ಕಾರ್ಮಿಕ ದಿನದ ವಿಶೇಷ-ಕಥೆ ತಿಥಿ ಟಿ. ಎಸ್. ಶ್ರವಣ ಕುಮಾರಿ. ತಿಥಿ “ನಾಗೂ… ಏ ನಾಗೂ… ಇದಿಯನೇ ಒಳಗೆ…” ಅಡುಗೆಮನೆಯನ್ನಿಸಿಕೊಂಡ ಆ ಮನೆಯ ಮೂಲೆಯಲ್ಲಿ ಹೊಗೆಯೊಂದಿಗೆ ಗುದ್ದಾಡುತ್ತಾ ಹುಳಿಗೆ ಹಾಕಲು ಹುಣಿಸೇಹಣ್ಣು ಕಿವುಚುತ್ತಾ ಕುಳಿತಿದ್ದ ನಾಗುವಿಗೆ ಸುಬ್ಬಣ್ಣನ ದನಿ ಕೇಳಿ ʻಯಾಕ್ ಬಂದ್ನೋ ಮಾರಾಯ ಈಗ, ಕೆಲಸಿಲ್ದೆ ಈ ದಿಕ್ಕಿಗ್ ಕೂಡಾ ತಲೆಯಿಟ್ಟು ಮಲಗೋನಲ್ಲʼ ಎಂದುಕೊಂಡೇ “ಇದೀನೋ ಇಲ್ಲೇ ಒಲೆಮುಂದೆ ಅಡುಗೆಮಾಡ್ತಾ” ಎಂದುತ್ತರಿಸಿದಳು. ಬಿಸಿಲಿನಿಂದ ಒಳಗೆ ಬಂದವನಿಗೆ ಅಡುಗೆಮನೆಯೆಂದು ಮಾಡಿದ್ದ ಅಡ್ಡಗೋಡೆಯ ಒಳಗಿನ ಕತ್ತಲೆ, ಹೊಗೆಯ ಮಧ್ಯೆ ʻನಾನೂ ಇದೀನಿʼ ಎನ್ನುವಂತೆ ಸಣ್ಣಗೆ ಉರಿಯುತ್ತಿದ್ದ ಬೆಂಕಿಯ ಬೆಳಕಲ್ಲಿ ಅಸ್ಪಷ್ಟವಾಗಿ ಅವಳ ಆಕೃತಿ ಕಂಡಿತು. “ಈ ಹೊಗೇಲಿ ಅದೆಂಗಾರ ಇದಿಯೇ ಮಾರಾಯ್ತಿ, ನಿನ್ ಮಖ್ವೇ ಸಮಾ ಕಾಣಲ್ವಲ್ಲೇ” ಎಂದ ಕೆಮ್ಮುತ್ತಾ. “ಕಾಣ್ದಿದ್ರೆ ಬಿಡತ್ಲಾಗೆ, ಮಾತಾಡ್ತಿರದು ಕೇಳ್ತಿದ್ಯಲ್ಲ, ಏನು ಸವಾರಿ ಈ ಕಡೆ” ಎಂದಳು. ಇಷ್ಟು ಹೊತ್ತಿಗೆ ಆ ಕತ್ತಲಿಗೆ ಸ್ವಲ್ಪ ಕಣ್ಣನ್ನು ಹೊಂದಿಸಿಕೊಂಡಿದ್ದವನು ಅಲ್ಲೇ ಎದುರಿನ ಗೋಡೆಗೊರಗಿ ಕೂತು “ಇವತ್ತು ಸೋಮಾರ ಅಲ್ವನೇ, ನಾಳೆ ಬರಾ ಶುಕ್ರಾರ ಅಜ್ಜಿ ಬರ್ತಳೆ. ಈ ಸಲ ʻಮೇ ಡೇʼ ರಜಾದಿನ್ವೇ ಬಂದಿದೆ ನೋಡು. ಕರ್ದೋರೆಲ್ರೂ ಬರ್ತರೆ. ದೊಡ್ಡೋರೆ ಒಂದು ಮೂವತ್ತು ಜನ್ರ ಮೇಲೇ ಆಗ್ತರಪ್ಪ. ಅಮ್ಮಂಗೆ ಒಬ್ಳಿಗೇ ಅಷ್ಟು ಅಡುಗೆ ಮಾಡಕ್ಕೆ ಕೈಲಾಗುಲ್ವಲ್ಲೆ. ಅದ್ಕೇ ನಾಗೂನ ಸಹಾಯಕ್ಕೆ ಬರ್ಬಕಂತೆ ಅಂತ ಹೇಳ್ಬಾ ಅಂದ್ಳು” ಅಂದ. ಅವನ ಕಡೆ ತಿರುಗಿ “ಈ ಶುಕ್ರಾರಾನಾ… ಅವತ್ತೇ ನಾರಣಪ್ಪನೋರ ಮನೇಲಿ ಮಗನ್ ಮದ್ವೆ ದೇವರ ಸಮಾರಾದ್ನೆ ಇಟ್ಕಂಡಿದರೆ. ಮದ್ವೆ ಮನೆ ಚಕ್ಲಿ, ಉಂಡೆ ಎಲ್ಲಾ ನಾನೇ ಮಾಡ್ಕೊಟ್ಟಿರದು. ನಿನ್ನೇಂದ ಶುರುಮಾಡ್ದೋಳು ಇವತ್ತು ಬೆಳಗ್ಗೆನೂ ಏಳುತ್ಲೇ ಹೋಗಿ ಕೆಲ್ಸ ಮುಗಿಸ್ಕೊಟ್ಟು ಬಂದು ಒಲೆ ಹಚ್ಚಿದೀನಿ. ತಪ್ದೇ ಅವತ್ತು ಸುತ್ತು ಕೆಲ್ಸಕ್ಕೆ ಜತಿಗೆ ಹೂವೀಳ್ಯಕ್ಕೂ ಬರ್ಬೇಕು ಅಂತ ಹೇಳಿಯಾರೆ. ನಾನೂ ಒಪ್ಕಂಡಿದಿನಿ. ತಿಥಿ ಅಡ್ಗೆಗೆ ನಂಗೆ ಬರಕ್ಕಾಗಲ್ಲ” ಅಂದು ಆರುತ್ತಿದ್ದ ಒಲೆಯನ್ನೊಮ್ಮೆ ಊದುಗೊಳವೆಯಿಂದ ಜೋರಾಗಿ ಊದಿದಳು. “ಹಂಗಂದ್ರೆ ಹ್ಯೆಂಗೇ? ವರ್ಷ್ವಷ್ವೂ ಮಾಘ ಶುದ್ಧ ಅಷ್ಟ್ಮಿ ದಿನ ಅಜ್ಜಿ ತಿಥಿ ಅನ್ನದು ನಿಂಗೊತ್ತಲ್ವನೆ. ಪ್ರತಿ ಸಲ್ವೂ ನಿಂಗೇ ಹೇಳುದು ನೀನೇ ಜತಿಗ್ ಬರದು. ಮರ್ತೇಂದ್ರೆ ಹ್ಯಂಗೆ?” ಮರೆತು, ಬೇರೆಯ ಕಡೆ ಒಪ್ಪಿಕೊಂಡದ್ದು ಅವಳದೇ ತಪ್ಪು ಅನ್ನೋ ಹಾಗೆ ಸುಬ್ಬಣ್ಣ ದಬಾಯಿಸಿದ. “ನಾನೊಬ್ಳೆನಾ ಇರದು ಅಜ್ಜಿಗೆ ಮೊಮ್ಮಗ್ಳೂಂತ, ಪ್ರತಿಸಲ್ವೂ ಬರ್ತಿರ್ಲಿಲ್ವ. ಈ ಸಲ ನಂಗಾಗಲ್ಲ. ಇನ್ಯಾರಾದ್ರೂ ಮಾಡ್ಲಿ” ಎಂದವಳೇ ಮತ್ತೆ ಆರುತ್ತಿದ್ದ ಒಲೆಯತ್ತ ತಿರುಗಿದಳು. “ನಂಗೊತ್ತಿಲ್ಲಪ್ಪ, ನೀ ಹೀಗಂದಿ ಅಂತ ಅಮ್ಮನ ಹತ್ರ ಹೇಳ್ತಿನಿ. ನೀನುಂಟು, ಅವ್ಳುಂಟು. ಹೇಳ್ಬಾ ಅಂದ್ಲು, ಹೇಳಿಯೀನಿ” ಎನ್ನುತ್ತಾ ಕೋಪಿಸಿಕೊಂಡು ಅಲ್ಲಿಂದ ಎದ್ದ. ʻಹೋದ್ರೆ ಹೋಗ್ತಾನೆ. ನಾನೊಬ್ಳು ಸಿಕ್ತೀನಿ ಇವ್ರಿಗೆ ಬಿಟ್ಟಿ ಚಾಕ್ರಿ ಮಾಡಿ ಸಾಯಕ್ಕೆ… ಹಾಳಾದ್ ಈ ಒಲೆ… ಹತ್ಕೊಂಡು ಅಡುಗೆಯಾದ್ರೆ ಸಾಕಾಗಿದೆ. ಮುಲ್ಲಾ ಕೂಗಿ ಎಷ್ಟೊತ್ತು ಆಗೋಯ್ತು. ಇನ್ನರ್ಧ ಗಂಟ್ಗೆ ಹಸ್ಕಂಡು ಬರಾ ಹೊತ್ಗೆ ಆಗಿಲ್ದಿದ್ರೆ ಒಂದು ರಾಮಾಣ್ಯವೇ ಆಗೋಗತ್ತೆ…ʼ ಅಂದುಕೊಂಡು ಮತ್ತೆ ಮತ್ತೆ ಊದಿ ಅಂತೂ ಒಲೆ ಉರಿಸುವುದರಲ್ಲಿ ಗೆದ್ದಳು. ಗಂಡನ ಊಟವಾದ ಮೇಲೆ ತಾನೂ ಒಂದಷ್ಟು ಉಂಡು ಮಿಕ್ಕದ್ದನ್ನ ಸ್ಕೂಲಿಂದ ಬರುವ ಮಕ್ಕಳಿಗೆ ಮುಚ್ಚಿಟ್ಟು ಅಡುಗೆ ಮಾಡಿದ ಜಾಗವೆಲ್ಲಾ ಒರಸಿ ಉಸ್ಸಪ್ಪಾ ಅಂತ ಬಾಗಿಲೆದುರಿಗೆ ಕುಳಿತುಕೊಂಡಳು. ಎದುರಿನ ಹೊಂಗೆಮರದಿಂದ ಬೀಸುತ್ತಿದ್ದ ಗಾಳಿಗೆ ಜೀವವೆಲ್ಲಾ ಹಾಯೆನಿಸಿ ಬಾಗಿಲು ತೆರೆದಿದ್ದಂತೆಯೇ ʻಓಣಿ ಕೊನೇಮನೆ, ಯಾರ್ ಹಾಯ್ತಾರಿಲ್ಲಿʼ ಎನಿಸಿ ಚಾಪೆ ಬಿಡಿಸಿ ಉರುಳಿಕೊಂಡಳು. ಬೆಳಗ್ಗೆ ಎದ್ದಾಗಿಂದ ಒಲೆ ಮುಂದೆ ದಣಿದಿದ್ದು ಬೆನ್ನು ನೆಲಕ್ಕೆ ಹಾಕಬೇಕೆನಿಸಿತ್ತು. ʻಪ್ರತಿಸಲವೂ ಜಯತ್ತೆ ನನ್ನೇ ಯಾಕ್ ಕರಿಬೆಕು? ಕೃಷ್ಣವೇಣಿ, ಶಾರದಾ, ವಿಮಲಾ ಯಾರೂ ಅವ್ಳ ಕಣ್ಣಿಗ್ಯಾಕ್ ಕಾಣಲ್ಲ. ಅವ್ರನ್ನ ಕರ್ಯದು, ಅವ್ರೂ ಎಲ್ಲಾ ನನ್ನಂಗೆ ಮಾವನ್ ಅಕ್ತಂಗೀರ್ ಮಕ್ಳೇ ಅಲ್ವಾ ಅವರತ್ರ ಕೆಲಸ ತೆಗೆಯೋದು ನನ್ನ ಹತ್ರ ತೆಗೆದಷ್ಟು ಸುಲಭ್ವಾ. ಯಾರೂ ಜಯತ್ತೆ ಜೋರಿಗೆ ಸೊಪ್ಪು ಹಾಕಲ್ಲ, ನೀನೂಂದ್ರೆ ನಿಮ್ಮಪ್ಪ ಅಂತರೆ. ಅವ್ರೆಲ್ಲಾ ಮನೆಕಡೆ ಹಚ್ಚಗೆ, ಬೆಚ್ಚಗೆ ತಕ್ಮಟ್ಟಿಗೆ ಚೆನ್ನಾಗಿದರೆ, ಹಾಗಂದ್ರೆ ತಡಕಳತ್ತೆ. ಅದೇ ನಾನು ಎದುರು ಮಾತಾಡಿದ್ರೆ ಊರಲ್ಲೆಲ್ಲಾ ʻಎರ್ಡೊತ್ತು ನೆಟ್ಗೆ ಊಟ್ಕಿಲ್ದಿದ್ದೂ ಎಷ್ಟು ಸೊಕ್ಕುʼ ಅಂತ ಕತೆಕತೆಯಾಗಿ ಹೇಳ್ಕಂಡು ಬರ್ತಳೆ. ತಥ್, ಬಡ್ತನಾ ಅನ್ನೋದು ಬಾಯ್ನೂ ಹೊಲ್ದ್ಬಿಡತ್ತಲ್ಲ…ʼ ಅನ್ನಿಸಿ ಇರುಸುಮುರುಸಾಯ್ತು. ಪಕ್ಕಕ್ಕೆ ತಿರುಗಿಕೊಂಡಳು. ʻಹಾಳಾಗ್ಲಿ ಆ ವಿಷ್ಯ, ಹೇಗೂ ಈ ಸಲ ಬರಲ್ಲʼ ಅಂತ ಹೇಳಾಯ್ತಲ್ಲಾ, ನಾಳೆ ತುಂಗಮ್ನೋರ ಮನೆ ಸಾರಿನ್ ಪುಡಿ, ಹುಳಿಪುಡಿ ಕೆಲ್ಸ ಇದೆ. ದುಡ್ಡಿನ್ ಜತಿಗೆ ಒಂದು ವಾರ ಹತ್ದಿನಕ್ಕಾಗಷ್ಟು ಪುಡೀನು ಕೊಡ್ತರೆ. ಬುದ್ವಾರ ಲಲಿತಮ್ನೋರಿಗೆ ದೋಸೆಹಿಟ್ಟು ರುಬ್ಬುಕೊಡಕ್ಕೆ ಬರ್ತಿನಿ ಅಂತ ಹೇಳಾಗಿದೆ. ಎರಡ್ಸೇರು ಅಕ್ಕಿ ನೆನ್ಸಿರೂ ಒಂದು ಹೊತ್ಗಾಗೋಷ್ಟು ಹಿಟ್ಟು ತಗಂಡೋಗೆ ಅಂತೇಳಿ ಮೇಲಿಷ್ಟು ದುಡ್ಡೂ ಕೈಗಾಕ್ತಾರೆ. ಗುರ್ವಾರ ಬೆಳಗ್ಗೇನೇ ನಾರಣಪ್ಪನೋರ ಮನೆಗೆ ಹೋಗಿ ಮಡೀಲಿ ಚಿಗಳಿ, ತಂಬಿಟ್ಟು ಮಾಡಿಟ್ಟು ಬಂದ್ಬಿಡ್ಬೇಕು. ಶುಕ್ರಾರ ಬೆಳಗ್ಗೆದ್ದು ಕೋಸಂಬ್ರಿ, ಪಾನಕ ಎಲ್ಲಾ ಮಾಡೋ ಹೊತ್ಗೆ ಸರೀ ಹೋಗತ್ತೆ. ಹತ್ತೂವರೆಗೆ ರಾಹುಕಾಲ ಬಂದ್ಬಿಡತ್ತೆ, ಬೇಗ್ನೇ ಶುರು ಮಾಡ್ಕಂಬಿಡಣ ಅಂದ್ರಲ್ಲ ಕಮಲಮ್ಮʼ ಅಂತ ಯೋಚನೆ ಬಂತು. ಕೆಲ್ಸಕ್ಕೆ ನಾನೇನು ಇಂತಿಷ್ಟೂ ಅಂತ ಹೇಳ್ದಿದ್ರೂ ಸೈತಾ ಅವ್ರ ಕೈ ಧಾರಾಳಾನೆ. ʻಹೂವೀಳ್ಯಕ್ಕೆ ಕೊಡಕ್ಕೇಂತ ಐದು ಜನ ಮುತ್ತೈದೇರಿಗೆ ಕಾಟನ್ ಸೀರೆ ತಂದಿದೀನಿ ಕಣೆ. ನಿಂಗೂ ಒಂದು ಕೊಡ್ತಿನಿ. ನೋಡಿಲ್ಲಿʼ ಅಂತ ತೋರ್ಸಿದ್ರು ಬೇರೆ. ಗಳದ ಮೇಲೊಂದು, ಮೈಮೇಲೊಂದು ಅನ್ನೋ ಹಾಗಾಗಿದೆ ನಂಗೀಗ. ಆ ಸೀರೆ ಬಂತೂಂದ್ರೆ ಹೊರಗೆಲ್ಲಾದ್ರೂ ಹೋಗೋವಾಗ ಉಡಕ್ಕಾಗತ್ತೆ. ಆಗದನ್ನ ಪೆಟ್ಗೆಲಿಟ್ಟು ಅಲ್ಲಿರೊ ಇನ್ನೊಂದೇ ಒಂದು ಸ್ವಲ್ಪ ಗಟ್ಟಿಯಾಗಿರೊ ಸೀರೇನ ಹೊರಗೆ ತೆಕ್ಕೋಬೋದುʼ ಅಂದುಕೊಳ್ತಾ ಮತ್ತೆ ಈ ಪಕ್ಕಕ್ಕೆ ತಿರುಗಿದಳು. ʻಜೊತೆಗೆ ಜಾನಕೀನೂ ಕರ್ಕಂಬಾ, ಕನ್ಯಾಮುತ್ತೈದೆಗೆ. ಅವ್ಳಿಗೂ ಎಲಡಿಕೆ ಕೊಡೋದು ಅನ್ಕಂಡಿದೀನಿ ಅಂದ್ರು. ಅವ್ಳ ಕೈಗೂ ಏನಾರ ಕೊಡ್ತರೆನೋ. ಕೊಟ್ಟೇ ಕೊಡ್ತರೆ. ಒಳ್ಳೇ ಊಟ್ವಂತೂ ಸಿಗತ್ತೆ.ʼ ಕಣ್ಣು ತೂಗುವ ಹಾಗಾಯ್ತು ʻಎದ್ದು ಬಾಗಿಲು ಮುಂದೂಡಲೇʼ ಅನ್ನಿಸಿದರೂ ʻಅಯ್ಯೋ ಕೊಳ್ಳೆ ಹೊಡ್ಕಂಡು ಹೋಗಕ್ಕೆ ಏನಿದೆ. ಸ್ವಲ್ಪ ಗಾಳಿಯಾದ್ರೂ ಆಡಲಿʼ ಅಂದುಕೊಂಡು ಮತ್ತೆ ಯೋಚನೆಯಲ್ಲಿ ಮುಳುಗಿರುವಂತೆಯೇ ಒಂದು ಜೋಂಪು ಹತ್ತಿತು… “ಏನೇ ಬಾಗಿಲು ತೆಕ್ಕೊಂಡೇ ಮಲ್ಗಿದೀಯಲ್ಲೇ. ಯಾರಾದ್ರೂ ನುಗ್ಗಿದ್ರೇನು ಗತಿ” ಅಂತ ಕೇಳಿದ ತಕ್ಷಣ ಬೆಚ್ಚಿಬಿದ್ದು ಎದ್ದಳು. ಬಾಗಿಲಿಗಡ್ಡವಾಗಿ ಜಯತ್ತೆ ನಿಂತಿದ್ದಳು. ತಕ್ಷಣವೇ ಎದ್ದು, ಅದೇ ಚಾಪೆಯನ್ನು ಇನ್ನೊಂದು ಗೋಡೆಗೆ ಹಾಕಿ “ಕೂತ್ಕೋತ್ತೆ, ಮಕ ತೊಳ್ಕಂಡು ಬರ್ತಿನಿʼ ಎನ್ನುತ್ತಾ ಹಿತ್ತಿಲಿನ ಬಾಗಿಲಿನ ಪಕ್ಕದಲ್ಲಿದ್ದ ತಗಡಿನ ಮರೆಗೆ ಹೋಗಿ ಕೈಕಾಲು, ಮುಖ ತೊಳೆದುಕೊಂಡು ಬಂದು ಹೊಗೆಹಿಡಿದಿದ್ದ ಕನ್ನಡಿಯಲ್ಲಿ ಮಸಕುಮಸಕಾಗಿ ಕಂಡೂ ಕಾಣದಂತಿದ್ದ ಮುಖವನ್ನು ನೋಡಿಕೊಂಡು ಹಣೆಗಿಟ್ಟುಕೊಂಡು ಅವಳು ಬಂದಿದ್ದೇಕೆಂದು ತಿಳಿದಿದ್ದರೂ, “ಏನತ್ತೆ ಬಂದೆ, ಕೂತ್ಕಾ, ಒಂಚೂರು ಕಾಫಿ ಮಾಡ್ತಿನಿ” ಎನ್ನುತ್ತಾ ಅವಳೆಡೆಗೆ ತಿರುಗಿದಳು. “ಕಾಫೀನೂ ಬೇಡ, ಏನೂ ಬೇಡ, ನೀ ಬಾಯಿಲ್ಲಿ ಮದ್ಲು. ಇಲ್ಲಿ ಬಾ” ಅಂದಳು ಜಯಮ್ಮ ಜೋರಾದ ಅತ್ತೆ ಪಾಪದ ಸೊಸೆಗೆ ಹೇಳುವ ಜರ್ಬಿನಲ್ಲಿ. ಈ ಧಾಳಿಗೆ ಸಿದ್ದವಾಗಿಲ್ಲದ ನಾಗು ಬಂದು ಅಡುಗೆಮನೆಯ ಅಡ್ಡಗೋಡೆಗೆ ಒರಗಿ, ʻಈಗ ಅತ್ತೆ ಏನು ಗಿಲೀಟು ಮಾತು ಹೇಳಿದ್ರು ಸೈತ ಒಪ್ಕಬಾರ್ದುʼ ಅಂತ ನಿರ್ಧರಿಸಿಕೊಂಡವಳಂತೆ ಒರಗಿ ನಿಂತಳು. “ಅಲ್ವೇ, ಬೆಳಗ್ಗೆ ಸುಬ್ಬಣ್ಣನ್ ಕೈಲಿ ಹೇಳ್ಕಳಿಸಿದ್ರೆ ಬರಕ್ಕಾಗುಲ್ಲಾ ಅಂದ್ಯಂತೆ. ನಿಮ್ಮಜ್ಜಿ ತಿಥೀನೇ… ತಿಳ್ಕ, ನಿಮ್ಮಮ್ಮನ ಹೆತ್ತವ್ಳಲ್ವಾ… ಸ್ವಲ್ಪ ಸಹಾಯಕ್ಕೆ ಬಾಂದ್ರೆ ಎಷ್ಟು ಜಂಭ ನಿಂದು. ಅಜ್ಜಿ ತಿಥೀಗಿಂತ ಯಾರ್ದೋ ಮನೆ ದೇವ್ರಸಮಾರಾದ್ನೆ ಹೆಚ್ಚಾಯ್ತ ನಿಂಗೆ. ನಾನೇ ಬೇಕಾರೆ ಅವ್ರ ಮನೇಗೆ ಹೇಳಿ ಕಳಿಸ್ತೀನಿ, ʻಹೀಗಿದೆ ನಿಂಗ್ ಬರಕ್ಕಾಗಲ್ಲʼ ಅಂತ. ಬೇಕಾರೆ ನಿನ್ ಬದ್ಲು ಶಾರೀನ ಮಗ್ಳನ್ ಕರ್ಕಂಡೋಗಕ್ಕೆ ವಪ್ಸಿ, ಕಮಲಮ್ಮಂಗೆ ಹೇಳ್ತಿನಿ. ಹಿಂದಿನ್ದಿನ ಹೋಗಿ ಕೆಲ್ಸ ಮಾಡ್ಕೊಟ್ಟು ಬಾ. ಆವತ್ತು ನಮ್ಮನಿಗೆ ತಪ್ಪಸ್ಬೇಡ. ಎಲ್ಲಿ ಮಡಿಸೀರೇಗೆ ಒಣಗ್ಹಾಕಕ್ಕೆ ನಿಂದೊಂದು ಸೀರೆ ಕೊಡು” ಜಬರ್ದಸ್ತಿಯಿಂದ ತಾನೇ ಎಲ್ಲಾ ತೀರ್ಮಾನವನ್ನೂ ಮಾಡಿಬಿಟ್ಟಳು ಜಯಮ್ಮ. “ಹಾಗಲ್ಲತ್ತೇ…” ಏನೋ ಹೇಳಲು ಹೋದ ನಾಗುವನ್ನು ಅಲ್ಲೇ ತಡೆದು “ಹಂಗೂ ಇಲ್ಲ, ಹಿಂಗೂ ಇಲ್ಲ ಮದ್ಲು ಮಡಿಗೆ ಹಾಕಕ್ಕೆ ನಿನ್ ಸೀರೆ ಕೊಡು ಅಷ್ಟೇಯ. ನೋಡು, ಪುರೋಹಿತ್ರು ನಮ್ಮನೇ ಕೆಲ್ಸ ಮುಗಿಸ್ಕಂಡು ಮೂರು ಗಂಟೆ ಬಸ್ಸಿಗೆ ತೀರ್ಥಳ್ಳಿಗೆ ಹೋಗ್ಬಕಂತೆ. ಅಡ್ಗೆ ತಡಾಗೋ ಹಾಂಗಿಲ್ಲ. ಅವತ್ತು ಅದೇನೋ ರಜ ಇದ್ಯಂತಲ್ಲ, ಜನ ಬೇರೆ ಜಾಸ್ತಿ, ಬೆಳಗ್ಗೆ ಆರು ಗಂಟ್ಗೇ ಬಂದ್ಬಿಡು. ಈಗ ಮದ್ಲು ಸೀರೆ ಕೊಡು” ಎನ್ನುತ್ತಾ ಅವಳು ಮಾತನಾಡಕ್ಕೆ ಅವಕಾಶವನ್ನೇ ಕೊಡದೆ ʻಇಕಾ ನಾನೆ ತಗಂಡೆʼ ಎನ್ನುತ್ತಾ ಪಕ್ಕದ ಗಳುವಿನ ಮೇಲಿದ್ದ ಸೀರೆ, ರವಿಕೆಯನ್ನು ಎಳೆದು ಸುತ್ತಿಕೊಂಡು ಹೊರಟೇಬಿಟ್ಟಳು ಜಯಮ್ಮ. ಬೆಪ್ಪಾಗಿ ನಿಂತುಬಿಟ್ಟಳು ನಾಗು ʻಅದ್ಹೇಗೆ ನಂಗೆ ಮಾತಾಡಕ್ಕೂ ಬಿಡ್ದೆ ಅತ್ತೆ ಹೀಗ್ಮಾಡ್ಬಿಟ್ಳೂʼ ಅಂತ ತಲೆಮೇಲೆ ಕೈಹೊತ್ತು ಕೂತಿದ್ದ ನಾಗುವನ್ನು ಜಾನಕಿ ಕೂಗಿದ್ದು ಎಚ್ಚರಿಸಿತು. ಸ್ಕೂಲಿನ ಚೀಲವನ್ನು ಮೂಲೆಯಲ್ಲಿಡುತ್ತಾ “ಅದೇನು ಯೋಚ್ನೆ ಮಾಡ್ತ ಕೂತಿದೀಯೇ. ನಂಗೆ ಹಸಿವು. ಬೇಗ ಒಂದಿಷ್ಟು ಕಲ್ಸಿ ಕೊಡು” ಎನ್ನುತ್ತಾ ಕೈಕಾಲು ತೊಳೆಯಲು ಹೋದಳು. ಒಳಗೆ ಮುಚ್ಚಿಟ್ಟಿದ್ದ ಅನ್ನದಲ್ಲಿ ಹುಳಿಯನ್ನ, ಮಜ್ಜಿಗೆಯನ್ನ ಎರಡನ್ನೂ ಕಲಿಸಿ ಸ್ವಲ್ಪ ಸ್ವಲ್ಪವನ್ನು ಜಾನಕಿಯ ತಟ್ಟೆಗೆ ಹಾಕಿ ಕೊಟ್ಟಳು. ಮಿಕ್ಕದ್ದನ್ನು ಇನ್ನೇನು ಬರುವ ಶೇಷಾದ್ರಿಗೆ ಮುಚ್ಚಿಟ್ಟಳು. ಹುಳಿಯನ್ನ ಬಾಯಿಗಿಟ್ಟ ಜಾನಕಿ “ಇವತ್ತೂ ಪಪಾಯ ಕಾಯಿನ ಹುಳೀನೇ ಮಾಡಿದೀಯಾ… ಥೂ ನಂಗಿಷ್ಟ ಇಲ್ಲ” ಎನ್ನುತ್ತಾ ತಟ್ಟೆ ಕುಕ್ಕಿದಳು. ನಾಗುವಿಗೂ ಕೋಪ ಬಂತು. “ಏನ್ ನಿಮ್ಮಪ್ಪ ಇಪ್ಪತ್ತುಮೂವತ್ತು ಸಾವ್ರ ಸಂಬಳ ತರೋ ಸರ್ದಾರ. ದಿನದಿನಾನೂ ಅಂಗ್ಡೀಯಿಂದ ತರ್ಕಾರಿ ತಂದು ಮಾಡ್ತೀನಿ. ಮನೆ ಹಿತ್ಲಲ್ಲಿ ಏನು ಬೆಳ್ದಿರತ್ತೋ ಅಷ್ಟೇನೆ. ಹಸಿವಾಗಿದ್ರೆ ತಿನ್ನು ಇಲ್ದಿದ್ರೆ ಅಲ್ಲೇ ಮೂಲೇಲಿ ಮುಚ್ಚಿಟ್ಟು ಹೋಗು. ರಾತ್ರಿ ಹೊಟ್ಟೆ ಕಾದ್ರೆ ತಿನ್ನೋವಂತೆ” ಎನ್ನುತ್ತಾ ಮತ್ತೆ ರಾತ್ರಿಯ ಅಡಿಗೆಗೆ ಒಲೆ ಹಚ್ಚತೊಡಗಿದಳು. ಅಷ್ಟರಲ್ಲಿ ಶೇಷಾದ್ರಿಯೂ ಬಂದ. ಮಾತಿಲ್ಲದೆ ತನ್ನ ತಟ್ಟೆಗೆ ಹಾಕಿಕೊಟ್ಟಿದ್ದನ್ನು ಸ್ವಾಹಾ ಮಾಡತೊಡಗಿದ. ಗುಮ್ಮೆಂದು ಕೂತಿದ್ದ ಜಾನಕಿಯನ್ನು ನೋಡಿ “ತಿನ್ನಲ್ವೇನೆ, ತಿಂದಿದ್ರೆ ನಂಗ್ಹಾಕು” ಎಂದು ತಟ್ಟೆಯನ್ನು ಮುಂದೆ ಚಾಚಿದ. ಮರುಮಾತಿಲ್ಲದೆ ಜಾನಕಿ ತಿನ್ನತೊಡಗಿದಳು. ಒಲೆ ಹೊತ್ತಿದ ತಕ್ಷಣ ಸ್ವಲ್ಪ ನೀರುಕಾಸಿ ತೊಟ್ಟೇತೊಟ್ಟಿದ್ದ ಹಾಲು ಸೋಕಿಸಿ ನಾಗು ಬೆಲ್ಲದ ಕಾಫಿ ಮಾಡಿಕೊಂಡು ರಾತ್ರಿಯ ಊಟಕ್ಕೆ ಎಸರಿಟ್ಟಳು. ತಟ್ಟೆ ತೊಳೆದಿಟ್ಟ ಶೇಷಾದ್ರಿ ಎದ್ದು ಆಟಕ್ಕೆ ಹೊರಗೋಡಿದ. ಹೆದಹೆದರುತ್ತಲೇ ಜಾನಕಿ “ನಂಗೊಂತೊಟ್ಟು ಕಾಫಿನಾದ್ರು ಕೊಡ್ತಿಯೆನೇ?” ಕೇಳಿದಳು. ʻಅಯ್ಯೋʼ ಅನ್ನಿಸಿ “ತಗಾ” ಎನ್ನುತ್ತಾ ತಳಮುಳುಗುವಷ್ಟು ಕಾಫಿಯನ್ನು ಸಣ್ಣಲೋಟಕ್ಕೆ ಬಗ್ಗಿಸಿಕೊಟ್ಟಳು. ಇನ್ನಷ್ಟು ಬಿಸಿನೀರು ಬೆಲ್ಲವನ್ನು ಬೆರಸಿಕೊಂಡು ತನ್ನ ಲೋಟದ ತುಂಬ ಮಾಡಿಕೊಂಡು ನಿಧಾನವಾಗಿ ಕುಡಿಯುತ್ತಾ “ಈ ಕಾಫಿ ಕೊಟ್ಟಿದ್ರೆ ನಿಜ್ವಾಗೂ ಜಯತ್ತೆ ಕುಡಿತಿದ್ಲಾ” ಅಂದುಕೊಳ್ಳುತ್ತಲೇ ಎರಡೂ ಲೋಟ ತೊಳೆದಿಡು ಎಂದು ಜಾನಕಿಗೆ ಕೊಟ್ಟು ಸಿಟ್ಟು ತೀರಿಸಿಕೊಳ್ಳುವಂತೆ ಆರುತ್ತಿದ್ದ ಒಲೆ ಊದಿದಳು… ರಾತ್ರಿ ಎಷ್ಟೋ ಹೊತ್ತು ನಿದ್ರೆ ಬರಲಿಲ್ಲ… ನಂಗ್ಯಾಕೆ ʻನಾ ಬರಲ್ಲಾಂದ್ರೆ ಬರಲ್ಲʼ ಅಂತ ಹೇಳಕ್ಕಾಗ್ಲಿಲ್ಲ… ಹೇಳಕ್ಕೆ ಅವ್ಳು ಬಿಟ್ಟಿದ್ರಲ್ವಾ… ನಾರ್ಣಪ್ಪನೋರ ಮನೆಗ್ಹೋದ್ರೆ ಸೀರೆ, ದಕ್ಷಿಣೆ, ಒಂದಷ್ಟು ಹಣ್ಣು ಎಲ್ಲಾ ಸಿಗತ್ತೆ ಅಂತ ಅವ್ಳಿಗ್ ಗೊತ್ತಿಲ್ವಾ. ಹಂಗ್ಸಿ ಮಾತಾಡ್ತಳಲ್ಲ. ಬದ್ಲಿಗೆ ಶಾರೀನ ಕಳಿಸ್ತಿನಿ