ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಮೂರನೇ ಆಯಾಮ

ಎಂದೂ ಸಾಕೆನಿಸದ ನೆಲದ ನಂಟು, ಸಮುದ್ರದ ಪ್ರೀತಿ

ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್‌ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ ಗುಡ್ಡೆಹಾಕಿಕೊಂಡು ಬೆಚ್ಚಗೆ ಮಲಗುತ್ತಿದ್ದ ಮಗನಿಗೆ ಈಗ ಆತ ಹಾಗೆ ಮಾಡುತ್ತಿದ್ದ ಎಂದರೆ ನಂಬುವುದಿಲ್ಲ. ಮಲಗುವಾಗ ನಾನು ಬೆಳ್ಳಿಗ್ಗೆ ಬೇಗ ಏಳಬೇಕಾದಾಗಲೆಲ್ಲ ಅವನ ಪಕ್ಕ ನನ್ನ ಉಪಯೋಗಿಸಿದ ಉಡುಪುಗಳನ್ನು ಇಡುತ್ತಿದ್ದೆ. ಅದನ್ನೇ ತಬ್ಬಿಕೊಂಡು ಆತ ಹಾಯಾಗಿ ಮಲಗಿಬಿಡುತ್ತಿದ್ದ. ಕೆಲವೊಮ್ಮೆ ಬಟ್ಟೆ ಇಡದಿದ್ದಾಗ ಎದ್ದು ಅಳಲು ಪ್ರಾರಂಭಿಸುತ್ತಿದ್ದ. ಪ್ರವೀಣ ಅವರ ಬಾನಸಮುದ್ರಕೆ ಗಾಳನೋಟ ಎನ್ನುವ ಸಂಕಲನದ ಮೊದಲ ಕವನವನ್ನು ಓದಿದಾಗ ನನಗೆ ಈ ಘಟನೆ ನೆನಪಾಗಿ ಮತ್ತೊಮ್ಮೆ ಕಣ್ಣಲ್ಲಿ ನೀರೂರಿತು. ತಾಯಂದಿರ ಸೀರೆಯ ಬಗ್ಗೆ ಎಲ್ಲ ಮಕ್ಕಳಿಗೂ ಒಂದು ರೀತಿಯಾದ ಭಾವನಾತ್ಮಕವಾದ ಅನುಬಂಧವಿರುತ್ತದೆ. ಊಟವಾದ ನಂತರ ತಾಯಿಯ ಸೆರಗಿಗೆ ಕೈ ಒರೆಸದ ನನ್ನ ತಲೆಮಾರಿನವರು ಸಿಗಲು ಸಾಧ್ಯವೇ ಇಲ್ಲ. ಕೊನೆಯಪಕ್ಷ ಹಳ್ಳಿಯಲ್ಲಿ ಬೆಳೆದವರಾದರೂ ಅಮ್ಮನ ಸೆರಗಿಗೆ ಕೈ ಒರೆಸಿಯೇ ಒಳೆದವರು ಎಂದು ಖಡಾಖಂಡಿತವಾಗಿ ಹೇಳಬಲ್ಲೆ. ನನ್ನ ನಂತರದ ತಲೆಮಾರಿಗೆ ಸೆರಗು ಸಿಕ್ಕಿರಲಿಕ್ಕಿಲ್ಲ. ಆದರೆ ಅಮ್ಮ ಬೆನ್ನು ತಬ್ಬಿ ಅಮ್ಮನ ಚೂಡಿದಾರಕ್ಕೆ ಮುಖ, ಕೈ ಒರೆಸಿಯೇ ಒರೆಸುತ್ತಾರೆ. ಆ ಸುಖವೇ ಬೇರೆ. ಇನ್ನು ನನ್ನ ಅಮ್ಮನ ತಲೆಮಾರಿನವರಿಗೆ ಹಾಗೂ ಅದಕ್ಕಿಂತ ಹಿಂದಿನವರಿಗೆ ಸೆರಗು ಬಹು ಉಪಯೋಗಿ ಸಾಧನವಾಗಿತ್ತು. ಕೆಂಡದ ಒಲೆಯಿಂದ ಬಿಸಿ ಪಾತ್ರೆಗಳನ್ನಿಳಿಸಲು, ಕೆಲವೊಮ್ಮೆ ಮಸಿ ಅರಿವೆಯಾಗಿ, ಮತ್ತೂ ಕೆಲವೊಮ್ಮೆ ತಕ್ಷಣದ ಸ್ವಚ್ಛಗೊಳಿಸುವ ಸಾಧನವಾಗಿಯೂ ಬಳಸಲ್ಪಡುತ್ತಿತ್ತು. ಸೆರಗಿನ ಬಳಕೆಯ ಮಹತ್ವ ಕಡಿಮೆಯದ್ದೇನಲ್ಲ. ಶ್ರೀಕೃಷ್ಣನ ಕೈಗೆ ಗಾಯವಾಗಿ ರಕ್ತ ಸೋರುತ್ತಿರುವಾಗ ದ್ರೌಪದಿ ತನ್ನ ಸೆರಗಿನ ಅಂಚನ್ನೇ ಹರಿದು ಗಾಯಕ್ಕೆ ಪಟ್ಟಿ ಕಟ್ಟಿದ್ದಳಂತೆ. ಆ ಸೆರಗಿನ ಅಂಚು ನಂತರ ದ್ರೌಪದಿಯ ವಸ್ತ್ರಾಪಹರಣದ ಸಮಯದಲ್ಲಿ ಅಕ್ಷಯ ಸೆರಗಾಗಿ ಅವಳನ್ನು ಆವರಿಸಿಕೊಂಡಿದ್ದು ಎನ್ನುವ ನಂಬಿಕೆಯಿದೆ. ಹೀಗಿರುವಾಗ ಅಮ್ಮನ ಸೆರಗನ್ನು ಚಾಣಿಗಿಯಾಗಿ ಬಳಸುವ ರೂಪಕವನ್ನು ತನ್ನ ಮೊದಲ ಕವಿತೆಯಲ್ಲಿ ತಂದು ಇಡೀ ಸಂಕಲನದ ಘನತೆಯನ್ನು ಹೆಚ್ಚಿಸಿ, ಸಂಕಲನದ ಉಳಿದ ಕವಿತೆಯ ಕಡೆಗೊಂದು ಕುತೂಹಲವನ್ನು ಹುಟ್ಟಿಸಿದ್ದಾರೆ ಪ್ರವೀಣ.    ಇಂದಿಗೂ ಪ್ರವೀಣ ಎಂದಾಗಲೆಲ್ಲ ಹತ್ತಾರು ಪ್ರವೀಣರನ್ನು ನೆನಪಿಸಿಕೊಳ್ಳುವ ನಾನು ೨೦೧೯ರಪ್ರಜಾವಾಣಿ ಕಾವ್ಯದ ವಿಜೇತರು ಎಂದಾಗ ಮಾತ್ರ ಅರ್ಥಮಾಡಿಕೊಳ್ಳುತ್ತೇನೆ. ಹೀಗಿರುವಾಗಲೇ ಈ ಸಂಕಲನ ನನ್ನ ಕೈ ಸೇರಿದ್ದು. ಅದ್ಭುತ ರೂಪಕಗಳ ಸುರಿಮಳೆಯನ್ನು ಓದಿ ದಿಗ್ಭ್ರಮೆಗೊಳಗಾಗಿದ್ದು. ಅಮ್ಮನ ಮೊದಲ ಸೀರೆಗೆಕನಸು ಬರೆದ ಚಿತ್ತಾರದ ಅಂಚಿತ್ತುವಸಂತ ಋತುವಿನ ಚಿಗುರಿನ ಉತ್ಸಾಹಗಳ ಚಿನ್ನದ ಸೆರಗಿತ್ತುನನ್ನ ಹುಟ್ಟಿದ ದಿನ ಬಂಗಾರದಸೆರಗು ಕುಂಚಿಗೆಯಾಗಿ ಅಂಚುಕಟ್ಟುವ ಕಸಿಯಾಗಿ ಚೂಪಾದತುತ್ತತುದಿಗೆ ಸಾಗರದಾಳದಹೊಚ್ಚಹೊಸ ಮುತ್ತು ಮೆರೆದುನನ್ನ ತಲೆಗೆ ಕಿರೀಟವಾಯಿತು.  ಎಂದು ಹೇಳುತ್ತಾರೆ. ಇಲ್ಲಿ ಬರುವ ಸಾಲುಗಳನ್ನು ಗಮನಿಸಿ. ಮಗುವಿನ ತಲೆಗೆ ಕಟ್ಟಲು ಅಮ್ಮ ಹೊಲಿಯುವ ಕುಂಚಿಗೆಗೆ ತನ್ನ ಮೆತ್ತನೆಯ ಸೀರೆಯನ್ನು ಬಳಸಿ ಹೊಲೆಯುವ ಸಹಜ ಪ್ರಕ್ರಿಯೆ ಇಲ್ಲಿ ಕವಿತೆಯಾಗಿ ಮನಮುಟ್ಟುವ ಪರಿಯೇ ವಿಶಿಷ್ಟವಾದದ್ದು. ಈ ಕವನದಲ್ಲಿ ಬರುವ ಸಾಲುಗಳನ್ನು ಓದುತ್ತ ಹೋದಂತೆ ಹೊಸತೇ ಆದ ಒಂದು ಕಾವ್ಯಲೋಕ ಕಣ್ಣೆದುರು ಬಿಚ್ಚಿಕೊಳ್ಳುತ್ತದೆ.   ಜಗತ್ತಿನ ಮೊತ್ತಮೊದಲ ಮುತ್ತಿನಸಂಭ್ರಮದಲ್ಲಿ ನನ್ನ ರಾಜ್ಯಾಭಿಷೇಕವಾಯಿತು.ಈ ಸಾಲುಗಳಲ್ಲಿ ಮೂಡಿರುವ ಆಪ್ತತೆಯನ್ನು ಗಮನಿಸಿ. ಈ ಎರಡು ಸಾಲುಗಳು ಓದುಗನಲ್ಲಿ ಸಾವಿರ ಭಾವವನ್ನು ತುಂಬುತ್ತವೆ.      ಹತ್ತನೇ ತರಗತಿಯ ಹಿಂದಿನ ಸಿಲೆಬಸ್‌ನಲ್ಲಿ ಎ. ಕೆ. ರಾಮಾನುಜನ್‌ರವರು ಇಂಗ್ಲೀಷ್‌ಗೆ ಅನುವಾದಿಸಿದ್ದ ಲಂಕೇಶರ ಅವ್ವ ಕವನವಿತ್ತು. ಅವ್ವನನ್ನು ಹೊಗಳುತ್ತಲೇ ಬನದ ಕರಡಿಯಂತೆ ಪರಚುವ ಅವ್ವ, ಕಾಸು ಕೂಡಿಡುವ ಅವ್ವ, ಸರಿಕರೆದುರು ತಲೆ ತಗ್ಗಿಸಬಾರದೆಂದು ಛಲದಿಂದ ದುಡಿವ ಅವ್ವನನ್ನು ಹೇಳುವಾಗಲೆಲ್ಲ ನನ್ನ ಮಾತು ಆರ್ದೃವಾಗುತ್ತಿತ್ತು. ಅವ್ವನನ್ನು ಕುರಿತ ಕನ್ನಡದ ಅಥವಾ ನಿಮ್ಮ ಮಾತೃಭಾಷೆಯಲ್ಲಿರುವ ಕವನಗಳನ್ನು ಇಂಗ್ಲೀಷ್‌ಗೆ ಅನುವಾದಿಸಿ ಎಂದು ನಾನು ಮಕ್ಕಳಿಗೆ ಹೇಳುತ್ತಿದ್ದೆ.  ಈಗ ಈ ಕವನವನ್ನು ಓದಿದ ನಂತರ ತಕ್ಷಣಕ್ಕೆ ಅನ್ನಿಸಿದ್ದು, ಆಗ ಹಿಂದಿನ ಸಿಲೆಬಸ್ ಇರುವಾಗಲೇ ಪ್ರವೀಣ ಈ ಕವನ ಬರೆದಿದ್ದರೆ ನನ್ನ ಮಕ್ಕಳಿಗೆ ಇನ್ನೊಂದಿಷ್ಟು ಚಂದವಾಗಿ ಅಮ್ಮನನ್ನು ಕಟ್ಟಿಕೊಡಬಹುದಿತ್ತು, ಆಸಕ್ತ ವಿದ್ಯಾರ್ಥಿಗಳಿಗೆ ನಾಲ್ಕಾರು ಸಾಲುಗಳನ್ನು ನೀಡಿ ಇಂಗ್ಲೀಷ್ ಅನುವಾದ ಮಾಡಿ ಎನ್ನಬಹುದಿತ್ತು ಎಂದೇ. ಅಮ್ಮನನ್ನು ಇಷ್ಟೊಂದು ಆಪ್ತವಾಗಿ ಕಟ್ಟಿಕೊಡುವ ಇನ್ನೊಂದು ಕವನವನ್ನು ಸಧ್ಯದಲ್ಲಿ ನಾನು ಓದಿರಲಿಲ್ಲ. ಬರೆದಷ್ಟೂ ಬರೆಯಿಸಿಕೊಳ್ಳುವ ಕವನವಿದು. ಇದೊಂದೇ ಕವನದ ಕುರಿತುಪುಟಗಟ್ಟಲೆ ಬರೆಯಬಹುದೇನೋ. ಭಗಭಗನೆ ಉರಿವ ಹಾಸಿಗೆಯ ಮೇಲೆಸೀರೆ ಹಾಸಿ ನಿದ್ದೆ ಮಾಡುತ್ತಾಳೆ ಎವೆಮುಚ್ಚದೆಸೀರೆಯ ಗಂಟಿನಲ್ಲಿ ಮಡಚಿಟ್ಟುಕೊಂಡಬೈಗುಳ ಅವಮಾನದಣಿವು ಸುಸ್ತುಗಳ ಒದರಿನಡಕ್ಕೆ ಸೆರಗು ಕಟ್ಟಿಕೊಂಡು ಹೊಟ್ಟೆಗೆಹತ್ತಿದ ಬೆಂಕಿ ಆರಿಸಲುಸ್ಟೋವು ಹೊತ್ತಿಸುತ್ತಾಳೆ. ಹೌದು, ಹೆಣ್ಣಿನ ಸೀರೆಯ ಸೆರಗಿನಂಚಿನಲ್ಲಿ ಎಂತೆಂಥವು ಗಂಟುಹಾಕಿಕೊಂಡಿರುತ್ತವೋ ಬಲ್ಲವರಾರು? ಯಾರೋ ಕೊಟ್ಟ ಹಣ, ಇನ್ನಾರೋ ಮಾಡಿದ ಅವಮಾನ, ನಡೆವ ಬೀದಿಯೇ ಮೈಮೇಲೆ ಬಿದ್ದು ಎಸುಗಲೆತ್ನಿಸಿದ ಬಲಾತ್ಕಾರ, ಸ್ವಂತ ಗಂಡನೇ ತಿರಸ್ಕರಿಸಿ ಬೇರೆಯವಳೊಟ್ಟಿಗೆ ನಡೆದ ನೋವು, ಹಡೆದ ಮಗನೇ ದೂರೀಕರಿಸಿದ ಅಸಹಾಯಕತೆ ಎಲ್ಲವೂ ಆ ಸೆರಗಿನ ಮೂಲೆಯಲ್ಲಿರುತ್ತದೆ. ಸೆರಗು ಕೊಡವಿ ಎದ್ದು ನಿಂತರೆ ಬಾಳು, ಇಲ್ಲವೆಂದಾದಲ್ಲಿ ಅದೇ ಸೆರಗನ್ನು ಮನೆಯ ಜಂತಿಗೆ ಕಟ್ಟಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಆದರೆ ಬದುಕುವ ಛಲವಿರುವ ಯಾವ ಅಮ್ಮನೂ ಹಾಗೆ ಮಾಡಿಕೊಳ್ಳುವುದಿಲ್ಲ, ಬದಲಾಗಿ ತನ್ನ ಮಕ್ಕಳಲ್ಲಿಯೂ ಬದುಕುವ ಹುಮ್ಮಸ್ಸನ್ನೇ ತುಂಬುತ್ತಾಳೆ.ಜೀವನ ಕಟ್ಟುವ ಎಳೆದಾಟದಲ್ಲಿಪಿಸುಕಿದ ಅಮ್ಮನ ಸೀರೆಗಳನ್ನು ಒಟ್ಟಿಗೆ ಹೊಲಿದರೆ ನೆಪ್ಪದಿ ನೀಡುವ ದುಪಟಿಹರಿದರೆ ಕಲ್ಮಶ ತೊಳೆಯುವ ಅರಿವೆಇನ್ನಷ್ಟು ಹರಿದರೆ ಕಣ್ಣೀರು ಒರೆಸುವ ಕೈವಸ್ತ್ರಹರಿದು ಚಿಂದಿ ಚಿಂದಿ ಮಾಡಿದರೂಲಕ್ಷಾಂತರ ದೀಪಗಳಿಗೆಬತ್ತಿ ನಿಜ, ಇಂತಹ ಸಶಕ್ತ ಸಾಲುಗಳಿಗಲ್ಲದೇ ಬೇರಾವುದಕ್ಕೆ ಪ್ರಜಾವಾಣಿಯ ದೀಪಾವಳಿ ಕವನ ಸ್ಪರ್ಧೆಯಲ್ಲಿ ಬಹುಮಾನ ನೀಡಲು ಸಾಧ್ಯ? ಹಾಗೆ ನೋಡಿದರೆ ಈ ಕವಿತೆಗೆ ಪ್ರಥಮ ಬಹುಮಾನ ನೀಡಿ ಪ್ರಜಾವಾಣಿಯ ಬಹುಮಾನಿತ ಕವನಗಳು ಯಾವತ್ತೂ ಅತ್ಯುತ್ತಮವಾಗಿರುತ್ತವೆ ಎಂಬ ಮಾತಿಗೆ ಗಟ್ಟಿ ಸಾಕ್ಷ್ಯ ದೊರೆತಂತಾಗಿದೆ. ಹುಡುಕುತಿವೆ ಕಾಳುಗಳು ಕೋಳಿಗಳನ್ನುಗೋರಿಗಳು ಸತ್ತ ದೇಹಗಳನ್ನುನಿದ್ರೆಗಳು ಮುಚ್ಚುವ ಕಣ್ಣೆವೆಗಳನ್ನುಬಟ್ಟೆಗಳು ಮುಚ್ಚಬಹುದಾದ ಮಾನಗಳನ್ನು   ಈ ಸಾಲುಗಳಲ್ಲಿರುವ ವ್ಯಂಗ್ಯವನ್ನು ಗುರುತಿಸಿ. ಲೋಕದ ನಿಯಮಗಳನ್ನೆಲ್ಲ ಬದಲಾಯಿಸಿದ ವಿಷಾದವನ್ನು ನೋಡಿ. ಹೇಳಬೇಕಾದುದನ್ನೂ ಮೀರಿ ಈ ಸಾಲುಗಳು ಮಾತನಾಡುತ್ತಿವೆ. ಹಾಗೆ ನೋಡಿದರೆ ಒಮ್ಮೆಲೆ ಸುಳ್ಳು ನಮ್ಮಲ್ಲಿಲ್ಲವಯ್ಯ, ಸುಳ್ಳೇ ನಮ್ಮಯ ದೇವರು….’ ಎನ್ನುವ ಸಾಲು ನೆನಪಿಗೆ ಬಂದೇ ಬರುತ್ತದೆ. ಇಡೀ ಕವನವನ್ನು ಓದಿದಮೇಲೆ ಅರಿವಾಗದ ವಿಶಣ್ಣಭಾವವೊಮದು ಎದೆಯೊಳಗೆ ಹಾಗೇ ಉಳಿಯದಿದ್ದರೆ ಹೇಳಿ. ಖಂಡಿತವಾಗಿ ಈ ಕವನವನ್ನು ಓದಿ ಮುಗಿಸಿದ ನಂತರ ಮಾಮೂಲಿಯಾಗಿ ಮುಂದಿನ ಕವನವನ್ನು ಓದಲಾಗುವುದೇ ಇಲ್ಲ. ಮತ್ತೊಮ್ಮೆ, ಮಗದೊಮ್ಮೆ ಈ ಕವನದ ಸಾಲುಗಳನ್ನು ತಿರುವುತ್ತೀರಿ. ಪ್ರಜಾಪ್ರಭುತ್ವದ ಮೇಲೆ ಒಂದಿಷ್ಟಾದರೂ ನಂಬಿಕೆಯಿದ್ದವರಾದರೆ ನಿಮಗೆ ಈ ಸಾಲುಗಳು ಚಿಂತನೆಗೆ ಹಚ್ಚುತ್ತವೆ. ಜೀವಪರ ನಿಲುವುಗಳು ನಿಮ್ಮಲ್ಲಿದ್ದರೆ ಖಂಡಿತಾ ಈ ಸಾಲುಗಳು ನಿಮ್ಮನ್ನು ಅಲುಗಾಡಿಸದೇ ಬಿಡುವುದಿಲ್ಲ. ಚೂರಿ ದೈವವೇ ಬಹುಪರಾಕಗಡಿಯ ನಶೆಯೇ ಬಹುಪರಾಕತಲೆಯ ಚಪ್ಪಲಿಯೇ ಬಹುಪರಾಕಬಣ್ಣದ ಪೊರಕೆಯೇ ಬಹುಪರಾಕನಿಜ, ಈ ಪರಾಕುಗಳೇ ನಾವು ಸಾಗುತ್ತಿರುವ ದಾರಿಯನ್ನು ತೋರಿಸುತ್ತಿದೆ. ಬಗಲಲ್ಲಿ ಚಾಕು ಸಿಕ್ಕಿಸಿಕೊಂಡೇ ನಾವೀಗ ಬೆಣ್ಣೆ ಸವರಿದ ಮಾತನಾಡುತ್ತೇವೆ. ದೇಶಪ್ರೇಮದ ಹೆಸರಿನಲ್ಲಿ ಸೈನಿಕರ ಕುರಿತಾದ ಭಾವನಾತ್ಮಕ ಕಥೆಗಳನ್ನು ಹರಿಯಬಿಟ್ಟು ಎಂದೂ ಇಳಿಯದ ನಶೆಯನ್ನು ಸಾಮಾನ್ಯ ಜನರಲ್ಲಿ ತುಂಬಿ ಅಧಿಕಾರದ ಗದ್ದುಗೆಯನ್ನು ಭದ್ರಪಡಿಸಿಕೊಳ್ಳುತ್ತೇವೆ, ಇದೇ ನಶೆಯಲ್ಲಿ ಮಾಡಿದ ತಪ್ಪುಗಳನ್ನೆಲ್ಲ ಮರೆಮಾಚಿಕೊಂಡು ತಲೆಯ ಮೇಲೆ ಪಾದುಕೆಗಳನ್ನಿಟ್ಟುಕೊಂಡು ಪೂಜಿಸುತ್ತಿದ್ದೇವೆ,‘ಇಕೋ ತಕೋ ಸಂಭ್ರಮಿಸು’ ಕವಿತೆಯಂತೂ ಇಡೀ ಸಂಕಲನದ ಕಿರೀಟವೆಂಬಂತೆ ಭಾಸವಾಗುತ್ತದೆ. ರಾವಣ ತನ್ನ ದೈವ ಶಂಕರನನ್ನು ಪ್ರಶ್ನಿಸುತ್ತಲೇ ದೇವಾನುದೇವತೆಗಳನ್ನು ಬೆತ್ತಲು ಮಾಡಿ ನಿಲ್ಲಿಸುತ್ತಾನೆ. ‘ಲಂಕೆಯ ಶರಧಿಯಲಿ ಬೀಳುವ ನನ್ನ ನಾಡ ಪ್ರತಿಬಿಂಬದಷ್ಟೂ ಚೆಂದವಿರದ ಸ್ವರ್ಗವನ್ನು ಬಿಟ್ಟು ಬಾ’ ಎಂದು ಶಿವನನ್ನೇ ಆಹ್ವಾನಿಸುವ ಪರಿ ಕುತೂಹಲ ಮೂಡಿಸುತ್ತದೆ. ಲಕ್ಷ್ಮಣನ್ನು , ಜರೆಯುತ್ತ, ಶಿವಧನಸ್ಸನ್ನು ಮುರಿದವನ ಮೇಲೆ ಸೇಡು ತೀರಿಸಿಕೊಳ್ಳುವ ತನ್ನ ಹಠವನ್ನು ತಪ್ಪೆಂದು ಒಪ್ಪಿಕೊಳ್ಳುತ್ತ ಇಕೊ ತಕೊ ನನ್ನ ಪ್ರಾಣ ಎನ್ನುವ ರಾವಣ ಇಲ್ಲಿ ಪ್ರತಿನಾಯಕನ ವಿಜೃಂಭಣೆಯಿಂದ ಮೆರೆಯುವುದಿಲ್ಲ. ಬದಲಿಗೆ ಒಬ್ಬ ಸಾಮಾನ್ಯ ಮನುಷ್ಯನಾಗಿಯೇ ಹೆಗ್ಗಳಿಕೆ ಗಳಿಸಿಕೊಳ್ಳುತ್ತಾನೆ.‘ತನ್ನ ಡಬ್ಬಿಯ ಅನ್ನ’ ಕವಿತೆ ಹಸಿವಿನ ಕುರಿತಾಗಿ ಮಾತನಾಡುತ್ತದೆ. ಹಸಿವೆಯೆಂದು ತಿಂದು ಬಿಡುವಂತಿಲ್ಲ, ಹೊಟ್ಟೆ ತುಂಬಿಸಿಕೊಳ್ಳುವಂತಿಲ್ಲ. ಅದಕ್ಕೂ ರೀತಿ ನೀತಿ ನಿಯಮಗಳಿವೆ. ಆದರೆ ಇಲ್ಲಿ ಮಗು ತನ್ನೆದುರು ಕುಳಿತ ಬಡ, ಬತ್ತಲ ಮಗುವಿಗೆ ಆಹಾರ ನೀಡಿ ಸಂತೃತ ಕಣ್ಣುಗಳಿಂದ ನೋಡುವ ಬಗೆಯಿದೆಯಲ್ಲ, ಅದು ಯಾವ ಸ್ಥಿರ ಚಿತ್ರಕ್ಕಿಂತಲೂ ಹೆಚ್ಚಿನ ಅರ್ಥವನ್ನು ಹೊಮ್ಮಿಸುತ್ತದೆ. ಇದೇ ಚಮದದ ಮನಸೆಳೆಯುವ ಚಿತ್ರಣ ‘ವಿಶ್ವವೇ ಆಟಿಗೆಯ ಬುಟ್ಟಿ’ಯಲ್ಲಿದೆ. ಕೊಚ್ಚೆಯಲೂ ನೆಗೆದು ಹಕ್ಕಿಗೂಡ ಮಾತಾಡಿನದಿಯೊಡನೆ ಓಟ ರವಿಯೊಡನೆ ಆಟಚಂದಾಮಾಮನ ಜೊತೆಯೂಟವಿಶ್ವವೇ ಅವಗೆ ಆಟಿಗೆಯ ಬುಟ್ಟಿ ಎನ್ನುವಲ್ಲಿ ಮಕ್ಕಳ ಮನಸ್ಸಿನ ನಿರ್ಮಲತೆಯನ್ನು ಬಣ್ಣಿಸಲಾಗಿದೆ. ಎರಡೂ ಕವನಗಳಲ್ಲಿ ಇದ್ದಷ್ಟು ಮುಗ್ಧವಾದ ಮಕ್ಕಳ ಪ್ರಪಂಚ ಈ ಜಗತ್ತಿನಲ್ಲಿದ್ದರೆ ಈ ಜಗತ್ತು ಅಳುವಾಗ ಅತ್ತು ಉಳಿದದ್ದಕ್ಕೆಲ್ಲ ನಗುವ ಸುಂದರ ಸ್ವರ್ಗವಾಗುತ್ತಿತ್ತು. ಆದರೆ ನಾವೆಲ್ಲ ಹಾಗೆ ಸ್ವರ್ಗದಲ್ಲಿ ಬದುಕುವ ಮನಸ್ಸು ಮಾಡುತ್ತಿಲ್ಲ. ಸದ್ದಿಲ್ಲದೇ ನರಕವನ್ನು ಕೈಹಿಡಿದು ಕರೆತಂದು ಎದುರಿಗೆ ಕುಳ್ಳಿರಿಸಿಕೊಳ್ಳುತ್ತೇವೆ. ನಾಜೂಕಾಗಿ ಒಂದೊಂದೇ ಹೆಜ್ಜೆಯನ್ನು ನರಕದೊಳಗೆ ಇಡುತ್ತ, ಅದರ ನೋವುಗಳನ್ನೇ ಸುಖ ಎಂದು ಭ್ರಮಿಸುತ್ತಿದ್ದೇವೆ. ನಾನು ಕತ್ತಲೆಯೊಡನೆ ರಾಜಿ ಮಾಡಿಕೊಂಡಿದ್ದೇನೆಮಿಂಚುಹುಳುಗಳ ಬೆಳಕಲ್ಲಿ ನಕ್ಷತ್ರಗಳ ಬಿಡಿಸುತ್ತಿದ್ದೇನೆಹೃದಯಕ್ಕೆ ಬೆಂಕಿ ಹಚ್ಚಿ ಬೆಚ್ಚಗಾಗುತ್ತಿದ್ದೇನೆ ಎಂಬುದು ನಮ್ಮೆಲ್ಲರ ಸಾಲುಗಳೂ ಹೌದು. ಬಯಸಿ ಬಯಸಿ ಎದೆಯಗೂಡಿನಲ್ಲಿರುವ ನಂದಾದೀಪವನ್ನು ತೆಗೆದು ಪೆಟ್ರೋಮ್ಯಾಕ್ಸ್ ಉರಿಸಿ ಸ್ಪೋಟಿಸುತ್ತೇವೆ. ‘ಇನ್ನು ಪ್ರೀತಿ ಹುಟ್ಟುವುದಿಲ್ಲ’ ಕವನದ ಬೆಂಕಿಕಡ್ಡಿ, ‘ಸುಡುತ್ತಿದ್ದುದು’ ಕವನದಲ್ಲಿ ಬರುವ ‘ಬರಿ ಚಡ್ಡಿಯಲ್ಲಿರುವವರು ಎಲ್ಲವನೂ ಸಹಿಸಿಕೊಳ್ಳಬೇಕಾಗುತ್ತೆ,’ ಎನ್ನುವ ಮಾತು, ‘ಹೂವು ಅರಳಿಲ್ಲ’ ಕವಿತೆಯಲ್ಲಿ ಹೇಳುವ ಪಾಚಿಗಟ್ಟಿದ ಗವಿಯ ಹೊರಗಿರುವ ಕಲ್ಲನ್ನು ತಿಕ್ಕಿ ತಿಕ್ಕಿ ಫಳಫಳನೆ ಹೊಳೆಯುವಂತೆ ಮಾಡುವ ಗವಿಯಾಚೆಗಿನ ಬೆಳಕು, ‘ಮುಗಿದು ಹೋದ ಕಥೆ’ಯಲ್ಲಿ ಬರುವ ಕಥೆಯಲ್ಲದ ಕಥೆಯ ವರ್ಣನೆ, ‘ಬದಲಿಸಲಾಗದ ಮೊದಲು’ ಕವಿತೆಯ ಹುಳು, ಎಲ್ಲವೂ ನಮ್ಮನ್ನು ಹೊಸತೇ ಆದ ಲೋಕವೊಂದನ್ನು ಪರಿಚಯಿಸಿಕೊಳ್ಳಲು ಒತ್ತಾಯಿಸುತ್ತಿರುವಂತೆ ಭಾಸವಾಗುತ್ತದೆ. ಇನ್ನೇನು ಮುಗಿದೇ ಹೋಯಿತೆನ್ನುವಾಗ ಧಿಗ್ಗನೆ ಹೊತ್ತಿ ಉರಿಯುವ ಪ್ರೇಮದಂತೆ ಇಲ್ಲಿನ ಕವಿತೆಗಳು ಏನು ಹೇಳಲಿಲ್ಲ ಎನ್ನುವಾಗಲೇ ಎರಡೇ ನಲ್ಲಿ ಎಲ್ಲವನ್ನೂ ಹೇಳಿ ದಿಗ್ಭ್ರಮೆಗೊಳ್ಳುವಂತೆ ಮಾಡಿಬಿಡುತ್ತವೆ. ನನ್ನಲ್ಲೂ ಮಳೆ ಬಂದುನಿನ್ನಲ್ಲೂ ಮಳೆ ಬಂದದ್ದೂತಿಳಿಯುವುದು ಮಳೆ ನಿಂತ ಮೇಲೆ ಇದು ಕೇವಲ ಪ್ರವೀಣರವರ ಸಾಲುಗಳಲ್ಲ. ಅವರ ಸಾಲುಗಳನ್ನು ಓದಿದ ನಂತರ ನಮ್ಮಲ್ಲೂ ಹೀಗೊಂದು ಭಾವ ಹೊಮ್ಮುತ್ತದೆ. ಏನೂ ಆಗಿಲ್ಲವಲ್ಲ ಎನ್ನುವಾಗಲೇ ಕವಿತೆ ನಮ್ಮನ್ನು ನಿಬ್ಬೆರಗಾಗುವ ಒಂದು ತಿರುವಿನಲ್ಲಿ ಕಣ್ಣುಕಟ್ಟಿ ನಿಲ್ಲಿಸಿ ನಾಜೂಕಾಗಿ ತಾನು ಜಾರಿಕೊಳ್ಳುತ್ತದೆ. ಮುಂದಿನ ದಾರಿ ತಿಳಿಯದೇ ಮತ್ತದೇ ಕವನದೊಳಗೆ ಹುದುಗಲೇಬೇಕಾದ ಅನಿವಾರ್‍ಯತೆ ಸೃಷ್ಟಿಯಾಗುವ ವೈಚಿತ್ರ್ಯವನ್ನು ನಾನು ಇಡೀ ಪುಸ್ತಕದ ತುಂಬ ಹಲವಾರು ಸಲ ಎದುರುಗೊಂಡಿದ್ದೇನೆ. ನೆಲದ ನಂಟು ಸಾಕೆಂದು ಸಮುದ್ರಕ್ಕೆ ಧುಮುಕಿದರೆನೀರೆಲ್ಲ ಜೀವಗಾಳಿಯಾಗಿ ಮುಟ್ಟಿದ್ದು ಮತ್ತೊಂದು ನೆಲ ಒಂದು ಕವಿತೆಯ ರೂಪಕಗಳು ಸಾಕೆಂದು ಮತ್ತೊಮದು ಕವಿತೆಗೆ ನಡೆದರೆ ಅಲ್ಲೂ ಎದುರಾಗುವುದು ಒಳಸುಳಿಗೆ ಸಿಕ್ಕಿಸುವ ನುಡಿಚಿತ್ರಗಳೇ ಹೊರತೂ ಮತ್ತೇನೂ ಅಲ್ಲ. ಬದುಕು ಇಷ್ಟೇ. ನಿಜ, ಆಜೆಗೇನೂ ಇಲ್ಲ ಎಂಬ ಸುಂದರ ಕಲ್ಪನೆಯಲ್ಲಿಯೇ ನಾವು ಈಚೆಗಿನ ಸೌದರ್‍ಯವನ್ನು ಕಣ್ತುಂಬಿಕೊಂಡು, ವಾಸ್ತವದ ನಿಜಾಯಿತಿಯಲ್ಲಿ ಬದುಕಬೇಕಿದೆ.                                  ***************************** ಲೇಖಕರ ಬಗ್ಗೆ ಎರಡು ಮಾತು:ಕವಯತ್ರಿ ಶ್ರೀದೇವಿ ಕೆರೆಮನೆ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿ. ಇವರ ಹದಿಮೂರು

ಎಂದೂ ಸಾಕೆನಿಸದ ನೆಲದ ನಂಟು, ಸಮುದ್ರದ ಪ್ರೀತಿ Read Post »

ಕಾವ್ಯಯಾನ

ಧ್ಯಾನ

ಕವಿತೆ ಸುನೀತ ಕುಶಾಲನಗರ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು ಕೂಸುಗಳ ಕೇಕೆಜತೆಯಾದ ಕ್ಷಣ ಕ್ಷಣವೂಕಣ ಕಣಕೂ ಹಿತಮತ್ತೊಮ್ಮೆ ಬದುಕಿಬಿಡೆಂದುಚಾಚುವ ಕೈಕಣ್ಣ ಸುತ್ತಿದ ಬಳೆಯಾಕಾರದಕಪ್ಪನೂ ನೇವರಿಸುವಕೂದಲ ಬಣ್ಣದ ಲೇಪನಕೆಹೊಸ ಹೊಳಪುಭೂತ ಭವಿಷ್ಯದಹಂಗ ತೊರೆವ ವರ್ತಮಾನತೀರಾ ಖಾಸಗಿ ಬದುಕೇಆದರೂ ಸದ್ದಿಲ್ಲದೆಮುಟ್ಟುಗೋಲಾಗುವ ಮುಟ್ಟಿಗೂಹುಟ್ಟುತ್ತಿದೆ ಹೊಸಹುರುಪುದಿನ,ದಿನಾಂಕಗಳಗಡಿದಾಟಿ ಬರುವಲವಲವಿಕೆಯ ಮತ್ತು. ******************

ಧ್ಯಾನ Read Post »

ಕಾವ್ಯಯಾನ

ಕೊನೆಯಲ್ಲಿ

ಕವಿತೆ ನಂದಿನಿ ಹೆದ್ದುರ್ಗ ಕಳಚಿಕ್ಕೊಳ್ಳುತ್ತಲೆ ಹೋಗುತ್ತದೆಹೀಗೇಒಂದೊಂದೇ ಒಂದೊಂದೇ ಬಂಧ. ಬಿಡಿಸಲಾಗದ್ದು ಎನ್ನುವಾಗಲೇಹೊರಡುತ್ತದೆ ಬಿಟ್ಟು ಕಣ್ಮರೆಯಾಗುವುದೋಕಣ್ಣಳತೆಯಲ್ಲೇ ಇದ್ದೂಬೇಕೆನಿಸದೆ ಹೋಗುವುದೊಕಣ್ಣು ಕೈಯಿಗೆ ನಿಲುಕಿದರೂಎದೆಗೆ ಇಳಿಯದೇ ಹೋಗುವುದೊಬೇಕೆನಿಸಿದರೂ ಝಾಡಿಸಿಹೊರಡುವುದೊ.. ಕಳಚುತ್ತಲೇ ಹೋಗುತ್ತದೆ…ಇದ್ದಿತೆಂಬುದರ ಕುರುಹುಕ್ರಮೇಣ ಇಲ್ಲವಾಗಿ.. ಒಂಟಿ ಕೊಂಡಿಯೊಂದುಕೊರಳೆತ್ತಿ‌ ನೋಡುತ್ತಿದೆಈಗಸುತ್ತೆಲ್ಲಾ ಕ್ಷೀಣವಾಗಿ *************************

ಕೊನೆಯಲ್ಲಿ Read Post »

ಅಂಕಣ ಸಂಗಾತಿ, ಸಂಪ್ರೋಕ್ಷಣ

ಕರ್ಟನ್ನಿನ ಮೇಲೊಂದು ಕೇತಕಿ ಹೂವು

ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ನನಗೆ ಕರ್ಟನ್ನುಗಳು ನೆನಪಾಗುತ್ತವೆ; ಬದುಕಿನ ಪ್ರತಿಯೊಂದು ಅಧ್ಯಾಯವೂ ಬೇರೆಬೇರೆ ಬಣ್ಣ-ವಿನ್ಯಾಸಗಳನ್ನು ಹೊತ್ತ ಸುಂದರವಾದ ಕರ್ಟನ್ನಿನಂತೆ ಭಾಸವಾಗುತ್ತದೆ. ಕಿಟಕಿಗಳೇ ಇಲ್ಲದ ಮನೆಯಲ್ಲಿ ಬೆಳಕಿಗೊಂದು ಅವಕಾಶವನ್ನು ಒದಗಿಸುವುದಾದರೂ ಹೇಗೆ; ಹಾಗೆ ಕಿಟಕಿಯೊಂದು ಒದಗಿಸಿದ ಅವಕಾಶವನ್ನು ಸ್ವಂತದ್ದಾಗಿಸಿಕೊಳ್ಳಲಿಕ್ಕೆ ಕರ್ಟನ್ನುಗಳ ಸೃಷ್ಟಿಯೂ ಆಗಿರಬೇಕು! ಬೆಳಕಿನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಕಿಟಕಿ, ಕಿಟಕಿಯೊಂದಿಗೆ ಸಾಮರಸ್ಯವನ್ನು ಬೆಳೆಸಿಕೊಳ್ಳುವ ಕರ್ಟನ್ನು ಎಲ್ಲವೂ ಸೇರಿ ಬದುಕಿಗೊಂದು ಸ್ವಂತಿಕೆ, ಜೊತೆಗಿಷ್ಟು ಬಣ್ಣಗಳು ಲಭ್ಯವಾಗಿದ್ದಿರಬೇಕು. ದುಃಸ್ವಪ್ನಗಳನ್ನೆಲ್ಲ ದೂರವಾಗಿಸುವ ಬೆಳಕು ಕಿಟಕಿಯನ್ನು ಸ್ಪರ್ಶಿಸುವ ಸಮಯಕ್ಕೆ ಸರಿಯಾಗಿ ಕಣ್ತೆರೆವ ಕರ್ಟನ್ನಿನ ಎಲೆ, ಹೂವು, ಹಣ್ಣು, ಹಕ್ಕಿಗಳೆಲ್ಲವೂ ಮುಂಜಾವಿಗೊಂದು ಹೊಸ ಬಗೆಯ ಸೊಬಗನ್ನು ಒದಗಿಸುತ್ತವೆ. ಎಳೆಬಿಸಿಲಿಗೆ ತಿಳಿಹಸಿರು ಬಣ್ಣವನ್ನು ಮೈಗೆ ಮೆತ್ತಿಕೊಳ್ಳುವ ಎಲೆಯೊಂದು ಮುಸ್ಸಂಜೆಗೆ ಅಚ್ಚಹಸಿರಾಗಿ, ಬೀದಿದೀಪದ ಬೆಳಕಿಗೆ ಹಳದಿಯೂ ಆಗಿ ಬಣ್ಣಗಳ ಹೊಸ ಜಗತ್ತನ್ನೇ ನಮ್ಮೆದುರು ತೆರೆದಿಡುತ್ತದೆ; ಎಲೆಗಳ ಸಂದಿಯಲ್ಲಡಗಿರುವ ಪುಟ್ಟ ಹಕ್ಕಿಯೊಂದು ಬಣ್ಣದ ರೆಕ್ಕೆಗಳನ್ನು ತೊಟ್ಟು ಸದ್ದಿಲ್ಲದೇ ಮನೆತುಂಬ ಹಾರಾಡುವ ಸಂಭ್ರಮವನ್ನು ಕಟ್ಟಿಕೊಡುವ ಕರ್ಟನ್ನು ಪ್ರತಿದಿನದ ಬೆಳಗಿಗೊಂದು ಹೊಸತನದ ಅನುಭವವನ್ನು ಒದಗಿಸುತ್ತದೆ.  ಬದುಕು ತನ್ನದಾಗಿಸಿಕೊಳ್ಳುವ ಅನುಭವಗಳ ಪಟ್ಟಿಯಲ್ಲಿ ಬಾಲ್ಯವೆನ್ನುವುದೊಂದು ಸುಂದರ ಅನುಭವ. ಹೋದಲ್ಲೆಲ್ಲ ಹಿಂಬಾಲಿಸುತ್ತಿದ್ದ ಪಾಟಿಚೀಲದಿಂದ ಹಿಡಿದು ದೊಡ್ಡಪ್ಪ ಅಂಗಳದಲ್ಲಿ ಬಿಡಿಸುತ್ತಿದ್ದ ರಂಗೋಲಿಯವರೆಗೆ ಘಟಿಸಿದ ಎಲ್ಲ ಚಿಕ್ಕಪುಟ್ಟ ಸಂಗತಿಗಳೂ ಅದ್ಯಾವುದೋ ಕ್ಷಣದಲ್ಲಿ ಅಚ್ಚರಿಗಳಾಗಿ ರೂಪಾಂತರಗೊಂಡು ಬದುಕಿಗೊಂದು ಹೊಸತನವನ್ನು ದೊರಕಿಸಿಕೊಡುತ್ತವೆ. ಪಾಟಿಚೀಲದ ಜಿಪ್ ನೊಂದಿಗೆ ನೇತಾಡುತ್ತಿದ್ದ ಕೀಚೈನ್ ಮೇಲಿದ್ದ ಪುಟ್ಟ ನಾಯಿಮರಿಯೊಂದಿಗಿನ ಗೆಳೆತನ ಪ್ರೈಮರಿ, ಹೈಸ್ಕೂಲು ಎಲ್ಲ ಮುಗಿದಮೇಲೂ ಬಾಲ್ಯದ ನೆನಪುಗಳೊಂದಿಗೆ ನಂಟು ಬೆಳೆಸಿಕೊಳ್ಳುತ್ತದೆ. ಒಮ್ಮೆಯೂ ಸ್ನಾನಮಾಡಿಸಿ ಕೋಲ್ಡ್ ಕ್ರೀಮ್ ಹಚ್ಚದಿದ್ದರೂ ಚಳಿಗಾಲದಲ್ಲಿಯೂ ತನ್ನ ಸೌಂದರ್ಯವನ್ನು ಕಳೆದುಕೊಳ್ಳದ ನಾಯಿಮರಿ, ಸನ್ ಸ್ಕ್ರೀನ್ ಲೋಷನ್ ಇಲ್ಲದೇ ಬಣ್ಣವನ್ನೂ ಕಾಪಾಡಿಕೊಂಡು, ಮಳೆಗಾಲದಲ್ಲಿ ಪಾಟಿಚೀಲದೊಂದಿಗೆ ತಾನೂ ಮಳೆಯಲ್ಲಿ ನೆನೆಯುತ್ತ ಕೊಳೆಯನ್ನೆಲ್ಲ ತೊಳೆದುಕೊಳ್ಳುತ್ತಿತ್ತು. ಪಾರ್ಲರ್ ಶಾಂಪೂವಿನಿಂದ ತಲೆಗೂದಲನ್ನು ತೊಳೆದುಕೊಳ್ಳುವಾಗಲೆಲ್ಲ, ಅರ್ಥವಾಗದ ಗಣಿತದ ಲೆಕ್ಕಾಚಾರವನ್ನು ಸಹನೆಯಿಂದ ಸಹಿಸಿಕೊಂಡು ಪರೀಕ್ಷೆಯ ಭಯವನ್ನು ಕಡಿಮೆ ಮಾಡಿದ ನಾಯಿಮರಿಯ ಪ್ರೇಮವನ್ನು ನೆನೆದು ಅಚ್ಚರಿಗೊಳ್ಳುತ್ತಲೇ ಇರುತ್ತೇನೆ.  ಅಂತಹ ಸೋಜಿಗಗಳಲ್ಲಿ ದೊಡ್ಡಪ್ಪ ಅಂಗಳದಲ್ಲಿ ಬಿಡಿಸುತ್ತಿದ್ದ ರಂಗೋಲಿಯೂ ಸೇರಿಕೊಂಡಿದೆ. ಹಬ್ಬಗಳಲ್ಲೋ, ದೇವರಕಾರ್ಯಗಳಲ್ಲೋ ದೊಡ್ಡಪ್ಪ ತನ್ನ ರಂಗೋಲಿ ತಟ್ಟೆಯೊಂದಿಗೆ ಅಂಗಳಕ್ಕೆ ಹಾಜರಾದರೆ ಕೇರಿಯ ಮಕ್ಕಳೆಲ್ಲ ಅವನ ಸುತ್ತ ನೆರೆಯುತ್ತಿದ್ದೆವು. ಯಾವ ಪೂರ್ವತಯಾರಿ-ಯೋಜನೆಗಳೂ ಇಲ್ಲದೇ ಮನಸ್ಸಿಗೆ ತೋಚಿದ ರಂಗೋಲಿಯನ್ನು ಬಿಡಿಸುತ್ತಿದ್ದ ದೊಡ್ಡಪ್ಪ ಅಂಗಳದಲ್ಲೊಂದು ಹೊಸ ಲೋಕವನ್ನೇ ಸೃಷ್ಟಿ ಮಾಡುತ್ತಿದ್ದ. ಬೆಟ್ಟದ ತುದಿಯಲ್ಲಿ ತನ್ನಪಾಡಿಗೆ ತಾನು ಗರಿಬಿಚ್ಚಿ ನಿಂತಿರುತ್ತಿದ್ದ ನವಿಲು, ಅದರ ಪಕ್ಕದಲ್ಲೇ ಹುಲ್ಲು ತಿನ್ನುತ್ತಾ ಆಚೀಚೆ ಓಡುತ್ತಿದ್ದ ಮೊಲ, ಕೊಟ್ಟಿಗೆಯಿಂದ ತಪ್ಪಿಸಿಕೊಂಡು ಬಂದು ಅಂಗಳದ ತುಂಬಾ ಹೆಜ್ಜೆಗುರುತು ಮೂಡಿಸುತ್ತಿದ್ದ ಆಕಳಕರು, ಆಗಷ್ಟೇ ಅರಳಿದ ಕೆಂಪು ದಾಸವಾಳ, ಹೂವಿನ ಮೊಗದ ಮುದ್ದು ಬಾಲಕೃಷ್ಣ ಹೀಗೆ ಪ್ರಕೃತಿಯೇ ರಂಗೋಲಿಯಾಗಿ ಹೊಸಹೊಸ ರೂಪ-ಬಣ್ಣಗಳನ್ನು ಧರಿಸುತ್ತಿತ್ತು. ರಂಗೋಲಿಯ ಒಂದೊಂದು ಎಳೆಯೂ ಎಲ್ಲೋ ಆರಂಭವಾಗಿ ಇನ್ನೆಲ್ಲೋ ಮುಗಿಯುತ್ತ ನವಿಲುಗರಿಯಾಗಿ, ಮೊಲದ ಕಿವಿಯಾಗಿ, ಕರುವಿನ ಕುತ್ತಿಗೆಯ ಗಂಟೆಯಾಗಿ, ಕೊಳಲಾಗಿ ಅಂಗಳಕ್ಕಿಳಿಯುವುದೊಂದು ಸೋಜಿಗದ ಸಂಗತಿಯಾಗಿತ್ತು. ದೊಡ್ಡಪ್ಪನಿಗೆ ರಂಗೋಲಿ ಬಿಡಿಸುವುದನ್ನು ಕಲಿಸಿಕೊಟ್ಟವರಿರಲಿಲ್ಲ; ಇಷ್ಟೇ ಜಾಗವನ್ನು ರಂಗೋಲಿಗೆ ಮೀಸಲಾಗಿಡಬೇಕು ಎನ್ನುವ ಯಾವ ಇತಿಮಿತಿಗಳೂ ಅವನ ತಲೆಯಲ್ಲಿ ಇರುತ್ತಿರಲಿಲ್ಲ. ಸಿಕ್ಕಿದ ಅವಕಾಶವನ್ನೆಲ್ಲ ಮುಕ್ತ ಮನಸ್ಸಿನಿಂದ ಬಳಸಿಕೊಳ್ಳುತ್ತ, ಪ್ರಕೃತಿಯಿಂದಲೇ ಪಾಠ ಕಲಿತು ಜೀವನಪ್ರೀತಿಯನ್ನು ಚಿತ್ರಿಸುತ್ತ ಮಕ್ಕಳ ಬದುಕಿಗೊಂದಿಷ್ಟು ಬೆರಗು ಬೆರೆಸಿದ ದೊಡ್ಡಪ್ಪ ಪ್ರಕೃತಿ ಕರುಣಿಸಿದ ಅಚ್ಚರಿಗಳಲ್ಲಿ ಒಂದಾಗಿ ಉಳಿದುಕೊಂಡಿದ್ದಾನೆ.  ಪ್ರಕೃತಿ ತನ್ನ ಮಡಿಲಿನಲ್ಲಿ ಸಲಹುವ ವಿಸ್ಮಯಗಳನ್ನು, ಕ್ಲಾಸ್ ರೂಮು-ಫೀಸುಗಳಿಲ್ಲದೇ ಕಲಿಸಿಕೊಡುವ ಪಾಠಗಳನ್ನು ಥಿಯರಿಗಳನ್ನಾಗಿಸಿ ಪುಸ್ತಕಗಳಲ್ಲಿ ಹಿಡಿದಿಡಲಾಗದು. ಬೇಸಿಗೆಯ ದಿನಗಳಲ್ಲಿ ಎಲ್ಲೋ ನೆಲಕ್ಕೆ ಬಿದ್ದ ಬೀಜವೊಂದು ಗಾಳಿಯೊಂದಿಗೆ ಹಾರುತ್ತಾ ಇನ್ನೆಲ್ಲೋ ತಲುಪಿ, ಮೊದಲಮಳೆಗೆ ಮೊಳಕೆಯೊಡೆಯುವ ಸೃಷ್ಟಿಯ ವಿಸ್ಮಯ ಅನುಭವಕ್ಕೆ ಮಾತ್ರವೇ ದಕ್ಕುವಂಥದ್ದು. ಇಂತಹ ಅನನ್ಯ ಅನುಭವಗಳ ಸಾಲಿನಲ್ಲಿ ಕೇಸರಿಬಣ್ಣದ ಕೇತಕಿಯ ಕಣವೂ ಸೇರಿಕೊಂಡಿದೆ. ಚಳಿಗಾಲದ ಹೂವಿನ ಸೀಸನ್ ಮುಗಿದು ಬೀಜಗಳೆಲ್ಲ ನೆಲಕ್ಕೆ ಉದುರಿ ಗಿಡವೂ ಒಣಗಿಹೋದಮೇಲೆ ಮಲ್ಲಿಗೆಯನ್ನೋ, ಜಾಜಿಯನ್ನೋ ಅರಸುತ್ತ ಪ್ರಕೃತಿಸಹಜವೆಂಬ ಮನಸ್ಥಿತಿಯಲ್ಲಿ ನಾವೆಲ್ಲ ಕೇತಕಿಯನ್ನು  ಮರೆತುಹೋಗುತ್ತಿದ್ದೆವು. ಅಂಗಳದಲ್ಲೋ, ಭತ್ತದ ಕಣಗಳಲ್ಲೋ ಬಿದ್ದಿರುತ್ತಿದ್ದ ಬೀಜಗಳೂ ಬಿಸಿಲಿಗೆ ಒಣಗುತ್ತ, ಗಾಳಿಯಲ್ಲಿ ಹಾರುತ್ತಾ ಮಾಯವಾಗಿಬಿಡುತ್ತಿದ್ದವು. ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಅಷ್ಟೂ ದಿನ ಮಾಯವಾಗಿದ್ದ ಬೀಜಗಳೆಲ್ಲ ಮೊಳಕೆಯೊಡೆದು, ಹತ್ತಿಪ್ಪತ್ತು ದಿನಗಳಲ್ಲಿ ಮೈತುಂಬ ಎಲೆಗಳನ್ನು ಹೊತ್ತು ಚಿಗುರಿಬಿಡುತ್ತಿದ್ದವು. ಜಾಸ್ತಿ ಮಳೆಯಾದ ವರ್ಷಗಳಲ್ಲಿ ಕೊಳೆತುಹೋಗದೇ, ಕಡಿಮೆ ಮಳೆಗೆ ಬಾಡಿಹೋಗದೇ ಜೀವ ಕಾಪಾಡಿಕೊಳ್ಳುತ್ತಿದ್ದ ಕೇತಕಿಯ ಗಿಡಗಳು ಜೀವನಪ್ರೀತಿಯನ್ನು ಉಳಿಸಿ ಬೆಳಸಿಕೊಂಡು ಹೋಗುವ ಕ್ರಿಯೆಯೊಂದರ ಕಣ್ಣೆದುರಿಗಿನ ಉದಾಹರಣೆಗಳಂತಿದ್ದವು. ಗುಂಪುಗುಂಪಾಗಿ ಹುಟ್ಟಿ, ಜೊತೆಯಾಗಿ ಬೆಳೆದು, ಕಿತ್ತೆಸೆದರೂ ಬೇಸರಿಸದೇ ಬೇರುಬಿಟ್ಟು, ಮೈತುಂಬ ಹೂವರಳಿಸಿ ಕೇಸರಿ-ಹಳದಿ ಬಣ್ಣಗಳ ಕಣವೊಂದನ್ನು ಸೃಷ್ಟಿಮಾಡಿಬಿಡುತ್ತಿದ್ದವು. ನಾಜೂಕು ಎಸಳುಗಳ ಕೇತಕಿ ಹೂವನ್ನು ಸ್ಪರ್ಶಿಸಿದಾಗಲೆಲ್ಲ, ಪ್ರಕೃತಿ ತನ್ನೊಳಗೆ ಬಚ್ಚಿಟ್ಟುಕೊಂಡ ವಿಸ್ಮಯವೊಂದು ಅಂಗೈಯೊಳಗೆ ದೊರಕಿದ ರೋಮಾಂಚನ ನನ್ನದಾಗುತ್ತಿತ್ತು. ವರ್ಷದಲ್ಲಿ ಒಂದೇ ತಿಂಗಳು ಕೈಗೆ ಸಿಗುತ್ತಿದ್ದ ಕೇತಕಿಯ ಹೂಗಳು ಕರ್ಟನ್ನಿನ ಮೇಲೂ ಇರಬಾರದಿತ್ತೇ ಎಂದುಕೊಳ್ಳುತ್ತಿದ್ದೆ.  ಆಗೆಲ್ಲ ಕರ್ಟನ್ನುಗಳೆಂದರೆ ಅಮ್ಮನ ಹಳೆಯ ಸೀರೆಗಳು. ಹಳತಾದ ಸೀರೆಗಳಲ್ಲಿ ಇರುವುದರಲ್ಲೇ ಒಳ್ಳೆಯ ಸೀರೆಯೊಂದು ಕರ್ಟನ್ನಿನ ಅವತಾರ ತೊಟ್ಟು ಬಾಗಿಲುಗಳನ್ನೂ, ಕಿಟಕಿಗಳನ್ನೂ ಆವರಿಸಿಕೊಳ್ಳುತ್ತಿತ್ತು. ಬಾಳೆಹಣ್ಣನ್ನೋ, ಬಿಸ್ಕಿಟನ್ನೋ ತಿಂದಾದ ಮೇಲೆ ಅರ್ಜಂಟಿಗೆ ಕೈ ಒರೆಸಿಕೊಳ್ಳುವ ಟವೆಲ್ ಆಗಿಯೂ ಆಗಾಗ ಕರ್ಟನ್ನು ಬಳಕೆಯಾಗುತ್ತಿತ್ತು. ಸೀರೆಯೊಂದು ಕರ್ಟನ್ನಾಗಿ ರೂಪಾಂತರ ಹೊಂದಿದ ಸ್ವಲ್ಪ ದಿನಗಳಲ್ಲಿಯೇ ಅದರ ಮೇಲಿದ್ದ ಹೂವು, ಮಾವಿನಕಾಯಿ, ವೀಣೆ, ನವಿಲಿನ ಚಿತ್ರಗಳೆಲ್ಲ ಮಾಸಿಹೋಗುತ್ತಿದ್ದವು. ಆದರೂ ಈ ಸೀರೆಯ ಇದೇ ಜಾಗದಲ್ಲಿ ಇಂಥದ್ದೇ ಚಿತ್ರವಿತ್ತು ಎನ್ನುವ ವಿವರ ಮಾತ್ರ ಕರಾರುವಕ್ಕಾಗಿ ಎಲ್ಲರ ಜ್ಞಾಪಕದಲ್ಲೂ ಇರುತ್ತಿತ್ತು. ಹೀಗೆ ಬದುಕಿನ ಒಂದು ಬಹುಮುಖ್ಯ ಭಾಗವೇ ಆಗಿಹೋಗುತ್ತಿದ್ದ ಕರ್ಟನ್ನಿನ ಮೇಲಿನ ಮೋಹ ಎಷ್ಟಿತ್ತೆಂದರೆ, ಅಮ್ಮ ಹೊಸ ಸೀರೆ ಖರೀದಿಸಿದಾಗಲೆಲ್ಲ ಇದು ಕರ್ಟನ್ನಾಗಿ ಬದಲಾಗಲು ಸೂಕ್ತವೋ ಅಲ್ಲವೋ ಎನ್ನುವ ಚರ್ಚೆಗಳೂ ನಡೆಯುತ್ತಿದ್ದವು. ಸೀರೆಯ ಜಾಗವನ್ನು ಬ್ರ್ಯಾಂಡೆಡ್ ಕರ್ಟನ್ನುಗಳು ತಮ್ಮದಾಗಿಸಿಕೊಂಡಮೇಲೂ, ಅವುಗಳೆಡೆಗಿನ ಸೆಳೆತ ಮಾತ್ರ ಹಾಗೆಯೇ ಉಳಿದುಕೊಂಡಿದೆ. ದಿನ ಬೆಳಗಾದರೆ ಕರ್ಟನ್ನಿನ ಮೇಲೆ ಅರಳುವ ಬಣ್ಣಬಣ್ಣದ ಹೂಗಳ ನಡುವೆ ಕೇತಕಿಯ ಬೀಜವೂ ಮೊಳಕೆಯೊಡೆಯುತ್ತಿರಬಹುದೆನ್ನುವ ನಿರೀಕ್ಷೆಯೊಂದು ಪ್ರತೀ ಬೆಳಗನ್ನೂ ಸುಂದರವಾಗಿಸುತ್ತದೆ. *************************** ಲೇಖಕರ ಬಗ್ಗೆ ಎರಡು ಮಾತು: ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ

ಕರ್ಟನ್ನಿನ ಮೇಲೊಂದು ಕೇತಕಿ ಹೂವು Read Post »

You cannot copy content of this page

Scroll to Top