Day: September 13, 2021

ಸವಾಲ್

ಸವಾಲ್ ದಾರನು ಹಣವನ್ನು ಪಡೆದು ಜರಿ ಸೀರೆಯನ್ನು ಕುತೂಹಲ ನಿರೀಕ್ಷಿಯಲ್ಲಿರುವ, ಐದನೇ ಸೀಟಿನಲ್ಲಿರುವವನ ಪತ್ನಿಗೇ ನೇರವಾಗಿ ಕೊಟ್ಟನು. ಅವಳು ಆ ಸೀರೆಯನ್ನು ಮತ್ತೊಮ್ಮೆ ಬಿಚ್ಚಿ ಕೈಯಾಡಿಸಿ ನೋಡಿ ಸಂತಸಬಟ್ಟು ಮಡಚಿ ಪಕ್ಕದಲ್ಲಿಟ್ಟು ಕೊಂಡಳು.

ಇಂಟರ್ ಲಾಕ್‌ ಅಂಗಳ

ಮನೆ ಮುಂದೆ‌
ತಗಡಿನ‌ ಶೀಟ್ ಛಾವಣಿ ಹೊದ್ದು
ಬೆಚ್ಚಗೆ ಮಲಗಿದ ಇಂಟರ್ ಲಾಕ್ ಅಂಗಳ
ಮನೆ ಮಂದಿಗೆ

ಕನ್ನಡಿ

ತಾವಿಲ್ಲ ಇಷ್ಟ ಕಷ್ಟಗಳಿಗೆ
ಸತ್ಯವನ್ನಲ್ಲದೆ ಬೇರೇನೂ ಹೇಳುವುದಿಲ್ಲ
ಗತ್ಯಂತರವಿಲ್ಲದೆ ಅಗತ್ಯವಾಗಿರುವೆ.

ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಾದೇಶಿಕ ಪಕ್ಷಗಳು ಜನಾದೇಶ ಪಡೆದು ರಾಜ್ಯಗಳ ಹಿತ ಕಾಪಾಡುತ್ತಿರುವ ನಿದರ್ಶನಗಳು ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿವೆ. ಹಾಗೆ ನೋಡಿದರೆ ಕೆಲಮಟ್ಟಿಗೆ ಕೇರಳದ ಎಡಪಂಥೀಯ ಸರಕಾರವೂ ಪ್ರಾದೇಶಿಕ ನೆಲೆಗಟ್ಟಿನದೇ. ಕೇಂದ್ರ ಮತ್ತು ರಾಜ್ಯದ ನಡುವಿನ ಮಧುರ ಬಾಂಧವ್ಯದಷ್ಟೇ ಪ್ರಾದೇಶಿಕ ಹಿತಾಸಕ್ತಿಯ ಬಾಂಧವ್ಯ ಅಕ್ಷರಶಃ ಅಲ್ಲಗಳೆಯಲಾಗದು.

ಧಾರಾವಾಹಿ ಆವರ್ತನ ಅದ್ಯಾಯ-33 ಆಸ್ಪತ್ರೆಯಲ್ಲಿ ಒಂದು ವಾರ ತೀವ್ರ ನಿಗಾಘಟಕದಲ್ಲಿ ನರಳಿದ ಶ್ರೀನಿವಾಸ ಕೊನೆಗೂ ಬದುಕುಳಿದ. ಆದರೆ ಈ ಘಟನೆಯಿಂದ ಪ್ರವೀಣನ ನಾಗದೋಷದ ಭೀತಿಯು ದುಪ್ಪಟ್ಟಾಗಿ ಪ್ರಜ್ವಲಿಸತೊಡಗಿತು. ತನ್ನ ಅನಾಚಾರದಿಂದಲೇ ಇವೆಲ್ಲ ಅನಾಹುತಗಳು ನಡೆಯುತ್ತಿರುವುದು! ಎಂದು ಭಾವಿಸಿದವನು ಇನ್ನು ತಡಮಾಡಬಾರದು. ತನ್ನ ಜೀವನ ಸರ್ವನಾಶ ಆಗುವುದಕ್ಕಿಂತ ಮುಂಚೆಯೇ ಎಚ್ಚೆತ್ತುಕೊಳ್ಳಬೇಕು ಎಂದು ನಿರ್ಧರಿಸಿದ. ಅದೇ ಸಂದರ್ಭದಲ್ಲಿ ಶಂಕರನ ಶೀಂಬ್ರಗುಡ್ಡೆಯ ನಾಗಬನ ಜೀರ್ಣೋದ್ಧಾರದ ಸಂಗತಿಯೂ ಅವನಿಗೆ ತಿಳಿಯಿತು. ಕೂಡಲೇ ಹಳೆಯ ಗೆಳೆಯನನ್ನು ಹೊಸ ಆತ್ಮೀಯತೆಯಿಂದ ಅರಸಿ ಹೋಗಿ ಭೇಟಿಯಾದ. ಶಂಕರನೂ ಪ್ರವೀಣನನ್ನು ಆಪ್ತತೆಯಿಂದ ಬರಮಾಡಿಕೊಂಡು ಕುಶಲೋಪರಿ ವಿಚಾರಿಸಿದ. ಆದರೆ ಅವನ ಮೂತ್ರ ಪ್ರಸಂಗ, ಚರ್ಮರೋಗ ಮತ್ತು ಹಾವಿನ ಕಡಿತದ ವಿಷಯವನ್ನು ಕೇಳಿದವನು ‘ಇದು ಖಂಡಿತಾ ನಾಗದೋಷದ ಪ್ರತಿಫಲವೇ ಮಾರಾಯಾ…! ಇಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ!’ ಎಂದು ಆತಂಕ ವ್ಯಕ್ತಪಡಿಸಿದ. ‘ಅಲ್ವಾ ಅಲ್ವಾ ಶಂಕರಣ್ಣಾ…? ನನಗೆ ಆವತ್ತು ಸುರೇಶ ಹೇಳಿದಾಗಲೇ ಅದು ಗೊತ್ತಾಗಿತ್ತು. ಆದರೆ ನನ್ನ ಮನೆಯವಳೂ, ಆ ಚರ್ಮರೋಗದ ಡಾಕ್ಟ್ರೂ ಹೇಳುವುದು ನಾನು ಸರಿಯಾಗಿ ಸ್ನಾನನೇ ಮಾಡುವುದಿಲ್ಲವಂತೆ. ಅದರಿಂದ ಹುಳಕಜ್ಜಿ ಬಂದಿದೆಯಂತೆ! ಹಾಗಾದರೆ ನನ್ನ ಮೈದುನನಿಗೆ ಹಾವು ಯಾಕೆ ಕಚ್ಚಿತು? ಅದೂ ನನ್ನ ಅಂಗಡಿಯ ಒಳಗೆಯೇ ಬಂದು ಕಚ್ಚಬೇಕಿತ್ತಾ…!’ ಎಂದು ಭಯದಿಂದ ಕಣ್ಣುಬಾಯಿ ಬಿಟ್ಟುಕೊಂಡು ಅಂದವನು, ‘ನನಗೀಗ ನೀವು ಹೇಳಿದ ಮೇಲೆ ಧೈರ್ಯ ಬಂತು ಶಂಕರಣ್ಣಾ…ಆದ್ದರಿಂದ ನೀವೇ ಇದಕ್ಕೊಂದು ಪರಿಹಾರವನ್ನೂ ಸೂಚಿಸಬೇಕು!’ ಎಂದು ಕೇಳಿಕೊಂಡ. ‘ನೀನೇನೂ ಹೆದರಬೇಡ ಮಾರಾಯಾ ನಾನಿದ್ದೇನೆ. ಎಲ್ಲಾ ಸಮ ಮಾಡುವ ನಡೀ…!’ ಎಂದು ಶಂಕರ ಗತ್ತಿನಿಂದ ಹೇಳಿದವನು ಕೂಡಲೇ ಅವನನ್ನು ಏಕನಾಥ ಗುರೂಜಿಯವರ ಹತ್ತಿರ ಕರೆದೊಯ್ದ.    ಆ ಸಮಯದಲ್ಲಿ ಗುರೂಜಿಯವರು ತಮ್ಮ ಹಳೆಯ ಮನೆಯ ಒಂದು ಪಾಶ್ರ್ವವನ್ನು ಒಡೆದು, ಮುಂದೆ ತಮ್ಮಲ್ಲಿ ನಿರಂತರ ನಡೆಯಲಿರುವ ವಿವಿಧ ಪೂಜಾ ಕೈಂಕರ್ಯಗಳಿಗೆ ಸಹಾಯಕವಾಗುವಂಥ ವಿಶಾಲವಾದ ಆಧುನಿಕ ಪಡಸಾಲೆಯೊಂದನ್ನು ನಿರ್ಮಿಸತೊಡಗಿದ್ದರು. ಅತ್ತ ಶಂಕರನ ಕಾರು ಬಂದು ತಮ್ಮ ಮನೆಯೆದುರು ನಿಂತುದನ್ನೂ, ಅವನೊಂದಿಗೆ ಶ್ರೀಮಂತನೊಬ್ಬ ಇಳಿದು ಬರುತ್ತಿರುವುದನ್ನೂ ಮತ್ತು ಅವನ ಮುಖದಲ್ಲಿದ್ದ ಕಳವಳವನ್ನೂ ಗ್ರಹಿಸಿದವರಿಗೆ ತಮ್ಮ ಪಡಸಾಲೆಯ ಕೆಲಸವು ನಿರ್ವಿಘ್ನವಾಗಿ ಸಮಾಪ್ತಿಗೊಳ್ಳುವುದರಲ್ಲಿ ಅನುಮಾನವಿಲ್ಲ ಎಂದೆನಿಸಿತು. ಆದ್ದರಿಂದ ಮಂದಹಾಸ ಬೀರುತ್ತ ಇಬ್ಬರನ್ನೂ ಬರಮಾಡಿಕೊಂಡು ತಮ್ಮ ಜ್ಯೋತಿಷ್ಯದ ಕೋಣೆಗೆ ಕರೆದೊಯ್ದರು.    ಶಂಕರ ತನ್ನ ಗೆಳೆಯನ ವ್ಯವಹಾರ ಮತ್ತು ಅವನ ಪ್ರಸ್ತುತ ಸಮಸ್ಯೆಯನ್ನು ಗುರೂಜಿಗೆ ಹಳೆಯ ಸಲುಗೆಯಿಂದ ವಿವರಿಸಿದ. ಆದರೆ ಅವರು ಅವನ ಸ್ನೇಹದತ್ತ ಗಮನಕೊಡದೆ ಅವನ ಮಾತುಗಳನ್ನು ಮಾತ್ರವೇ ಗಂಭೀರರಾಗಿ ಕೇಳಿಸಿಕೊಂಡರು ಹಾಗೂ ಕ್ಷಣಹೊತ್ತು ಕಣ್ಣುಮುಚ್ಚಿ ಧ್ಯಾನಸ್ಥರಂತೆ ಕುಳಿತು ಪ್ರವೀಣನ ಸಮಸ್ಯೆಗಳನ್ನು ತಮ್ಮದೇ ದೃಷ್ಟಿಕೋನದಿಂದ ಮಥಿಸಿದರು. ಗುರೂಜಿಯ ಗಾಂಭೀರ್ಯವನ್ನೂ ಅವರು ತನಗಾಗಿ ಧ್ಯಾನಿಸುತ್ತಿದ್ದ ರೀತಿಯನ್ನೂ ಕಂಡ ಪ್ರವೀಣನಿಗೆ ಅರ್ಧಕ್ಕರ್ಧ ಭಯ ಹೋಗಿಬಿಟ್ಟಿತು. ಆದರೆ ಅತ್ತ ಗುರೂಜಿಯ ಯೋಚನಾಲಹರಿ ಈ ರೀತಿ ಸಾಗುತ್ತಿತ್ತು, ‘ಓ ಪರಮಾತ್ಮಾ… ಕೊನೆಗೂ ನೀನು ನಮ್ಮ ಜೀವನಕ್ಕೊಂದು ಭದ್ರ ನೆಲೆಯನ್ನು ಕರುಣಿಸಿಬಿಟ್ಟೆ. ಅದಕ್ಕಾಗಿ ಅನಂತಾನಂತ ಕೃತಜ್ಞತೆಗಳು ದೇವಾ! ಹಾಗೆಯೇ ಈಗ ನಮ್ಮಲ್ಲಿಗೆ ನೀನು ಕಳುಹಿಸಿರುವ ಈ ವ್ಯವಹಾರವೂ ಸಾಂಗವಾಗಿ ನೆರವೇರುವಂಥ ಶಕ್ತಿಯನ್ನು ದಯಪಾಲಿಸು ಪ್ರಭುವೇ!’ಎಂದು ಪ್ರಾರ್ಥಿಸಿದರು. ನಂತರ ನಿಧಾನವಾಗಿ ಕಣ್ಣು ತೆರೆದು ಪ್ರವೀಣನನ್ನು ದಿಟ್ಟಿಸಿದರು. ಆಗ ಅವನು ಅವರನ್ನು ದೈನ್ಯದಿಂದ ನೋಡಿದ. ‘ಹೌದು ಪ್ರವೀಣರೇ, ನೀವು ಮಾಡಿರುವುದು ಮಹಾ ಅಪರಾಧವೇ ಆಗಿದೆ! ಅದರಲ್ಲಿ ಎರಡು ಮಾತಿಲ್ಲ’ ಎನ್ನುತ್ತ ಅವನನ್ನು ತೀಕ್ಷ್ಣವಾಗಿ ದಿಟ್ಟಿಸಿದರು. ಪ್ರವೀಣ ಭಯದಿಂದ ಇನ್ನಷ್ಟು ಇಳಿದುಹೋದ. ಅದನ್ನು ಗಮನಿಸಿದ ಗುರೂಜಿ, ‘ಆದರೂ ನೀವಿನ್ನು ಹೆದರಬೇಕಾಗಿಲ್ಲ. ನಿಮ್ಮ ಆ ಪಾಪಕೃತ್ಯವನ್ನು ಸರಿಪಡಿಸುವ ಮಾರ್ಗ ನಮ್ಮಲ್ಲಿದೆ. ಆದರೆ ಅದಕ್ಕೆ ಸಂಬಂಧಿಸಿದ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಸಿದ್ಧರಿದ್ದೀರಾ?’ ಎಂದು ಮುಖದಲ್ಲಿ ನಿರ್ಭಾವ ತೋರಿಸುತ್ತ ಕೇಳಿದರು. ಆದರೂ ಅವರ ಕೆಳದುಟಿಯು ಸಣ್ಣಗೆ ಕಂಪಿಸುತ್ತಿದ್ದುದು ಯಾರ ಗಮನಕ್ಕೂ ಬರಲಿಲ್ಲ. ‘ಆಯ್ತು ಗುರೂಜಿ. ತಾವು ಹೇಗೆ ಹೇಳುತ್ತೀರೋ ಹಾಗೆ ನಡೆದುಕೊಳ್ಳುತ್ತೇನೆ. ಒಟ್ಟಾರೆ ನನ್ನ ಸಮಸ್ಯೆಯನ್ನು ನಿವಾರಿಸಿಕೊಡಬೇಕು ತಾವು!’ ಎಂದ ಪ್ರವೀಣ ನಮ್ರನಾಗಿ ಕೇಳಿಕೊಂಡ. ಆಗ ಗುರೂಜಿಯ ಮುಖದಲ್ಲಿ ನಗು ಮೂಡಿತು.  ‘ಆಯ್ತು, ಸರಿಮಾಡಿ ಕೊಡುವ. ಆದರೆ ಅದಕ್ಕಿಂತ ಮೊದಲು ಆ ಜಾಗವನ್ನು ನಾವೊಮ್ಮೆ ನೋಡಬೇಕಲ್ಲಾ…?’ ‘ಆಯ್ತು ಗುರೂಜಿ. ನಿಮಗೆ ಪುರುಸೋತ್ತಿದ್ದರೆ ಈಗಲೇ ಹೋಗಿ ನೋಡಿ ಬರಬಹುದು!’ ಎಂದ ಪ್ರವೀಣನು, ಶಂಕರನ ಮುಖ ನೋಡುತ್ತ, ‘ಹೇಗೇ…ಹೋಗಿ ಬರುವ ಅಲ್ಲವಾ…?’ ಎಂದು ಕಣ್ಣಿನಲ್ಲೇ ಪ್ರಶ್ನಿಸಿದ.  ಆದರೆ ಅತ್ತ, ‘ಈಗಲೇ ಹೋಗುವುದಾ…?’ ಎಂದ ಗುರೂಜಿ ಬೇಕೆಂದೇ ಕೆಲವುಕ್ಷಣ ಯೋಚಿಸುವಂತೆ ನಟಿಸಿದವರು ನಂತರ, ‘ಸರಿ. ಹೊರಡುವ…!’ ಎಂದರು. ‘ನೋಡಮ್ಮಾ ದೇವಕೀ… ಎಲ್ಲಿದ್ದೀಯೇ?’ ಎಂದು ಹೆಂಡತಿಯನ್ನು ಕೂಗಿ ಕರೆದರು. ಅವಳು ಅಡುಗೆ ಕೋಣೆಯಿಂದಲೇ, ‘ಏನೂಂದ್ರೆ….?’ ಎಂದಳು. ‘ಪಡಸಾಲೆಯ ಕೆಲಸವನ್ನು ಸ್ವಲ್ಪ ಗಮನಿಸುತ್ತಿರು. ನಾವು ಹೊರಗೆ ಹೋಗಿ ಬರುತ್ತೇವೆ…’ ಎಂದು ಸೂಚಿಸಿದರು. ‘ಆಯ್ತು, ಹೋಗಿ ಬನ್ನಿ…!’ ಎಂಬ ಅವಳ ಉತ್ತರ ಸಿಗುತ್ತಲೇ ಎದ್ದು ಅವರೊಂದಿಗೆ ಹೊರಟರು.                                                                                    *** ಗುರೂಜಿ ಮತ್ತು ಶಂಕರನೊಂದಿಗೆ ಪ್ರವೀಣ ಮಸಣದಗುಡ್ಡೆಗೆ ಬಂದವನು ಅಲ್ಲಿಂದ ಸ್ವಲ್ಪ ದೂರವಿದ್ದ ಸುರೇಶನ ಸರಕಾರಿ ಕಾಲೋನಿಗೆ ಅವರನ್ನು ಕರೆದೊಯ್ದ. ಅಲ್ಲಿನ ಅಶ್ವತ್ಥ ಮರದ ಕಟ್ಟೆಯೊಂದಲ್ಲಿ ಗುರೂಜಿಯವರನ್ನು ಕುಳ್ಳಿರಿಸಿದವನು ಶಂಕರನನೊಂದಿಗೆ ಸುರೇಶನ ಮನೆಯತ್ತ ಹೋದ. ಸುರೇಶ ಆಹೊತ್ತು ತನ್ನ ಬಡಾವಣೆಯ ಕೊನೆಯ ಸಾಲಿನ ಹರಕು ಮುರುಕು ಮನೆಯೊಂದರಲ್ಲಿ ಕುಡಿದು ಮತ್ತನಾಗಿ ಮಲಗಿದ್ದ. ಪ್ರವೀಣ ಮತ್ತು ಶಂಕರನ ಚೆನ್ನಾಗಿ ಪರಿಚಯವಿದ್ದ ಅಲ್ಲಿನವರಲ್ಲಿ ಒಂದಿಬ್ಬರು ಗಂಡಸರು ಅವರನ್ನು ಕಂಡು ದಡಬಡನೆದ್ದು ಬಂದು ಅವರಿಂದ ವಿಷಯ ತಿಳಿದುಕೊಂಡವರು ಕೂಡಲೇ ಸುರೇಶನನ್ನು ಎಬ್ಬಿಸಲು ಅವನ ಮನೆಯೊಳಗೆ ನುಗ್ಗಿದರು. ಆದರೆ ಸುರೇಶ ಏಳುವ ಸ್ಥಿತಿಯಲ್ಲಿರಲಿಲ್ಲ. ಆದ್ದರಿಂದ ಅವರಲ್ಲೊಬ್ಬ ಸುರೇಶನ ನೆತ್ತಿಗೆ ಒಂದು ಚೊಂಬು ತಣ್ಣೀರು ಸುರಿದು ಎಬ್ಬಿಸಬೇಕಾಯಿತು. ಅದರಿಂದ ಸುರೇಶ ಎಚ್ಚರಗೊಂಡು ಕೆಂಡಾಮಂಡಲನಾದವನು ಇಬ್ಬರಿಗೂ ಕೆಟ್ಟಕೆಟ್ಟ ಪದಗಳಿಂದ  ಬಯ್ಯುತ್ತ ಎದ್ದು ಕುಳಿತ. ಆದರೆ ಅವರು ಅವನ ಅಂಥ ಬೈಗುಳವನ್ನು ಕೇಳಿ ತಮಾಷೆಯಾಗಿ ನಗುತ್ತ ಪ್ರವೀಣ, ಶಂಕರರು ಬಂದಿರುವುದನ್ನು ಅವನಿಗೆ ತಿಳಿಸಿದರು. ಅವರ ಹೆಸರು ಕಿವಿಗೆ ಬೀಳುತ್ತಲೇ ಸುರೇಶ ತಟ್ಟನೆ ನೆಟ್ಟಗಾದ. ‘ಓಹೋ, ಆ ಬೇವರ್ಸಿ ಬಂದಿದ್ದಾನಾ…? ಅಂವ ನನ್ನನ್ನು ಹುಡುಕಿಕೊಂಡು ಬಂದೇ ಬರ್ತಾನೆ ಅಂತ ಗೊತ್ತಿತ್ತು ಬಿಡಿ!’ ಎಂದು ನಗುತ್ತ ಎದ್ದು ತೂರಾಡುತ್ತ ಹೊರಗೆ ಬಂದ. ಅಲ್ಲಿ ತನ್ನ ವಠಾರದವರೆಲ್ಲರೂ ತಂತಮ್ಮ ಹೊಸ್ತಿಲು, ಅಂಗಳದಲ್ಲಿ ನಿಂತುಕೊಂಡು ತನ್ನತ್ತ ಕುತೂಹಲದಿಂದ ನೋಡುತ್ತಿದ್ದುದನ್ನು ಕಂಡ ಸುರೇಶ ತನ್ನ ಮಹತ್ವವನ್ನು ಸಾರುವ ಉದ್ದೇಶದಲ್ಲಿ,‘ನಮಸ್ಕಾರ ಪ್ರವೀಣಣ್ಣ… ಏನು ವಿಷಯ ಮಾರಾಯ್ರೇ…?’ಎಂದು ಸಂಗತಿ ತನಗೆ ಗೊತ್ತಿದ್ದರೂ ಜೋರಿನಿಂದ ಪ್ರಶ್ನಿಸಿದ. ಅವನ ಅಹಂಕಾರದ ಮಾತುಗಳನ್ನು ಕೇಳಿದ ಪ್ರವೀಣ, ಶಂಕರರಿಬ್ಬರಿಗೂ ಕೆಟ್ಟ ಕೋಪ ಬಂತು. ಆದರೆ ಈ ಸಮಯದಲ್ಲಿ ತಾಳ್ಮೆಗೆಟ್ಟರೆ ಕೆಲಸ ಕೆಡುವುದೆಂದು ವಿವೇಕ ಎಚ್ಚರಿಸಿತು. ‘ಏನಿಲ್ಲ ಮಾರಾಯಾ ನಮ್ಮ ಗುರೂಜಿಯವರು ಬಂದಿದ್ದಾರೆ. ಮೊನ್ನೆ ನೀನು ತೋರಿಸಿದ ನಾಗನ ಕಲ್ಲಿದ್ದ ಆ ಜಾಗ ಮತ್ತು ಅದರ ಕಥೆಯನ್ನು ಸ್ವಲ್ಪ ಅವರಿಗೆ ಹೇಳಬೇಕಿತ್ತಲ್ಲವಾ…?’ ಎಂದು ಪ್ರವೀಣ, ‘ಈಗಲೇ ಹೊರಡು…!’ ಎಂಬಂಥ ಭಾವದಿಂದ ಆಜ್ಞಾಪಿಸಿದ. ‘ಅರೇ, ಅದಕ್ಕೇನಂತೆ ಹೋಗುವ. ನಡೆಯಿರಿ!’ ಎಂದು ಸುರೇಶ ಅವರಿಗಿಂತ ಮುಂದೆ ನಡೆದವನು ತಟ್ಟನೆ ನಿಂತು,‘ಆದರೆ ಪ್ರವೀಣಣ್ಣ ನನಗೀಗ ಸ್ವಲ್ಪ ಎದುರು ಹಾಕದೆ (ಸಾರಾಯಿ ಕುಡಿಯದೆ) ಕೈಕಾಲು ಅಲ್ಲಾಡುವುದಿಲ್ಲ ನೋಡಿ. ಆಗ ಸ್ವಲ್ಪ ಕುಡಿದು ಮಲಗಿದ್ದೆ. ಆದರೆ ಈ ದರ್ವೇಶಿಗಳಿದ್ದಾರಲ್ಲ…ಇವರು, ನೀವು ಬಂದ ಸುದ್ದಿಯನ್ನು ಹೇಳುವ ಗಡಿಬಿಡಿಯಲ್ಲಿ ನನ್ನ ಮಂಡೆಗೆ ಸಮಾ ನೀರು ಸುರಿದು ಎಬ್ಬಿಸಿ ಎಲ್ಲಾ ಹಾಳು ಮಾಡಿಬಿಟ್ಟರು!’ಎಂದು ಆ ಇಬ್ಬರತ್ತ ಕೋಪದಿಂದ ದಿಟ್ಟಿಸುತ್ತ ಹೇಳಿದ. ಆದರೆ ಅವರು ಆಗಲೂ ತಮಾಷೆಯಿಂದ ನಗುತ್ತ ನಿಂತಿದ್ದರು. ‘ಆಯ್ತು, ಆಯ್ತು ಮಾರಾಯಾ. ಸ್ವಲ್ಪವೇನು ಕೆಲಸವಾದ ಮೇಲೆ ಇಡೀ ಬಾಟಲಿಯನ್ನೇ ಕೊಡಿಸುತ್ತೇನೆ. ಕುಡಿದು ಬಿದ್ದು ಸಾಯಿ ಅತ್ಲಾಗೆ. ಈಗ ಮೊದಲು ನಡೆ!’ ಎಂದು ಪ್ರವೀಣ ತನ್ನ ಕೋಪವನ್ನು ತಮಾಷೆಯೊಂದಿಗೆ ಬೆರೆಸಿ ತೋರಿಸಿದ.‘ಹಾಗಾದರೆ ಸರಿ ಹೋಗುವ…!’ ಎಂದು ಸುರೇಶ ತಾಳತಪ್ಪಿದ ಹೆಜ್ಜೆಗಳನ್ನಿಡುತ್ತ ಮುಂದೆ ನಡೆದ.    ಸ್ವಲ್ಪಹೊತ್ತಿನಲ್ಲಿ ಸುರೇಶ ಗುರೂಜಿಯವರನ್ನು ಅಲ್ಲಿನ ಕುರುಚಲು ಹಾಡಿಯತ್ತ ಕರೆದುಕೊಂಡು ಹೋಗಿ ಆ ಪೊದೆಯನ್ನು ತೋರಿಸಿದ. ಪ್ರವೀಣನಿಗೆ ಮೂತ್ರ ಹುಯ್ಯಲು ಆ ಸ್ಥಳವು ಬಹಳ ಇಷ್ಟವಾಗಿದ್ದುದರಿಂದ ಆ ಪರಿಸರವಿಡೀ ಗಬ್ಬು ವಾಸನೆ ಬೀರುತ್ತಿತ್ತು. ಗುರೂಜಿಯವರು ಕುತೂಹಲದಿಂದ ಅದರತ್ತ ಹೋದವರಿಗೆ ಒಮ್ಮೆಲೇ ವಾಂತಿ ಬಂದಂತಾಯಿತು. ಆದರೂ ಮೂಗು ಮುಚ್ಚಿಕೊಂಡು ಆ ಜಾಗವನ್ನೂ ಅಲ್ಲಿನ ಕಲ್ಲುಗಳನ್ನೂ ಸೂಕ್ಷ್ಮವಾಗಿ ಪರಿಶೀಲಿಸತೊಡಗಿದರು. ಆದರೆ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗದೆ ಉಸಿರುಗಟ್ಟಿತು. ತಟ್ಟನೆ ಈಚೆಗೆ ಧಾವಿಸಿ ಬಂದವರು, ‘ಛೇ, ಛೇ! ಎಂಥದಿದು ಪ್ರವೀಣರೇ… ಎಷ್ಟು ವರ್ಷಗಳಿಂದ ಇಲ್ಲಿ ಗಲೀಜು ಮಾಡುತ್ತಿದ್ದೀರಿ…? ಈ ಜಾಗವಿಡೀ ಸರ್ಕಾರಿ ಪಾಯಿಖಾನೆಯ ಥರಾ ನಾರುತ್ತಿದೆಯಲ್ಲ. ಅಪಚಾರ ಅಪಚಾರ…!’ ಎಂದು ಗೊಣಗಿದರು. ಅಷ್ಟು ಕೇಳಿದ ಪ್ರವೀಣನಿಗೆ ಭಯ, ಅವಮಾನವೆಲ್ಲವೂ ಒಟ್ಟೊಟ್ಟಿಗಾಯಿತು. ಪೆಚ್ಚು ನಗುತ್ತ ನಿಂತುಕೊಂಡ. ಗುರೂಜಿಯವರು ಆ ಪೊದೆಯ ಸುತ್ತಮುತ್ತ ದಟ್ಟ ಮರಗಳಿಂದ ತುಂಬಿದ ಪ್ರದೇಶವೊಂದನ್ನು ಮೂಗು ಮುಚ್ಚಿಕೊಂಡೇ ಪರೀಕ್ಷಿಸುತ್ತ ಸ್ವಲ್ಪಹೊತ್ತು ಸುತ್ತಾಡಿದರು. ಅಲ್ಲೊಂದು ಕಡೆ ವಿಶಾಲವಾದ ಮನೆಯಿದ್ದು ಈಗ ಅದರ ನಾಮಾಶೇಷ ಮಾತ್ರವೇ ಉಳಿದಿದ್ದುದು ಕಾಣಿಸುತ್ತಿತ್ತು. ಆದ್ದರಿಂದ ಈ ಬನವೂ ಅದಕ್ಕೆ ಸಂಬಂಧಿಸಿದ್ದು ಎನ್ನುವುದು ಅವರಿಗೆ ಸ್ಪಷ್ಟವಾಯಿತು. ಮತ್ತೊಮ್ಮೆ ಅವೆಲ್ಲವನ್ನೂ ಪರಿಶೀಲಿಸಿ ಮುಂದಿನ ಕಾರ್ಯಚರಣೆ ಏನೆಂಬುದರ ಕುರಿತು ಅಲ್ಲಿಯೇ ನಿರ್ಧರಿಸಿಬಿಟ್ಟರು. ಈಗ ಸುರೇಶ ಮಾತನಾಡಿ,‘ಆ ಜಾಗದ ವಾರಸುದಾರರು ಈಗ ಇಲ್ಲಿ ಸುತ್ತಮುತ್ತ ಯಾರು ಇಲ್ಲ. ಜಾಗವು ಸರಕಾರದ ಸ್ವಾಧೀನದಲ್ಲಿದೆ! ಎಂದ. ಗುರೂಜಿ ಅವನ ಹೇಳಿಕೆಯನ್ನು ಕೇಳಿಸಿಕೊಂಡರಾದರೂ ಅವರಿಗೆ ಅದರಲ್ಲಿ ವಿಶ್ವಾಸ ಬರಲಿಲ್ಲ. ಆದ್ದರಿಂದ ಆ ಕುರಿತು ಸತ್ಯವನ್ನು ತಿಳಿದುಕೊಳ್ಳುವ ಜವಾಬ್ದಾರಿಯನ್ನು ಪ್ರವೀಣ ಮತ್ತು ಶಂಕರನಿಗೆ ವಹಿಸಲಿಚ್ಛಿಸಿದವರು,‘ನೋಡಿ ಪ್ರವೀಣರೇ, ನೀವಿನ್ನು ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ. ಇಲ್ಲಿನ ಸಂಗತಿ ಏನೆಂಬುದು ನಮಗೆ ಸ್ಪಷ್ಟವಾಗಿದೆ. ಅವೆಲ್ಲವನ್ನೂ ಸುಸೂತ್ರವಾಗಿ ಪರಿಹರಿಸಿಕೊಡುವ ಜವಾಬ್ದಾರಿ ನಮ್ಮದು. ಆದರೆ ಸ್ವಲ್ಪ ದುಡ್ಡು ಖರ್ಚಾಗುತ್ತದೆ. ನೀವು ಕೂಡಲೇ ಆ ವ್ಯವಸ್ಥೆಯನ್ನು ಮಾಡಿಕೊಳ್ಳಿ ಮತ್ತು ಈ ಸ್ಥಳಕ್ಕೆ ಸಂಬಂಧಪಟ್ಟು ನಾವು ಹೇಳುವ ಕೆಲವು ಮುಖ್ಯ ವಿಚಾರಗಳನ್ನೂ ತಿಳಿದುಕೊಳ್ಳುವ ಕೆಲಸವನ್ನು ನೀವಿಬ್ಬರೂ ಮಾಡಬೇಕಾಗುತ್ತದೆ. ಎಷ್ಟು ಬೇಗ ಆ ಮಾಹಿತಿಯನ್ನು ತಂದು ನಮಗೆ ಒಪ್ಪಿಸುತ್ತೀರೋ ಅಷ್ಟೇ ಬೇಗ ನಿಮ್ಮ ಸಮಸ್ಯೆಯನ್ನೂ ನಿವಾರಿಸಿಕೊಡುತ್ತೇವೆ!’ ಎಂದರು ಗಂಭೀರವಾಗಿ. ‘ಹಣದ ವ್ಯವಸ್ಥೆ ಮಾಡಿಕೊಳ್ಳಿ…!’ಎಂದಾಕ್ಷಣ ಪ್ರವೀಣ ಸ್ವಲ್ಪ ಅಶಾಂತನಾದ. ಅದನ್ನು ಗಮನಿಸಿದ ಶಂಕರ,‘ಅದರ ಬಗ್ಗೆ ಈಗಲೇ ತಲೆಕೆಡಿಸಿಕೊಳ್ಳುವುದು ಮಾರಾಯಾ ಸುಮ್ಮನಿರು…!’ ಎಂದು ಕಣ್ಣಿನಲ್ಲೇ ಅವನನ್ನು ಸಮಾಧಾನಿಸಿದ.    ಗುರೂಜಿಯ ಆಜ್ಞೆಯಂತೆ ಗೆಳೆಯರಿಬ್ಬರು ಕೆಲವೇ ದಿನದೊಳಗೆ ಆ ಬನದ ಚರಿತ್ರೆಯನ್ನು ತಿಳಿದುಕೊಂಡು ಬಂದು ಅವರಿಗೊಪ್ಪಿಸಿದರು. ಆ ವರದಿಯ ಪ್ರಕಾರ, ‘ಸದ್ಯ ಬನದ ವಾರಸುದಾರರು ಈಶ್ವರಪುರದಲ್ಲಿ ಯಾರೂ ಇಲ್ಲ. ಅವರ ದೂರದ ಸಂಬಂಧಿಗಳಾದ ಒಂದೆರಡು ಕುಟುಂಬಗಳು ಇರುವುವಾದರೂ ಮೂಲ ಜಾಗಕ್ಕೆ ಸಂಬಂಧಿಸಿದವರ ಮಾಹಿತಿ ಮತ್ತು ವಿಳಾಸ ಅವರಿಗೂ ಗೊತ್ತಿಲ್ಲ ಹಾಗೂ ಬನದ ಜಾಗವೂ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಸ್ಮಶಾನವಿದ್ದ ಜಮೀನು ಮಾತ್ರ ಸರಕಾರದ್ದು. ಹಾಗಾಗಿ ಸ್ಮಶಾನದ ಸುತ್ತಮುತ್ತದ ಒಂದಷ್ಟು ಭೂಮಿ ಸಹಜವಾಗಿಯೇ ಪಾಳುಬಿದ್ದಿದೆ. ಅದರಲ್ಲಿ ಬನವೂ ಸೇರಿಬಿಟ್ಟಿದೆ!’ ಎಂದು ತಿಳಿದು ಬಂತು. ಅಷ್ಟು ವಿಷಯನ್ನು ತಿಳಿದ ಗುರೂಜಿಯವರು ಒಳಗೊಳಗೇ ಹರುಷಗೊಂಡರು.‘ಈಶ್ವರಪುರದ ಹೃದಯಭಾಗದಲ್ಲಿರುವ ನಾಗ ಬನವದು. ಅಲ್ಲಿ ಸುತ್ತಮುತ್ತಲ್ಲೆಲ್ಲೂ ಬೇರೊಂದು ಬನವೂ ಇಲ್ಲ. ಹಾಗಾಗಿ ಅದನ್ನು ತಮ್ಮಿಂದ ಊರ್ಜಿತಗೊಳಿಸುವುದೇ ನಾಗದೇವನಿಚ್ಛೆಯಿರಬೇಕು. ಅಷ್ಟಲ್ಲದೇ ತಮ್ಮ ಜೀವನದೇಳಿಗೆಯ ಕಾರ್ಯಸಾಧನೆಗೂ ಆ ಪರಿಸರವು ಹೇಳಿ ಮಾಡಿಸಿದಂತಿದೆ. ಆದಷ್ಟು ಬೇಗ ಅದನ್ನು ಜೀರ್ಣೋದ್ಧಾರ ಮಾಡಿ ತಮ್ಮದಾಗಿಸಿಕೊಳ್ಳಬೇಕು!’ ಎಂದು ನಿರ್ಧರಿಸಿದರು ಹಾಗೂ ಕೂಡಲೇ ಪ್ರವೀಣನನ್ನೂ ಶಂಕರನಿಗೂ ಮನೆಗೆ ಕರೆದು ತಮ್ಮ ಮನದಿಂಗಿತವನ್ನು ಅವರಿಗೆ ವಿವರಿಸಿದರು. ಜೊತೆಗೆ ಆ ಶುಭಕಾರ್ಯಕ್ಕೆ ತಗಲುವ ಖರ್ಚುವೆಚ್ಚವನ್ನೂ ಮತ್ತದನ್ನು ಹೊಂದಿಸುವ ಬಗೆಯನ್ನೂ ಹಾಗೂ ಆ ಕಾರ್ಯದಲ್ಲಿ ಪಾಲುಗೊಳ್ಳುವುದರಿಂದ ಅವರ ಜೀವನದಲ್ಲಾಗುವ ಸಮೃದ್ಧಿಗಳು ಯಾವ ಯಾವ ರೀತಿಯವು ಎಂಬುದನ್ನೆಲ್ಲ ಅಂದು ಶಂಕರನಿಗೆ ವಿವರಿಸಿದಂತೆಯೇ ಇಂದು ಪ್ರವೀಣನಿಗೂ ತಿಳಿಸಿ ಅವನನ್ನು ಸಜ್ಜುಗೊಳಿಸಿದರು.    ಗುರೂಜಿಯವರ ಮಾತು ಕೇಳಿದ ಪ್ರವೀಣ ಮತ್ತು ಶಂಕರ ಆ ಕಾರ್ಯದ ಕುರಿತು ಭಾರೀ ಉತ್ಸುಕರಾದರು. ಗುರೂಜಿಯ ಮಾರ್ಗದರ್ಶನದಂತೆ ಅವರ ಹೇಳಿಕೆಯನ್ನು ಆ ಬನದ ಸುತ್ತಮುತ್ತಲಿನ ಜನರಲ್ಲಿ ಪ್ರಚಾರ ಮಾಡುತ್ತ ಬಂದರು. ಬಳಿಕ ಜೀರ್ಣೋದ್ಧಾರದ ವಿಷಯಕ್ಕೆ ಸಂಬಂಧಿಸಿ ನಗರಸಭೆಯಿಂದಲೂ ಕೆಲವೇ ದಿನದಲ್ಲಿ ‘ನೋ ಅಬ್ಜಕ್ಷನ್!’ ಲೆಟರ್ ಕೂಡಾ ಪ್ರವೀಣನ ಕೈಸೇರಿತು. ಆದ್ದರಿಂದ ದಟ್ಟ ಹಸಿರಿನಿಂದ ತುಂಬಿ ಆರೋಗ್ಯಪೂರ್ಣವಾಗಿದ್ದ ಆ ಬನವನ್ನು ಕೂಡಲೇ‘ಕಾಂಕ್ರೀಟ್ ಭವನ’ವನ್ನಾಗಿ ಮಾರ್ಪಡಿಸಲು ಶುಭದಿನವೊಂದನ್ನು ಗೊತ್ತುಪಡಿಸಲಾಯಿತು. ಆದರೆ ಅದಕ್ಕಿನ್ನೂ ಒಂದೂವರೆ ತಿಂಗಳ ಗಡುವಿತ್ತು. ಈ ಎರಡನೆಯ ಜೀರ್ಣೋದ್ಧಾರದ ಮೂಲಕ ಗುರೂಜಿಯವರಿಗೆ ತಮ್ಮ ಧಾರ್ಮಿಕ ವರ್ಚಸ್ಸು ಮತ್ತು ಸಂಪಾದನೆಯನ್ನು ವೃದ್ಧಿಸಿಕೊಳ್ಳುವುದು ಬಹಳ ಮುಖ್ಯ ಉದ್ದೇಶವಾಗಿತ್ತು. ಹಾಗಾಗಿ ಬಹಳ ಹಿಂದೆಯೇ ಅವರೊಳಗೆ ಹೊಸ ವಿಚಾರವೊಂದು ಮೊಳೆತಿತ್ತು. ಆದ್ದರಿಂದ ಇದೇ ಕಾರ್ಯಕ್ರಮದಲ್ಲಿ ಅದನ್ನು ಕಾರ್ಯಗತಗೊಳಿಸಲು ಅವರು ಮನಸ್ಸು ಮಾಡಿದರು. (ಮುಂದುವರೆಯುವುದು) ********* ಗುರುರಾಜ್ ಸನಿಲ್ ಗುರುರಾಜ್ ಸನಿಲ್ ಉಡುಪಿ ಇವರು ಖ್ಯಾತ ಉರಗತಜ್ಞ, ಸಾಹಿತಿಯಾಗಿ ನಾಡಿನಾದ್ಯಂತ ಹೆಸರು ಗಳಿಸಿದವರು. .‘ಹಾವು ನಾವು’, ‘ದೇವರಹಾವು: ನಂಬಿಕೆ-ವಾಸ್ತವ’, […]

Back To Top