ಅಂಕಣ ಬರಹ

ಜೀವಕ್ಕಿಂತಲೂ ಹೆಚ್ಚಾಗಿ ಅಂಧಶ್ರದ್ಧೆಯಲ್ಲಿ ನಂಬಿಕೆ

ಇಟ್ಟಿರುವುದು ನನಗೆ ಹೆಚ್ಚುಕಾಡುವ ವಿಷಯ”

ಈ ಸಲದ ಮುಖಾಮುಖಿ ಯಲ್ಲಿ ನಾಗರಾಜ್ ಹರಪನಹಳ್ಳಿ ಸಂದರ್ಶಿಸಿದ್ದಾರೆ ಕವಿ,ಕತೆಗಾರ ಹುಬ್ಬಳ್ಳಿಯ ಕುಮಾರ ಬೇಂದ್ರೆ ಅವರನ್ನು.
……….
ಪರಿಚಯ :
ಸಂಯುಕ್ತ ಕರ್ನಾಟಕ, ಉದಯವಾಣಿ, ಗೌರಿಲಂಕೇಶ್ ಪತ್ರಿಕೆಗಳು ಸೇರದಂತೆ ೧೪ ವರ್ಷಗಳ ಕಾಲ ಪತ್ರಕರ್ತನಾಗಿ ಕೆಲಸ. ಸಧ್ಯ ಚಲನಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರಕಲೆಯಲ್ಲಿ ಡಿಪ್ಲೋಮಾ, ಕನ್ನಡ ಎಂ.ಎ. ಪದವಿಧರ. ಸುಮಾರು ಎರಡು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ಸಕ್ರಿಯರು. ಮಾದಪ್ಪನ ಸಾವುಅದೃಶ್ಯ ಲೋಕದ ಮಾಯೆ ನಿರ್ವಾಣಗಾಂಧಿ ವೃತ್ತದ ದಂಗೆ ಕಥಾ ಸಂಕಲನಗಳು, ಮನಸೆಂಬ ಮಾಯಾವಿ ಆಯ್ದ ಕತೆಗಳ ಸಂಕಲನ.ಜೋಗವ್ವ ತಲ್ಲಣನೆಲೆ `ದಾಳಿ ಕಾದಂಬರಿ ಸೇರದಂತೆ ಒಟ್ಟು ೧೦ ಕೃತಿಗಳು ಪ್ರಕಟವಾಗಿವೆ.
ಜೋಗವ್ವ ಕಾದಂಬರಿಗೆ ಅಮೆರಿಕಾದಲ್ಲಿ ನಡೆದ ೨೦೦೬ರ ಅಕ್ಕ ವಿಶ್ವ ಕನ್ನಡ ಸಮ್ಮೇಳನ ಸ್ಪರ್ಧೆಯ ಪುರಸ್ಕಾರ ಹಾಗೂ ಕತೆಗಳಿಗೆ ಕ.ಸಾ.ಪ. ದತ್ತಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. ಪತ್ನಿ ಅನುಪಮ ಮತ್ತು ಇಬ್ಬರು ಪುತ್ರರೊಂದಿಗೆ ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾರೆ.

………………………………….

ಕತೆ, ಕವಿತೆಗಳನ್ನು ಯಾಕೆ ಬರೆಯುತ್ತೀರಿ?

ಬರೆವಣಿಗೆ ಎಂಬುದು ನನಗೆ ಮಾಸಿಕ ಬಿಡುಗಡೆಯ ಒಂದು ಮಾರ್ಗ. ಹೊಟ್ಟೆ ಹಸಿದಾಗ ಹೇಗೆ ಊಟದ ಅಗತ್ಯವಿರುತ್ತದೋ ಹಾಗೆ, ಬರೆವಣಿಗೆ ಮನಸ್ಸಿನ ಹಸಿವು ನೀಗಿಸುವ ಒಂದು ಕ್ರಮ ಎಂದುಕೊಂಡಿದ್ದೇನೆ. ನನಗೆ ಕತೆಗಳಲ್ಲಿ ಹೆಚ್ಚು ಆಸಕ್ತಿ. ಅದು ಕನಸೋ, ಅನುಭವವೋ, ಹುಡುಕಾಟವೋ ಅಥವಾ ಇನ್ನೇನೋ ಆಗಿರಬಹುದು. ಅದನ್ನು ಅಕ್ಷರಗಳಲ್ಲಿ ತೆರೆದಿಟ್ಟು ನಿರಾಳವಾಗುವುದಕ್ಕೆ ಬರೆಯುತ್ತೇನೆ. ವಸ್ತುಸ್ಥಿತಿಯೊಂದರ ಬೆನ್ನುಬಿದ್ದು ಹೊರಟು ಧ್ಯಾನದ ಉತ್ತುಂಗದ ಸ್ಥಿತಿಯಲ್ಲಿ ದೊರೆತ ಅರಿವಿನ ಸಾಕ್ಷಾತ್ಕಾರದ ಫಲವೇ ಕಥನ ಎಂಬುದು ನನ್ನ ನಂಬಿಕೆ.

 ಕವಿತೆ, ಕತೆ ಹುಟ್ಟುವ ಕ್ಷಣ ಯಾವುದು?

ಆನಂದವಾಗಲಿ, ವಿಸ್ಮಯವಾಗಲಿ, ದುಃಖವಾಗಲಿ ಅಥವಾ ಶೋಧನೆಯ ಹಂಬಲವೇ ಇರಲಿ ಯಾವ ಒಂದು ಸಂಗತಿ ಮನಸ್ಸನ್ನು ತಟ್ಟುತ್ತದೋ; ಬಹಳ ದಿನ ಕಾಡುತ್ತದೋ, ಚಿಂತನೆ-ಜಿಜ್ಞಾಸೆಗೆ ಹಚ್ಚುತ್ತದೋ ಅದು ಕತೆ-ಕವಿತೆಯ ಸ್ವರೂಪದಲ್ಲಿ ರೂಪಗೊಂಡು ವ್ಯಕ್ತವಾಗುತ್ತದೆ. ಅದಕ್ಕೆ ಇಂತಹದೇ ಸಮಯ ಎಂಬುದು ಇಲ್ಲ. ಮನಸ್ಸಿಗೆ ಹತ್ತಿರವಾದದ್ದು, ನಾನೇ ಅರಿಯದ ನನ್ನ ಪ್ರಜ್ಞೆ ಯೊಂದನ್ನು ಜಾಗೃತಗೊಳಿಸುವ ಸಂಗತಿ, ಘಟನೆ, ವ್ಯಕ್ತಿ ಕತೆ ಹುಟ್ಟುವ ಕ್ಷಣಕ್ಕೆ ಮೂಲ.

 ನಿಮ್ಮ ಕವಿತೆ, ಕತೆಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು? ಪದೇ ಪದೇ ಕಾಡುವ ವಿಷಯ ಯಾವುದು?

ಮನುಷ್ಯ ಸಂಬಂಧಗಳ ನಿಗೂಢ ನೆಲೆಗಳನ್ನು ಶೋಧಿಸುವುದು, ಆ ಮೂಲಕ ವಾಸ್ತವಿಕ ನೆಲೆಗಟ್ಟಿನಲ್ಲಿ ಬದುಕನ್ನು ನೋಡುವುದು ನನ್ನ ಹಲವು ಕತೆಗಳ ಗುಣ ಅಥವಾ ವಸ್ತು ಎನ್ನಬಹುದು. ನಾವು ಪರಂಪರೆಯನ್ನು ಒಪ್ಪಿಕೊಂಡು ಯಾವುದನ್ನು ಬದುಕು ಎಂದು ಕೊಂಡು ಕಣ್ಣುಮುಚ್ಚಿ ಜೀವಿಸುತ್ತಿದ್ದೇವೊ ಅದನ್ನು ಮೀರಿದ ಒಂದು ಬದುಕಿನ ಆಯಾಮವನ್ನು ಅನ್ವೇಷಿಸುವ, ದರ್ಶಿಸುವ ಕ್ರಮ ನನ್ನ ಕತೆಗಳಲ್ಲಿ ಹೆಚ್ಚಾಗಿ ವ್ಯಕ್ತವಾಗಿದೆ ಎಂದು ಭಾವಿಸಿದ್ದೇನೆ.

ನಮ್ಮ ದೇಶದ ಜನರಿಗೆ ಅಂಟಿಕೊಂಡಿರುವ ಕರಾಳ ಮೌಢ್ಯ ಎಂಬುದು ೨೧ನೇ ಶತಮಾನದಲ್ಲೂ ವಿಮೋಚನೆಯಾಗಿಲ್ಲವಲ್ಲ ಎಂಬುದು ಮತ್ತು ಈ ಜನರು ತಮ್ಮ ಜೀವಕ್ಕಿಂತಲೂ ಹೆಚ್ಚಾಗಿ ಅಂಧಶ್ರದ್ಧೆಯಲ್ಲಿ ನಂಬಿಕೆ ಇಟ್ಟಿರುವುದು ನನಗೆ ಹೆಚ್ಚು ಕಾಡುವ ವಿಷಯ. ನಮ್ಮ ದೇಶದಲ್ಲಿ ಇದಕ್ಕೆ ಕೊನೆಯೇ ಇಲ್ಲವೇನೊ!?

ಕವಿತೆ, ಕತೆಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ?

ಸಾಮಾನ್ಯವಾಗಿ ಎಲ್ಲ ಲೇಖಕರ ಬರವಣಿಗೆಯಲ್ಲಿ ಬಾಲ್ಯ ಮತ್ತು ಹರೆಯದ ಕಾಲಘಟ್ಟದ ಸಗತಿಗಳು ವ್ಯಕ್ತವಾಗಿರುತ್ತವೆ. ಬಾಲ್ಯವೆಂಬುದು ನಮ್ಮ ಬದುಕಿನ ಅಡಿಪಾಯವಿದ್ದಂತೆ ಹಾಗಾಗಿ ವ್ಯಕ್ತಿ ಎಷ್ಟೇ ಪ್ರಬುದ್ಧನಾದರೂ ಬಾಲ್ಯವನ್ನು ಮರೆಯಲಾರ. ಅದರಂತೆ ಹರೆಯದ ಕಾಲಘಟ್ಟವನ್ನು ಒಂದು ಭಾವಗೀತೆಗೆ ಹೋಲಿಸಬಹುದು. ಅಲ್ಲಿ ವಾಸ್ತಕ್ಕಿಂತ ಹೆಚ್ಚು ಕನಸುಗಳೇ ಇರುತ್ತವೆ. ಹಾಗಾಗಿ ಕತೆ ಮತ್ತು ಕವಿತೆಗಳಲ್ಲಿ ಇವೆರಡೂ ಹಂತಗಳನ್ನು ದಾಟಿ ನಾನೀಗ ಬದುಕು, ಸಮಾಜ ಮತ್ತು ಜಗತ್ತನ್ನು ಒಂದು ಪ್ರಬುದ್ಧ ನೋಟದಿಂದ ನೋಡುವ ಹಂತಕ್ಕೆ ಬಂದಿದ್ದೇನೆ ಅನಿಸುತ್ತದೆ. ಹಾಗಾಗಿ ಹಿಂದೆ ಬರೆದದ್ದೆಲ್ಲ ಅಪೂರ್ಣ ಅನಿಸುತ್ತದೆ. ಇನ್ನುಮುಂದೆ ಬರೆಯುವುದೆಲ್ಲ ಇನ್ನೂ ಪಕ್ವವಾಗಿರಬೇಕು ಅನ್ನಿಸುತ್ತದೆ.

ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು?

ಪ್ರಸ್ತುತ ರಾಕೀಜಯ ಸನ್ನಿವೇಶಗಳ ಬಗೆಗೆ ಮಾತನಾಡಿ ನಮ್ಮ ನೈತಿಕತೆ, ಬದ್ಧತೆಯನ್ನು ಮಲಿನ ಮಾಡಿಕೊಳ್ಳುವುದು ಬೇಡ ಅನ್ನಿಸುತ್ತದೆ. ನೈತಿಕತೆ ಮತ್ತು ಬದ್ಧತೆಯ ವಿಚಾರದಲ್ಲಿ ಇಂದು ರಾಜಕೀಯ ಆ ಮಟ್ಟಕ್ಕೆ ಅಧಃಪತನಗೊಂಡಿದೆ. ದೇಶದಲ್ಲಿ ಇಂದು ಪಕ್ಷ-ಸಿದ್ಧಾಂತಗಳು ಎಂಬುವವೇ ಅಸ್ತಿತ್ವದಲ್ಲಿ ಇಲ್ಲ. ಅಧಿಕಾರ ಸಿಗುವುದಾದರೆ ಯಾವ ವ್ಯಕ್ತಿಯೇ ಆದರೂ ಯಾವುದೇ ಗುಂಪು-ವಿಷಯಗಳೊಂದಿಗೆ ರಾಜಿಯಾಗಬಲ್ಲ. ತನ್ನ ಬದ್ಧತೆಯನ್ನು ತಾನೇ ತುಳಿದು ಅದರ ಮೇಲೆ ಜನರ ಹಿತವನ್ನು ಸಮಾಧಿ ಮಾಡಬಲ್ಲ. ಒಟ್ಟಾರೆ, ಹಣ ಬಲ, ಪ್ರಭಾವ, ಶಕ್ತಿ ಇದ್ದವನೇ ಜನಪ್ರತಿನಿಧಿ ಎನ್ನುವಂತಹ ನೀಚ ಮಟ್ಟಕ್ಕೆ ಈ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಾಂತರಗೊಂಡಿದೆ. ಜನ ಇದನ್ನು ಅರ್ಥ ಮಾಡಿಕೊಂಡು ಜಾಗೃತರಾಗುವವರೆಗೆ ಇದಕ್ಕೆ ಕೊನೆ ಇಲ್ಲ.

 ಧರ್ಮ, ದೇವರು ವಿಷಯದಲ್ಲಿ ನಿಮ್ಮ ನಿಲುವೇನು?

ನನ್ನ ಪ್ರಕಾರ ಮನುಷ್ಯ ಮಾನವೀಯ ಸಂಸ್ಕಾರಗಳನ್ನು ಅಳವಡಿಸಿಕೊಂಡು ಜೀವಿಸುವುದೇ ಧರ್ಮ. ಧರ್ಮದ ವಿಚಾರದಲ್ಲಿ ಇದನ್ನು ಮೀರಿದ ಇತರ ಸಂಗತಿಗಳೆಲ್ಲ ವ್ಯವಹಾರ-ವ್ಯಾಪಾರಗಳಷ್ಟೇ. ಸಮಾಜದಲ್ಲಿ ಇಂದು ಧರ್ಮದ ವಿಷಯ ಬಂಡವಾಳವಾಗಿ ಮಾರ್ಪಟ್ಟಿದೆ. ತಮ್ಮ ಧರ್ಮವೇ ಹೆಚ್ಚು, ತಮ್ಮ ಧರ್ಮವೇ ಉಳಿಯಬೇಕು- ಬೆಳೆಯಬೇಕು, ವ್ಯಾಪಿಸಬೇಕು ಎಂಬ ಕ್ಷುದ್ರ ಉದ್ದೇಶಗಳು ಧರ್ಮದ ಅರ್ಥವನ್ನು ವಿರೂಪಗೊಳಿಸಿವೆ. ಅದ್ದರಿಂದ ನಾನು ಹೇಳುವುದೇನೆಂದರೆ ಸಮಾಜದಲ್ಲಿ ಸಮದಾಯಗಳು ಸಾವಿರಾರು ಇದ್ದರೂ ಧರ್ಮಕ್ಕೆ ಇರುವ ಅರ್ಥ ಒಂದೇ. ಎಲ್ಲ ಸಮುದಾಯಗಳು ಅದನ್ನು ಅರಿಯಬೇಕಿದೆ.

ಸೃಷ್ಟಿಯಲ್ಲಿ ಧರ್ಮ ಮತ್ತು ದೇವರ ಪರಿಕಲ್ಪನೆಗಳು ಸಮನ್ವಯವಾದಂತಹವು. ನಾನು ಯಾವುದನ್ನು ಮಾನವೀಯ ಸಂಸ್ಕಾರ ಎಂದು ಹೇಳಿದೆನೊ ಮನುಷ್ಯನಲ್ಲಿ ಅದನ್ನು ಜಾಗೃತಗೊಳಿಸುವ ಪ್ರಜ್ಞೆಯೇ ದೇವರು. ಅದಕ್ಕೆ ಮೂರ್ತವಾದ ಆಕೃತಿ ಎಂಬುದು ಇಲ್ಲ. ಅದೊಂದು ಮನುಷ್ಯನಲ್ಲಿ ಇರಬೇಕಾದ ಸಕಾರಾತ್ಮಕ ಭಾವವಷ್ಟೇ. ಹಾಗಾಗಿ ದೇವರು ಇದ್ದಾನೋ-ಇಲ್ಲವೋ ಎಂಬುದರ ಕುರಿತು ಮಾತನಾಡುವ ಮೊದಲು `ದೇವರು ಎಂದರೆ ಏನು ಎಂಬುದನ್ನು ವಾಸ್ತವವಾಗಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ದೇವರು ಎಂಬ ಇಂತಹ ಶ್ರೇಷ್ಠ ಭಾವ ಇಂದು ಸಮಾಜದಲ್ಲಿ ಕೆಲವರಿಂದ ವ್ಯಾಪಾರೀಕರಣಗೊಂಡು, ರಾಜಕೀಯಕರಣಗೊಂಡು ಇಡೀ ಸಮಾಜವನ್ನೇ ಅಂಧಶ್ರದ್ಧೆಯ ಕೂಪಕ್ಕೆ ತಳ್ಳುವ ಚಟುವಟಿಕೆಯಾಗಿ ಬೆಳೆದಿದೆ. ಅದು ಈ ದೇಶದ ದುರಂತವೆಂದೇ ಹೇಳಬೇಕು. ತಮ್ಮ ತಮ್ಮ ಅನುಕೂಲಕ್ಕೆ ತಕ್ಕಂತಹ ದೇವರ ರೂಪಗಳನ್ನು ಸೃಷ್ಟಿಸಿಕೊಂಡು ಜನ ಆ ರೂಪಕ್ಕೆ ಹಾಲು-ತುಪ್ಪ, ಹಣ ಸುರಿದು, ಹಸಿದ ಹೊಟ್ಟೆಗಳನ್ನು ಹೊರಳಿಯೂ ನೋಡದಿರುವುದನ್ನು ಕಂಡರೆ `ಅಯ್ಯೋ ಅನಿಸುತ್ತದೆ. ಈ ದೇಶದಲ್ಲಿ ಬುದ್ಧ ಬಂದು ಹೋದ, ಬಸವಣ್ಣ ಬಂದು ಹೋದ, ಅಂಬೇಡ್ಕರ್ ಅವರಂತಹ ಮಹಾ ಜ್ಞಾನಿ ಬಂದು ಹೋದರೂ,  ಕ್ರೂರ ಮೌಢ್ಯದಿಂದ ಹೊರ ಬರದ ಈ ಜನರನ್ನು ಕಂಡಾಗಲೆಲ್ಲ ನನಗೆ ಆಕ್ರೋಶ, ಕೋಪ, ಕಡೆಗೆ ವಿಷಾದ ಮೂಡುತ್ತದೆ.

 ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ?

ಪ್ರಸ್ತುತ ಸಾಂಸ್ಕೃತಿಕ ಕ್ಷೇತ್ರ ತನ್ನ ಧ್ಯೇಯೋದ್ದೇಶಗಳನ್ನು ಕಳೆದುಕೊಂಡು ವ್ಯಾಪಾರಕ್ಕೆ ತಿರುಗಿದೆ ಎಂದು ಹೇಳಬಹುದು. ನಾವು ಯಾವುದನ್ನು ಸಂಸ್ಕೃತಿ ಎಂದು ಅಭಿಮಾನದಿಂದ ಪೋಷಿಸುತ್ತ ಬಂದಿದ್ದೇವೆಯೋ ಇಂದು ಅದು ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ. ಕಲೆ-ಸಾಹಿತ್ಯವೂ ಇದಕ್ಕೆ ಹೊರತಾಗಿಲ್ಲ. ಅದಕ್ಕೆ ಕಾರಣ ಜಾಗತೀಕರಣ, ತಂತ್ರಜ್ಞಾನ ಬೆಳವಣಿಗೆ ಮತ್ತು ರಾಜಕೀಯ ಶಕ್ತಿಗಳು. ಕಲೆ, ಸಾಹಿತ್ಯ, ಸಂಸ್ಕೃತಿ ಎಂಬವು ಆಯಾ ದೇಶದ ಸೌಂದರ್ಯದ ದ್ಯೋತಕವಾಗಿರುತ್ತವೆ. ಅವು ವಿರೂಪಗೊಂಡರೆ ದೇಶದ ಸೌಂದರ್ಯವೇ ವಿರೂಪಗೊಂಡತೆ. ಇವನ್ನು ಪೋಷಿಸಬೇಕಾದ ಸರ್ಕಾರಗಳು ಈ ವಿಚಾರವನ್ನು ನಿರ್ಲಕ್ಷಿಸುತ್ತಿವೆ. ಸಮಾಜದಲ್ಲಿ ಕ್ರೌರ್ಯ ಬೆಳೆಯಲು ಇದೂ ಒಂದು ಕಾರಣವಾಗಿರಬಹುದು.

ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುತ್ತೀರಿ?

ರಾಜಕಾರಣವೆಂಬುದು ಇಂದು ಎಲ್ಲ ಕ್ಷೇತ್ರದಲ್ಲಿ ಇರುವಂತಹದೆ. ರಾಜಕಾರಣ ಎಲ್ಲ ಕ್ಷೇತ್ರಗಳನ್ನು ವ್ಯಾಪಿಸಿಕೊಂಡಿರುವುದರಿಂದಲೇ ಸತ್ಯ ಮತ್ತು ಮೌಲ್ಯಗಳು ನೆಲೆ ಕಳೆದುಕೊಂಡಿವೆ. ಅರ್ಹತೆ ಮತ್ತು ಪ್ರತಿಭೆ ಎಂಬುದು ಮೂಲೆಗುಂಪಾಗಿದೆ. ಆದ್ದರಿಂದ ರಾಜಕಾರಣದಲ್ಲಿ ಸಾಹಿತ್ಯ-ಸಂಸ್ಕೃತಿ ಇರಬೇಕೆ ಹೊರತು ಸಾಹಿತ್ಯ-ಸಂಸ್ಕೃತಿಯಲ್ಲಿ ರಾಜಕಾರಣವಿರಬಾರದು. ಇಂದು ಸ್ಥಾನಮಾನ, ಅಧಿಕಾರ, ಪ್ರಶಸ್ತಿ, ಸನ್ಮಾನಗಳ ವಿಚಾದರಲ್ಲಿ ಕೆಲವು ಸಾಹಿತಿಗಳು ರಾಜಕಾರಣಿಗಳನ್ನೂ ಮೀರಿಸುವಂತೆ ರಾಜಕೀಯ ಮಾಡುತ್ತಿರುವುದನ್ನು ನೋಡಿದರೆ ಸಾಹಿತ್ಯದ ಮೌಲ್ಯ ಯಾವ ಮಟ್ಟಕ್ಕೆ ಇಳಿದಿದೆ ಎಂಬುದು ಅರ್ಥವಾಗುತ್ತದೆ. ಸಾಹಿತ್ಯವೆಂಬುದು ಜ್ಞಾನ-ಅರಿವಿನ ಮಾರ್ಗವೇ ಹೊರತು ಸ್ಥಾನಮಾನ, ಅಧಿಕಾರ, ಪ್ರಶಸ್ತಿ, ಸನ್ಮಾನಗಳ ಹಪಾಹಪಿತನವಲ್ಲ. ಈ ಎಲ್ಲದರ ನಡುವೆಯೂ ಪ್ರಾಮಾಣಿಕ ಸಾಹಿತ್ಯ, ಸಾಹಿತಿಗಳು ನೇಪಥ್ಯದಲ್ಲೇ ಇದ್ದಾರೆ.

 ಈ ದೇಶದ ಚಲನೆಯ ಬಗ್ಗೆ ನಿಮ್ಮ ನಮ್ಮ ಮನಸು ಏನು ಹೇಳುತ್ತಿದೆ?

ಈ ವಿಷಯವಾಗಿ ನಾನು ಮಾತನಾಡುವ ಮೊದಲು ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನನಗೆ ಯಾವುದೇ ರಾಜಕೀಯ ಪಕ್ಷಗಳಲ್ಲಿ ನಂಬಿಕೆ ಇಲ್ಲ. ಯಾಕೆಂದರೆ ಎಲ್ಲ ಪಕ್ಷಗಳಿಗೂ ಅಧಿಕಾರ ಮುಖ್ಯ ಹೊರತೂ ಜನರ ಹಿತವಲ್ಲ. ಮಾನವೀಯ ಗುಣಗಳನ್ನು ಪ್ರತಿಪಾದಿಸುವ ರೀತಿ-ಸಿದ್ಧಾಂತಗಳಲ್ಲಿ ನಂಬಿಕೆ ಇದೆ. ಅದು ಎಲ್ಲಿದ್ದರೂ ಸ್ವೀಕಾರರ್ಹ. ಚುನಾಯಿತ ಯಾವುದೇ ವ್ಯಕ್ತಿ, ಮಂತ್ರಿ-ಸರ್ಕಾರವೇ ಇರಲಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆಯಬೇಕಾಗುತ್ತದೆ. ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ, ತಮ್ಮದೇ ಶಾಸನ ಸೃಷ್ಟಿಸುವ ಮೂಲಕ ದೇಶದ ಆಂತರಿಕ ವ್ಯವಸ್ಥೆಯನ್ನೇ ಪಲ್ಲಟಗೊಳಿಸಬಹುದಾದ ಹುನ್ನಾರಗಳನ್ನು ನಾನು ಒಪ್ಪಲಾರೆ. ಒಂದು ರಾಷ್ಟವೆಂದರೆ ಒಂದು ಸಮುದಾಯ, ಧರ್ಮ ಕೇಂದ್ರಿತ ಭೂಪ್ರದೇಶವಲ್ಲ. ಸರ್ವ ಸಮುದಾಯ, ಧರ್ಮ ಕೇಂದ್ರಿತ ಭಾರತದಂತಹ ರಾಷ್ಟ್ರವನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ರೂಪಾಂತರಗೊಳಿಸುವ ಹುನ್ನಾರ ಸಲ್ಲದು. ದೇಶವನ್ನು ಮುನ್ನಡೆಸುವವರು ಇದನ್ನು ಅರಿಯಬೇಕು. ಓಟ್ ಬ್ಯಾಂಕ್‌ಗಾಗಿ ಸಮುದಾಯ, ಧರ್ಮದ ವಿಷಯಗಳನ್ನು ಅಸ್ತçವಾಗಿಸಿಕೊಂಡು ಜನರ ಮನಸ್ಸು ಒಡೆಯುವುದು ಯಾವ ಪಕ್ಷ-ಸಿದ್ಧಾಂತದ ಮೌಲ್ಯ?

 ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು?

ನನ್ನ ಅರಿವಿನಲ್ಲಿ ಹೇಳುವುದಾದರೆ ಸಾಹಿತ್ಯವೆಂಬುದು ಅಂತರಂಗದಲ್ಲಿ ಬೆಳಗುವ ಜ್ಯೋತಿ. ಅದಕ್ಕೆ ಯಾವುದೇ ತರಹದ ಆಡಂಬರ, ವೈಭವ, ಮೆರವಣಿಗೆಗಳ ಅಗತ್ಯವಿಲ್ಲ. ಬರವಣಿಗೆ ಎಂಬುದು ಆ ಜ್ಯೋತಿಯನ್ನು ಹೊತ್ತಿಸಿದರೆ, ಓದು ಎಂಬುದು ಅದನ್ನು ನಿರಂತರವಾಗಿ ಬೆಳಗಿಸುತ್ತದೆ. ಸಾವು ಕಣ್ಣೆದುರು ಬಂದರೂ ಈ ಅರಿವಿನ ಆನಂದ ವೆಂಬುದು ಅದರ ಭಯವನ್ನು ಮರೆಸುತ್ತದೆ. ಹಾಗಾಗಿ ನಾನು ಸಾಹಿತ್ಯದ ಈ ಪ್ರಕ್ರಿಯೆಯನ್ನು ನನ್ನ ಜೀವಿತಾವಧಿಯವರೆಗೂ ಜಾಗೃತವಾಗಿಟ್ಟುಕೊಳ್ಳಲು ಬಯಸುತ್ತೇನೆ. ಇಂದಿಗಿಂತ ನಾಳೆ ಇನ್ನೂ ಚೆನ್ನಾಗಿ ಬರೆಯಬೇಕು ಎಂಬ ಹಂಬಲದಲ್ಲಿರುತ್ತೇನೆ. ಇದು ಆತ್ಮೋದ್ಧಾರದ ಮಾರ್ಗ! ವ್ಯಾಪಾರವಾಗದೇ ಉಳಿಯಬೇಕು ಎಂಬುದು ನನ್ನ ಆಶಯ. ಆದರೆ ಲೇಖಕರು ಬಡವರಾಗಿಯೇ ಉಳಿದು, ಪ್ರಕಾಶಕರು ಮಾತ್ರ ಶ್ರೀಮಂತರಾಗುತ್ತಿರುವುದು ವಿಪರ್ಯಾಸ.

ಕನ್ನಡ ಹಾಗೂ ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ, ಸಾಹಿತಿ ಯಾರು?

ಬೇರೆ ಬೇರೆ ಲೇಖಕರು ಬೇರೆ ಬೇರೆ ಕಾರಣಗಳಿಗೆ ಇಷ್ಟವಾಗುತ್ತಾರೆ. ಹಲವರಲ್ಲಿ ಹಲವು ಬಗೆಯ ವೈವಿಧ್ಯವಾದ ಗುಣಗಳು ಇಷ್ಟವಾಗಬಹುದು. ಆದಾಗ್ಯೂ ಕನ್ನಡದಲ್ಲಿ ಪೂರ್ಣಚಂದ್ರ ತೇಜಸ್ವಿ, ಶಿವರಾಮ ಕಾರಂತರು ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾನ್ಜ್ ಕಾಫ್ಕಾ, ಆಲ್ಬರ್ಟ್ ಕಮೂ ಅವರು ನನಗೆ ಹೆಚ್ಚು ಇಷ್ಟವಾಗುವ ಲೇಖಕರು. ಯಾವುದೇ ವರ್ಗಕ್ಕೂ ಸೇರಬಹುದಾದ ವಿಶಿಷ್ಟ ಪ್ರಬೇಧದ ಬರವಣಿಗೆ ಮೂಲಕ ತೇಜಸ್ವಿ ಇಷ್ಟವಾದರೆ, ಕಾರಂತರು ಪ್ರಖರ ವೈಚಾರಿಕ ನಿಲುವಿನಿಂದ ಇಷ್ಟವಾಗುತ್ತಾರೆ. `ಮೆಟಮಾರ್ಫಸಿಸ್ ನಂತಹ ಬೆರಗು ಮೂಡಿಸುವಂತಹ ಅಸಂಗತ ಕಾದಂಬರಿ ಮೂಲಕ ಪ್ರಾನ್ಜ್ ಕಾಫ್ಕಾ ಇಷ್ಟವಾಗುತ್ತಾನೆ.

 ಈಚೆಗೆ ಓದಿದ ಕೃತಿಗಳಾವುವು?

ಟಿ.ಪಿ. ಅಶೋಕ ಅವರ  ಕಥನ ಭಾರತಿ, ಅಮರೇಶ ನುಗಡೋಣಿ ಅವರ  ದಂದುಗ,  ವಸುಧೇಂದ್ರ ಅವರ  ತೇಜೋ ತುಂಗಭದ್ರಾ ಮತ್ತು ಇತರ ಕೃತಿಗಳು.

 ನಿಮಗೆ ಇಷ್ಟವಾದ ಕೆಲಸ ಯಾವುದು?

ಓದು, ಬರೆವಣಿಗೆಯಂತೆ ಪ್ರವಾಸ ಮತ್ತು ಕಾಡಿನಲ್ಲಿ ಚಾರಣ ಮಾಡುವುದು ಕೂಡ ಇಷ್ಟ. ಕಾಂಕ್ರಿಟ್ ಕಾಡಿನಿಂದ ದೂರ ಹೋಗಿ ನಿಸರ್ಗದ ಮಡಿಲಲ್ಲಿ ಬೆರೆಯುವುದು ಎಂದಿಗೂ ನನಗೆ ಇಷ್ಟದ ಕೆಲಸ. ಅದೇ ರೀತಿ ಸಂಗೀತ ಆಲಿಸುವುದುವುದು ಕೂಡ.

 ನಿಮಗೆ ಇಷ್ಟವಾದ ಸ್ಥಳ ಯಾವುದು?

ಹಲವು ಕಾರಣಕ್ಕೆ ಹಲವು ಸ್ಥಳಗಳು ಇಷ್ಟವಾಗುತ್ತವೆ. ಆದರೂ ಮೂಲದಲ್ಲಿ ನಾನು ಲಲಿತಕಲಾ ಶಿಕ್ಷಣದ ವಿದ್ಯಾರ್ಥಿಯಾಗಿದ್ದ ಹಿನ್ನೆಲೆಯಲ್ಲೋ ಏನೋ ಹಂಪಿಯ ಪರಿಸರ ನನಗೆ ಬಹಳ ಇಷ್ಟವಾಗುತ್ತದೆ. ಅಲ್ಲಿಗೆ ಹೋದಾಗಲೆಲ್ಲ ನಾನು ಭಾವಪರವಶನಾಗುತ್ತೇನೆ. ಒಂದೊಂದು ಕಲ್ಲಿನೊಂದಿಗೂ ಮಾತನಾಡುತ್ತೇನೆನೊ ಎನ್ನುವ ಭಾವ ಬರುತ್ತದೆ. ನಮ್ಮ ಬುದ್ಧಿ ಭಾವಕ್ಕೆ ನಿಲುಕದ ಕಾವ್ಯವೆಂದರೆ ಇದೇ ಅಲ್ಲವೆ!?

 ನಿಮ್ಮ ಪ್ರೀತಿಯ, ತುಂಬಾ ಇಷ್ಟ ಪಡುವ ಸಿನಿಮಾ ಯಾವುದು?

ಇಷ್ಟಪಡುವ ಚಿತ್ರಗಳು ಹಲವಾರು ಇವೆ. ಉತ್ತಮ ಕತೆಯುಳ್ಳ, ಸಹಜ ಕಲಾತ್ಮಕ ಚಿತ್ರಗಳನ್ನು ನಾನು ಹೆಚ್ಚು ಇಷ್ಟಪಡುತ್ತೇನೆ. ನನ್ನ ದೃಷ್ಟಿಯಲ್ಲಿ ಅಮೂರ್ತ ರೂಪದಲ್ಲಿರುವ ಓದುವ ಕತೆಯ ಮೂರ್ತ ಸ್ವರೂಪವೇ ಚಲನಚಿತ್ರ. ಹಾಗಾಗಿ ಚಲನಚಿತ್ರವೂ ಸಾಹಿತ್ಯದ ಇನ್ನೊಂದು ರೂಪ ಎಂದೇ ನಾನು ಭಾವಿಸುತ್ತೇನೆ. ಟಿ.ಎಸ್. ನಾಗಾಭರಣ ನಿರ್ದೇಶನದ `ಸಂತ ಶಿಸುನಾಳ ಶರೀಫ ಚಿತ್ರವನ್ನು ಕೆಲವು ಕಾರಣಗಳಿಂದ ಆಗಾಗ ಮತ್ತೆ ಮತ್ತೆ ನೋಡುತ್ತಿರುತ್ತೇನೆ. ಇತ್ತೀಚಿನ ದಿನಗಳಲ್ಲಿ ನನ್ನನ್ನು ಹೆಚ್ಚು ಕಾಡಿದ ಚಿತ್ರವೆಂದರೆ ಮಂಸೋರೆ ನಿದೇರ್ಶನದ ಹರಿವು.

 ನೀವು ಮರೆಯಲಾರದ ಘಟನೆ ಯಾವುದು?

ನಾನು ಬಾಲ್ಯದಲ್ಲಿ ಅನುಭವಿಸಿದ ಬಡತನ, ಅನಾಥ ಪ್ರಜ್ಞೆ. ಒಂದೊಂದು ದಿನ, ಆ ದಿನದ ಘಟನೆಗಳನ್ನು ನೆನೆದರೆ ಈಗಲೂ ಕಣ್ಣುಗಳು ಒದ್ದೆಯಾಗುತ್ತವೆ. ಬಡತನವೆಂಬುದು ಅಷ್ಟೇಕೆ ಕ್ರೂರ!? ಎಂಬ ಪ್ರಶ್ನೆಗೆ ಈಗಲೂ ನನ್ನಲ್ಲಿ ಉತ್ತರವಿಲ್ಲ. ಅದು ಬರೆಯಲಾಗದ ಮಹಾಕ್ಯಾವ! ಅರ್ಥವಾಗದ ಯಾತನೆಯ ಕಥೆ! ಅದನ್ನು ಒಡಲಲ್ಲಿಟ್ಟುಕೊಂಡು ಇಂದು ಹಸನ್ಮುಖಿಯಾಗಿದ್ದೇನೆ.

 ನಿಮಗೆ ಕುಮಾರ್ ಬೇಂದ್ರೆ ಎಂಬ ಹೆಸರು ಹೇಗೆ?

 ಇದರಲ್ಲಿ ವಿಶೇಷವೆನಿಲ್ಲ. ನನ್ನ ಪೋಷಕರು ನನಗೆ ಇಟ್ಟಿರುವ ಹೆಸರು ಕುಮಾರ. ಕುಟುಂಬದ ಹೆಸರು ಬೇಂದ್ರೆ. ಹಾಗಾಗಿ ಕುಮಾರ ಬೇಂದ್ರೆ ಎಂಬ ಹೆಸರು. ಇದೊಂದು ರೀತಿ ಕಾಕತಾಳಿಯದ ಹಾಗೆ. ದ.ರಾ. ಬೇಂದ್ರೆ ಅವರಿಗೂ ನಮ್ಮ ಕುಟುಂಬಕ್ಕೂ ಯಾವುದೇ ಕೌಟುಂಬಿಕ ಸಂಬಂಧವಿಲ್ಲ. ನನ್ನ ಹೆಸರು ಕೇಳಿದ ಕೂಡಲೇ ಯಾರೇ ಆಗಲಿ ಮೊದಲು ಕೇಳುವುದು, ‘ಬೇಂದ್ರೆ ಅವರು ನಿಮಗೆ ಏನಾಗಬೇಕು?’ ಎಂದು. ಆ ಬೇಂದ್ರೆ ಅವರ ಎದುರು ನಾನು ತೃಣ ಮಾತ್ರ.

**********************************************

ನಾಗರಾಜ ಹರಪನಹಳ್ಳಿ

ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Leave a Reply

Back To Top