ಕೂರಿಗಿ ತಾಳು

ಪುಸ್ತಕ ಪರಿಚಯ

ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವಾ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು.ಕಾವ್ಯವೆನ್ನುವುದು ಹುಡುಕಾಟವಲ್ಲ, ಅದೊಂದು ಮಿಡುಕಾಟ. ಕಾವ್ಯದಲ್ಲಿ ಮನರಂಜನೆ, ಶ್ರೀಮಂತಿಕೆ ಮತ್ತು ಉದಾತ್ತತೆ ಇರಬೇಕು. ಅದನ್ನು ಓದಿದವರು ಮೊದಲಿಗಿಂತ ಬೇರೆಯದ್ದೇ ವ್ಯಕ್ತಿತ್ವ ಹೊಂದಿದವರಾಗಿರಬೇಕು. ಅಂತಹ   ಕಾವ್ಯ ಶ್ರೇಷ್ಠ ಕಾವ್ಯ ಎನಿಸಿಕೊಳ್ಳುತ್ತದೆ . 

ಕಾವ್ಯದಲ್ಲಿ ಭಾವದ ಅತೀ ಸಾಮಾನ್ಯತೆ ಇದ್ದರೆ ಅದು ಕಾವ್ಯದ ದೋಷ. ಇದರ ಸೀಮೋಲ್ಲಂಘನ ಮಾಡಬೇಕು. ಅಂತೆಯೇ ಕಾವ್ಯದಲ್ಲಿ ಅಲಂಕಾರ ಅತಿಯಾದರೆ ಅದೂ ಕೂಡ ದೋಷ. ಧ್ವನಿ ಅತಿಯಾದರೆ ಕಾವ್ಯದ ಪ್ರಭಾವ ಕುಗ್ಗುತ್ತದೆ. ಈ ವಾಸ್ತವತೆಯ ಅರಿವು ಪ್ರತಿಯೊಬ್ಬ ಕವಿಗೂ ಇರಲೇ ಬೇಕಾಗುತ್ತದೆ.


               ಅತಿಯಾದ ಕಾವ್ಯಪ್ರೀತಿ ,ಭೂಮಿ ಪ್ರೀತಿ, ಮನುಷ್ಯ ಪ್ರೀತಿ ಹೊಂದಿರುವ ರಾಮಣ್ಣ  ಅಲ್ಮರ್ಸಿಕೇರಿಯವರು’ಕೂರಿಗೆ ತಾಳು’ ಅನ್ನುವ ವಿಶಿಷ್ಟವಾದ ಹಾಗು ಅಪ್ಪಟ ಗ್ರಾಮ್ಯ ಭಾಷೆಯ ಸೊಗಡು ಇರುವ ಕಾವ್ಯ ಸಂಕಲನ ಹೊರತಂದಿದ್ದಾರೆ. ಸಂಕಲನದ ಹೆಸರೇ ಓದುಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಡಿ.ರಾಮಣ್ಣ ಅಲ್ಮರ್ಸಿಕೇರಿಯವರ ಈ ಸಂಕಲನ ಅವರ ಅನುಭವ, ಕೃಷಿ ಬದುಕಿನ ಒಡನಾಟ, ತನ್ನೂರಿನ ಅದಮ್ಯ ಪ್ರೇಮ,ಭವಬಂಧನದ ರೀತಿನೀತಿಗಳನ್ನು ತಮ್ಮ ಕವಿತೆಗಳಲ್ಲಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.
ಕೊಯ್ದು,ಕೊರೆದು,ಕೂಡಿಟ್ಟು
ಒಕ್ಕಲಿಮಾಡಿ,ಸುಗ್ಗಿ ಮಾಡುತ
ಹಂತಿ ಹಾಡು ಹಾಡಿ
ಬಂಡಿಗೆ ಬಲವಾದ ಹೋರಿ ಹೂಡಿ
ನೂರು ಚೀಲದ ಹಗೇವು ತುಂಬಿಸಿ
ಗರ್ವದಿಂದ ಬೀಗುತ್ತಿದ್ದರು ನನ್ನೂರಿನ ಜನರು”ಅಂತ ತನ್ನೂರಿನ ಜನರ ಬಗ್ಗೆ ಅಭಿಮಾನದಿಂದ ಕವಿ ಹೇಳಿದ್ದಾರೆ.


ಜನ್ಮಕ್ಕೆ ಕಾರಣನಾದ ಅಪ್ಪನೆಂದರೆ ಎಲ್ಲಾ ಮಕ್ಕಳಿಗೂ ಅಪ್ಯಾಯಮಾನ. ತೋಳುಗಳಲ್ಲಿ ಅಪ್ಪಿ ಬದುಕಿನಲಿ ಭದ್ರತೆಯ ಭಾವ ಬಿಂಬಿಸಿ, ಕೈ ಹಿಡಿದು ತಪ್ಪು ಹೆಜ್ಜೆಯ ಜೊತೆ ಹೆಜ್ಜೆ ಬೆರೆಸಿ ಹೊರ ಜಗತ್ತಿಗೆ ತಮ್ಮನ್ನು ಪರಿಚಯಿಸುವ ಅಪ್ಪನೆಂದರೆ ಪುಳಕ, ಅಪ್ಪನೆಂದರೆ ಜಗದ ಸಿರಿಯನ್ನೆಲ್ಲ ಬೊಗಸೆ ಬೊಗಸೆಯಲಿ ಮೊಗೆದು ಕೊಟ್ಟವನು. ಅಪ್ಪನೆಂದರೆ ಬದುಕಿನಲಿ ಚೈತನ್ಯ ತುಂಬಿದವನು. ಅಪ್ಪನೆಂದರೆ ಬೆರಗುಗಣ್ಣಿನಲಿ ಪ್ರಪಂಚ ನೋಡುವಂತೆ ಮಾಡಿದವನು , ತಪ್ಪು ತಪ್ಪು ಹೆಜ್ಜೆ ಇರಿಸುವಾಗ ಕೈ ಹಿಡಿದು ನಡೆಸಿದವನು, ಹೆಗಲ ಮೇಲೆ ಕೂರಿಸಿಗೊಂಡು ಹಾದಿಯುದ್ದಕ್ಕೂ ನಡೆದವನು, ಬಿದ್ದು ಗಾಯ ಗೊಂಡಾಗ ಮೈ ದಡವಿ ರಮಿಸಿದವನು, ಹೊಳೆಯಲ್ಲಿ ಈಜು ಕಲಿಸಿದವನು, ಮಳೆಯಲ್ಲಿ ನೆನೆದು ಜ್ವರ ಬರಿಸಿಕೊಂಡಾಗ ಅಮ್ಮನಂತೆ ಸೇವೆ ಮಾಡಿದವನು ಹೀಗೆ ಬದುಕಿನ ಒಂದೊಂದು ಮಜುಲುಗಳಲ್ಲೂ ತನ್ನ ಛಾಪು ಮೂಡಿಸಿ “ನಿನ್ನಂತ ಅಪ್ಪ ಇಲ್ಲಾ” ಅಂತ ಅನ್ನಿಸಿಕೊಂಡಂತಹ ಅಪ್ಪ ಕವಿಯ ಬದುಕಿನಲ್ಲು ಮಹತ್ವದ ಸ್ಥಾನ ಪಡೆದು ಗೆಳೆಯನಂತೆ, ತಾಯಿಯಂತೆ, ಗುರುವಂತೆ, ಮಾರ್ಗದರ್ಶಿಯಂತೆ, ಹಿತೈಷಿಯಂತೆ ಮಕ್ಕಳ ಬಾಳಿನಲ್ಲಿ ಬೆಳಕಾಗಿ ಬೆಳಕು ತಂದವರು.ಮಗನಿಗಾಗಿ ಏನೆಲ್ಲಾ ಕಷ್ಟಪಟ್ಟ ಅಪ್ಪ ಕೊನೆಗೆ
“ಹೂಡುವ ಎತ್ತು ಮಾರಿ ಮನೆಯ ಹೊಸ್ತಿಲು
ದಾಟುವಾಗ ಎಡವಿ ಬಿದ್ದು ನಿಟ್ಟುಸಿರು ಬಿಟ್ಟು
ಕಣ್ಣು ಮುಚ್ಚಿ ನನ್ನ ಮಗ ಚೆನ್ನಾಗಿ ಓದಬೇಕೇಂದು
ಕನವರಿಸುತ್ತಾ ಜೀವಬಿಟ್ಟ ಅಪ್ಪನಹತ್ತಾರು ಪ್ರಶ್ನೆಗಳಿಗೆ
ಮಗ ಮಾತ್ರ ಉತ್ತರ”
ಹೃದಯ ವಿದ್ರಾವಕ ಈ ಸನ್ನಿವೇಶ,ಸಂದರ್ಭ ಓದುಗರ ಮನಸ್ಸನ್ನು ಕರಗಿಸಿ ಕಣ್ತುಂಬಿಸಿ ಬಿಡುತ್ತದೆ.
ಛಲಗಾತಿ ಗೆಳತಿಯೆಂದರೆ ಕವಿಗೆ ಪ್ರೀತಿಯ ಕಡಲು,ಚಂದ್ರಮಾನ ಬೆಳಕು ಚೆಲ್ಲಿದವಳು,ಎದೆ ಸೆಟೆದು ನಿಂತ ಛಲಗಾತಿ ಗೆಳತಿ , ಹೀಗೆಲ್ಲ ಇರುವ ಗೆಳತಿಗೆ ಹೀಗೆ ಹೇಳುತ್ತಾರೆ.
ಬೆಳೆದು ಬೆಟ್ಟವಾಗಬೇಕೆಂಬ
ಮಹದಾಸೆಯ ಕನಸು ಹೊತ್ತು
ನಡೆವ ಅವಳು ನಿಗಿನಿಗಿ
ಕೆಂಡದಂತಹ ಸೂರ್ಯನಾಗುವಾಸೆ
ಕಡುಕಷ್ಟ ಪೊರೆದು ಸುಖದೆಡೆಗೆ
ಹೆಜ್ಜೆ ಹಾಕುವ ಗಳಿಗೆ
ನಾ ಸಾಕ್ಷಿ ಆಗಬೇಕೆಂಬ ಆಸೆ ಹೊತ್ತವನು ಎಂದು ಬಯಸುತ್ತಾರೆ.
ಜಾತಿ ಭೂತದ ಬಗ್ಗೆಯು ಕವಿಗೆ ತೀವ್ರ ಅಸಮಾಧಾನವಿದೆ.ಮುಗ್ಧಮನಸ್ಸುಗಳನ್ನು ಒಡೆಯುವ ಮತಾಂಧರನ್ನು ಕಂಡಾಗ ಕೆರಳಿ ಕೆಂಡವಾಗುವ ಕವಿ
ಹಗಲೆಲ್ಲ ನಮ್ಮನ್ನಗಲದ
ಹಾಲು ಬಾನುಂಡು ಅಕ್ಕರೆಯ ಮಾತಾಡಿ
ದಿನವಿಡಿ ದುಡಿಸಿಕೊಂಡು
ಕತ್ತಲ ರಾತ್ರಿಯಲ್ಲಿ ಜಾತಿ ಲಾಬಿ ಮಾಡುವ
ರಾಕ್ಷಸರನ್ನು ಕಂಡು ನಡುಗಿ ಹೋಗಿದ್ದೇನೆ
ಎಂದು ಭೀತರಾಗಿ ಸ್ವಾರ್ಥ ಅವಕಾಶವಾದಿಗಳ ಕಂಡು ದಂಗು ಬಡಿದು ನಯವಂಚಕರ ವಂಚನೆಗೆ ರೋಸಿಹೋಗಿದ್ದಾರೆ.
ಬರೀ ನಿರಾಸೆ,ಸಂಕಟ ನೋವು ಮಾತ್ರ ತೋರಿದೆ ಆಶಾವಾದಿಯಾಗುತ್ತಾ ಹೋಗುತ್ತಾರೆ. ಈ ಪ್ರಪಂಚದ ಎಲ್ಲಾ ದ್ವೇಷ, ಅಸೂಯೆ, ಸ್ವಾರ್ಥ,ಮೋಹ , ಮತ್ಸರ ಮಾಯವಾಗಿ, ಕೋಮುಗಲಭೆ,ಜಾತಿಸಂಘರ್ಷಗಳ ದುರಂತ ದೂರಾಗಿ ಪ್ರೀತಿ ,ಮಮತೆ ಮಾನವೀಯತೆ ಹೊಳೆಯಾಗಿ ಹರಿದು
ಅಣ್ವಸ್ತ್ರಗಳು ಸುಟ್ಟು ಬೂದಿಯಾಗಿ
ಬಂದೂಕಿನ ಬಾಯಿಯ ಸದ್ದಡಗಿ
ಯಾರಿಗೂ ಬೇಕಿಲ್ಲದ ಯುದ್ಧಗಳು ಕೊನೆಯಾಗಿ ಅನ್ನ ನೀರು ಅರಿವೆ ಅಕ್ಷರ
ಸೂರು ಸರ್ವರಿಗೂ ಸಿಗುವಂತಾಗಲಿ
ಎಂದು ಕವಿ ಆಶಿಸುತ್ತಾರೆ.
ಮಾನವೀಯತೆ, ಮಾನವೀಯ ಜೀವ ಸೆಲೆ ಬತ್ತಿಹೋದ ವರ್ತಮಾನದ ಮರುಭೂಮಿಯಲ್ಲಿ ಮನುಷ್ಯ ಸಂಬಂಧಗಳನ್ನು ಹುಡುಕಿ ಕಾವ್ಯದ ಮೂಲಕ ಪ್ರೀತಿಯನ್ನು ಹಂಚಿ ಮನಸುಗಳ ಬೆಸೆಯುವ ಬಯಕೆ ಕವಿ ರಾಮಣ್ಣನವರದು .ಪ್ರತಿಯೊಬ್ಬ ಕವಿಯು ಪ್ರೀತಿ, ವಿಶ್ವಾಸ ಹಾಗೂ ಮನುಷ್ಯ ಪ್ರೀತಿಯನ್ನು ಎದೆಯಲ್ಲಿ ಕಾಪಿಟ್ಟುಕೊಳ್ಳುವ ಮನೋಧರ್ಮ ಹೊಂದಬೇಕಾಗಿದೆ ಎನ್ನುವ ಇವರ ವಿಶ್ವಪ್ರೇಮದ ಭಾವ ಆದರ್ಶ ಹಾಗೂ ಅನುಕರಣೀಯವಾಗಿದೆ.
ದೀರ್ಘ ಕವಿತೆ ಬರೆಯುವ ಶಕ್ತಿ ಹೊಂದಿರುವ ಕವಿ ರಾಮಣ್ಣ ರವರಿಗೆ ಕಂಡುಕೊಂಡ ಎಲ್ಲವನ್ನೂ ಕವಿತೆಯಾಗಿಸುವ ತವಕ, ಹಾಗಾಗಿ ಕೆಲವೊಮ್ಮೆ ವಾಚ್ಯವಾಗುವ ಲಕ್ಷಣಗಳು ಕಂಡರೂ ಅವರ ಅನುಭವ, ನಿರಂತರ ಅಧ್ಯಯನ,ಕಾವ್ಯ ಶ್ರದ್ಧೆ, ಆಸಕ್ತಿ ಇವೆಲ್ಲವೂ ಅವರನ್ನು ಕವಿಯ ಸಾಲಿನಲ್ಲಿ ನಿಲ್ಲಿಸಲಡ್ಡಿ ಮಾಡದು.ಇವರ ಈ ಉತ್ಸಾಹ, ಧ್ಯಾನಸ್ಥತೆ, ಅಧ್ಯಯನ ಶೀಲತೆ ಮತ್ತಷ್ಟು ಹೆಚ್ಚಾಗಿ ಶ್ರೇಷ್ಠ ಕಾವ್ಯದ ಕೊಡುಗೆ ಸಾಹಿತ್ಯ ಕ್ಷೇತ್ರಕ್ಕೆ ದಕ್ಕಲಿ ಎಂದು ಆಶಿಸುತ್ತೇನೆ.

******

ಎನ್ ಶೈಲಜಾ ಹಾಸನ

Leave a Reply

Back To Top