ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

   ಭಯದ ಬಗ್ಗೆ ಭಯ ಬೇಡ

Motivation Monday: Fear – The Journeying Planetarian

     ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.

       ಮಕ್ಕಳು ಯಾವ ಯಾವದೆ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ ಉಂಟಾಗುತ್ತದೆ ಅದನ್ನು ಹೇಗೆ ನಿವಾರಿಸುವದು ಎಂಬ ಪ್ರಶ್ನೆಗಳು ನಮ್ಮಲ್ಲಿ  ಅದೆಷ್ಟೋ ಬಾರಿ ಸುಳಿಯುತ್ತವೆ. ಭಯ ಅಂದರೆ ಏನು ಅಂತ ಹೇಳೋಕೆ ಆಗಲ್ಲ ಆದರೆ ಅದನ್ನು ಒಂದಿಲ್ಲೊದು ಸಂದರ್ಭದಲ್ಲಿ ನಾವು ಅನುಭವಿಸುತ್ತೇವೆ. ಇದು ಮನಸ್ಸಿನ ನಕಾರಾತ್ಮಕ ಭಾವನೆ.

        ಭಯ ಎಂದರೇನು?

        ನಮ್ಮ ಶಕ್ತಿಗೆ ಮೀರಿದ ಅಸಾಂಭವ್ಯ ವಿಚಾರವು ನಮ್ಮ ಮನಸ್ಸಿಗೆ ಹೊಕ್ಕಿತೆಂದರೆ ಆಗ ನಮ್ಮಲ್ಲಿ ನಾವು ಏನೋ ಕಲ್ಪಿಸಿಕೊಳ್ಳುತ್ತೇವೆ. ಇಂತಹ ವಾಸ್ತವವಲ್ಲದ ಕಲ್ಪನೆಗಳಿಗೆ ಒಂದು ಸ್ಪಷ್ಟ ಚಿತ್ರಣವನ್ನು ಸೃಷ್ಟಿಸಿಕೊಂಡು ನೋಡಲು ಶುರು ಮಾಡುತ್ತೇವೆ. ಆಗ ಮನದಲ್ಲಿ ಸಾವಕಾಶವಾಗಿ ಭಯವು ಆವರಿಸಕೊಳ್ಳತೊಡುಗತ್ತದೆ. ನಾವು ಸೃಷ್ಟಿಸಿಕೊಂಡ ಕಾಲ್ಪನಿಕ ಚಿತ್ರಣವು ಕ್ರಮೇಣ ತನ್ನ ಸಾಮ್ರಾಜ್ಯವನ್ನು ಸ್ಥಾಪಿಸಿ ನಮ್ಮನ್ನು ಅಧೋಗತಿಗೆ ತಳ್ಳುತ್ತದೆ.

         ಬಹಳಷ್ಟು ಬಾರಿ ಭಯವು ನಮ್ಮ ಭ್ರಮೆಯೇ ಆಗಿರುತ್ತದೆ. ಇಲ್ಲದ್ದನ್ನು ಇದ್ದ ಹಾಗೆ ತಿಳಿದುಕೊಳ್ಳುತ್ತೇವೆ. ಇದು ಒಂದು ಭಾವನಾತ್ಮಕ ಅನುಭವ. ಮನದಲ್ಲಿ ಆತಂಕ ಭಾವ ಸೃಷ್ಟಿ ಮಾಡಿ, ಭಾವನಾತ್ಮಕ ಅಡಚಣೆಯನ್ನುಂಟು ಮಾಡುತ್ತದೆ. ಭಯದಿಂದಾಗಿ ನಮ್ಮ ಜಾಗೃತ ಮನಸ್ಸು ನೋವನ್ನು ಅನುಭವಿಸುತ್ತದೆ. ನೋವಿನಿಂದ ಹೊರಬರಲು ನಮ್ಮ ಮನಸ್ಸು ಒದ್ದಾಡುತ್ತದೆ. ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ಎಚ್ಚರಿಕೆಯ ಸಂಕೇತವಾಗಿ ವರ್ತಿಸುತ್ತದೆ. ಇಲ್ಲವಾದಲ್ಲಿ ಮಾನಸಿಕ ವ್ಯಾಧಿಯಾಗಿ ಕಾಡುತ್ತದೆ.

        ಭಯ ಉಂಟಾಗೋದು ಯಾವಾಗ?

   ನಾಳೆ ಏನಾಗುತ್ತದೆಯೋ ಏನೊ ಎಂಬ ಚಿಂತೆಯು ಭಯವಾಗಿ ಪರಿವರ್ತನೆಯಾಗುತ್ತದೆ. ಯಾವುದೇ ವಿಷಯದ ಬಗೆಗೆ ನಿರಾಶಾದಾಯಕವಾಗಿ ಆಲೋಚಿಸುವದು, ಸುಮ್ಮನೆ ಏನನ್ನೋ ಇಲ್ಲದ್ದನ್ನು ಊಹಿಸಿಕೊಳ್ಳುವದು,ಹಿಂದೆ ನಡೆದು ಹೋದ ಕಹಿ ಘಟನೆಗಳನ್ನು ಮೇಲಿಂದ ಮೇಲೆ ನೆನಪು ಮಾಡಿಕೊಳ್ಳುವದು, ನಾನೆಲ್ಲಿ ಸೋತು ಹೋಗುತ್ತೇನೊ ಎಂಬ ಸೋಲಿನ ಆತಂಕ, ನನಗಾರೂ ಇಲ್ಲ ನಾನು ಏಕಾಂಗಿ ಎಂಬ ಭಾವ, ಪರರು ನನಗಿಂತ ಮುಂದೆ ಹೋಗುತ್ತಿದ್ದಾರೆ ಎಂಬ ಮತ್ಸರ ಭಾವ ನಮ್ಮಲ್ಲಿ ಭಯವನ್ನು ಹುಟ್ಟು ಹಾಕುತ್ತವೆ. ನಾವು ಅಪಾಯದಲ್ಲಿ ದ್ದಾಗ ನಮ್ಮ ಜೀವನದ ಬಗ್ಗೆ ಹೆದರಿಕೆಯಾಗುತ್ತದೆ.

       ಯಾವುದಕ್ಕೆ ಭಯಗೊಳ್ಳುತ್ತೆವೆ?

    ಚಿಕ್ಕ ಪುಟ್ಟ ವಿಷಯಗಳಿಗೂ ಮನಸ್ಸು ಭಯಗೊಳ್ಳುತ್ತದೆ. ಇದು ಒಂದು ತೆರನಾದ ಮಾನಸಿಕ ಸಂಘರ್ಷ. ಇದಕ್ಕೆ ಫೋಬಿಯೋ ಅಂತಲೂ ಕರೆಯುತ್ತಾರೆ. ಕೆಲವರಿಗೆ ಕಾಡುಪ್ರಾಣಿಗಳೆಂದರೆ ಭಯ. ಇನ್ನೂ ಕೆಲವರಿಗೆ ಸಾಕು ಪ್ರಾಣಿಗಳಾದ ನಾಯಿ ಬೆಕ್ಕು ಕಂಡರೂ  ಭಯ. ಮಳೆ ಗುಡುಗು ಮಿಂಚಿಗೂ ಹೆದರುತ್ತಾರೆ. ವಿಚಿತ್ರೆಮದರೆ ಕೆಲವರು ಜನರನ್ನು ಕಂಡರೆ ಕಾಡು ಪ್ರಾಣಿ ನೋಡಿದ ತರ ಭಯಗೊಳುತ್ತಾರೆ.ಆಹಾರದ ಭಯ, ಎತ್ತರ ಜಾಗದ ಭಯ, ಬಸ್ಸಿನಲ್ಲಿ , ರೈಲಿನಲ್ಲಿ ವಿಮಾನದಲ್ಲಿ ಪ್ರಯಾಣ ಮಾಡುವದೆಂರೆ ಭಯ ಇನ್ನು ಕೆಲವರು ನೀರು ಕಂಡರೆ ಹೆದರುತ್ತಾರೆ. ಅಂದರೆ ಭಯ ಎಲ್ಲ ಹಂತಗಳಲ್ಲಿ ಇದ್ದೇ ಇರುತ್ತದೆ.ಒಬ್ಬೊಬ್ಬರಿಗೆ ಒಂದೊಂದನ್ನು ಕಂಡರೆ ಭಯ. ಆಫೀಸಿಗೆ ಹೋದ ಗಂಡ, ಸ್ಕೂಲಿಗೆ ಹೋದ ಮಕ್ಕಳು ಮನೆಗೆ ಸರಿಯಾದ ಸಮಯಕ್ಕೆ ಮರಳಿ ಬರದಿದ್ದರೂ ಭಯಗೊಳ್ಳುವ ಪ್ರಸಂಗಗಳಿವೆ.

              ನಾವು ಧೈರ್ಯವಂತರು ಎಂದು ಎಷ್ಟೋ ಜಂಭ ಕೊಚ್ಚಿಕೊಂಡರೂ ಭಯಗೊಳ್ಳುತ್ತೇವೆ ಎಲ್ಲಕ್ಕಿಂತ ದೊಡ್ಡ ಭಯ ಎಂದರೆ ಸಾವಿನ ಭಯ. ಈ ಭಯ ನಮ್ಮ ಅಸ್ತಿತ್ವಕ್ಕೆ ಸಂಭಧಿಸಿದ್ದುಎಲ್ಲಿ ನಮ್ಮ ಪ್ರಾಣಕ್ಕೆ ಸಂಚಕಾರ ಬರುತ್ತೇನೋ ಎಂದು ಎಷ್ಟೋ ಬಾರಿ ಭಯಗೊಳ್ಳುತ್ತೇವೆ.

            ಭಯದ ಲಕ್ಷಣಗಳೇನು?

     ಭಯವುಂಟಾದಾಗ ಮೈಂಡ್ ಫುಲ್ ಬ್ಲ್ಯಾಂಕ್ ಆಗಿರುತ್ತೆ ಯಾವುದೇ ವಿಚಾರಗಳು ಆಲೋಚನೆಗಳು ಹೊಳೆಯೊದಿಲ್ಲ. ಮೈಯೆಲ್ಲ ಬೆವರುತ್ತೆ.ಕೈ ಕಾಲುಗಳಲ್ಲಿ ಶಕ್ತಿಯಿಲ್ಲದಂತೆ ಭಾಸವಾಗುತ್ತೆ. ಮಾತೇ ಹೊರಡೊದಿಲ್ಲ.ಹೊರಡಿದರೂ ತೊದಲುತ್ತೆ. ಭಯದ ವಿಚಾರವನ್ನು ಹೊರತುಪಡಿಸಿ ಬೇರೆ ಯಾವ ವಿಚಾರಗಳು ಮನಸ್ಸಿನಲ್ಲಿ ಸುಳಿಯಲಾರವು. ವಿಚಾರಗಳೆಲ್ಲ ಅಸ್ಥವ್ಯಸ್ಥವಾಗುವವು ಅಂದುಕೊಂಡ ಯಾವ ಕೆಲಸವನ್ನು ಮಾಡಲು ಸಾಧ್ಯವಾಗುವದಿಲ್ಲ. ಸಣ್ಣ ಪುಟ್ಟ ವಿಷಯಗಳಿಗೆ ಬೆಚ್ಚಿ ಬೀಳುವದು ಅಥವಾ ಇದಕ್ಕೆ ತದ್ವಿರುದ್ಧವಾಗಿ ಗಂಭೀರ ವಿಷಯಗಳಿಗೂ ಪ್ರತಿಕ್ರಿಯಿಸದೆ ಮೌನವಾಗಿರುವದು.ಇವೆಲ್ಲ ಭಯದ ಮುಖ್ಯ ಲಕ್ಷಣಗಳು.

           ಭಯ ತಡೆಯೋಕೆ ಏನು ಉಪಾಯ

      ಪ್ರತಿಯೊಂದು ಭಯದಿಂದಲೂ ನಾವು ಮುಕ್ತರಾಗಬಹುದು. ಭಯ ತಡೆಯುವ ಉಪಾಯಗಳು ಕಠಿಣವೆನಿಸಿದರೂ ಅಸಾಧ್ಯವೇನಲ್ಲ. ನಾವು ಭಯಗೊಳ್ಳುತ್ತೇವೆ ಎನ್ನುವ ಸಂಗತಿಯನ್ನು ಒಪ್ಪಿಕೊಳ್ಳುವದು.ಯಾವ ವಿಷಯದ ಬಗ್ಗೆ ಭಯವಿದೆಯೋ ಎಂಬುನ್ನು ತಿಳಿದು ಅದನ್ನು ಮುಕ್ತವಾಗಿ  ಆತ್ಮೀಯರೊಂದಿಗೆ ಚರ್ಚಿಸುವದು.ಯಾವಾಗಲೂ ಕೆಲಸದಲ್ಲಿ  ತೊಡಗಿಸಿಕೊಳ್ಳುವದು. ಮೂಢನಂಬಿಕೆ ಮತ್ತು ಅಪಶಕುನಗಳನ್ನು ನಂಬದೆ ಇರುವದು. ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳುವದು. ಪರಿಸ್ತಿತಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುವದು ಅನುಮಾನಕ್ಕೆ ಆಸ್ಪದ ಕೊಡದಿರುವದು ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ನಮಗೆ ಎಚ್ಚರಿಕೆಯಂತೆ ವರ್ತಿಸುತ್ತದೆ ಎಂದು ತಿಳಿದುಕೊಳ್ಳುವದು.ಭಯ ನಿವಾರಿರಿಸುವದಕ್ಕೆ ಪ್ರಯತ್ನಿಸಿ ತಜ್ಞ ವೈಜ್ಞರನ್ನು ಭೇಟಿ ಮಾಡುವದು. ನಿಜವಾದ ಧೈರ್ಯವನ್ನು ಮನಸ್ಸಿಗೆ ತುಂಬಿಕೊಳ್ಳುವದು ಆಶಾವಾದಿಯಾಗಿರುವದು. ನಾನು ಧೈರ್ಯವಂತ ಎಂದು ನನ್ನಷ್ಟಕ್ಕೆ ನಾವೇ ಹೇಳಿಕೊಳ್ಳುವದು ಎಂದರೆ ಸೆಲ್ಪ ಹಿಪ್ನಾಟಿಸಂ ಮಾಡಿಕೊಳ್ಳುವದು.

        ವಿವೇಕಾನಂದರ ವಾಣಿಯಂತೆ ‘ನಿಮ್ಮಿಂದ ನೀವೇ ಉದ್ದಾರವಾಗಬೇಕು. ಸ್ನೇಹಿತನೆ ನಿನಗೆ ಯಾರೂ ಸಹಾಯ ಮಾಡಲಾರರು. ನಿನಗೆ ನೀನೇ ದೊಡ್ಡ ಶತ್ರು ನಿನಗೆ ನೀನೇ  ದೊಡ್ಡ ಮಿತ್ರ ಹಾಗಾದರೆ ನೀನು ಆತ್ಮವನ್ನು ದೃಢವಾಗಿ ಹಿಡಿದುಕೊ ಎದ್ದು  ನಿಲ್ಲು ಅಂಜಬೇಕಾಗಿಲ್ಲ. ನೀನು ಜಗತ್ತನ್ನೇ ಅಲ್ಲಾಡಿಸಲು  ಸಮರ್ಥನಾಗುವೆ. ಶಕ್ತಿಯ ರಹಸ್ಯ ವ್ಯಕ್ತಿ ಮತ್ತು ಆತನ ಜೀವನವೇ ಹೊರತು ಮತ್ತಾವುದು ಅಲ್ಲವೆಂಬುವದನ್ನು ನೆನಪಿನಲ್ಲಿಡಿ’.

         ಸ್ವಾಮಿ ವಿವೇಕಾನಂದರ ವಿವೇಕಭರಿತವಾದ ಈ ವಾಣಿಯನ್ನು  ಮೈಗೂಡಿಸಿಕೊಳ್ಳಲು ಪ್ರಯತ್ನಿಸುತ್ತ ಕೇವಲ ದೈಹಿಕ ಆರೋಗ್ಯದ ಕಡೆಗೆ ಗಮನ ಕೊಡದೆ ಮಾನಸಿಕ ಆರೋಗ್ಯದ ಬಗೆಗೆ ಗಮನವಹಿಸಿ ಆಗಾಗ ತಜ್ಞ ವೈದ್ಯರನ್ನು ಭೇಟಿಯಾಗಿ ನಮ್ಮ ವರ್ತನೆಯಲ್ಲಾದ ಬದಲಾವಣೆಯ ಕುರಿತು ಚರ್ಚಿಸಿ, ಅವರ ಸಲಹೆಗಳನ್ನು ಪಾಲಿಸಿದರೆ, ಭಯ ಮಂಗಮಾಯವಾಗುವದು ಖಚಿತ.

**************************

ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ‍್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು

About The Author

3 thoughts on “”

  1. Kashim padadar ramdurga

    ಭಯ ಅಂದರೇನು ಭಯ ಯಾಕೆ ಉಂಟಾಗುವುದು ಭಯ ಹೇಗೆ ಉಂಟಾಗುವುದು ಒಬ್ಬರಿಗೆ ಒಂದು ವಸ್ತು ಕಂಡರೆ ಭಯ ಮತ್ತೊಬ್ಬರಿಗೆ ಮತ್ತೊಂದು ವಸ್ತು ಕಂಡರೆ ಭಯ ಭಯವನ್ನು ಎದುರಿಸುವುದು ಹೇಗೆ ಇದೆಲ್ಲರ ಬಗ್ಗೆ ಸ್ವಾಮಿ ವಿವೇಕಾನಂದರ ವಿವೇಕ ಭರಿತ ವಾಣಿ ಫೂರ್ವಕ ಸ್ವವಿಸ್ತಾರವಾಗಿ ನಿಮ್ಮದೆ ಮ್ರದು ಭಾಷೆಯಲ್ಲಿ ತಿಳಿ ಹೇಳಿದ ಅಮೂಲ್ಯ ಬರಹ ಓದಿದರೆ ಭಯ ಹೊಗುವಂತದು! ತಮಗೆ ತುಂಬಾ ಧನ್ಯವಾದಗಳು ಮೆಡಮ..ಜಿ ..

    1. ಜಯಶ್ರೀ. ಅಬ್ಬಿಗೇರಿ

      ತಮ್ಮ
      ಅಮೂಲ್ಯ ಸ್ಪಂದನೆಗೆ
      ಧನ್ಯವಾದಗಳು

  2. Basavaraj Muragod

    “ಭಯದ ಬಗ್ಗೆ ಭಯ ಬೇಡ” ಲೇಖನ ತುಂಬಾ ಚೆನ್ನಾಗಿದೆ ಮೇಡಂ.

Leave a Reply

You cannot copy content of this page

Scroll to Top