ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು. ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ ಕ್ಷಣಗಳು ಉಳಿದಿದ್ದವು. ಅಷ್ಟರಲ್ಲಿ ಇಬ್ಬರಲ್ಲಿ ಒಬ್ಬ ಸರಸರನೆ ಮರ ಹತ್ತಿ ಮರದ ಕೊಂಬೆಯ ಮೇಲೆ ಕುಳಿತು ಬಿಟ್ಟ. ಆದರೆ ಇನ್ನೊಬ್ಬನಿಗೆ ಮರ ಹತ್ತಲು ಬರದು. ಮತ್ತೊಬ್ಬರು ಸಹಾಯ ಸಿಕ್ಕಿದ್ದರೆ ಹತ್ತಿರುತ್ತಿದ್ದನೇನೋ! ಆದರೆ ಅವನ ಗೆಳೆಯ ಅದಾಗಲೇ ಮರದ ತುದಿಯನ್ನೇರಿ ಬಿಟ್ಟಿದ್ದರಿಂದ ಇವನೀಗ ನೆಲದಲ್ಲಿ ಒಬ್ಬಂಟಿಯಾಗಿದ್ದ. ಕರಡಿ ಇನ್ನೇನು ಹತ್ತಿರವೇ ಬಂತು. ಏನು ಮಾಡಬೇಕೆಂದು ಯೋಚಿಸುತ್ತಿರುವಾಗಲೇ ಒಂದು ಉಪಾಯ ಹೊಳೆದಂತಾಯ್ತು. ಕರಡಿ ಸಮೀಪಕ್ಕೆ ಬಂತು ಎನ್ನುವಷ್ಟರಲ್ಲಿ ನೆಲದ ಮೇಲೆ ಸತ್ತಂತೆ ಮಲಗಿ ಬಿಟ್ಟ. ಕರಡಿ ತೀರಾ ಹತ್ತಿರಕ್ಕೆ ಬಂತು. ಯುವಕನನ್ನು ಮೂಸಿತು. ಸಾವು ಎದೆಯ ಮೇಲೆ ನಿಂತಿರುವಾಗ ಯಾರಿಗಾದರೂ ಉಸಿರು ಬಂದೀತೆ? ಯುವಕನಿಗೆ ಭಯದಲ್ಲಿ ಉಸಿರೇ ನಿಂತು ಹೋದಂತಾಗಿತ್ತು! ಕರಡಿ ಆತನು ಸತ್ತಿರುವನೆಂದು ತಿಳಿದು ತನ್ನ ಪಾಡಿಗೆ ತಾನು ಮುಂದೆ ಸಾಗಿತು. ಕರಡಿ ಕಣ್ಮರೆಯಾಗುವವರೆಗೂ ಮರದ ಮೇಲೆ ಕುಳಿತಿದ್ದ ಯುವಕ ಇನ್ನೇನು ಅಪಾಯವಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡು ಕೆಳಗಿಳಿದ. ಸತ್ತಂತೆ ನಟಿಸಿ ಮಲಗಿದ್ದವನೂ ಅಬ್ಬಾ! ಅಂತೂ ಇಂತೂ ಬಚಾವಾದೆ ಎಂದು ಎದ್ದು ಕೂತ. ಮರದಿಂದ ಇಳಿದ ಯುವಕ ‘ಏನು ಹೇಳಿತು ಗೆಳೆಯ, ಕರಡಿ ನಿನ್ನ ಕಿವಿಯಲ್ಲಿ? ಎಂದು ನಗುತ್ತ ಕೇಳಿದ. ಸತ್ತಂತೆ ಮಲಗಿದ್ದ ಯುವಕ ಉತ್ತರಿಸಿದ ‘ಅಪಾಯದ ಸಮಯದಲ್ಲಿ ಕೈ ಬಿಟ್ಟು ಹೋಗುವವರನ್ನು ಎಂದೂ ನಂಬಬೇಡ ಎಂದು ಹೇಳಿತು. ಅಪಾಯವೆಂದರೆ. . . . .? ದೈನಂದಿನ ಬದುಕಿಗೆ ಅಕಸ್ಮಾತ್ತಾಗಿ ಭೇಟಿ ಕೊಡುವಂಥ ಆಗಂತುಕನೇ ಅಪಾಯ. ಆಂತರಿಕ ಅಗ್ನಿಯನ್ನು ಉದ್ದೀಪನಗೊಳಿಸುತ್ತದೆ. ನಮ್ಮೊಳಗಿನ ಅತ್ಯುನ್ನತವಾದುದನ್ನು ಅತ್ಯುತ್ತಮವಾದುದನ್ನು ಹೊರಗೆಳೆಯಲು ಪ್ರೇರೇಪಿಸುತ್ತದೆ. ಬಹುತೇಕರು ಅಪಾಯವನ್ನು ಅಪಾಯಕಾರಿ ಎಂದು ದೂರ ಸರಿಯುತ್ತಾರೆ ಹೊರತು ಅದು ಹೊತ್ತು ತಂದ ಅವಕಾಶಗಳ ಮೂಟೆಗಳನ್ನು ತೆರೆದು ನೋಡುವುದೇ ಇಲ್ಲ. ಸಣ್ಣ ಪುಟ್ಟ ಅಪಾಯಗಳಿಗೂ ಹೆದರಿ ಜೀವನ ಪ್ರೀತಿ ಕಳೆದುಕೊಳ್ಳುವವರು ಅಪಾಯಗಳ ಮಡಿಲಲ್ಲಿ ಬಿದ್ದು ಗಗನಚುಂಬಿ ಹಿಮ ಪರ್ವತಗಳ ನೆತ್ತಿಯ ಮೇಲೆ ನಿಂತವರನ್ನು, ಉದ್ದುದ್ದ ಸಾಗರಗಳನ್ನು ಈಸಿ ಗೆದ್ದವರನ್ನು ಹಗ್ಗದ ಮೇಲೆ ನಡೆಯುವವರನ್ನು ನೋಡಿ ಕಲಿಯಬೇಕು. ಅಪಾಯಗಳು ಮನುಷ್ಯನಿಗೆ ಹೇಳಿ ಕೇಳಿ ಬರುವುದಿಲ್ಲ. ಅಪಾಯದ ಸ್ಥಿತಿಯಲ್ಲಿ ಯಾರಾದರೂ ನಮ್ಮನ್ನು ಬಚಾವು ಮಾಡುತ್ತಾರೆಂದು ನಂಬಿಕೊಂಡು ಕುಳಿತುಕೊಳ್ಳುವುದು ತರವಲ್ಲ. ಸಮಯ ನಿರ್ವಹಣೆಯಂತೆ ಅಪಾಯ ನಿರ್ವಹಣೆಯೂ ಒಂದು ಕಲಿಯಬೇಕಾದ ಕಲೆ. ಅಪಾಯ ಎದುರಿಸುವ ಬಗೆ ಹೇಗೆ ಎನ್ನುವುದನ್ನು ನೋಡೋಣ ಬನ್ನಿ. ಮೇಲಿನ ಕಥೆಯ ಸಂದೇಶವನ್ನು ಮಾನವರೆಲ್ಲ ಬಯಸುವುದು ಸಹಜ. ಆಪತ್ತಿನಲ್ಲಿ ಉದ್ದೇಶಪೂರ್ವಕವಾಗಿ ನಮ್ಮನ್ನು ಕೈ ಬಿಟ್ಟು ಹೋಗುವವರನ್ನು ನಾವು ನಂಬಲೇ ಬಾರದು. ಆದರೆ ಆ ಸಮಯದಲ್ಲಿ ಏನು ಮಾಡಬೇಕೆಂದು ಹೊಳೆಯದೇ ಹಾಗೆ ನಡೆದುಕೊಂಡಿದ್ದರೆ ಅಂಥವರನ್ನು ಕ್ಷಮಿಸುವುದು ಒಳಿತು. ‘ಕ್ಷಮಾ ಗುಣದ ಬಗ್ಗೆ ಖಂಡಿತ ಕಡಿಮೆ ಎಣಿಕೆ ಬೇಡ.’ ಯಾವುದೇ ಕೆಟ್ಟ ಕಾರ್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳದು. ಎಂಬುದನ್ನು ನೆನಪಿನಲ್ಲಿಡಬೇಕು. ಗೊಂದಲದ ಗೂಡಾದ ಮನಸ್ಸಿಗೆ ಎಲ್ಲವೂ ವಿಪರೀತಾರ್ಥಗಳೇ! ಸಮಯ ಸನ್ನಿವೇಶವನ್ನು ಅರ್ಥೈಸಿಕೊಂಡು ಆಪತ್ಕಾಲದಲ್ಲಿ ನಮ್ಮೊಂದಿಗಿದ್ದವರು ನಡೆದುಕೊಳ್ಳುವ ರೀತಿಯನ್ನು ಪರಿಶೀಲಿಸಿ ದೂರ ಸರಿಯುವುದೋ ಇಲ್ಲ ಸಂಬಂಧವನ್ನು ಮುಂದುವರೆಸಿಕೊಂಡು ಹೋಗಬೇಕೋ ಎನ್ನುವುದನ್ನು ನಿರ್ಧರಿಸುವುದು ಉಚಿತ ಮನಸ್ಥಿತಿ. ಹಾಗೆ ನೋಡಿದರೆ ಅಪಾಯದ ಸ್ಥಿತಿಯಲ್ಲಿ ನಮ್ಮ ಮನಸ್ಥಿತಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ನಮಗೆ ಘಟಿಸುವ ಅನೇಕ ವಿಷಯಗಳು ಮತ್ತು ಅವು ನಮಗೆ ಎಂಥ ಫಲಗಳನ್ನು ನೀಡುತ್ತವೆ ಎಂಬುದು ನಮ್ಮ ಮನಸ್ಥಿತಿಯ ಮೇಲೆ ಆಧಾರ ಪಡುತ್ತದೆ. ಭಯಗೊಂಡರೆ ಏನು ಮಾಡಬೇಕೆಂದು ತಲೆಗೆ ತೋಚುವುದೇ ಇಲ್ಲ. ಹೀಗಾಗಿ ‘ಧೈರ್ಯದಿಂದ ಇದ್ದರೆ ಅರ್ಧ ಅಪಾಯವನ್ನು ಗೆದ್ದಂತೆ.’ಆಶಾವಾದಿ ಭಾವ ಶಕ್ತಿಯನ್ನು ತುಂಬುತ್ತದೆ. ಪ್ರಯತ್ನವೆನ್ನುವುದು ಎಲ್ಲದಕ್ಕೂ ಮೂಲ ಕೇಂದ್ರ ಬಿಂದು. ಅಪಾಯದಲ್ಲಿ ಪ್ರಯತ್ನ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವೆನ್ನುವುದು ಕೇವಲ ಪಠ್ಯ ಬೋಧನೆಯಲ್ಲ. ಆಗಾಗ ಎದುರಾಗುವ ಅಪಾಯಗಳನ್ನು ಎದುರಿಸಲು ಸಿದ್ಧರಾಗುವುದನ್ನು ಕಲಿಸುವುದೂ ಆಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಅಪಾಯದ ಅಡಿಪಾಯ ಅಲ್ಲಾಡಿಸುವ ಬಗೆ ತಿಳಿದುಕೊಳ್ಳಬೇಕು. ಅನುಭವದ ತಿಳುವಳಿಕೆ ನಾವು ಯಾವುದೇ ಕ್ಷೇತ್ರದಲ್ಲಿರಲಿ ಅಪಾಯ ನಿರ್ವಹಣೆಯನ್ನು ಕಲಿಯದ ಹೊರತು ಆ ಕ್ಷೇತ್ರದಲ್ಲಿಯ ವ್ಯಕ್ತಿ ಮತ್ತು ವಸ್ತುಗಳ ಮೌಲ್ಯವನ್ನು ನಿಖರವಾಗಿ ಅಳೆಯದ ಹೊರತು ಕ್ಷೇಮಕರ ಎಂದು ಹೇಳಲಾಗದು. ಅಪಾಯದ ಬಗೆಗಿನ ನಮ್ಮ ಹಿಂದಿನ ಅನುಭವಗಳು ಒಳ್ಳೆಯ ನಿರ್ಧಾರಗಳಿಗೆ ದಾರಿ ಮಾಡುವುದಾದರೆ ಸರಿಯಾದ ದಾರಿಯಲ್ಲಿ ನಡೆಯಲು ಸಾಧ್ಯವಾಗುತ್ತದೆ. ‘ನಾವು ಒಂದು ಅನುಭವದ ತಿಳುವಳಿಕೆಯನ್ನು ಬಿಟ್ಟರೆ ಮಿಕ್ಕೆಲ್ಲದ್ದರಿಂದ ಹೊರ ಬರುವ ಜಾಗರೂಕತೆಯನ್ನು ವಹಿಸಬೇಕು. ಅಲ್ಲಿಗೇ ನಿಲ್ಲಿಸಬೇಕು. ಇಲ್ಲದಿದ್ದರೆ ನಾವು ಬಿಸಿ ಒಲೆಯ ಬಾಣಲೆಯ ಮೇಲೆ ಕುಳಿತ ಬೆಕ್ಕಂತಾಗುತ್ತೇವೆ. ಅದು ಮತ್ತೆ ಬಿಸಿ ಒಲೆಯ ಬಾಣಲೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಇದು ಒಳ್ಳೆಯದೇ, ಆದರೆ ಅದು ತಂಪಾದ ಒಲೆಯ ಮೇಲೂ ಕುಳಿತುಕೊಳ್ಳುವುದಿಲ್ಲ ಎಂದಿದ್ದಾನೆ ಮಾರ್ಕ್ ಟ್ವೇನ್. ಧನಾತ್ಮಕ ಆಲೋಚನೆ ಅಪಾಯದ ಸ್ಥಿತಿಯಲ್ಲಿ ಕೈ ಬಿಟ್ಟು ಹೋಗುವವರನ್ನು ಕುರಿತು ನಕಾರಾತ್ಮಕವಾಗಿ ಯೋಚಿಸತೊಡಗಿದರೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅವರ ಉಳಿದೆಲ್ಲ ಉತ್ತಮ ಗುಣಗಳು ಗೌಣವೆನಿಸುತ್ತವೆ. ಅವರಿಂದ ದೂರವಾಗಬೇಕೆಂಬ ಭಾವನೆಯೂ ಬಲವಾಗುತ್ತದೆ.ಕೈ ಬಿಟ್ಟವರು ಸ್ವಯಂ ರಕ್ಷಣೆ ಮಾಡಲು ಕಲಿಸಿದರು ಎಂದುಕೊಂಡರೆ ಜೀವನಕ್ಕೊಂದು ಹೊಸ ಪಾಠ ಸಿಕ್ಕಂತಾಗುತ್ತದಲ್ಲವೇ? ಇಂಥವರು ನಮಗೆ ಭಿನ್ನ ದಾರಿಯಲ್ಲಿ ನಡೆಯುವುದನ್ನು ಕಲಿಸುತ್ತಾರೆ ಎಂದುಕೊಳ್ಳಬಹುದಲ್ಲವೇ? ಈ ಆಲೋಚನೆ ರೀತಿ ಪರಸ್ಪರ ವಿರುದ್ಧ ದಿಕ್ಕಿನಲ್ಲಿದೆ ಎನಿಸುತ್ತದೆ ಅಲ್ಲವೇ? ಈ ಅಂಶ ಅವರು ಜೀವ ಪರರಾಗಿಲ್ಲವೆನ್ನುವುದಕ್ಕಿಂತ ನಾವೆಷ್ಟು ಸಂಬಂಧ ಪರತೆಯನ್ನು ಹೊಂದಿದ್ದೇವೆ ಎಂಬುದನ್ನು ನಮಗೆ ಮನಗಾಣಿಸುತ್ತದೆ. ಅಷ್ಟಕ್ಕೂ ಇಂಥವರು ನಮಗಾಗಿ ಅಪಾಯವನ್ನು ತಂದೊಡ್ಡುವುದಿಲ್ಲ ಎಂಬುದು ದೊಡ್ಡ ನಿರುಮ್ಮಳ ವಿಷಯ. ಅಪಾಯವನ್ನು ಎದುರಿಸುವ ಸಂಧರ್ಭದಲ್ಲಿ ಹೇಗೆ ವರ್ತಿಸುವುದು ಗೊತ್ತಿಲ್ಲ ಅಷ್ಟೇ.ಆಪತ್ತು ನಿರ್ವಹಣೆಯಲ್ಲಿರುವ ಕೊರತೆಗಾಗಿ ಸಂಬಂಧವನ್ನು ಕಳೆದುಕೊಳ್ಳುವುದು ಮೂರ್ಖತನ. ಆದ್ದರಿಂದ ಧನಾತ್ಮಕವಾಗಿ ಆಲೋಚಿಸಬೇಕು. ವಿವೇಚನೆ ಅಪಾಯಗಳಿಂದ ಸಾಕಷ್ಟು ಕಲಿಯುತ್ತೇವೆ. ಅವು ಜೀವನದ ಪಾಠಗಳೇ ಸರಿ.ಅಪಾಯಗಳು ಆತ್ಮಶೋಧನೆಗೆ ವಿಶ್ಲೇಷಣೆಗೆ ಹಚ್ಚುತ್ತವೆ.ಅಪಾಯಗಳು ಯಾವಾಗಲೋ ಬರುತ್ತವೆ ಆಗ ಏನಾದರೊಂದು ಮಾಡಿದರಾಯಿತು ಎಂಬ ನಿರ್ಲಕ್ಷ್ಯವು ಸಲ್ಲದು. ಬದುಕು ಆತ್ಮಶೋಧನೆ, ವೈಯಕ್ತಿಕ ಬೆಳವಣಿಗೆ ಮತ್ತು ಜೀವನ ಪರ್ಯಂತದ ಕಲಿಕೆಯ ಒಂದು ಪಥವಾಗಿದೆ. ಅಪಾಯಗಳು ಜೀವನದ ಅವಿಭಾಜ್ಯ ಅಂಗಗಳು ಎಂಬ ವಿಷಯ ತಿಳಿಯುವುದು ಸಮಾಧಾನಕರ ಸಂಗತಿ. ಹಾಗಾದಾಗ ಅಪಾಯಗಳನ್ನು ವಿವೇಚನೆಯ ರೀತಿಯಿಂದ ನೋಡುವುದನ್ನು ಕಲಿಯಬಹುದು. ಅನೇಕರು ಅಪಾಯದಲ್ಲಿ ಗೆಲುವಿನ ಹಂತ ಮುಟ್ಟುವ ಸಂಧರ್ಭದಲ್ಲಿಯೇ ಕೈ ಚೆಲ್ಲಿ ಬಿಡುತ್ತಾರೆ. ಇದರಿಂದ ಆಂತರಿಕ ಬಲ ಅಪಾರ ದೃಢಶಕ್ತಿಗೆ ನಷ್ಟವುಂಟಾಗುತ್ತದೆ. ಭಿನ್ನಧಾರೆ ಹಾಗೆ ನೋಡಿದರೆ ಆ ದೇವರು ಪ್ರತಿ ಜೀವಿಗೂ ಅಪಾಯ ನಿರ್ವಹಿಸುವ ಕಲೆಯನ್ನು ದಯಪಾಲಿಸಿದ್ದಾನೆ. ಅತಿ ಚಿಕ್ಕದೆನಿಸುವ ಇರುವೆಗೆ ನೋವಾಗಿಸಿದರೆ ನಮ್ಮನ್ನು ಕಚ್ಚುತ್ತದೆ. ಊಸರವಳ್ಳಿ ತನ್ನ ಬೇಟೆಯಾಡುವ ಪ್ರಾಣಿಗಳಿಂದ ಬಚಾವಾಗಲು ಬಣ್ಣ ಬದಲಿಸುತ್ತದೆ. ಹೀಗೆ ಎಲ್ಲ ಜೀವಿಗಳಿಗೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ುರ್ತು ಅನಿವಾರ್ಯತೆ ಇರುತ್ತದೆ. ಅಪಾಯದಲ್ಲಿರುವಾಗ ಇತರರು ನಮ್ಮನ್ನು ಉಳಿಸುವರೆಂದು ತಿಳಿದರೆ ನಾವು ಅವರ ತೆಕ್ಕೆಗೆ ಬೀಳುತ್ತೇವೆ.ಬೇರೆ ಪ್ರಯತ್ನಗಳತ್ತ ಗಮನ ಹರಿಸುವುದು ಕಡಿಮೆ. ಭಿನ್ನಧಾರೆಯತ್ತ ಹೊರಳುವುದು ಜೀವನ ಪ್ರೀತಿಗೆ ತೆರುವ ಬೆಲೆ ಎನ್ನಬಹುದು. ಇದೆಲ್ಲ ಕೇವಲ ಗೆಳೆತನಕ್ಕೆ ಮಾತ್ರ ಸೀಮಿತವಾದದ್ದು ಎನ್ನುವಂತಿಲ್ಲ. ಆಪತ್ತಿನಲ್ಲಿ ಸಹಕರಿಸಲಿಲ್ಲವೆಂದು ಆಪ್ತಬಾಂಧವರಲ್ಲಿ ಮುನಿಸಿಕೊಳ್ಳುತ್ತೇವೆ. ನಿಜವಾದ ಅವರ ಸ್ಥಿತಿಯನ್ನು ಅರಿಯದೇ ನಮ್ಮ ಮೂಗಿಗೆ ನಾವು ಯೊಚಿಸಿ ಆ ಸಂಬಂಧವನ್ನು ಕಾಟು ಒಗೆಯುತ್ತೇವೆ. ಆತ್ಮೀಯರಲ್ಲಿ ಹಿತೈಷಿಗಳಲ್ಲೂ ಇಂಥ ವಿಷಯಗಳು ಮುನ್ನೆಲೆಗೆ ಬರುವುದುಂಟು. ಅನಗತ್ಯ ಪ್ರಾಮುಖ್ಯತೆಯನ್ನು ಪಡೆಯುವುದುಂಟು. ಆದರೆ ಕಾಲ ಒಂದು ದಿನ ಎಲ್ಲವನ್ನೂ ಹಿಂದಕ್ಕೆ ತಳ್ಳುತ್ತದೆ. ಆಗ ಅಪಾಯ ನಿರ್ವಹಣೆ ಗೊತ್ತಿಲ್ಲದವರು ಪ್ರಪಾತಕ್ಕೆ ಬೀಳುತ್ತಾರೆ. ಕೊನೆ ಹನಿ ಗೆಳೆಯರು ಹಿತೈಷಿಗಳು ಅಪಾಯದ ಸ್ಥಿತಿಯಲ್ಲಿ ಕೈ ಹಿಡಿಯಬೇಕೆಂದು ಬಯಸುವುದು ಸಹಜಗುಣ. ಆದರೆ ಒಂದೊಂದು ಸಂಧರ್ಭದಲ್ಲಿ ನಾವು ಬಯಸಿದಂತೆ ನಮಗೆ ಇರಲಾಗುತ್ತದೆಯೇ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಬೇಕಾಗುತ್ತದೆ. ಮಧುರ ಬಾಂಧವ್ಯಗಳ ತಾಳವನ್ನು ತಪ್ಪಿಸುವ ಘಟನೆಗಳನ್ನು ನಿಂದಿಸುವ ರೀತಿಯಲ್ಲಿ ತೆಗೆದುಕೊಳ್ಳದೇ, ನಮ್ಮ ಶಕ್ತಿಯನ್ನು ಗುರುತಿಸಿಕೊಳ್ಳಲು ಸಹಕರಿಸಿದವರೆಂದು ತಿಳಿದು ವಂದಿಸುವ ರೀತಿಯಲ್ಲಿ ನಡೆದುಕೊಳ್ಳುವುದು ಸೂಕ್ತ. ಇದೆಲ್ಲ ನಮ್ಮ ದೃಷ್ಟಿ ಸಂಬಂಧಿಯಾದುದು. ಮನುಷ್ಯನ ಅನೇಕಾನೇಕ ಅಪೇಕ್ಷಿತ ಗುಣಗಳಲ್ಲಿ ಅಪಾಯ ಕಾಲದಲ್ಲಿ ಆಗಬೇಕು ಎನ್ನುವುದೂ ಒಂದು.ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಬೀಜವೊಂದು ಸಂಪೂರ್ಣವಾಗಿ ಯಾವಾಗ ತನ್ನನ್ನು ಮಣ್ಣಲ್ಲಿ ಕಳೆದುಕೊಳ್ಳುತ್ತದೆಯೋ ಆಗ ಮಾತ್ರ ಅದು ಚಿಗುರೊಡೆದು ಮರವಾಗಿ ಬೆಳೆಯುವುದು. ಅಂತೆಯೇ ನಾವು ಮಾನವೀಯ ತುಡಿತಗಳಿಗೆ ಬೆಲೆ ಕೊಡಬೇಕು.ಗೊತ್ತಿಲ್ಲದೇ ಮಾಡಿದ ತಪ್ಪುಗಳನ್ನು ಕ್ಷಮಿಸಬೇಕು. ವಿಸ್ತಾರ ಚಿಂತನೆಗೆ ಹೊಸ ರೂಪ ಹೊಸ ಭಾಷ್ಯ ಬರೆಯಬೇಕು. ಹೊಸ ಅರ್ಥ ಬಿಟ್ಟು ಕೊಡುವ ಜೀವನದ ಹಲವಾರು ಘಟನೆಗಳ ಮೂಲಕ ಮನಸ್ಸಿಗೆ ಕನ್ನಡಿ ಹಿಡಿಯುವ ಕೆಲಸ ನಡೆದರೆ ಅಪಾಯದ ಮಡಿಲನ್ನು ಬಿಟ್ಟು ಸುಂದರ ಜೀವನದ ತೆಕ್ಕೆಯಲ್ಲಿ ನಾವಿರಲು ಸಾಧ್ಯ. ********************** ಲೇಖಕರ ಬಗ್ಗೆ ಎರಡು ಮಾತು ಲೇಖಕಿ ಜಯಶ್ರೀ ಜೆ ಅಬ್ಬಿಗೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿ . ಇವರ ಹನ್ನೆರಡು ಪುಸ್ತಕಗಳು ಪ್ರಕಟಗೊಂಡಿವೆ. ಓದು ಮತ್ತು ಬರಹ ಹಾಡುಗಾರಿಕೆ ಮಾತುಗಾರಿಕೆ ಇವರ ಹವ್ಯಾಸಗಳು
ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ
ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ ಕನ್ನಡ ವಿವಿ ಶಿಲ್ಪಕಲಾ ವಿಭಾಗದಲ್ಲಿ. ಬಿಎಫ್ಎ ಶಿಲ್ಪಕಲೆ ಕಲಿತ ಅವರು ಮೈಸೂರಿನ ಕಾವಾದಲ್ಲಿ ಮಾಸ್ಟರ್ ಆಫ್ ಆರ್ಟ ಕಲಿತರು. ನಂತರ ಶಿಲ್ಪಕಲೆಯಲ್ಲಿ ಎಂ.ಫಿಲ್.ಪದವಿ ಹಾಗೂ ಡಾಕ್ಟರೇಟ್ ಪದವಿಗಳನ್ನು ಹಂಪಿ ಕನ್ನಡ ವಿ.ವಿ.ಯಿಂದ ಪಡೆದರು. ಹಂಪಿ ವಿಶ್ವ ವಿದ್ಯಾಲಯದ ಶಿಲ್ಪಕಲಾ ವಿಭಾಗ ಬದಾಮಿ ಶಾಖೆಯಲ್ಲಿ ಅವರು ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಲೆಗಳನ್ನು ಕೆತ್ತಿ ಕಲೆ ಅರಳಿಸುವ ಅವರು ಈವರೆಗೆ ರೂಪಿಸಿದ ಶಿಲ್ಪಗಳನ್ನು ೨೦೧೮ರಲ್ಲಿ ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನವನ್ನು ಹೈದರಾಬಾದ್ನಲ್ಲಿ ಏರ್ಪಡಿಸಿದ್ದರು. ಜವಾಹರಲಾಲ್ ನೆಹರು ಆರ್ಕಿಟೆಕ್ಚರ್ ಆಂಡ್ ಫೈನ್ ಆರ್ಟ ಯುನಿವರ್ಸಿಟಿಯಲ್ಲಿ ಅವರ ಶಿಲ್ಪಕಲಾ ಪ್ರದರ್ಶನ ನಡೆದಿದೆ. ೨೦೦೭, ೨೦೦೮,೨೦೦೯,೨೦೧೦ ರಲ್ಲಿ ಕ್ರಮವಾಗಿ ಕೇರಳ, ಚೆನ್ನೆöÊ, ವಿಜಾಪುರ, ಧಾರವಾಡ, ಹಾಗೂ ೨೦೧೧ರಲ್ಲಿ ಬೆಂಗಳೂರು, ಕುಂದಾಪುರದಲ್ಲಿ ಅವರ ಶಿಲ್ಪಕಲಾ ಕೃತಿಗಳ ಪ್ರದರ್ಶನ ನಡೆದಿದೆ. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ೧೯೯೯ ರಿಂದ ೨೦೧೭ರವರೆಗೆ ೨೬ ಕಡೆ ಅವರ ಶಿಲ್ಪಗಳ ಪ್ರದರ್ಶನಗಳು ನಡೆದಿವೆ. ೨೦೦೯ ರಿಂದ ೨೦೧೩ರವರೆಗೆ ಅವರು ರಾಜ್ಯದ ಶಿಲ್ಪಕಲಾ ಅಕಾಡೆಮಿಯ ಸದಸ್ಯರಾಗಿ ಸಹ ಡಾ. ಮಹಾಂತೇಶ್ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಹಾಗೂ ದೇಶದ ವಿವಿದೆಡೆ ೨೨ ಕಲಾ ಶಿಬಿರಗಳಲ್ಲಿ ಅವರು ಭಾಗವಹಿಸಿ ಶಿಲ್ಪಗಳನ್ನು ರೂಪಿಸಿದ್ದಾರೆ. ಅವರ ಅತ್ಯುತ್ತಮ ಶಿಲ್ಪಗಳನ್ನು ಕಾರವಾರದ ರಾಕ್ ಗಾರ್ಡನ್ ಸೇರಿದಂತೆ ಹಂಪಿ ಕನ್ನಡ ವಿವಿಯಲ್ಲಿ, ಪಂಜಾಬದ ಪಟಿಯಾಲಾ ಕಲಾಗ್ರಾಮದಲ್ಲಿ, ಇಳಕಲ್ ಚಿತ್ರಕಲಾ ವಿದ್ಯಾಲಯ, ಬಾಗಲಕೋಟೆ ಜಿಲ್ಲಾ ಆಡಳಿತ ಭವನ, ಮಧ್ಯಪ್ರದೇಶದ ಖುಜರಾಹೋ ಶಿಲ್ಪಗ್ರಾಮದಲ್ಲಿ, ಬೆಂಗಳೂರು ಕಲಾ ಗ್ರಾಮದಲ್ಲಿ ,ದಾವಣಗೆರೆ ಕುವೆಂಪು ವಿವಿ ಆವರಣದಲ್ಲಿ, ಕುಪ್ಪಳ್ಳಿಯಲ್ಲಿ, ಬಳ್ಳಾರಿಯಲ್ಲಿ , ಸತ್ತೂರು ಮಠದಲ್ಲಿ, ಹೂವಿನಹಡಗಲಿ ರಂಗಭಾರತಿಯಲ್ಲಿ ಕಾಣಬಹುದಾಗಿದೆ. ………………………………………………………………………….. ನಾಗರಾಜ ಹರಪನಹಳ್ಳಿ : ಬಣ್ಣಗಳ ಜೊತೆ ,ಶಿಲೆಗಳ ಜೊತೆ ಕುಂಚ ಮತ್ತು ಉಳಿಯ ಜೊತೆ ಕಳೆದ ರೋಚಕ ಕ್ಷಣ ಯಾವುದು ? ನೆನಪಲ್ಲಿ ಉಳಿದ ಒಂದು ಪ್ರಸಂಗ ಕುರಿತು ವಿವರಿಸಿ …. ಮಹಾಂತೇಶ್ ಪಲದಿನ್ನಿ : ವಿದ್ಯಾರ್ಥಿಗಳ ಜೊತೆಗೆ ನಿಸರ್ಗ ಚಿತ್ರ ಬಿಡಿಸಲು ಹೋದಾಗ ಅವರ ಜೊತೆ ಸೇರಿ ಒಂದು ವರ್ಣಚಿತ್ರ ಬಿಡಿಸಿರುವುದು ಸ್ಮರಣೀಯ ಕ್ಷಣ. ಪ್ರಶ್ನೆ : ಕಲೆ ಅಥವಾ ಚಿತ್ರ, ಹುಟ್ಟುವ ಕ್ಷಣ ಯಾವುದು ? *ಉತ್ತರ :* ಕಲೆ ಯಾವ ಕ್ಷಣದಲ್ಲಿಯಾದರು ಹುಟ್ಟಬಹುದು ಕಲೆಗೆ ನಿರ್ದಿಷ್ಟತೆ ಇಲ್ಲ. ಪ್ರಶ್ನೆ : ನಿಮ್ಮ ಶಿಲ್ಪಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು ? ಪದೇ ಪದೇ ಕಾಡುವ ವಿಷಯ ಯಾವುದು ? ಉತ್ತರ : ಬಾದಾಮಿಯಲ್ಲಿರುವ ಏಕಶಿಲಾ ಬೆಟ್ಟದಲ್ಲಿ ನಿರ್ಮಾಣವಾಗಿರುವ ಗುಹಾಂತರ ಶಿಲ್ಪಗಳು, ಅದರ ವಸ್ತು ವಿನ್ಯಾಸಗಳು, ಕಥಾನಕ ಶಿಲ್ಪಗಳು, ಸಾಲಭಂಜಿಕೆ ಶಿಲ್ಪಗಳು, ನನಗೆ ಹೆಚ್ಚು ಇಷ್ಟವಾಗಿವೆ. ಲಜ್ಜಾಗೌರಿ ಶಿಲ್ಪಗಳು ನನಗೆ ಬಹಳ ಕಾಡುವ ವಿಷಯ. ಪ್ರಶ್ನೆ : ನಿಮ್ಮ ಶಿಲ್ಪಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ ? ಉತ್ತರ : ನಮ್ಮ ಸುತ್ತಲಿನ ಪರಿಸರವು ಕಾರಣವಾಗುತ್ತದೆ. ನಾವು ಕಳೆದ ಬಾಲ್ಯದ ನೆನಪುಗಳು ನಮಗೆ ಅರಿಯದೆ ಶಿಲ್ಪಗಳನ್ನು ರಚಿಸುವಾಗ ಅದರಲ್ಲಿ ಮೂಡುತ್ತದೆ. ಹಾಗೂ ಕೆಲವು ನಮ್ಮಲ್ಲಿರುವಂತಹ ಹೇಳಿಕೊಳ್ಳಲಾಗದ ವಿಷಯವನ್ನು ಶಿಲ್ಪಗಳ ಮೂಲಕ ತೋರಿಸುವುದು. ನಮ್ಮ ಜೀವನದಲ್ಲಿ ನಡೆದಂತಹ ಘಟನೆಗಳನ್ನು ಸಹ ಯಾವುದೇ ಮಾಧ್ಯಮದ ಮೂಲಕ ಅದನ್ನು ತೋರ್ಪಡಿಸಲು ಇಲ್ಲಿ ಅವಕಾಶವಿರುತ್ತದೆ. ಪ್ರಶ್ನೆ : ಪ್ರೀತಿಯ ಅಭಿವ್ಯಕ್ತಿ ನಿಮ್ಮ ಶಿಲ್ಪಗಳಲ್ಲಿ ಹೆಚ್ಚು …ಅಲ್ವಾ ? ಉತ್ತರ : ಅಭಿವ್ಯಕ್ತಿ ಎಂಬ ಪದವನ್ನು ಸರಳವಾಗಿ ವಿವರಿಸುವುದಾದರೆ, ನಮ್ಮ ಭಾವನೆಗಳನ್ನು ದೃಶ್ಯದ ಮೂಲಕ ಹೊರಹಾಕುವುದು. ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತ ಪಡಿಸುವುದಕ್ಕೆ ಅಭಿವ್ಯಕ್ತಿ ಎಂಬ ಸಾಧನದ ಮೂಲಕ ಚಿತ್ರ, ಶಿಲ್ಪದ ಮೂಲಕವೂ ವ್ಯಕ್ತಪಡಿಸಬಹುದು. ಈ ಎಲ್ಲ ದಾರಿಗಳ ಮೂಲಕ ಪ್ರಕಟಪಡಿಸುವುದೇ ಅಭಿವ್ಯಕ್ತಿ ಅನ್ನಿಸಿಕೊಳ್ಳುತ್ತದೆ. ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ. ಪ್ರಶ್ನೆ : ಮಿಥುನ ಶಿಲ್ಪ ಗಳನ್ನು ಆಧುನಿಕ ಕಲಾ ಶೈಲಿಯಲ್ಲಿ ಹೆಚ್ಚು ರೂಪಿಸಿದ್ದೀರಿ… ಹೇಗೆ ಇದರ ಪ್ರಭಾವ ಆಯಿತು. ಏನು ಉದ್ದೇಶ ? ಉತ್ತರ : ಮಿಥುನ ಶಿಲ್ಪಗಳು ಕ್ರಿ.ಶ.೨ ನೇ ಶತಮಾನದಷ್ಟು ಪ್ರಾಚೀನವಾದುದು. ಕೆಲವು ಶಿಲ್ಪಗಳು ದೇವಾಲಯದ ಗೋಪುರದ ಮೇಲೆ, ದೇವಾಲಯದ ಭಿತ್ತಿಯ ಮೇಲೆ ರಚಿಸಲಾಗಿದೆ. ಅವುಗಳ ಹಿಂದಿನ ಆಶಯ ಬೇರೆ. ಹಿಂದಿನ ಕಾಲದಲ್ಲಿ ಲೈಂಗಿಕತೆ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಉದ್ದೇಶವಾಗಿತ್ತು. ನಾನು ರಚಿಸಿದ ಶಿಲ್ಪಗಳಲ್ಲಿ ಮಿಥುನ ಶಿಲ್ಪಗಳನ್ನು ಪ್ರಸ್ತುತ ಸನ್ನಿವೇಶ ನಡೆದಿರುವ ಘಟನೆ ಮತ್ತು ಲೈಂಗಿಕ ಕಿರುಕುಳ, ಸಮಾಜಕ್ಕೆ ಒಳಿತಾಗುವ ದೃಶ್ಯವನ್ನು ನನ್ನ ಶಿಲ್ಪಗಳಲ್ಲಿ ಕಾಣಬಹುದು. ಪ್ರಶ್ನೆ : ನಾಡಿನ ದೇವಾಲಯದಲ್ಲಿನ ಶೃಂಗಾರ ಮತ್ತು ಮಿಥುನ ಶಿಲ್ಪಗಳ ಪ್ರಭಾವ ನಿಮ್ಮ ಮೇಲಿದೆಯೇ? ಉತ್ತರ : ದೇವಾಲಯದಲ್ಲಿರುವ ಕಥಾನಕ, ದೇವತಾ ಶಿಲ್ಪಗಳು, ಮಿಥುನ ಶಿಲ್ಪಗಳು, ಮತ್ತು ಆ ಕಾಲದಲ್ಲಿ ರಚಿತವಾದ ಶಿಲ್ಪಶಾಸ್ತ್ರಗಳು ಗ್ರಂಥಗಳು ದೇವಾಲಯಗಳ ನಿರ್ಮಾಣ ಇವೆಲ್ಲ ಪ್ರಭಾವ ನನ್ನ ಕೃತಿಗಳ ಮೇಲಾಗಿದೆ. ಪ್ರಶ್ನೆ : ಕಲಾ ಪ್ರಕಾರದಲ್ಲಿ ಯಾವ ಮಾಧ್ಯಮ ನಿಮಗೆ ಇಷ್ಟ? ಉತ್ತರ : ಶಿಲಾ ಮಾಧ್ಯಮ ಪ್ರಶ್ನೆ : ಬದಾಮಿ , ಪಟ್ಟದಕಲ್ಲು ಶಿಲಾ ಬಾಲಕಿಯರಿಗೂ, ಹಳೇಬೀಡು, ಬೇಲೂರು ಶಿಲಾ ಬಾಲಕಿಯರಲ್ಲಿ ಯಾರು ಚೆಂದ? ಆ ಶಿಲ್ಪಗಳ ವಿಶೇಷತೆ ಏನು ? ಉತ್ತರ : ಚೆಂದ ಪ್ರಶ್ನೆಯ ಬರುವುದಿಲ್ಲ ಆಯಾ ಕಾಲಘಟ್ಟದಲ್ಲಿ ಪ್ರಚಲಿತದಲ್ಲಿರುವ ಕೆಲವು ಉಡುಗೆ ತೊಡುಗೆಗಳನ್ನು ಧರಿಸಿರುತ್ತಾರೆ. ಬಾದಾಮಿ ಚಾಲುಕ್ಯ ಶಿಲ್ಪಗಳಲ್ಲಿ ಉದ್ದ ನೀಳವಾಗಿ ವಸ್ತ್ರವಿನ್ಯಾಸಗಳು, ಅಂದಿನ ಕಾಲದಲ್ಲಿ ಪ್ರಚಲಿತವಿದ್ದ ವೇಷಭೂಷಣಗಳು ಇಲ್ಲಿ ರಚನೆಯಾಗಿವೆ. ವಿವಿಧ ಭಾವನಾತ್ಮಕ ಸಂಬAಧವನ್ನು ಹೊಂದಿರುವ ಜೋಡಿ ಶಿಲ್ಪ, ಕೆಲವು ಸಂದರ್ಭಗಳಲ್ಲಿ ಒಂದು ಹೊಸ ರೀತಿಯ ಶಿಲ್ಪಗಳು ಇಂದಿಗೂ ನಾವು ಕಾಣುತ್ತೇವೆ. ಬೇಲೂರಿನ ಶಿಲ್ಪಗಳು ಪ್ರತ್ಯೇಕವಾದ ಶಿಲೆಯನ್ನು ಬಳಸಿ ರಚಿಸಿದ ಶಿಲ್ಪಗಳನ್ನು ತಂದು ಜೋಡಿಸಲಾಗಿದೆ. ಆದರೆ ಬಾದಾಮಿಯಲ್ಲಿ ಏಕಶಿಲಾ ಬೆಟ್ಟದಲ್ಲಿ ಅಖಂಡ ಶಿಲೆಯಲ್ಲಿ ಕೆತ್ತಿರುವುದು ವಿಶೇಷವಾಗಿದೆ. ಅಲ್ಲದೆ ಕಠಿಣವಾದ ಮರಳು ಶಿಲೆಯನ್ನು ಇಲ್ಲಿ ಶಿಲ್ಪಕ್ಕೆ ಬಳಸಿರುವುದು ಮಹತ್ವದ್ದು. ಇದು ಶಿಲ್ಪಕಾರನ ನೈಪುಣ್ಯ, ಕಠಿಣ ಪರಿಶ್ರಮ, ವಿಷಯ ಹಾಗೂ ಮಾಧ್ಯಮದ ಬಗ್ಗೆ ಇರುವ ತಿಳುವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಪ್ರಶ್ನೆ : ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ಉತ್ತರ : ಪ್ರಸ್ತುತ ರಾಜಕೀಯ ಜಾತಿಯಿಂದ ತುಂಬಾ ಹದಗೆಟ್ಟಿದೆ. ಕಲಾವಿದರಿಗೆ ಇಂದಿನ ಪರಿಸ್ಥಿತಿಯಲ್ಲಿ ಬೆಲೆ ಇಲ್ಲದಂತಾಗಿದೆ. ತಮ್ಮ ಸ್ವಾರ್ಥಕ್ಕಾಗಿ ಕಲಾವಿದರನ್ನು ಬಲಿಪಶು ಮಾಡುತ್ತಿದ್ದಾರೆ. ರಾಜಕೀಯ ಅನ್ನೋದೆ ಇರಬಾರದು ನನ್ನ ಪ್ರಕಾರ ಪ್ರಶ್ನೆ : ಧರ್ಮ ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು ? ಉತ್ತರ : ಧರ್ಮ, ದೇವರು ಅಂದರೆ ಯಾವುದು ನಂಬಿಕೆ ಅನ್ನುವುದೆ ದೇವರು ನನ್ನ ಪ್ರಕಾರ. ಧರ್ಮವು ಮಾನವ ಸಮಾಜವನ್ನು ಸಂರಕ್ಷಿಸುವ ಒಂದು ಪ್ರಮುಖ ಸಾಧನವಾಗಿದೆ. ಧರ್ಮೋ ರಕ್ಷತಿ ರಕ್ಷತಃ ಅಂದರೆ ಧರ್ಮವನ್ನು ರಕ್ಷಿಸುವವರನ್ನು ಧರ್ಮವು ರಕ್ಷಿಸುತ್ತದೆ. ಧರ್ಮನಾಶವಾದಲ್ಲಿ ಜನಾಂಗವೇ ನಾಶವಾಗುವುದು. ಒಳ್ಳೆಯ ರೀತಿಯಲ್ಲಿ ಬದುಕುವುದೆ ಧರ್ಮ. ದಯಯೇ ಧರ್ಮದ ಮೂಲ. ದೇವನೊಬ್ಬ ನಾಮ ಹಲವು. ಪ್ರಶ್ನೆ : ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ ? ಉತ್ತರ : ಪ್ರಸ್ತುತ ಸಾಂಸ್ಕೃತಿಕ ವಾತಾವರಣ, ಅಕಾಡೆಮಿಗಳಲ್ಲಿಯೂ ಕೂಡ ರಾಜಕೀಯದಿಂದ ಹೊರತಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಯಾವುದೇ ಕಾರ್ಯಗಳಲ್ಲಿ ರಾಜಕೀಯ ಮುಖ್ಯ ಪಾತ್ರ ವಹಿಸುತ್ತಿದೆ. ಪ್ರಶ್ನೆ : ಚಿತ್ರ , ಕಲಾ ಲೋಕ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಉತ್ತರ : ಪ್ರಸ್ತುತ ಇತ್ತೀಚಿನ ದಿನಗಳಲ್ಲಿ ಕಲಾ ಲೋಕದಲ್ಲಿಯೂ ಕೂಡ ರಾಜಕೀಯ ಮಧ್ಯಸ್ಥಿಕೆ ವಹಿಸುತ್ತಿದೆ. ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ. ನಿಜವಾದ ಕಲಾವಿದರನ್ನು ಗುರುತಿಸುವುದು ಕಷ್ಟವಾಗಿದೆ. ಪ್ರಶ್ನೆ : ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ಉತ್ತರ : ಮನುಜ ಜನ್ಮವು ಒಂದೆ ಎಂದು ತಿಳಿದುಕೊಂಡು ಧರ್ಮ ದಿಂದ ನಡೆಯಬೇಕು. ಪ್ರಶ್ನೆ : ಕನ್ನಡ ಹಾಗೂ ಆಂಗ್ಲ ಭಾಷೆಯ ಕಲಾಪ್ರಕಾರದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕಲಾವಿದ ಯಾರು ? ಉತ್ತರ : ಕರ್ನಾಟಕದ ಶಿಲ್ಪಿ. ದೇವಲಕುಂದ ವಾದಿರಾಜ ಹಾಗೂ ಪಾಶ್ಚಿಮಾತ್ಯ ಕಲಾವಿದ ಹೆನ್ರಿ ಮೋರ್. ********************** ************************************* ಲೇಖಕರ ಬಗ್ಗೆ: ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ Read Post »
ಕಬ್ಬಿಗರ ಅಬ್ಬಿ – ಸಂಚಿಕೆ ೩
ಶ್ರಾವಣ ಗೀತ ಮಹಾದೇವ ಕಾನತ್ತಿಲ ಸಂಕ್ರಮಣ! ಹೌದು, ಸಂಕ್ರಮಣ, ಒಂದು ಸ್ಥಿತಿಯಿಂದ ಇನ್ನೊಂದಕ್ಕೆ, ಮತ್ತೆ ಮತ್ತೊಂದಕ್ಕೆ!. ಅಂಗಳದಲ್ಲಿ ಲಂಗದಾವಣಿ ಹಾಕಿ ಕುಣಿದು ಹಾರುತ್ತಿದ್ದ ಹುಡುಗಿ, ಪುಷ್ಪವತಿಯಾಗಿ, ಗಾಂಭೀರ್ಯ ತುಂಬಿ, ಗಜಗಾಮಿನಿಯಾದಾಗ ಸಂಕ್ರಮಣ. ಒಂದು ಮುಂಜಾನೆ, ಕಪ್ಪುಹಸಿರು ಜಡ ಎಲೆಗಳ ಮಾಮರದಲ್ಲಿ, ನಸುಗೆಂಪು ತಳಿರು ಚಿಗುರೊಡೆದಾಗ ಮರಕ್ಕೆ ಸಂಕ್ರಮಣ. ನಲವತ್ತರ ನಸುಕಲ್ಲಿ, ಕಣ್ಣು ಮಬ್ಬಾಗಿ ನೆಟ್ಟ ನೇರ ನೋಟಕ್ಕೆ, ಚಾಳೀಸು ಬಂದಾಗ ಸಂಕ್ರಮಣ. ಅರುವತ್ತಕ್ಕೆ ವೃತ್ತಿಯಿಂದ ನಿವೃತ್ತಿ ಸಂಕ್ರಮಣ. ಹೆಚ್ಚೇನು! ಸೂರ್ಯೋದಯ,ಸೂರ್ಯಾಸ್ತಮಾನ ದಿನ ರಾತ್ರೆಗಳ ಅದಲು ಬದಲು ಸಂಕ್ರಮಣ!. ಪ್ರಕೃತಿಯಲ್ಲಿ, ಬದುಕಿನ ಘಟನೆಗಳಲ್ಲಿ, ಅರ್ಥವ್ಯವಸ್ಥೆಯ ಸಾಧ್ಯತೆಗಳಲ್ಲಿ, ನೇರವಾಗಿ ಚಲಿಸುವ ನಮ್ಮ ಕಾರು, ಅಚಾನಕ್ ಆಗಿ ರಸ್ತೆ ಬಲಕ್ಕೋ, ಎಡಕ್ಕೋ ತಿರುಗಿದರೆ ಒಂದು ಬಿಂದುವಿನಲ್ಲಿ ದಾರಿ ಸಂಕ್ರಮಿಸುತ್ತದೆ. ಹೌದು ಅಲ್ಲೊಂದು ಸಂಧಿಬಿಂದುವಿದೆ. ಇಂತಹ ಸಂಕ್ರಮಣಕ್ಕೆ, ಕವಿಮನಸ್ಸನ್ನು ಹೇಗೆ ಸ್ಪಂದಿಸಬಹುದು ಎನ್ನುವುದು ಕೌತುಕವೇನಲ್ಲ. ಕವಿಮನಸ್ಸು ಅತ್ಯಂತ ಸೂಕ್ಷ್ಮ. ಸುತ್ತುಮುತ್ತಲಿನ ಅತಿ ಚಿಕ್ಕ ಬದಲಾವಣೆಗಳನ್ನೂ, ಗಮನಿಸಿ ಸ್ಪಂದಿಸುವ, ಅನುಭವಿಸಿ, ಸೃಜಿಸುವ ಮನಸ್ಸದು. ಉದಾಹರಣೆಗೆ, ನಿನ್ನೆಯವರೆಗೆ ರಣರಣ ಬಿಸಿಲು, ಸಾಯಂಕಾಲ ಗಾಳಿಬೀಸಿದರೂ, ಒಲೆಯಿಂದ ಹೊರಟ ತಿದಿಯ ಹಾಗೆ ಬೇಯಿಸುವ ಗಾಳಿ. ಧೂಳನ್ನೆಬ್ಬಿಸುವ, ಸುಳಿ ಸುಳಿಯಾಗಿ ತಿರುಗಿಸುವ ಸುಂಟರಗಾಳಿ. ಆಕಾಶದಲ್ಲಿ ಬಿಳೀ ಮೋಡಗಳು ನಿರಾಶೆಯ ಹೆಣವನ್ನು ಹೊತ್ತು ಸ್ಮಶಾನ ಹುಡುಕುವಂತೆ ಸುತ್ತುವಾಗ, ಮಳೆಯೆಲ್ಲಿಯದು! ಎಲ್ಲೋ ಮರೀಚಿಕೆಯಂತೆ ಒಂದೋ ಎರಡೋ ಹನಿ ಉದುರಿಸಿ ವಾತಾವರಣವನ್ನು, ಇಡ್ಲಿ ಬೇಯಿಸುವ ಕುಕ್ಕರ್ ನೊಳಗಿನ ಹಬೆಯಂತೆ ಬೆವರಿಳಿಸುವ ಹವೆ. ಹಾಗಿದ್ದಾಗ ಅಚಾನಕ್ ಆಗಿ ಮಳೆ ಬಂದರೆ! ಅದೆಂಥಾ ಮಳೆ!. ಇಳೆ ತಣಿಸುವ, ನೊಂದು ಬಿಕ್ಕಳಿಸುವ ಮನಸ್ಸಿಗೆ ಬೆನ್ನು ಸವರಿ ಸಾಂತ್ವನ ಹೇಳುವ ಅಮ್ಮನ ಸ್ಪರ್ಶದಂತಹಾ ಮಳೆ!. ಮಳೆಯೋ ಮಳೆ. ಹ್ಞಾ! ಇದೊಂದು ಮೈನವಿರೇಳಿಸುವ ಸಂಕ್ರಮಣವೇ!. ಹೀಗೆ ಉತ್ತರ ಕರ್ನಾಟಕಕ್ಕೆ ಹಾಜರು ಹಾಕುವುದು ಶ್ರಾವಣ! (ಇವಿಷ್ಟೂ ಮಲೆನಾಡು ಮತ್ತು, ಕರಾವಳಿಗೆ ಅನ್ವಯವಾಗಲ್ಲ. ಅಲ್ಲಿ, ಆಷಾಢ ಪೂರ್ತಿ ಮಳೆಸುರಿದು,ಶ್ರಾವಣದಲ್ಲಿ ಸೋನೆಮಳೆ.) ಶ್ರಾವಣ ಬಂತೆಂದರೆ, ಬೇಂದ್ರೆಯಂತಹ ಬೇಂದ್ರೆ, ಕರಗಿ ಹರಿಯುತ್ತಾರೆ.. “ಶ್ರಾವಣ ಬಂತು ಕಾಡಿಗೆ ಬಂತು ನಾಡಿಗೆ ಬಂತು ಬೀಡಿಗೆ ಬಂತು ಶ್ರಾವಣ ಓ! ಬಂತು ಶ್ರಾವಣ” ಸಮ ದೃಷ್ಟಿ, ಬೇಂದ್ರೆಯವರ ಶ್ರಾವಣಕ್ಕೆ!. ಈ ಶ್ರಾವಣ, ಎಲ್ಲರಿಗೂ, ಎಲ್ಲಾ ನೆಲಕ್ಕೂ, ತಾರತಮ್ಯವಿಲ್ಲದೆ ಕದ ತಟ್ಟಿ, ಎಲ್ಲವನ್ನೂ ಹೊಸತಾಗಿಸುವ ಸಂಕ್ರಮಣ ಕ್ರಿಯೆ. ಶ್ರಾವಣದ ಅಗಾಧತೆ, ಮನಷ್ಯನ ಯೋಚನೆಗೂ ಮೀರಿದ ಅದರ ಶಕ್ತಿಯನ್ನು, ವ್ಯಾಪ್ತಿಯನ್ನು ಬೇಂದ್ರೆಯವರು ಈ ಕೆಳಗಿನ ಸಾಲುಗಳಲ್ಲಿ ಅನುಭವಿಸುತ್ತಾರೆ. “ಕಡಲಿಗೆ ಬಂತು ಶ್ರಾವಣಾ| ಕುಣಿಧ್ಹಾಂಗ ರಾವಣಾ| ಕುಣಿದಾವ ಗಾಳಿ| ಭೈರವನ ರೂಪತಾಳಿ” ಇಲ್ಲಿ, ಕಡಲು, ಗಾಳಿ ಇತ್ಯಾದಿಗಳು, ಬೇಂದ್ರೆಯವರ ಕಾವ್ಯ ಕುಸುರಿಯ ಹಲವು ಅರ್ಥಸಾಧ್ಯತೆಗಳು. ಅವರು ಮುಂದುವರೆದು, “ಶ್ರಾವಣ ಬಂತು ಘಟ್ಟಕ್ಕ ರಾಜ್ಯ ಪಟ್ಟಕ್ಕ, ಬಾಣ ಮಟ್ಟಕ್ಕ” ಅನ್ನುತ್ತಾರೆ. ಶ್ರಾವಣ ಎಂಬ ಪ್ರತಿಮೆಯನ್ನು, ಮಳೆಯಿಂದ, ಎತ್ತರಕ್ಕೆ ಬೆಳೆಸಿ, ಅದಕ್ಕೆ ರಾಜ್ಯಭಾರದ ಹವಾಮಾನದ ಪ್ರತಿಮೆ, ವಿವಿಧ ಬದುಕಿನ ಸ್ತರಗಳನ್ನು ಅದು ಆವರಿಸುವ ಪ್ರತಿಮೆ, ಅದರ ಅಗಾಧತೆ ಇತ್ಯಾದಿ ಆಯಾಮಗಳಿಂದ ಅರ್ಥವರ್ಷವಾಗಿಸುತ್ತಾರೆ. ಆಷಾಢ ಮಾಸದ ಅಗಂತುಕ, ಅಪರೂಪದ ಅತಿಥಿ ಮಳೆ. ನೆಲ ಹಸನು ಮಾಡಿ, ಬಿತ್ತಿ, ಮಳೆಗಾಗಿ ಕಾಯುವಾಗ, ಅದೋ ನೋಡಿ, ಆಗಸ ತುಂಬಾ ದಟ್ಟ ಮೋಡಗಳು.ಮೋಡಗಳು ಜೀವಜಾಲಕ್ಕೆ ಹೊಸ ಭರವಸೆಯ ಮೋಡ. ಬರೇ ಮೋಡವಲ್ಲ, ಆಗಸದ ತುಂಬಾ ತೂತು ಬಿದ್ದು ಸೋರಿ ಬೀಳುವ ತುಂತುರು ನಿರಂತರ ಮಳೆ, ಆಶೆ ಆಶೋತ್ತರಗಳ ಸಂಕೇತ. “ಬನಬನ ನೋಡು ಈಗ ಹ್ಯಾಂಗ| ಮದುವಿ ಮಗನ್ಹಾಂಗ ತಲಿಗೆ ಬಾಸಿಂಗ| ಕಟ್ಟಿಕೊಂಡೂ| ನಿಂತಾವ ಹರ್ಷಗೊಂಡು” ಶ್ರಾವಣ ಎಂದರೆ ಬೇಂದ್ರೆಯವರಿಗೆ ಸೃಷ್ಟಿಯ ಮುಖಬಾಗಿಲು. ಅಸಂಖ್ಯ ಬೀಜಗಳು ತಂತಾನೇ ಮೊಳೆತು ಜೀವಸಂಕುಲಗಳ ಚಿಲಿಪಿಲಿ ಎಷ್ಟು ಅಗಾಧ ಎಂದರೆ ಬೆಟ್ಟಗಳೆಲ್ಲಾ ಹಸಿರಿನ ಅಂಗಿ ತೊಡುತ್ತವೆ. ಶ್ರಾವಣ ಎಂದರೆ ಅದು ಸೃಷ್ಟಿಕ್ರಿಯೆಯ ಉತ್ಸವವೂ ಹೌದು. ಬನಬನಗಳೂ ಬಾಸಿಂಗ ಕಟ್ಟಿ ಮದುಮಗ, ಮದುಮಗಳಾಗಿ ಸಂಭ್ರಮಿಸುವದನ್ನು ಬೇಂದ್ರೆಯವರು, ಶ್ರಾವಣದ ಮೂಲಕ ಕಾಣುತ್ತಾರೆ. ರೈತರಿಗೆಲ್ಲ, ಬಿತ್ತಿದ,ಬೀಜ, ಮೊಳಕೆ ಹಸಿರು ಚಿಗುರೊಡೆಯುವ ಸಂತಸ. ಪ್ರಕೃತಿ ಹಸಿರುಮನೆಯಾಗಿ ಹೊಸ ಹಕ್ಕಿಗಳನ್ನು ಕರೆಯುತ್ತೆ, ಬಳ್ಳಿಗಳು ಬಳುಕಿ ಮರವೇರಿ ಹೂಗಳ ಬಾವುಟ ಹಾರಿಸುತ್ತವೆ. ಇಂತಹಾ ಶ್ರಾವಣ, ಪ್ರಕೃತಿಯ ಸಂಭ್ರಮದ ಬಾಗಿಲು ತೆರೆದಂತೆ, ಜೀವಸಂಕುಲಕ್ಕೆ ಚೇತನ ಮೂಡಿಸಿದಂತೆ, ಹಬ್ಬಗಳೂ ಜನಮಾನಸಕ್ಕೆ ಬಣ್ಣ ತುಂಬುತ್ತವೆ. ಮದುವೆಯಾಗಿ ಗಂಡನಮನೆ ಸೇರಿದ ಹೆಣ್ಣು ಮಗಳನ್ನು ಹೊಕ್ಕುಳಬಳ್ಳಿ ಸೆಳೆಯುತ್ತೆ,ಆಷಾಢ ಮಾಸದ ಕೊನೆಯಲ್ಲಿ. ಅಣ್ಣ ಬಂದು ತವರುಮನೆಗೆ ಕರೆದೊಯ್ಯುವ, ಹಬ್ಬದ ಸಡಗರ ಶ್ರಾವಣದ ಚೌತಿ ಮತ್ತು ಪಂಚಮಿ. ಜಾನಪದ ಸಂಗೀತಕ್ಕೂ ಮತ್ತು ಶ್ರಾವಣಕ್ಕೂ ಬಿಟ್ಟಿರದ ಸಂಬಂಧ. ‘ಆನಂದ ಕಂದ’ ( ಬೆಟಗೇರಿ ಕೃಷ್ಣಶರ್ಮ) ಅವರು ಜಾನಪದ ಶೈಲಿಯಲ್ಲಿ ಬರೆದ ಹಾಡು.. “ಪಂಚಮಿ ಹಬ್ಬ ಉಳಿದಿದೆ ದಿನ ನಾಕs.. ಅಣ್ಣ ಬರಲಿಲ್ಲ ಯಾಕs ಕರಿಯಾಕs..” ಅಂತ ಆರ್ತದನಿಯಲ್ಲಿ ಅಣ್ಣನಿಗಾಗಿ ಕಾಯುವ ತಂಗಿಯ ಹಾಡು. ಈ ಹಾಡು ಮನಮನವನ್ನೂ ಹೊಕ್ಕು, ಪ್ರತಿಯೊಂದು ಮನೆಯಲ್ಲೂ ಗುನುಗುನಿಸಿ, ಬರೆದವರ ಹೆಸರೇ ಮರೆತಷ್ಟು ಜಾನಪದ ಹಾಡಿನ ಸ್ವರೂಪ ಪಡೆದಿದೆ. ಈ ಶ್ರಾವಣವೇ ಹೀಗೆ. ಇದರ ಮಳೆ, ಇದರ ಮೋಡ, ಮೊಳಕೆಯೊಡೆಯುವ ಹೊಲ, ಎಲ್ಲವೂ ಆಶೆ ಆಶೋತ್ತರಗಳನ್ನು, ಭರವಸೆಗಳನ್ನು ಸೋನೆಮಳೆಯಾಗಿ ಸುರಿಸುತ್ತೆ. ಈ ಹಾಡಿನ ಕೆಳಗಿನ ಸಾಲುಗಳನ್ನು ನೋಡಿ.. “ನಮ್ಮ ತವರೀಲಿ ಪಂಚಮಿ ಭಾರಿ ಮಣದ ತುಂಬಾ ಬಟ್ಟಲ ಕೊಬ್ಬರೀ ಎಳ್ಳು ಅವಲಕ್ಕಿ ತಂಬಿಟ್ಟು ಸೂರಿ ನಾನೂ ತಿನುವಾಕಿ ಬಂದ್ ಹಾಂಗ ಮನಕ- ಅಣ್ಣ ಬರಲಿಲ್ಲ ಯಾಕೋ ಕರಿಲಾಕ …” ಪಂಚಮಿ ಹಬ್ಬದ ಸಿಹಿ ತಿಂಡಿಗಳು, ಮನೆ ಮುಂದೆ ಚಿತ್ರಿಸುವ ರಂಗೋಲಿಗಳು, ಹೆಣ್ಮಕ್ಕಳೆಲ್ಲಾ ಮಕ್ಕಳೆಲ್ಲಾ ಸಪ್ತವರ್ಣದ ಬಳೆ ತೊಟ್ಟು ಗಲಗಲಿಸಬೇಕು, ಹೊಸ ಅಂಗಿ ತೊಟ್ಟು,ಜೋಕಾಲಿ ಆಡಬೇಕು, ಎಷ್ಟೆಂದರೆ, ಈ ಹಬ್ಬವನ್ನೇ, ಜೋಕಾಲಿ ಹಬ್ಬ ಎನ್ನುವಷ್ಟು!. ಶ್ರಾವಣ ಅಂದರೆ ಬರೇ ಮಳೆಯಲ್ಲ, ಇದೊಂದು ಸಮಾಜದಿಂದ ಸಮಾಜಕ್ಕೇ ಕಳೆಕಟ್ಟುವ ಹಬ್ಬಗಳ ತೋರಣ. ಶ್ರಾವಣದ ಪಂಚಮಿಯಂದು ಮದುವೆಯಾದ ಹೆಣ್ಣುಮಗಳು ತನ್ನ ತವರಿಗೆ ಬಂದು, ನಾಗನಿಗೆ ಹಾಲೆರೆದು ತಮ್ನ ಬೆನ್ನು, ಬಸಿರು ತಣ್ಣಗಿರಿಸಬೇಕೆಂದು ನಾಗನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ತನ್ನ ಬೆನ್ನು ಎಂದರೆ ತವರು, ಅಣ್ಣ ತಮ್ಮಂದಿರು, ಬಸಿರು ಎಂದರೆ ಮುಂದಿನ ಪೀಳಿಗೆ. ಹೀಗೆ ತವರಿಗಾಗಿ ಮತ್ತು ತನ್ನ ಪೀಳಿಗೆಗಾಗಿ ಪ್ರಾರ್ಥನೆ ಮಾಡುವಾಗ,ಆಕೆ, ಎರಡು ಮನೆಗಳನ್ನು ತನ್ನ ಮೂಲಕ ಜೋಡಿಸುತ್ತಾಳೆ. ಶ್ರಾವಣ ಕಳೆಯುವ ಕಾಲವಲ್ಲ, ಕೂಡುವ ಕೂಡಿ ಚಿಗುರುವ ಸಮೃಧ್ಧಿಯ ಕಾಲ. ಹೀಗೆ ಶ್ರಾವಣ, ಕವಿಮನಸ್ಸಿನೊಳಗೆ ಹೇಗೆ ಹಲವಾರು ಪ್ರತಿಮೆಗಳ ರೂಪತಳೆದು ಜನ್ಮಿಸುತ್ತದೋ,ಹಾಗೆಯೇ ಜಾನಪದದಲ್ಲೂ ಹಲವು ಆಯಾಮಗಳಿಗೆ ರೂಪಕವಾಗಿ, ಹಳತನ್ನು ಮರೆಯದೆ ಹೊಸತಿಗೆ ತೆರೆಯುವ, ಸ್ವಸ್ಥ ಸಮಾಜದ ನಿರ್ಮಾಣದ, ಸಂಕ್ರಮಣ, ಜೀವಸಂಭ್ರಮ. **********
ಕಬ್ಬಿಗರ ಅಬ್ಬಿ – ಸಂಚಿಕೆ ೩ Read Post »
ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ ಇರಲಿಲ್ಲವಂತೆ. ಸಂತಾನ ಬೇಕಾದ ಸ್ತ್ರೀಯರೂ ರಾಜ್ಯದ ಹೊರಗೆ ಹೋಗಿ ಪಡೆಯಬೇಕಾಗಿತ್ತಂತೆ. ಒಂದುವೇಳೆ ಗಂಡು ಸಂತಾನವನ್ನು ಪಡೆದರೆ ಆ ಮಗುವನ್ನು ಅಲ್ಲಿಯೇ ಬಿಟ್ಟು ಬಿಡುವುದು ಅನಿವಾರ್ಯವಾಗಿತ್ತಂತೆ. ಆದರೆ ಹೆಣ್ಣು ಮಗುವಾಗಿದ್ದರೆ ಮಾತ್ರ ತಮ್ಮ ರಾಜ್ಯಕ್ಕೆ ಕರೆದೊಯ್ಯಬಹುದಿತ್ತಂತೆ. ಅಂತಹುದ್ದೊಂದು ಪ್ರಮಿಳಾ ರಾಜ್ಯವಿದ್ದರೆ ನಾನೂ ಅಲ್ಲಿಯೇ ಹೋಗಿ ಇರಬಹುದಾಗಿತ್ತು ಎಂದು ಎಷ್ಟೋ ಸಲ ಅಂದುಕೊಳ್ಳುತ್ತಿರುತ್ತೇನೆ. ಎಷ್ಟೊಂದು ಕೆಲಸಗಳು. ಮುಗಿಯದ, ಮುಗಿಯಲೊಲ್ಲದ ಕೆಲಸಗಳು ದಿನವಿಡೀ ಆದಾಗಲೆಲ್ಲ ಮನೆಯಲ್ಲಿರುವ ಹಿರಿಯ, ಕಿರಿಯ ಮತ್ತು ಅತ್ತ ಹಿರಿಯನೂ ಅಲ್ಲದ, ಇತ್ತ ಕಿರಿಯನೂ ಅಲ್ಲದ ಮೂವರು ಗಂಡಸರಿಗೆ ಒಳಗೊಳಗೇ ಬೈಯ್ದುಕೊಳ್ಳುತ್ತೇನೆ. ಮಹಿಳಾ ಸಾಮ್ರಾಜ್ಯವಾಗಬೇಕಿತ್ತು. ಅಧಿಕಾರವೆಲ್ಲ ನಮ್ಮದೇ ಕೈಯ್ಯಲ್ಲಿದ್ದರೆ ಇವರನ್ನೆಲ್ಲ ಆಟ ಆಡಿಸಬಹುದಿತ್ತು ಎಂದುಕೊಳ್ಳುತ್ತ, ಏನೇನು ಮಾಡಬಹುದಿತ್ತು ನಾನು ಎಂದೆಲ್ಲ ಊಹಿಸಿಕೊಂಡು ಮನದೊಳಗೇ ನಸುನಗುತ್ತಿರುತ್ತೇನೆ ಆಗಾಗ. ನಾನು ಹಾಗೆ ನಗುವುದನ್ನು ಕಂಡಾಗಲೆಲ್ಲ ‘ಅಮ್ಮ ಹಗಲುಗನಸು ಕಾಣ್ತಿದ್ದಾಳೆ’ ಎಂದು ಗುಟ್ಟಾಗಿ ಅಪ್ಪನ ಬಳಿ ಹೇಳಿಕೊಂಡು ಮಕ್ಕಳು ನಗುತ್ತಿರುತ್ತಾರೆ. ಅಂತಹುದ್ದೇ ಒಂದು ಕನಸಿನ ಕಥೆ ಇಲ್ಲಿದೆ. ಸಂಕಲನದ ಮೊದಲ ಕಥೆ, ಶೀರ್ಷಿಕಾ ಕಥೆಯೂ ಆದ ಎಪ್ರಿಲ್ ಫೂಲ್ ಇದು. ಇಲ್ಲಿ ಗಂಡ ರಾಮು ಮನೆಗೆಲಸವನ್ನೆಲ್ಲ ಮಾಡುತ್ತಾನೆ. ಮಗ ದೀಪುವನ್ನು ಎಷ್ಟು ಓದಿದರೂ ಮನೆಗೆಲಸ ಮಾಡೋದು ತಾನೆ ಎಂದು ಮುಂದೆ ಓದಿಸದೇ ಮನೆಗೆಲಸ ಕಲಿಸಿದ್ದರು. ಮಗಳು ಭೂಮಿ ಮತ್ತು ಹೆಂಡತಿ ಮೈತ್ರಿ ರಾವ್ ಮಾತ್ರ ಹೊರಗಡೆ ಕೆಲಸಕ್ಕೆ ಹೋಗುವವರು. ಹೆಣ್ಣಿನ ಮೇಲೆ ಆಗುತ್ತಿರುವ ದೌರ್ಜನ್ಯ ಈಗ ಗಂಡಿನ ಮೇಲೆ ಆಗುತ್ತಿದೆ. ಗಂಡು ಹೆಣ್ಣಿನ ಅನುಗ್ರಹಕ್ಕಾಗಿ ಅಳುತ್ತಾನೆ. ತನ್ನನ್ನು ಬಿಟ್ಟು ಹೋದರೆ ಎಂದು ಹಳಹಳಿಸುತ್ತಾನೆ. ಹೆಣ್ಣು ಸರ್ವ ಸ್ವತಂತ್ರಳು. ಹೊರಗಡೆಯ ಜವಾಬ್ಧಾರಿ ಹೆಣ್ಣಿನದ್ದು. ಮಗುವನ್ನು ಹೆತ್ತುಕೊಟ್ಟರೆ ಆಯಿತು. ಪಾಲನೆ ಪೋಷಣೆ ಎಲ್ಲವೂ ಗಂಡಿನದ್ದೇ. ಆಹಾ ಎಂದು ಖುಷಿಯಲ್ಲಿ ಓದುತ್ತಿರುವಾಗಲೇ ಇದು ಕನಸು ಎಂದು ಕಥೆಗಾರ ಹೇಳಿಬಿಡುವುದರೊಂದಿಗೆ ನನ್ನ ಊಹಾಲೋಕವೂ ನಿಂತುಹೋಯಿತು. ಆದರೂ ಕಥೆಯಲ್ಲಿ ಬರುವ ಮೊನಚು ವ್ಯಂಗ್ಯ ಇಂದಿಗೂ ಹೆಣ್ಣಿನ ವೇದನೆಯನ್ನು ಕನ್ನಡಿಯಲ್ಲಿಟ್ಟು ತೋರಿಸುತ್ತದೆ. ಹನಮಂತ ಹಾಲಿಗೇರಿ ಒಬ್ಬ ಸಶಕ್ತ ಕಥೆಗಾರ. ನಿಸೂರಾಗಿ ಕಥೆ ಹೇಳುವ ಕಲೆ ಸಿದ್ಧಿಸಿದೆ. ಅದನ್ನು ಮನಮುಟ್ಟುವಂತೆ ಅಕ್ಷರಕ್ಕಿಳಿಸುವ ಶೈಲಿಯೂ ಕರಗತವಾಗಿದೆ. ಕಾರವಾರದಲ್ಲಿ ಪತ್ರಕರ್ತನಾಗಿದ್ದಾಗ ಕೆಲವು ವರ್ಷಗಳ ಕಾಲ ಹತ್ತಿರದಿಂದ ಗಮನಿಸಿದ್ದೇನೆ. ನೊಂದವರ ಪರ ನಿಲ್ಲುವ, ಶೋಷಣೆಗೊಳಗಾದವರ ಸಹಾಯಕ್ಕೆ ಧಾವಿಸುವ ಅವರ ಗುಣವನ್ನು ಕಣ್ಣಾರೆ ಕಂಡಿದ್ದೇನೆ. ಅಂತಹ ಗುಣದಿಂದಾಗಿಯೇ ಬಹುಪಾರಮ್ಯದ ಮಾಧ್ಯಮ ಲೋಕದಲ್ಲಿ ಏಕಾಂಗಿಯಾಗಬೇಕಾದುದನ್ನೂ ಗಮನಿಸಿದ್ದೇನೆ. ಆದರೂ ತಳ ಸಮುದಾಯದ ಪರ ಅವರ ಕಾಳಜಿ ಯಾವತ್ತೂ ಕುಂದಿಲ್ಲ. ಹೀಗಾಗಿಯೇ ಇಲ್ಲಿನ ಕಥೆಗಳಲ್ಲಿ ಶೋಷಣೆಗೊಳಗಾದವರ ನೋವುಗಳನ್ನು ನೇರಾನೇರ ತೆರೆದಿಡುವ ಗುಣವನ್ನು ಕಾಣಬಹುದು. ಅಲೈ ದೇವ್ರ್ರು, ಸುಡುಗಾಡು, ಪಿಡುಗು, ಸ್ವರ್ಗ ಸಾಯುತಿದೆ ಹೀಗೆ ಸಾಲು ಸಾಲಾಗಿ ಕಥೆಗಳು ನಮ್ಮ ಸಾಮಾಜಿಕ ಸ್ಥರಗಳ ಪರಿಚಯ ಮಾಡಿಕೊಡುತ್ತವೆ. ನಮ್ಮದೇ ಧರ್ಮಾಂಧತೆಯನ್ನು ಕಣ್ಣೆದುರು ಬಿಚ್ಚಿಡುತ್ತವೆ. ನಾನು ಚಿಕ್ಕವಳಿರುವಾಗ ಮನೆಯ ಸಮೀಪ ಒಂದು ಮುಸ್ಲಿಂ ಮನೆಯಿತ್ತು. ಅವರ ರಂಜಾನ್ ಬಕ್ರೀದ್ಗೆ ತಪ್ಪದೇ ಸುತ್ತಮುತ್ತಲಿನ ಮನೆಗಳಿಗೆ ಸುರ್ಕುಂಬಾ ಕಳಿಸುತ್ತಿದ್ದರು. ಬಹುತೇಕ ಮನೆಯವರು ಅದನ್ನು ತೆಗೆದುಕೊಂಡೂ ಚೆಲ್ಲಿಬಿಡುತ್ತಿದ್ದುದು ನನಗೀಗಲೂ ನೆನಪಿದೆ. ಆದರೆ ನಮ್ಮ ಮನೆಯಲ್ಲಿ ಅಮ್ಮ ಮಾತ್ರ ಲೋಟಕ್ಕೆ ಹಾಕಿ ಕುಡಿ ಎಂದು ಕುಡಿಸುತ್ತಿದ್ದಳು. ‘ಅವರ ಹಬ್ಬ, ಅವರು ಆಚರಿಸುತ್ತಾರೆ. ಸಿಹಿ ಕೊಡುತ್ತಾರೆ. ನಮ್ಮ ಹಬ್ಬ ಮಾಡಿದಾಗ ನಾವೂ ಪಾಯಸ ಕೊಡುವುದಿಲ್ಲವೇ ಹಾಗೆ’ ಎನ್ನುತ್ತಿದ್ದಳು. ಅಕ್ಕಪಕ್ಕದ ಮನೆಯವರೆಲ್ಲ ಚೆಲ್ಲುವುದನ್ನು ಹೇಳಿದಾಗ ಆಹಾರ ಯಾರೇ ಕೊಟ್ಟರೂ ಅದು ದೇವರಿಗೆ ಸಮಾನ. ಅದಕ್ಕೆ ಅಪಮಾನ ಮಾಡಬಾರದು ಎನ್ನುತ್ತಿದ್ದಳು. ಇತ್ತೀಚೆಗೆ ನಾನು ಈಗಿರುವ ಶಾಲೆಗೆ ಬಂದಾಗ ಎಂಟನೇ ತರಗತಿಗೆ ಬಂದ ಮುಸ್ಲಿಂ ಹುಡುಗ ತಮ್ಮ ಹಬ್ಬಕ್ಕೆ ಮತ್ತದೇ ಸಿರ್ಕುಂಬಾ ಹಿಡಿದುಕೊಂಡು ಬಂದಿದ್ದ. ನಾನು ಚಿಕ್ಕವಳಾಗಿದ್ದಾಗಿನ ಖುಷಿಯಲ್ಲಿಯೇ ಅದನ್ನು ಸವಿದಿದ್ದೆ. ಹತ್ತಿರದ ಸದಾಶಿವಗಡ ಕೋಟೆಯ ಬಳಿ ತನ್ನ ಆರಾಧ್ಯ ದೈವ ದುರ್ಗಾದೇವಿ ದೇವಸ್ಥಾನವನ್ನು ಕಟ್ಟಿದ್ದ ಶಿವಾಜಿ ಪಕ್ಕದಲ್ಲೇ ಒಂದು ಮಸೀದಿಯನ್ನೂ ಕಟ್ಟಿಸಿಕೊಟ್ಟಿದ್ದಾನೆ. ಹಿಂದೂ ಧರ್ಮದ ಅತ್ಯುಗ್ರ ನಾಯಕ ಎಂದು ಬಿಂಬಿಸುತ್ತ, ಶಿವಾಜಿಯನ್ನು ಮುಸ್ಲಿಂ ವಿರೋಧಿ ಎನ್ನುವಾಗಲೆಲ್ಲ ನನಗೆ ಈ ಮಸೀದಿ ನೆನಪಾಗುತ್ತಿರುತ್ತದೆ. ದುರ್ಗಾದೇವಿಯ ಜಾತ್ರೆಗೆ ಹಾಗೂ ದರ್ಗಾದ ಉರುಸ್ಗೆ ಪರಸ್ಪರ ಸಹಕಾರ ನೀಡುವ ಪದ್ದತಿ ಇಲ್ಲಿದೆ. ಹಿಂದೂ ಮುಸ್ಲಿಮರು ಆಚರಿಸುವ ಮೊಹರಂ ಬಗ್ಗೆ ಕೇಳಿದಾಗಲೆಲ್ಲ ಏನೋ ಖುಷಿ. ನನ್ನ ಪರಿಚಯದ ಒಂದು ಮುಸ್ಲಿಂ ಕುಟುಂಬ ಗಣೇಶ ಚತುರ್ಥಿಗೆ ಗಣೇಶನನ್ನು ಕುಳ್ಳಿರಿಸಿ ಪೂಜೆ ಮಾಡುತ್ತದೆ. ಅದೆಷ್ಟೋ ಕ್ರಿಶ್ಚಿಯನ್ ಕುಟುಂಬದೊಡನೆ ಆತ್ಮೀಯ ಸಂಬಂಧವಿದೆ. ನಮ್ಮೂರಿನ ಬಂಡಿ ಹಬ್ಬದ ಸವಿಗಾಗಿ ನಮ್ಮ ಸಹೋದ್ಯೋಗಿಗಳೂ ಮನೆಗೆ ಬರುವುದಿದೆ. ಕ್ರಿಸ್ಮಸ್ ಬಂತೆಂದರೆ ನನ್ನ ಪ್ರೀತಿಯ ವೈನ್ಕೇಕ್ನ ಸುವಾಸನೆ ನಮ್ಮ ಮನೆಯನ್ನೂ ತುಂಬಿರುತ್ತದೆ. ಧಾರ್ಮಿಕ ಸೌಹಾರ್ಧ ಎನ್ನುವುದು ಬರೀ ಬಾಯಿ ಮಾತಿನಲ್ಲಿ ಹೇಳಿದರೆ ಆಗದು. ಇಲ್ಲಿ ಅಲೈ ಹಬ್ಬದಲ್ಲಿ ಹಾಗೂ ಸುಡುಗಾಡು ಎನ್ನುವ ಕಥೆಗಳಲ್ಲಿ ಕಥೆಗಾರ ಧರ್ಮ ಸಾಮರಸ್ಯದ ಬಗ್ಗೆ ಹೇಳುತ್ತಾ ಹೋಗುತ್ತಾರೆ. ಅಲೈ ಹಬ್ಬದಲ್ಲಿ ಹೆಜ್ಜೆ ಹಾಕುವ ಹುಡುಗರು ಹಿಂದುಗಳು. ಆದರೆ ಅದರ ಆಚರಣೆ ಮಸೀದಿಯಲ್ಲಿ. ಅದನ್ನು ನಿಲ್ಲಿಸಲೆಂದೇ ಬರುವ ಧರ್ಮದ ಕಟ್ಟಾಳುಗಳ ಮಾತನ್ನು ಮೀರಿಯೂ ಹಬ್ಬ ನಡೆಯುತ್ತದೆ. ಆದರೆ ಸುಡಗಾಡು ಕಥೆಯಲ್ಲಿ ಹಿಂದುಗಳ ರುದ್ರಭೂಮಿಯಲ್ಲಿ ಹೆಣದ ಕೆಲಸ ಮಾಡುತ್ತಿದ್ದವನ್ನು ಹೊರಗೆಸೆದು ಅವನ ಜೀವನವನ್ನೇ ನರಕವನ್ನಾಗಿಸುವ ಕಥೆಯಿದೆ. ಸಿದ್ದಯ್ಯನ ಪವಾಡ ಹಾಗೂ ಸ್ಥಿತಪ್ರಜ್ಞ ಕಥೆಗೂ ನಮ್ಮ ದೇವರೆಂಬ ಬಹುನಾಟಕದ ಕಥಾನಕಗಳನ್ನು ಹೇಳುತ್ತವೆ. ದೇವರೇ ಇಲ್ಲ ಎಂಬ ಸತ್ಯವನ್ನರಿತ ಸಿದ್ದಯ್ಯನನ್ನೇ ದೇವರನ್ನಾಗಿಸುವ ಜನರ ಮೂರ್ಖತನವೋ ಮುಗ್ಧತೆಯೋ ಎಂದು ಹೇಳಲಾಗದ ನಡುವಳಿಕೆಯಿದ್ದರೆ ಸ್ಥಿತಿಪ್ರಜ್ಞದಲ್ಲಿ ತನ್ನ ತಾಯಿ ತೀರಿ ಹೋದರೂ ನಗುನಗುತ್ತ ದೇವರ ಪೂಜೆಗೆ ಅಣಿಯಾಗುವ ಮಠಾಧೀಶನೊಬ್ಬನ ಮನುಷ್ಯತ್ವ ಕೊನೆಗೊಂಡ ವ್ಯಕ್ತಿಯ ಚಿತ್ರಣವಿದೆ. ಫಾರಿನ್ ಹೊಲೆಯ ಕಥೆಯಂತೂ ನಮ್ಮ ಧರ್ಮದ ಲೂಪ್ಹೋಲ್ಗಳನ್ನು ಅತ್ಯಂತ ತೀಕ್ಷ್ಣವಾಗಿ ನಮ್ಮೆದರು ಬೆತ್ತಲಾಗಿಸುತ್ತದೆ. ಬೀಪ್ ತಿನ್ನಬೇಕೆಂದು ಬಯಸಿದ ವಿದೇಶಿ ಕ್ಯಾಮರೂನ್ ಭಾರತದಲ್ಲಿ ಮಾತ್ರ ಸಿದ್ಧವಾಗುವ ಬೀಫ್ನ ಮಸಾಲೆ ರುಚಿಯನ್ನು ತಮ್ಮ ಊರಲ್ಲಿ ವರ್ಣಿಸುವುದನ್ನು ಹೇಳುತ್ತ ನಿರೂಪಕನ ಧರ್ಮವನ್ನು ಕರಾರುವಕ್ಕಾಗಿ ವಿಶ್ಲೇಷಿಸುತ್ತಾನೆ. ಪಿಡುಗು ಕಥೆಯಲ್ಲಿ ವೇಶ್ಯೆಯರ ಬದುಕಿನ ಕಥೆಯಿದೆ. ಮಧ್ಯಮ ವರ್ಗದ ಮಹಿಳೆಯರು ಯಾವ್ಯಾವುದೋ ಅನಿವಾರ್ಯ ಕಾರಣಗಳಿಗಾಗಿ ಮೈಮಾರಿಕೊಳ್ಳಬೇಕಾದ ಅನಿವಾರ್ಯತೆಯನ್ನು ಈ ಕಥೆ ಹೇಳುತ್ತದೆ. ಕೆಲವು ವರ್ಷಗಳ ಹಿಂದೆ ಗೀತಾ ನಾಗಭೂಷಣರವರ ಒಂದು ಕಥೆ ಎಂಟನೆ ತರಗತಿಗಿತ್ತು. ಮಗನನ್ನು ಕಾಯಿಲೆಯಿಂದ ಉಳಿಸಿಕೊಳ್ಳಲು ಬೇಕಾದ ಔಷಧ ಹಾಗೂ ಆಸ್ಪತ್ರೆಯ ಖರ್ಚಿಗಾಗಿ ಅನಿವಾರ್ಯವಾಗಿ ತನ್ನ ಮೈಯನ್ನು ಒಪ್ಪಿಸಲು ನಿರ್ಧರಿಸುವ ಕಥೆಯದು. ಆದರೆ ಅಂತಹ ಸಂದಿಗ್ಧತೆಯನ್ನು ವಿವರಿಸಿ ಮಕ್ಕಳಿಗೆ ತಾಯಿಯ ಮಹತ್ವವನ್ನು ತಿಳಿಹೇಳಬೇಕಾದ ಅಗತ್ಯತೆ ಅಲ್ಲಿತ್ತು. ವೇಶ್ಯೆಯರೆಂದರೆ ಕೆಟ್ಟವರಲ್ಲ, ಇಂತಹ ಅನಿವಾರ್ಯ ಕಾರಣಗಳೂ ಇರುತ್ತವೆ ಎಂದು ಆಗತಾನೆ ಹರೆಯದ ಹೊಸ್ತಿಲಲ್ಲಿ ಹೆಜ್ಜೆ ಇಡುತ್ತಿರುವ ಮಕ್ಕಳಿಗೆ ಮನಮುಟ್ಟುವಂತೆ ತಿಳಿಸುವ ಗುರುತರ ಜವಾಬ್ಧಾರಿಯೂ ಶಿಕ್ಷಕರ ಮೇಲಿತ್ತು. ಆದರೆ ಆ ಕಥೆ ಹರೆಯದ ಮಕ್ಕಳ ಹಾದಿ ತಪ್ಪುವಂತೆ ಮಾಡುತ್ತದೆ ಎಂಬ ನೆಪ ಹೇಳಿ ಪಾಠವನ್ನು ರದ್ದುಗೊಳಿಸಲಾಯಿತು. ವೇಶ್ಯೆಯರೆಂದರೆ ಒಂದೇ ತಟ್ಟೆಯಲ್ಲಿಟ್ಟು ತೂಗುವ ಸಮಾಜದ ಹೊಸ ಪೀಳಿಗೆಗೆ ಈ ಕಥೆ ಹೇಳಿದರೆ ದೃಷ್ಟಿಕೋನ ಬದಲಾಗಬಹುದಿತ್ತು. ಇಲ್ಲಿಯೂ ಕೂಡ ಮಗಳಿಗಾಗಿ ಮೈಮಾರಿಕೊಳ್ಳುವ ಮಧ್ಯ ವಯಸ್ಕ ಗ್ರಹಿಣಿ ಮತ್ತು ಅವಳಿಗಾಗಿ ತಾನೇ ಗಿರಾಕಿಗಳನ್ನು ತರುವ ಗಂಡನ ಹಣದ ದಾಹ, ನಂತರ ತೀರಿ ಹೋದ ತಾಯಿಯಂತೆ ಅನಿವಾರ್ಯವಾಗಿ ಮತ್ತದೇ ದಂಧೆಗೆ ಇಳಿಯುವ ಮಗಳು ನಮ್ಮ ಆತ್ಮಸಾಕ್ಷಿಯನ್ನೇ ಬೀದಿಗೆ ತಂದು ಬೆತ್ತಲಾಗಿಸಿ ಪ್ರಶ್ನೆ ಕೇಳಿದಂತೆ ಅನ್ನಿಸುತ್ತದೆ. ಇತ್ತ ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವ ಕಥೆ ಕೂಡ ನಮ್ಮನ್ನು ಯೋಚಿಸುವಂತೆ ಮಾಡುತ್ತದೆ. ತನ್ನ ಮಾರ್ಕೆಟಿಂಗ್ ವ್ಯವಹಾರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತ ಮನೆಯ ಜವಾಬ್ಧಾರಿ ವಹಿಸಿಕೊಂಡವಳನ್ನು ಕುಗ್ಗಿಸಿ ತಮ್ಮ ಲಾಭಕ್ಕಾಗಿ ಪುರುಷರ ಮೂತ್ರಿಖಾನೆಯಲ್ಲಿ ಅವಳ ನಂಬರ್ ಬರೆದಿಟ್ಟ ಪುರುಚ ಸಮಾಜ ಅವಳು ಸಂಪೂರ್ಣ ಹತಾಷವಾಗುವಂತೆ ಮಾಡಿಬಿಡುತ್ತದೆ. ಒಮ್ಮೆ ಅನುಮಾನಿಸಿದರೂ ವಸ್ತುಸ್ಥಿತಿಯನ್ನು ಅರ್ಥ ಮಾಡಿಕೊಂಡು ಜೊತೆಗೆ ನಿಲ್ಲುವ ಗಂಡನೊಬ್ಬ ಇಲ್ಲಿದ್ದಾನೆ ಎಂಬುದೇ ಈ ಕಥೆ ಓದಿದ ನಂತರ ಒಂದು ನಿರಾಳ ನಿಟ್ಟುಸಿರಿಡುವಂತೆ ಮಾಡುತ್ತದೆ. ರಾಷ್ಟ್ರೀಯ ಹೆದ್ದಾರಿ ೬೬ನ್ನು ಅಗಲೀಕರಣಗೊಳಿಸುವ ಪ್ರಕ್ರೀಯೆಗೆ ಚಾಲನೆ ದೊರೆತು ನಾಲ್ಕೈದು ವರ್ಷಗಳೇ ಉರುಳಿ ಹೋಗಿದೆಯಾದರೂ ಅಗಲೀಕರಣವಾಗುತ್ತದೆ ಎಂದು ಹೇಳಲಾರಂಭಿಸಿ ಅದೆಷ್ಟೋ ದಶಕಗಳೇ ಕಳೆದು ಹೋಗಿದೆ. ಚಿಕ್ಕವಳಿರುವಾಗ ‘ನಿಮ್ಮ ಮನೆ ರಸ್ತೆಗೆ ಹತ್ತಿರದಲ್ಲಿದೆ. ನಿಮ್ಮನೆ ಗ್ಯಾರಂಟಿ ಹೋಗ್ತದೆ ನೋಡು’ ಎನ್ನುವ ಮಾತು ಕೇಳುತ್ತಲೇ ಬೆಳೆದವಳು ನಾನು. ‘ನಮ್ಮನೆ ಹೋಗೂದಿಲ್ಲ. ಮನೆಪಕ್ಕದಲ್ಲಿ ಪುರಾತತ್ವ ಇಲಾಖೆಗೆ ಸೇರಿದ, ವಿಜಯನಗರ ಸಾಮ್ರಾಜ್ಯದ ಮೂಲ ಮನೆ ಹಾಗೂ ದೇವಸ್ಥಾನವಿದೆ’ ಎನ್ನುತ್ತಿದ್ದೆ ನಾನು. ನಾಗಬಲಿ ಎನ್ನುವ ಈ ಕಥೆಯಲ್ಲಿಯೂ ಬರೀ ಬಾಯಿ ಮಾತಿನಲ್ಲಿದ್ದ ಯೋಜನೆಗೆ ಚಾಲನೆ ದೊರೆತು ಹಾವೂರು ಎನ್ನುವ ಪುರಾತನ ದೇಗುಲದ ಮೇಲೆ ರಸ್ತೆ ಹಾದು ಹೋಗುವುದನ್ನು ವಿರೋಧಿಸುವ ಊರ ಜನರ ಹೋರಾಟ ಯಶಸ್ವಿಯಾದರೂ ಮುಂದೆ ಸರಕಾರ ಅಲ್ಲಿ ಸ್ನೇಕ್ ಟೆಂಪಲ್ ಎನ್ನುವ ಹಾವುಗಳ ಪಾರ್ಕ್ ಮಾಡಿ ಇಡೀ ಊರೆ ನಾಶವಾಗಿ ಹೋಗುವ ಕಥೆ ಇಲ್ಲಿದೆ. ಹಾವುಗಳ ಶಿಲ್ಪ ಮಾಡಿ ಪ್ರದರ್ಶಿಸುವ ನಾವು ನಿಜದ ಹಾವುಗಳನ್ನು ಹೇಗೆ ಕೊಲ್ಲುತ್ತೇವೆ ಎನ್ನುವ ವಿಷಾದ ಇಲ್ಲಿದೆ. ಅದೇರೀತಿ ಹಾಳಾಗಿ ಹೋದ ಊರಿನ ಮತ್ತೊಂದು ಕಥೆ ‘ಸ್ವರ್ಗ ಸಾಯುತ್ತಿದೆ’. ಇಲ್ಲಿ ದೇವಸಗ್ಗ ಎನ್ನುವ ಊರನ್ನು ತಮ್ಮ ಪಾಳೆಗಾರಿಕೆಯಿಂದ ವಶಡಿಸಿಕೊಂಡ ನಾಯಕ, ಹುಲಿಯೋಜನೆಯಿಂದಾಗಿ ಮನೆ ಬಿಟ್ಟ ಊರ ಜನರು, ಊರನ್ನು ಬಿಡಲೊಲ್ಲದ ಒಂದೆರಡು ಮನೆಯವರು ಉಡಲು ವಸ್ತ್ರವಿಲ್ಲದೇ ಬಳ್ಳಿ ಎಲೆಗಳನ್ನು ಸುತ್ತಿಕೊಂಡು ನಾಗರಿಕ ಸಮಾಜಕ್ಕೆ ಆದಿವಾಸಿಗಳಂತೆ ಗೋಚರಿಸುವುದನ್ನು ಕಥೆಗಾರ ಮನೋಜ್ಞವಾಗಿ ಹೇಳಿದ್ದಾರೆ. ಹುಲಿ ಯೋಜನೆ ಅನುಷ್ಟಾನಗೊಂಡ ಹಳ್ಳಿಗಳಲ್ಲಿ ಎಷ್ಟೋ ಸಲ ವಾಸಿಸಿದ್ದೇನೆ. ಮನೆ ಬಿಟ್ಟರೆ ಸರಕಾರ ಪರಿಹಾರ ನೀಡುತ್ತದೆ ಎನ್ನುವ ಆಕರ್ಷಕ ಕೊಡುಗೆಯ ಹೊರತಾಗಿಯೂ ಅಲ್ಲಿನ ಕೆಲ ಜನರು ಮನೆಯನ್ನು ಬಿಡಲೊಲ್ಲದೇ ಅಲ್ಲೇ ಇದ್ದಾರೆ. ಆದರೆ ಅಂತಹ ಹಳ್ಳಿಗಳ ಬಿಟ್ಟ ಮನೆಗಳಿಂದಾಗಿ ನಿರಾಶ್ರಿತರ ತವರೂರಿನಂತಾಗಿರುವುದನ್ನು ಕಂಡು ಬೇಸರಿಸಿದ್ದೇನೆ. ಹರಪ್ಪಾ ಮೊಹಂಜೋದಾರ್ನಂತೆ ಅವಶೇಷಗಳ ಊರು ಎನ್ನಿಸಿ ಖೇದವೆನಿಸುತ್ತದೆ. ಈ ಕಥೆಯನ್ನು ಓದಿದಾಗ ಅದೆಲ್ಲ ನೆನಪುಗಳು ಒತ್ತಟ್ಟಿಗೆ ಬಂದು ಕಾಡಲಾರಂಭಿಸಿದ್ದು ಸುಳ್ಳಲ್ಲ. ಮನೆ ಕಟ್ಟುವ ಆಟದಲ್ಲಿ ಬೆಂಗಳೂರೆಂಬ ಬೆಂಗಳೂರಲ್ಲಿ ಮನೆ ಕಟ್ಟಬೇಕೆಂದುಕೊಂಡ ಸಾಮಾನ್ಯ ಪ್ರಿಂಟಿಂಗ್ ಪ್ರೆಸ್ನ ನೌಕರನೊಬ್ಬನ ಬವಣೆಯ ಚಿತ್ರವಿದ್ದರೆ ‘ದೀಪದ ಕೆಳಗೆ ಕತ್ತಲು’ ಕಥೆ ಮಲ ಬಾಚಲು ಹಿಂದೇಟು ಹಾಕಿದ ಪೌರ ಕಾರ್ಮಿಕ ನಂತರ ಎಲ್ಲೂ ಉದ್ಯೋಗ ದೊರಕದೇ ಒದ್ದಾಡುವ ಕಥೆಯನ್ನು ಹೇಳುತ್ತದೆ. ಮಣ್ಣಿಗಾಗಿ ಮಣ್ಣಾದವರು ಸೈನಿಕನೊಬ್ಬನ ಮನಮಿಡಿಯು ಕಥೆಯ ಜೊತೆಗೇ ಅವನ ನಂತರ ಅವನ ಹೆಂಡತಿ ಅನುಭವಿಸುವ ತಲ್ಲಣಗಳನ್ನು ವಿವರಿಸುತ್ತೆ. ಆದರೂ ಈ ಮೂರು ಕಥೆಗಳು ಮತ್ತಿಷ್ಟು ಗಟ್ಟಿಯಾಗಿದ್ದರೆ ಒಳ್ಳೆಯದಿತ್ತು. ಗಂಡು ಜೋಗ್ಯ ಕಥೆಯು ಬದುಕಬೇಕೆಂಬ ಆಸೆ ಹೊತ್ತ ಮುತ್ತು ಕಟ್ಟಿಸಿಕೊಂಡ ಜೋಗಪ್ಪನ ಪ್ರೀತಿಯನ್ನು ವಿಷದಪಡಿಸಿದರೆ ಪ್ರೀತಿಗೆ ಸೋಲಿಲ್ಲ ಕಥೆ ಗಂಡು ಹೆಣ್ಣಿನ ಸಂಬಂಧದ ಕುರಿತು ಮಾತನಾಡುತ್ತದೆ. ಹಾಗೆ ನೋಡಿದರೆ ಇಡೀ ಸಂಕಲನವೇ ಮಾನವ ಸಹಜ ಭಾವನೆಗಳಿಂದ ಕೂಡಿಕೊಂಡಿದೆ. ಇಲ್ಲಿ ಪ್ರೀತಿಯಿದೆ, ದ್ವೇಷವಿದೆ, ಮೋಸ, ಸುಳ್ಳುಗಳಿವೆ, ಅಷ್ಟೇ ಸಹಜವಾದ ಕಾಮವೂ
ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು. ಬದುಕಿನ ಸೂಕ್ಷ್ಮಗಳೆಲ್ಲವನ್ನೂ ತನ್ನೆಲ್ಲ ಚಾಣಾಕ್ಷತೆಯನ್ನು ಉಪಯೋಗಿಸಿ ಕಾಪಾಡಿಕೊಳ್ಳುವ ಮಾತು, ಅಗತ್ಯ ಬಿದ್ದಾಗಲೆಲ್ಲ ಸಂಬಂಧಗಳಿಗೊಂದು ಜೀವಂತಿಕೆಯನ್ನೂ ಒದಗಿಸುತ್ತದೆ. ಮಾತುಗಳೇ ಇಲ್ಲದ ಸಂಬಂಧವೊಂದು ಎಲ್ಲಿಯವರೆಗೆ ಜೀವಂತವಾಗಿ ಉಳಿದೀತು; ಎಲ್ಲ ನಕಾರಾತ್ಮಕತೆಯ ಪರಿಹಾರವೆನ್ನುವಂತೆ ಹೃದಯಕ್ಕಿಳಿವ ಮಾತು ಮಾತ್ರವೇ ಸಂಬಂಧಗಳನ್ನೆಲ್ಲ ಸಹೃದಯತೆಯ ಸೆರಗಿನಲ್ಲಿ ಬಚ್ಚಿಟ್ಟು ಸಾಕಿ ಸಲಹೀತು! ಕಾಲಕಾಲಕ್ಕೆ ತಕ್ಕಂತೆ ಸಂಬಂಧಗಳ ಮೌಲ್ಯದ ಪರಿಕಲ್ಪನೆ ಬದಲಾಗುತ್ತಾ ಹೋದರೂ ಮಾತು ಮಾತ್ರ ಬೇಜಾರಿಲ್ಲದೇ ಬದಲಾವಣೆಗಳಿಗೆಲ್ಲ ಹೊಂದಿಕೊಂಡಿತು. ಪತ್ರಗಳ ಪ್ರಿಯ ಗೆಳತಿ-ಗೆಳೆಯಂದಿರೆಲ್ಲ ವಾಟ್ಸಾಪ್ ಮೆಸೇಜುಗಳ ಬ್ರೊ-ಡಿಯರ್ ಗಳಾದರು; ಪೋಸ್ಟ್ ಕಾರ್ಡ್ ನ ನಾಲ್ಕೇ ನಾಲ್ಕು ಸಾಲುಗಳ ಮಧ್ಯದಲ್ಲಿ ಕಷ್ಟಪಟ್ಟು ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದ್ದ ಉದ್ದನೆಯ ವಿಳಾಸವೊಂದು ಏಳೆಂಟು ಅಕ್ಷರಗಳ ಇಮೇಲ್ ಅಡ್ರೆಸ್ಸಾಗಿ ನಿರಾಳವಾಗಿ ಕಾಲುಚಾಚಿತು; ಗ್ರೀಟಿಂಗ್ ಕಾರ್ಡುಗಳಲ್ಲಿ ಆತಂಕದಿಂದ ಬಸ್ಸನ್ನೇರುತ್ತಿದ್ದ ಪ್ರೇಮನಿವೇದನೆಯೊಂದು ಇಮೋಜಿಗಳಲ್ಲಿ, ಸ್ಮೈಲಿಗಳಲ್ಲಿ ಗೌಪ್ಯವಾಗಿ ಹೃದಯಗಳನ್ನು ತಲುಪಲಾರಂಭಿಸಿತು. ಹೀಗೆ ಸಂವಹನದ ಸ್ವರೂಪಗಳೆಲ್ಲ ಬದಲಾದರೂ ಮಹತ್ವ ಕಳೆದುಕೊಳ್ಳದ ಮಾತು ಕಾಲಕ್ಕೆ ತಕ್ಕ ಮೇಕಪ್ಪಿನೊಂದಿಗೆ ಅಪ್ಡೇಟ್ ಆಗುತ್ತಲೇ ಇರುತ್ತದೆ. ಗಂಡ-ಹೆಂಡತಿ ಪರಸ್ಪರ ಮಾತನ್ನಾಡಿದರೆ ಸಾಕು ಮಕ್ಕಳು ಹುಟ್ಟುತ್ತವೆ ಎಂದು ನಾನು ನಂಬಿಕೊಂಡಿದ್ದ ಕಾಲವೊಂದಿತ್ತು. ಅಜ್ಜ-ಅಜ್ಜಿ ಜೊತೆಯಾಗಿ ಕೂತು ಮಾತನ್ನಾಡಿದ್ದನ್ನೇ ನೋಡಿರದ ನಾನು ಅವರಿಗೆ ಎಂಟು ಮಕ್ಕಳು ಹೇಗೆ ಹುಟ್ಟಿದವು ಎಂದು ಅಮ್ಮನನ್ನು ಪ್ರಶ್ನಿಸುತ್ತಿದ್ದೆ. ಇಂತಹ ಮುಗ್ಧ ಯೋಚನೆಯೊಂದು ಈಗ ನಗು ತರಿಸಿದರೂ, ಕಾಲಕಾಲಕ್ಕೆ ಸಂವಹನವೊಂದು ಬದಲಾಗುತ್ತಾ ಬಂದ ರೀತಿಯೂ ಅಚ್ಚರಿ ಹುಟ್ಟಿಸುತ್ತದೆ. ಅಜ್ಜ-ಅಜ್ಜಿಯ ಕಾಲದಲ್ಲಿ ಊಟ-ತಿಂಡಿ, ಪೂಜೆ-ಪುನಸ್ಕಾರಗಳ ಹೊರತಾಗಿ ಮಾತುಕತೆಯೇ ಇಲ್ಲದ ದಾಂಪತ್ಯವೊಂದು ಜಗಳ-ಮನಸ್ತಾಪಗಳಿಲ್ಲದೇ ನಿರಾತಂಕವಾಗಿ ಸಾಗುತ್ತಿತ್ತು. ಮಕ್ಕಳ-ಮೊಮ್ಮಕ್ಕಳ ಮಾತು-ನಗು ಇವುಗಳೇ ಅವರ ಸುಖೀಸಂಸಾರದ ರಹಸ್ಯಗಳೂ, ಗುಟ್ಟುಗಳು ಎಲ್ಲವೂ ಆಗಿದ್ದವು. ಪ್ರೀತಿಯ ಸೆಲೆಯೊಂದು ಸಂವಹನದ ಮಾಧ್ಯಮವಾಗಿ, ಮಾತು ಮೌನಧರಿಸಿ ಸಂಬಂಧಗಳನ್ನು ಸಲಹುತ್ತಿತ್ತು. ದುಡ್ಡು-ಕಾಸು, ಸೈಟು-ಮನೆ ಹೀಗೆ ಸಂಬಂಧಗಳಿಗೊಂದು ಮೌಲ್ಯವನ್ನು ದೊರಕಿಸದ ಮಾತುಕತೆಗಳು ಮನೆತುಂಬ ಹರಿದಾಡುವಾಗಲೆಲ್ಲ, ಮಾತೊಂದು ಪ್ರೀತಿಯ ರೂಪ ಧರಿಸುತ್ತಿದ್ದ ಅಜ್ಜ-ಅಜ್ಜಿಯ ಕಾಲಕ್ಕೆ ವಾಪಸ್ಸಾಗುವ ವಿಚಿತ್ರ ಆಸೆಯೊಂದು ಆಗಾಗ ಹುಟ್ಟಿಕೊಳ್ಳುತ್ತಿರುತ್ತದೆ. ಹೀಗೆ ಆಗಾಗ ಆತ್ಮತೃಪ್ತಿಯ ಪರಿಕಲ್ಪನೆಯನ್ನೇ ಪ್ರಶ್ನಿಸಿಬಿಡುವಂತಹ, ಈ ಕ್ಷಣದ ಬದುಕಿನ ಸನ್ನಿವೇಶಕ್ಕೆ ಹೊಂದಾಣಿಕೆಯಾಗದೇ ವಿಲಕ್ಷಣವೆನ್ನಿಸಬಹುದಾದಂತಹ ಆಸೆಯೊಂದು ಎಲ್ಲರ ಬದುಕಿನಲ್ಲಿಯೂ ಇರುತ್ತದೆ. ಅಂತಹ ಆಸೆಯೊಂದರ ಅಕ್ಕಪಕ್ಕ ಬಾಲ್ಯವಂತೂ ಸದಾ ಸುಳಿದಾಡುತ್ತಲೇ ಇರುತ್ತದೆ; ಬಾಲ್ಯದ ಹಿಂದೆ-ಮುಂದೊಂದಿಷ್ಟು ಮಾತುಗಳು! ಆ ಮಾತುಗಳೊಂದಿಗೆ ನಾಡಗೀತೆಯನ್ನು ಸುಮಧುರವಾಗಿ ಹಾಡುತ್ತಿದ್ದ ಪ್ರೈಮರಿ ಸ್ಕೂಲಿನ ಟೀಚರೊಬ್ಬರ ಧ್ವನಿ, ಊರಿನ ದೇವಸ್ಥಾನದಲ್ಲಿ ಚಂಪಾಷಷ್ಠಿಯ ದಿನದಂದು ನಡೆಯುತ್ತಿದ್ದ ತಾಳಮದ್ದಳೆಯ ಮೃದಂಗದ ಸದ್ದು, ಕಪ್ಪು-ಬಿಳುಪು ಟಿವಿಯ ಶ್ರೀಕೃಷ್ಣನ ಅವತಾರ ಮಾತನಾಡುತ್ತಿದ್ದ ಅರ್ಧಂಬರ್ಧ ಅರ್ಥವಾಗುತ್ತಿದ್ದ ಹಿಂದಿ, ದುಷ್ಯಂತ-ಶಕುಂತಲೆಯ ಪ್ರಣಯವನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತಿದ್ದ ಸಂಸ್ಕೃತ ಶಿಕ್ಷಕರ ನಾಚಿಕೆ ಎಲ್ಲವೂ ಸೇರಿಕೊಂಡು ಅಲ್ಲೊಂದು ಹೊಸ ಪ್ರಪಂಚ ಸೃಷ್ಟಿಯಾಗುತ್ತಿರುತ್ತದೆ. ಆ ಪ್ರಪಂಚದ ಮಾತುಗಳೆಲ್ಲವೂ ಆತ್ಮಸಂಬಂಧಿಯಾದದ್ದೇನನ್ನೋ ಧ್ವನಿಸುತ್ತ, ಭಾಷೆಯೊಂದರ ಅಗತ್ಯವೇ ಇಲ್ಲದಂತೆ ಅಮೂರ್ತವಾದ ಅನುಭವವೊಂದನ್ನು ಒದಗಿಸುತ್ತಿರುತ್ತವೆ. ಹಾಗೆ ಮಾತುಗಳೊಂದಿಗೆ ದಕ್ಕಿದ ಸ್ಮರಣ ಯೋಗ್ಯ ಅನುಭವವೆಂದರೆ ಇಸ್ಪೀಟಿನ ಮಂಡಲಗಳದ್ದು. ತಿಥಿಯೂಟ ಮುಗಿಸಿ ಕಂಬಳಿಯ ಮೇಲೊಂದು ಜಮಖಾನ ಹಾಸಿ ತಯಾರಾಗುತ್ತಿದ್ದ ಇಸ್ಪೀಟಿನ ವೇದಿಕೆಗೆ ಅದರದ್ದೇ ಆದ ಗಾಂಭೀರ್ಯವಿರುತ್ತಿತ್ತು. ಊರ ದೇವಸ್ಥಾನದ ಅಧ್ಯಕ್ಷಸ್ಥಾನದ ಚುನಾವಣೆಯಿಂದ ಹಿಡಿದು ಸಂವಿಧಾನದ ಆರ್ಟಿಕಲ್ ಗಳವರೆಗೆ ಚರ್ಚೆಯಾಗುತ್ತಿದ್ದ ಆ ವೇದಿಕೆಯಲ್ಲಿ ಇಸ್ಪೀಟಿನ ರಾಜ-ರಾಣಿಯರೆಲ್ಲ ಮೂಕಪ್ರೇಕ್ಷಕರಾಗುತ್ತಿದ್ದರು. ಸೋಲು-ಗೆಲುವುಗಳೆಲ್ಲ ಕೇವಲ ನೆಪಗಳಾಗಿ ಮಾತೊಂದೇ ಆ ಮಂಡಲದ ಉದ್ದೇಶವಾಗಿದ್ದಿರಬಹುದು ಎಂದು ನನಗೆ ಯಾವಾಗಲೂ ಅನ್ನಿಸುತ್ತಿರುತ್ತದೆ. ಆಧುನಿಕತೆಯೊಂದು ಮಾತಿನ ಜಾಗ ಕಸಿದುಕೊಂಡು ಎಲ್ಲರೂ ಅವರವರ ಪ್ರಪಂಚದಲ್ಲಿ ಮಗ್ನರಾಗಿರುವಾಗ, ಕಪಾಟಿನ ಮೂಲೆಯಲ್ಲಿ ಮಾತು ಮರೆತು ಕುಳಿತ ಜಮಖಾನದ ದುಃಖಕ್ಕೆ ಮರುಗುತ್ತಾ ರಾಜನೊಂದಿಗೆ ಗುಲಾಮ ಯಾವ ಸಂಭಾಷಣೆಯಲ್ಲಿ ತೊಡಗಿರಬಹುದು ಎಂದು ಯೋಚಿಸುತ್ತೇನೆ. ಹೀಗೆ ಸಂಭಾಷಣೆಗೊಂದು ವೇದಿಕೆ ಸಿಕ್ಕರೂ ಸಿಗದಿದ್ದರೂ ಮಾತು ಒಮ್ಮೆ ವ್ಯಕ್ತವಾಗಿ, ಇನ್ನೊಮ್ಮೆ ಶ್ರಾವ್ಯವಾಗಿ, ಕೆಲವೊಮ್ಮೆ ಮೌನವೂ ಆಗಿ ತನ್ನದೇ ಆದ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತದೆ. ಸಿನೆಮಾದ ನಾಯಕನೊಬ್ಬ ಫೈಟ್ ಮಾಸ್ಟರ್ ನ ಮಾತನ್ನು ಆಕ್ಷನ್ ಗಿಳಿಸಿದರೆ, ರಂಗಭೂಮಿಯ ಮಾತೊಂದು ತಾನೇ ನಟನೆಗಿಳಿದು ಥಿಯೇಟರನ್ನು ತುಂಬಿಕೊಳ್ಳುತ್ತದೆ; ಪುಟ್ಟ ಕಂದನ ಅಳುವೊಂದು ಹಸಿವಿನ ಮಾತನ್ನು ಅಮ್ಮನಿಗೆ ತಲುಪಿಸುವಾಗ, ಅಮ್ಮನ ಪ್ರೇಮದ ಮಾತೊಂದು ಎದೆಯ ಹಾಲಾಗಿ ಮಗುವನ್ನು ತಲುಪುತ್ತದೆ; ಬಸ್ಸಿನ ಟಿಕೆಟಿನಲ್ಲಿ ಪೇಪರಿನ ನೋಟುಗಳು ಮಾತನಾಡಿದರೆ, ಕಂಡಕ್ಟರ್ ನ ಶಿಳ್ಳೆಯ ಮಾತು ಡ್ರೈವರ್ ನ ಕಿವಿಯನ್ನು ಅಡೆತಡೆಗಳಿಲ್ಲದೇ ತಲುಪುತ್ತದೆ. ಅಪ್ಪನ ಕಣ್ಣುಗಳ ಕಳಕಳಿ, ಪ್ರೇಮಿಯ ಹೃದಯದ ಕಾಳಜಿ, ಸರ್ಜರಿಗೆ ಸಿದ್ಧರಾದ ವೈದ್ಯರ ಏಕಾಗ್ರತೆ, ಪರೀಕ್ಷಾ ಕೊಠಡಿಯ ಪೆನ್ನಿನ ಶಾಯಿ ಎಲ್ಲವೂ ಮಾತುಗಳಾಗಿ ತಲುಪಬೇಕಾದ ಸ್ಥಳವನ್ನು ನಿರಾತಂಕವಾಗಿ ತಲುಪಿ ಸಂವಹನವೊಂದು ಅಚ್ಚುಕಟ್ಟಾಗಿ ರೂಪುಗೊಳ್ಳುತ್ತದೆ. ಹೀಗೆ ಬೆರಗಿನ ಲೋಕವೊಂದನ್ನು ನಮ್ಮೆದುರು ತೆರೆದಿಡುತ್ತಾ, ತಾನೂ ಬೆಳೆಯುತ್ತ ನಮ್ಮನ್ನೂ ಬೆಳೆಸುವ ಸಂವಹನವೆನ್ನುವ ಸಂವೇದನೆಯೊಂದು ಮಾತಾಗಿ ಅರಳಿ ಮನಸ್ಸುಗಳನ್ನು ತಲುಪುತ್ತಿರಲಿ. ಪ್ರೈಮರಿ ಸ್ಕೂಲಿನ ಅಂಗಳದ ಮಲ್ಲಿಗೆಯ ಬಳ್ಳಿಯೊಂದು ಟೀಚರಿನ ಕಂಠದ ಮಾಧುರ್ಯಕ್ಕೆ ತಲೆದೂಗುತ್ತಿರಲಿ. ಭಕ್ತರ ಮಾತುಗಳನ್ನೆಲ್ಲ ತಪ್ಪದೇ ಆಲಿಸುವ ದೇವರ ಮೌನವೊಂದು ಶಾಂತಿಯ ಮಂತ್ರವಾಗಿ ಹೃದಯಗಳನ್ನು ಅರಳಿಸಲಿ. ಸಕಲ ಬಣ್ಣಗಳನ್ನೂ ಧರಿಸಿದ ಟಿವಿ ಪರದೆಯ ಪಾತ್ರಗಳೆಲ್ಲ ಪ್ರೀತಿ-ವಿಶ್ವಾಸಗಳ ಮಧ್ಯವರ್ತಿಗಳಾಗಿ ಮಾತಿನ ಮೂಲಕ ಮಮತೆಯನ್ನು ಬಿತ್ತರಿಸಲಿ. ನಾಚಿ ನೀರಾಗುತ್ತಿದ್ದ ಸಂಸ್ಕೃತ ಶಿಕ್ಷಕರ ಶಕುಂತಲೆಯ ಪ್ರೇಮಕ್ಕೆಂದೂ ಪರೀಕ್ಷೆಯ ಸಂಕಷ್ಟ ಎದುರಾಗದಿರಲಿ. ಕಲಿತ ಮಾತುಗಳೆಲ್ಲ ಪ್ರೀತಿಯಾಗಿ, ಪ್ರೀತಿಯೊಂದು ಹೃದಯಗಳ ಮಾತಾಗಿ, ಹೃದಯಗಳೊಂದಿಗಿನ ಸಂವಹನವೊಂದು ಸಂಬಂಧಗಳನ್ನು ಸಲಹುತ್ತಿರಲಿ. *************************************** ಲೇಖಕರ ಬಗ್ಗೆ ಎರಡು ಮಾತು: ಮೂಲತ: ಉತ್ತರ ಕನ್ನಡದವರಾದ ಅಂಜನಾ ಹೆಗಡೆಯವರು ಸದ್ಯ ಬೆಂಗಳೂರಲ್ಲಿ ನೆಲೆಸಿರುತ್ತಾರೆ. ‘ಕಾಡ ಕತ್ತಲೆಯ ಮೌನ ಮಾತುಗಳು’ ಇವರು ಪ್ರಕಟಿಸಿದ ಕವನಸಂಕಲನ.ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ
ಸ್ವಾತ್ಮಗತ
ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ‘ಶೂನ್ಯ ಬಂಡವಾಳದ (ನೈಸರ್ಗಿಕ) ಕೃಷಿ’ಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿದ್ದರು. ಇದಕ್ಕೂ ಮುಂಚೆಯೇ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶ, ಛತ್ತೀಸ್ ಘಡ, ಹಿಮಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಈ ಕೃಷಿ ಪದ್ದತಿಯನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯಾಯ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿವೆ. ಈ ನಡುವೆ ನೈಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ಅನೇಕ ಕೃಷಿ ಪಂಡಿತರು, ವಿಜ್ಞಾನಿಗಳು, ರೈತಪರ ಚಿಂತಕರು ಕೃಷಿ ವಿಶ್ಲೇಷಕರು ಒಳಗೊಂಡಂತೆ ರಾಷ್ಟ್ರವ್ಯಾಪಿ ಚರ್ಚೆಗಳು ನಡೆದಿವೆ. ಕಳೆದ ಕೆಲ ವಾರಗಳ ಹಿಂದೆ ರಮೇಶ್ ಮುಳಬಾಗಿಲುರವರು ಬರೆದ ‘ನೈಸರ್ಗಿಕ ಕೃಷಿಯೊಳಗಿನ ಬಲಪಂಥೀಯವಾದ’ ಲೇಖನಕ್ಕೆ ಚುಕ್ಕು ನಂಜುಡಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದರು. ‘ಶೂನ್ಯ ಬಂಡವಾಳ’– ನೈಸರ್ಗಿಕ ಕೃಷಿಯನ್ನು ವಿಮರ್ಶೆ ಮಾಡುತ್ತಿರುವ ಅನೇಕ ಕೃಷಿ ತಜ್ಞರಿಗೆ ನೈಸರ್ಗಿಕ ಕೃಷಿ ಬಗ್ಗೆ ಅನೇಕ ಅನುಮಾನಗಳು ಇದ್ದಂತಿವೆ. ಯಾವ ಬಂಡವಾಳವೂ ಹೂಡದ ಕೃಷಿ ಸಾಧ್ಯವೇ? ಈ ಪದ್ದತಿಯಿಂದ ದೇಶದ 130 ಕೋಟಿ ಜನರ ಹೊಟ್ಟೆ ತುಂಬಿಸಲು ಸಾಧ್ಯವೇ? ದೇಶದ ಎಲ್ಲ ಹವಾಮಾನ ವಲಯಗಳಲ್ಲಿ ಇದನ್ನು ಅಳವಡಿಸಲು ಸಾಧ್ಯವೇ. ಈ ಪದ್ಧತಿಯು ಕೃಷಿ ವಿಶ್ವ ವಿದ್ಯಾಲಯಗಳ ಮಾನ್ಯತೆ ಪಡೆದಿದೆಯೇ ಎಂಬ ಪ್ರಶ್ನೆಗಳನ್ನು ಎತ್ತಿದ್ದರು. ಈ ಕೃಷಿ ಪದ್ಧತಿಯನ್ನು ಸಂಶೋಧನೆಗೆ ಒಳಪಡಿಸಿ ಪರೀಕ್ಷಿಸಬೇಕೆಂದು ಇನ್ನೂ ಕೆಲವರು ಅಭಿಪ್ರಾಯಪಟ್ಟಿದ್ದರು. ಈ ದೇಶದ ಬಹು ಸಂಖ್ಯಾತರ ಭೂಮಿ ಮತ್ತು ಬದುಕನ್ನು ಜೋಪಾನ ಮಾಡುವ ಜವಾಬ್ದಾರಿಯನ್ನು ನಮ್ಮ ಕೃಷಿ ವಿಶ್ವವಿದ್ಯಾಲಯಗಳಿಗೆ ಕೊಡಲಾಗಿತ್ತು. ಆದರೆ ನಮಗೆ ಎದುರಾಗಿದ್ದ ಸವಾಲುಗಳಿಗೆ ನಮ್ಮಲ್ಲೇ ಉತ್ತರ ಹುಡಕುವ ಗೋಜಿಗೆ ಹೋಗಲಿಲ್ಲ ಈ ವಿಶ್ವವಿದ್ಯಾಲಯಗಳು. ಪಾಶ್ಚಿಮಾತ್ಯ ದೇಶಗಳಿಂದ ಎರವಲು ಪಡೆದ ‘ಹಸಿರು ಕ್ರಾಂತಿ’ಯನ್ನು ಪ್ರಚುರಪಡಿಸಿದ್ದಷ್ಟೇ ಇವುಗಳ ಸಾಧನೆಯಾಯಿತು. ಹಸಿರು ಕ್ರಾಂತಿಯ ನಂತರ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿತು ಎನ್ನುವುದೇನೋ ಸತ್ಯ. ಎರಡನೇ ಮಹಾಯುದ್ಧದ ನಂತರ ಶಸ್ತ್ರಾಸ್ತ್ರಗಳಿಗೆ ರಾಸಾಯನಿಕಗಳನ್ನು ತಯಾರಿಸುತ್ತಿದ್ದ ಕಂಪೆನಿಗಳಿಗೆ ಮಾರುಕಟ್ಟೆ ಇಲ್ಲದಂತಾಗಿತ್ತು. ಕೃಷಿ ಸಾಧನ ಸಲಕರಣೆಗಳು- ಬೀಜ ಗೊಬ್ಬರ ಕೀಟನಾಶಕಗಳ ತಯಾರಿಕೆಯಲ್ಲಿ ತಮ್ಮ ವ್ಯಾಪಾರವನ್ನು ಮುಂದುವರೆಸಲು ಈ ಎಲ್ಲ ಕಂಪೆನಿಗಳಿಗೆ ಹಸಿರು ಕ್ರಾಂತಿಯೇ ರತ್ನಗಂಬಳಿ ಹಾಸಿಕೊಟ್ಟಿತು ಎಂಬುದೂ ಅಷ್ಟೇ ಸತ್ಯ. ಹಸಿರು ಕ್ರಾಂತಿಗೂ ಮುಂಚೆ ಭಾರತದ ‘ಕೃಷಿ’ ಬದುಕಿನ ಭಾಗವಾಗಿತ್ತು. ಸಂಸ್ಕೃತಿಯ ನೆಲೆಯಾಗಿತ್ತು. ನಿಸರ್ಗದಲ್ಲಿರುವ ವೈವಿಧ್ಯತೆಯನ್ನು ಆರಾಧಿಸಿ ನಮ್ಮ ಹಿರಿಯರು ಮಾಡುತ್ತಿದ್ದುದು ಮಿಶ್ರ ಬೆಳೆ ಪದ್ಧತಿ. ಕರ್ನಾಟಕದಲ್ಲಿ ಅಕ್ಕಡಿ ಎಂದು ಕರೆದರೆ, ಉತ್ತರ ಭಾರತದಲ್ಲಿ `ಬಾರಾ ಅನಾಜ್” (ಹನ್ನೆರಡು ದವಸ ಧಾನ್ಯ) ಎಂದು ಕರೆದರು. ಮನೆಯ ಆಹಾರ ಭದ್ರತೆಗೆ ಬೇಕಾದ ಧವಸ, ಧಾನ್ಯ, ಬೇಳೆಕಾಳುಗಳು, ಎಣ್ಣೆಬೀಜಗಳನ್ನು ಒಂದಕ್ಕೊಂದು ಹೊಂದುವಂತೆ ಬಿತ್ತಿ ಬೆಳೆಯುವ ಪದ್ಧತಿ ನಶಿಸುತ್ತ ಬಂದು ಅದರ ಜಾಗವನ್ನು ಕಾಲಕ್ರಮೇಣ ಏಕ ಬೆಳೆಯ ಪದ್ಧತಿಯು ಆವರಿಸಿಕೊಂಡಿತು. ನಮ್ಮಲ್ಲಿದ್ದ ಕೋಟ್ಯಾಂತರ ತಳಿಗಳು ಕಾಣೆಯಾದವು. ಹೆಚ್ಚು ಹೆಚ್ಚು ಬೆಳೆ ಬೆಳೆಯಲು ರಾಸಾಯನಿಕ ಗೊಬ್ಬರಗಳು-, ಕ್ರಿಮಿನಾಶಕಗಳನ್ನು ಮನೆ ಬಾಗಿಲಿಗೆ ತಂದುಕೊಟ್ಟರು. ಇವುಗಳನ್ನು ಸುರಿದು ಭೂಮಿ ಬಂಜರಾಯಿತು. ಎಕರೆಗಟ್ಟಲೇ ಭೂಮಿಯಲ್ಲಿ ರೈತರು ಕಬ್ಬು, ಭತ್ತ, ಹತ್ತಿ, ಅಡಿಕೆಯಂತಹ ಬೆಳೆಗಳನ್ನು ಈ ದೇಶದ ಆಹಾರ ಸ್ವಾವಲಂಬನೆಗಾಗಿ ಬೆಳೆದರು. ಮಿಕ್ಕೆಲ್ಲದಕ್ಕೂ ಮಾರುಕಟ್ಟೆಯ ಮೊರೆ ಹೋಗುವಂತಾಯಿತು. ಆಹಾರದ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಯಿತು. ರೈತ ತನ್ನ ಖುದ್ದು ಆಹಾರ ಭದ್ರತೆಗೆ ಪರಾವಲಂಬಿಯಾದ. ಬೇರೆಯವರಿಗೆ ಕೊಡುತ್ತಿದ್ದ ರೈತನ ಕೈ ಮೂರು ಕಾಸಿನ ಸಬ್ಸಿಡಿ ಬೇಡಿ ಚಾಚುವಂತಾಯಿತು. ಇದೆಲ್ಲದರ ಶ್ರೇಯಸ್ಸು ಈ ದೇಶದ ಕೃಷಿ ವಿಜ್ನಾನಿಗಳಿಗೇ ಸಲ್ಲಬೇಕು. ಇದರ ನಡುವೆ ತೊಂಬತ್ತರ ದಶಕದಲ್ಲಿ ಮುಕ್ತ ಮಾರುಕಟ್ಟೆ ನೀತಿ ಜಾರಿಯಾಯಿತು. ವಿದೇಶೀ ಕೃಷಿ ಉತ್ಪನ್ನಗಳು ಯಾವುದೇ ಆಮದು ಸುಂಕವಿಲ್ಲದೇ ಅಗ್ಗದ ದರದಲ್ಲಿ ದೇಶದೊಳಗೆ ಭಾರೀ ಪ್ರಮಾಣದಲ್ಲಿ ಸುರಿದವು. ನಮ್ಮ ದೇಶದ ರೈತರ ಗಾಯದ ಮೇಲೆ ಬರೆ ಎಳೆದವು. ನಮ್ಮ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲದಂತಾಯಿತು. ಇಂದಿಗೂ ಕೃಷಿ ಮಾರುಕಟ್ಟೆ ಜೂಜಾಟವಿದ್ದಂತೆಯಾಯಿತು. ಯಾರು ಯಾವಾಗ ಬಾಜಿ ಕಟ್ಟುತ್ತಾರೋ ಯಾರಿಗೂ ತಿಳಿಯದು. ಇಂದಿಗೂ ಬೆಳೆಗಳ ಬೆಲೆ ರಕ್ಷಣೆಗೆ ಸಂಬಂಧಿಸಿದಂತೆ ಈ ದೇಶದಲ್ಲಿ ಯಾವ ಶಾಸನವೂ ಇಲ್ಲ. ಬೆಂಬಲ ಬೆಲೆ ನೀತಿಗಾಗಿ ಪ್ರತಿ ವರ್ಷ ನಡೆಯುವ ರೈತರ ಹೋರಾಟಗಳು ಮತ್ತು ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿರುವ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಮ್ಮ ಕಣ್ಮುಂದೆಯೇ ಇವೆ. ಭಾರತ ಸರ್ಕಾರದ ಕೃಷಿ ಮಂತ್ರಾಲಯದ ಅಂಕಿಅಂಶಗಳ ಪ್ರಕಾರ 1951ರಲ್ಲಿ ಭಾರತದಲ್ಲಿ ಒಕ್ಕಲುತನದಲ್ಲಿ ತೊಡಗಿದ್ದ ಜನಸಂಖ್ಯೆಯ ಒಟ್ಟು ಶೇಕಡಾ 69.7%. ಈ ಪ್ರಮಾಣ 2011 ರಲ್ಲಿ 54.6% ಕ್ಕೆ ಕುಸಿಯಿತು. ಇಷ್ಟೆಲ್ಲಾ ಆದರೂ ಸರ್ಕಾರಗಳೇ ಆಗಲಿ, ಕೃಷಿ ವಿಶ್ವವಿದ್ಯಾಲಯಗಳೇ ಆಗಲಿ, ಕೃಷಿ ಒಂದು ಗಂಭೀರ ಬಿಕ್ಕಟ್ಟಿಗೆ ಸಿಲುಕಿದೆಯೆಂದು ಗುರುತಿಸುವ ಕನಿಷ್ಠ ಕೆಲಸವನ್ನು ಕೂಡ ಮಾಡಲಿಲ್ಲ. ಕೃಷಿಯಲ್ಲಾಗುತ್ತಿದ್ದ ಅನ್ಯಾಯ, ಮೋಸಗಳ ಕುರಿತು ಕಣ್ಣು ಬಾಯಿ ಕಿವಿ ಮುಚ್ಚಿಕೊಂಡವು. ಇದೇ ಸಮಯದಲ್ಲಿ ಅನೇಕ ವರ್ಷಗಳ ಸಂಶೋಧನೆಗಳ ನಂತರ ಹಸಿರು ಕ್ರಾಂತಿಯಿಂದಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ತಿಳಿ ಹೇಳುತ್ತಾ ನೈಸರ್ಗಿಕ ತತ್ವಗಳನ್ನಾಧರಿಸಿದ “ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ” ಎಂಬ ಹೆಸರಿನ ಒಂದು ಪರ್ಯಾಯವನ್ನು ದೇಶದ ರೈತರ ಮುಂದಿಟ್ಟವರು ಮಹಾರಾಷ್ಟ್ರದ ಸುಭಾಷ್ ಪಾಳೇಕರ್ ರವರು. ಸುಭಾಷ್ ಪಾಳೇಕರರ ಸಹಜ ಕೃಷಿ ಪದ್ಧತಿ– ಇದಕ್ಕೂ ಮುಂಚೆ ನೈಸರ್ಗಿಕ ತತ್ವಗಳನ್ನಾಧರಿಸಿ ಮಾಡಬಹುದಾದ ಕೃಷಿಯನ್ನು “ಶೂನ್ಯ ಉಳುಮೆ ಕೃಷಿ” (Zero Tillage Farming) ಎಂಬ ಹೆಸರಿನ ಸಹಜ ಕೃಷಿಯನ್ನು ಜಗತ್ತಿಗೇ ಪರಿಚಯಿಸಿದ್ದು ಜಪಾನಿನ ಕೃಷಿ ಸಂತ ಮಸನೊಬು ಫುಕುವೊಕಾ. ಆನಂತರ ನಮ್ಮವರೇ ಆದ ತಮಿಳುನಾಡಿನ ಶ್ರೀಯುತ ನಮ್ಮಾಳವರ್, ಗ್ರಾಮೀಣ ಗಾಂಧೀ ಎಂದೇ ಹೆಸರುವಾಸಿಯಾಗಿದ್ದ ಭಾಸ್ಕರ್ ಸಾವೆ ಹಾಗೂ ಇತ್ತೀಚೆಗೆ ನಮ್ಮನ್ನಗಲಿದ ನಾಡೋಜ ಡಾ.ನಾರಾಯಣರೆಡ್ಡಿಯವರು. 2002 ನೇ ಇಸವಿಯಲ್ಲಿ ಕರ್ನಾಟಕದ ರೈತ ಚಳವಳಿಯ ಹಿರಿಯ ಮುಖಂಡರಾಗಿದ್ದ ಬಸವರಾಜ್ ತಂಬಾಕೆಯವರು ಸುಭಾಷ್ ಪಾಳೇಕರ್ ರವರನ್ನು ಕರ್ನಾಟಕಕ್ಕೆ ಪರಿಚಯ ಮಾಡಿದರು. ಅಲ್ಲದೇ ನಮ್ಮ ಮೈಸೂರಿನ ಪತ್ರಕರ್ತರಾದ ಆರ್.ಸ್ವಾಮಿ ಆನಂದ ಅವರು ಈ ಸುಭಾಷ್ ಪಾಳೇಕರ್ ರನ್ನು ಕಟ್ಟಿಕೊಂಡು ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಡಿ ಸುಭಾಷ್ ಪಾಳೇಕರರ ಈ ಕೃಷಿ ಪದ್ದತಿಯನ್ನು ಪ್ರಚುರಪಡಿಸಿದರು. ಅಷ್ಟೇ ಅಲ್ಲ ರೈತರಿಗೆ ಸಹಜ ಕೃಷಿಯನ್ನು ಪದ್ದತಿ ಆಹಾರ ಉತ್ಪಾದನೆಗೆ ಎಷ್ಟು ಬಹುಮುಖ್ಯವೆಂದು ಸಾರಿಸಾರಿ ಹೇಳಿದರು. ಅಲ್ಲದೇ ನಮ್ಮ ‘ಅಗ್ನಿ’ ವಾರಪತ್ರಿಕೆಯಲ್ಲಿ ಅಂಕಣವೊಂದನ್ನು ಧಾರಾವಾಹಿಯಾಗಿ ‘ಸಹಜ ಕೃಷಿ’ಯ ಬಗೆಗೆ ಕಂತುಗಟ್ಟಲೇ ಬರೆದು ರೈತರನ್ನು ಎಚ್ಚರಿಸುವ ಲೇಖನ ಮಾಲೆಯನ್ನು ಹೊರತಂದರು. ಈ ಸಹಜ ಕೃಷಿ ಕೃಷಿ ಬಗೆಗಿನ ಪುಸ್ತಕ ೩-೪ ಮುದ್ರಣ ಕಂಡಿತು. ಇರಲಿ… ಆರ್. ಸ್ವಾಮಿ ಆನಂದರ ಜೊತೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಭಾಷ್ ಪಾಳೇಕರರ ಅನೇಕ ತರಬೇತಿಗಳನ್ನು ಆಯೋಜಿಸಿತು. ಶಿಬಿರಕ್ಕೆ ಬರುತ್ತಿದ್ದ ರೈತರ ಊಟ, ವಸತಿಗೆ ಅನೇಕ ಪ್ರಗತಿಪರ ಮಠಾಧೀಶರುಗಳ ಸಹಕಾರ ದೊರಕಿತು. ಕರ್ನಾಟಕದಲ್ಲಿ ಮೊದಲಿಗೆ ಈ ಕೃಷಿ ಪದ್ಧತಿಯಲ್ಲಿ ರೈತ ಸಂಘದ ಕಾರ್ಯಕರ್ತ ಬನ್ನೂರಿನ ಕೃಷ್ಣಪ್ಪ ಅಳವಡಿಸಿ ಎಲ್ಲರೂ ಹುಬ್ಬೇರಿಸುವಂತೆ ಬಾಳೆ ಬೆಳೆದರು. ಆಗ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಮೈಸೂರಿನ ಸ್ವಾಮಿ ಆನಂದ್ ರವರು ಕೃಷ್ಣಪ್ಪರವರ ಬಾಳೆಯ ಬಗ್ಗೆ ಲೇಖನ ಬರೆದರು. ನಂತರ ಹೀಗೆ ನೈಸರ್ಗಿಕ ಕೃಷಿಯ ಆಂದೋಲನ ಕರ್ನಾಟಕದಲ್ಲಿ ವ್ಯಾಪಕಗೊಳ್ಳುತ್ತಾ ಹೋಯಿತು. 2006 ಅಥವಾ 2007 ಇರಬೇಕು. ಕೂಡಲ ಸಂಗಮದಲ್ಲಿ ನಡೆದ ಪಾಳೇಕರ್ ರವರ ಏಳು ದಿನಗಳ ಶಿಬಿರದಲ್ಲಿ ಭಾಗವಹಿಸಿದ ರೈತರ ಸಂಖ್ಯೆ ಆರು ಸಾವಿರ ದಾಟಿತ್ತು. ಕರ್ನಾಟಕದಲ್ಲಿ ಮೌನವಾಗಿ ನಡೆಯುತ್ತಿದ್ದ ಈ ಚಳವಳಿಯನ್ನು ನೋಡಿದ ತಮಿಳುನಾಡಿನ ‘ಪಸುಮೈ ವಿಕಟನ್’ ಪತ್ರಿಕೆ ತಮಿಳುನಾಡಿನಲ್ಲೂ ಪಾಳೇಕರರ ಶಿಬಿರ ಆಯೋಜಿಸಿತು. ನಂತರ ಕೇರಳ, ಪಂಜಾಬ್, ಆಂಧ್ರ ಪ್ರದೇಶ, ರಾಜಸ್ಥಾನ ಹೀಗೆ ನೈಸರ್ಗಿಕ ಕೃಷಿಯ ಆಂದೋಲನ ವ್ಯಾಪಕವಾಗಿ ಬೆಳೆಯತೊಡಗಿತು. ವಿಶ್ವ ರೈತ ಚಳವಳಿಯಾದ ‘ಲಾ ವಿಯಾ ಕ್ಯಾಂಪೆಸಿನಾ’ದ ಮೂಲಕ ಶ್ರೀಲಂಕಾ, ನೇಪಾಳ ಮತ್ತು ಇಂಡೋನೇಷಿಯಾದಲ್ಲೂ ಅನೇಕ ರೈತರು ನೈಸರ್ಗಿಕ ಕೃಷಿಯನ್ನು ಅಳವಡಿಸಿ ಯಶಸ್ಸನ್ನು ಕಂಡಿದ್ದರು. ಆದರೆ, ಇದೆಲ್ಲದರ ನಡುವೆ ನಮ್ಮ ಯಾವೊಬ್ಬ ಕೃಷಿ ವಿಜ್ಞಾನಿಯೂ, ಕೃಷಿ ಅಧಿಕಾರಿಯೂ ಇದರ ಕಡೆ ತಿರುಗಿ ನೋಡಲಿಲ್ಲ. ಪಾಳೇಕರ್ ಪದ್ಧತಿ ಅವೈಜ್ಞಾನಿಕ ಅಥವಾ ಅರ್ಥಹೀನ ಎಂದು ತೀರ್ಮಾನಿಸಿದಂತಿತ್ತು ಅವರ ನಡೆ. ಇವರೆಲ್ಲರನ್ನೂ ಮೀರಿ ಅನೇಕ ರಾಜ್ಯ ಸರ್ಕಾರಗಳು ಮತ್ತು ಇತ್ತೀಚೆಗೆ ಕೇಂದ್ರ ಸರ್ಕಾರವೂ ಸೇರಿದಂತೆ ಶೂನ್ಯ ಬಂಡವಾಳ (ನೈಸರ್ಗಿಕ) ಕೃಷಿಗೆ ಒತ್ತು ನೀಡಲು ತೀರ್ಮಾನಿಸಿಯಾಗಿದೆ. ಆಂಧ್ರ ಪದೇಶದ ಸರ್ಕಾರ 2015ರಲ್ಲಿ ಈ ಕೃಷಿ ಪದ್ಧತಿಯನ್ನು ರಾಜ್ಯದಾದ್ಯಂತ ಒಯ್ಯಲು ಕೈಗೊಂಡ ತೀರ್ಮಾನವೇ ಇದೆಲ್ಲಕ್ಕೆ ನಾಂದಿ ಆಗಿತ್ತು. 2024 ರವರೆಗೆ ಇಡೀ ರಾಜ್ಯವನ್ನು ನೈಸರ್ಗಿಕ ಕೃಷಿಗೆ ಒಳಪಡಿಸಬೇಕೆಂದು ಆಂಧ್ರ ಈಗ ಪಣ ತೊಟ್ಟಿದೆ. ಇದಕ್ಕೆ ಮೀಸಲಿಟ್ಟಿರುವ ಹಣ ಹದಿನೇಳು ಸಾವಿರ ಕೋಟಿಗಳಷ್ಟು. ಇದರ ಬಗ್ಗೆ ಅನೇಕ ಟೀಕೆಗಳೂ ಕೇಳಿ ಬರುತ್ತಿವೆ. ಶೂನ್ಯ ಬಂಡವಾಳವೆಂದ ಮೇಲೆ ಹದಿನೇಳು ಸಾವಿರ ಕೋಟಿ ಏಕೆ? ಹದಿನೇಳು ಸಾವಿರ ಕೋಟಿ ಮೀಸಲಿಟ್ಟಿರುವುದು ಎಂಟರಿಂದ ಹತ್ತು ವರ್ಷಗಳ ಯೋಜನಾ ಅವಧಿಗೇ ಹೊರತು ಕೇವಲ ಒಂದು ವರ್ಷಕ್ಕಲ್ಲ. 2024 ರ ಒಳಗೆ ರಾಜ್ಯದ ಅರವತ್ತು ಲಕ್ಷ ರೈತರನ್ನು ತಲುಪಲು ಈ ಹಣವನ್ನು ಬಳಸಲಾಗುತ್ತಿದೆ. (http://apzbnf.in/an-open-letter-to-critics/). ಈ ಹಣ ಬಹುರಾಷ್ಟೀಯ ಕಂಪೆನಿಗಳಿಂದ ಅಥವಾ ಜಗತ್ತಿನ ದೈತ್ಯ ಕಂಪೆನಿಗಳಿಂದ ಬರುತ್ತಿದ್ದಲ್ಲಿ, ಅದನ್ನು ವಿರೋಧಿಸಬೇಕಾಗುತ್ತೆ. ಆದರೆ ಈ ಆಪಾದನೆಗಳಿಗೆ ಸದ್ಯ ಯಾವ ಪುರಾವೆಗಳೂ ಇಲ್ಲ. ಈಗ ವಿಮರ್ಶೆ ಮಾಡಿರುವ ಅನೇಕರು ‘ಶೂನ್ಯ ಬಂಡವಾಳ’ ಎಂಬುದನ್ನು ಯಥಾವತ್ ಅರ್ಥ ಮಾಡಿಕೊಂಡಂತಿದೆ. ಪಾಳೇಕರ್ ಅವರು ಹೇಳಿರುವುದು ಒಂದು ಬೆಳೆಯನ್ನು ಬೆಳೆಯಲು ತಗಲುವ ವೆಚ್ಚವನ್ನು ಬೆಳೆಯ ನಡುವೆ ಬೆಳೆಯಬಹುದಾದ ಅಂತರ ಬೆಳೆಯಿಂದ ಬರುವ ಆದಾಯದಿಂದ ಭರಿಸುವುದೆಂದು. ಅದಕ್ಕೂ ಮಿಗಿಲಾಗಿ ‘ಶೂನ್ಯ ಬಂಡವಾಳ’ ಎಂಬುದು ಒಂದು ಪರ್ಯಾಯ ಕೃಷಿ ಚಿಂತನೆಗೆ ಆಹ್ವಾನ ನೀಡುವ ಘೋಷಣೆಯೂ ಆಗಿದೆ. ಈಗ ಸುಭಾಷ್ ಪಾಳೇಕರ್ ರವರು ಹೆಸರನ್ನು ಬದಲಾಯಿಸಿದ್ದಾರೆ. ಅದಕ್ಕೆ ಅನೇಕರ ಸಹಮತ ಇಲ್ಲ. ಶೂನ್ಯ ಬಂಡವಾಳದ ಕೃಷಿಯಲ್ಲಿ ಹೊರಗಿನಿಂದ ಏನನ್ನೂ ತರುವುದಿಲ್ಲ. ಬೀಜ, ಜೀವಾಮೃತ, ಕ್ರಿಮಿನಾಶಕಗಳ ಸಿದ್ಧತೆಯಲ್ಲಿ ಪ್ರಕೃತಿದತ್ತವಾಗಿ ಸಿಗುವದನ್ನೇ ಬಳಸಲಾಗುತ್ತದೆ. ಇದನ್ನು ವೈಜ್ನಾನಿಕ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸುತ್ತಿರುವ ವಿಜ್ಞಾನಿಗಳು ಕಾನೂನು ಬಾಹಿರವಾಗಿ ಮಾರಲಾಗುತ್ತಿರುವ ಬಿಟಿ ಬದನೆ ಬೀಜಗಳ ಬಗ್ಗೆ ಯಾಕೆ ಬಾಯಿ ಬಿಡುತ್ತಿಲ್ಲ? ಜಗತ್ತಿನ ಅನೇಕ ದೇಶಗಳಲ್ಲಿ ಈಗಾಗಲೇ ನಿಷೇಧಿಸಲಾಗಿದ್ದು ನಮ್ಮ ದೇಶದಲ್ಲಿ ರಾಜಾರೋಷವಾಗಿ ಮಾರಾಟ್ವಾಗುತ್ತಿರುವ ಹಾನಿಕಾರಕ Glyphosate ಅಥವಾ Round Up ಕಳೆ ನಾಶಕಗಳ ಬಗ್ಗೆ ಯಾವುದೇ ವಿಜ್ಞಾನಿ ಏಕೆ ಪ್ರಶ್ನೆ ಮಾಡುತ್ತಿಲ್ಲ? ನೈಸರ್ಗಿಕ ಕೃಷಿಗೆ ವೈಜ್ಞಾನಿಕ ಮಾನ್ಯತೆ ಇದೆಯೇ ಎಂಬ ಪ್ರಶ್ನೆ ಅಪ್ರಸ್ತುತವಾಗಿದೆ. ಈಗಾಗಲೇ ಹದಿನೈದು ವರ್ಷಗಳಿಂದ ನೈಸರ್ಗಿಕ ಕೃಷಿಯನ್ನು ಮಾಡುತ್ತಿರುವ ರೈತರೇ ಮಾನ್ಯತೆ ಕೊಟ್ಟಿರುವಾಗ, ವಿಶ್ವವಿದ್ಯಾಲಯಗಳ ಮಾನ್ಯತೆ ಪಡೆಯುವ ಅಗತ್ಯವಿದೆಯೇ? ಹಿಮಾಚಲದ ಸೇಬು ಬೆಳೆಗಾರರಿಂದ ಹಿಡಿದು ಬೀದರ ಜಿಲ್ಲೆಯ ಖುಷ್ಕಿ ಬೆಳೆಗಾರರು ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಂಡಿದ್ದಾರೆ. ಎಲ್ಲಾ ಹವಾಮಾನಗಳಿಗೂ ಹೊಂದುವುದಿಲ್ಲ ಎನ್ನುವವರಿಗೆ ಒಂದು ಸಲಹೆ– ದಯವಿಟ್ಟು ನೈಸರ್ಗಿಕ ಕೃಷಿ ಮಾಡುತ್ತಿರುವ ರೈತರನ್ನು ಭೇಟಿ ಮಾಡಿ ಮಾತನಾಡಿಸಿ. ವಿತಂಡ ವಾದಗಳನ್ನು ಮಾಡುತ್ತಿರುವವರಿಗೆ ಜಗತ್ತಿನ ಮುಂದೆ ನಿಂತಿರುವ ಅತಿ
ಭಯದ ಬಗ್ಗೆ ಭಯ ಬೇಡ
ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ. ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ ಉಂಟಾಗುತ್ತದೆ ಅದನ್ನು ಹೇಗೆ ನಿವಾರಿಸುವುದು ಎಂಬ ಪ್ರಶ್ನೆಗಳು ನಮ್ಮಲ್ಲಿ ಅದೆಷ್ಟೋ ಬಾರಿ ಸುಳಿಯುತ್ತವೆ. ಭಯ ಅಂದರೆ ಏನು ಅಂತ ಹೇಳೋಕೆ ಆಗಲ್ಲ ಆದರೆ ಅದನ್ನು ಒಂದಿಲ್ಲೊಂದು ಸಂದರ್ಭದಲ್ಲಿ ನಾವು ಅನುಭವಿಸುತ್ತೇವೆ. ಇದು ಮನಸ್ಸಿನ ನಕಾರಾತ್ಮಕ ಭಾವನೆ. ಭಯ ಎಂದರೇನು? ನಮ್ಮ ಶಕ್ತಿಗೆ ಮೀರಿದ ಅಸಂಭಾವ್ಯ ವಿಚಾರವು ನಮ್ಮ ಮನಸ್ಸಿಗೆ ಹೊಕ್ಕಿತೆಂದರೆ ಆಗ ನಮ್ಮಲ್ಲಿ ನಾವು ಏನೋ ಕಲ್ಪಿಸಿಕೊಳ್ಳುತ್ತೇವೆ. ಇಂತಹ ವಾಸ್ತವವಲ್ಲದ ಕಲ್ಪನೆಗಳಿಗೆ ಒಂದು ಸ್ಪಷ್ಟ ಚಿತ್ರಣವನ್ನು ಸೃಷ್ಟಿಸಿಕೊಂಡು ನೋಡಲು ಶುರು ಮಾಡುತ್ತೇವೆ. ಆಗ ಮನದಲ್ಲಿ ಸಾವಕಾಶವಾಗಿ ಭಯವು ಆವರಿಸಕೊಳ್ಳತೊಡಗುತ್ತದೆ. ನಾವು ಸೃಷ್ಟಿಸಿಕೊಂಡ ಕಾಲ್ಪನಿಕ ಚಿತ್ರಣವು ಕ್ರಮೇಣ ತನ್ನ ಸಾಮ್ರಾಜ್ಯವನ್ನು ಸ್ಥಾಪಿಸಿ ನಮ್ಮನ್ನು ಅಧೋಗತಿಗೆ ತಳ್ಳುತ್ತದೆ. ಬಹಳಷ್ಟು ಬಾರಿ ಭಯವು ನಮ್ಮ ಭ್ರಮೆಯೇ ಆಗಿರುತ್ತದೆ. ಇಲ್ಲದ್ದನ್ನು ಇದ್ದ ಹಾಗೆ ತಿಳಿದುಕೊಳ್ಳುತ್ತೇವೆ. ಇದು ಒಂದು ಭಾವನಾತ್ಮಕ ಅನುಭವ. ಮನದಲ್ಲಿ ಆತಂಕ ಭಾವ ಸೃಷ್ಟಿ ಮಾಡಿ, ಭಾವನಾತ್ಮಕ ಅಡಚಣೆಯನ್ನುಂಟು ಮಾಡುತ್ತದೆ. ಭಯದಿಂದಾಗಿ ನಮ್ಮ ಜಾಗೃತ ಮನಸ್ಸು ನೋವನ್ನು ಅನುಭವಿಸುತ್ತದೆ. ನೋವಿನಿಂದ ಹೊರಬರಲು ನಮ್ಮ ಮನಸ್ಸು ಒದ್ದಾಡುತ್ತದೆ. ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ಎಚ್ಚರಿಕೆಯ ಸಂಕೇತವಾಗಿ ವರ್ತಿಸುತ್ತದೆ. ಇಲ್ಲವಾದಲ್ಲಿ ಮಾನಸಿಕ ವ್ಯಾಧಿಯಾಗಿ ಕಾಡುತ್ತದೆ. ಭಯ ಉಂಟಾಗೋದು ಯಾವಾಗ? ನಾಳೆ ಏನಾಗುತ್ತದೆಯೋ ಏನೊ ಎಂಬ ಚಿಂತೆಯು ಭಯವಾಗಿ ಪರಿವರ್ತನೆಯಾಗುತ್ತದೆ. ಯಾವುದೇ ವಿಷಯದ ಬಗೆಗೆ ನಿರಾಶಾದಾಯಕವಾಗಿ ಆಲೋಚಿಸುವದು, ಸುಮ್ಮನೆ ಏನನ್ನೋ ಇಲ್ಲದ್ದನ್ನು ಊಹಿಸಿಕೊಳ್ಳುವದು,ಹಿಂದೆ ನಡೆದು ಹೋದ ಕಹಿ ಘಟನೆಗಳನ್ನು ಮೇಲಿಂದ ಮೇಲೆ ನೆನಪು ಮಾಡಿಕೊಳ್ಳುವದು, ನಾನೆಲ್ಲಿ ಸೋತು ಹೋಗುತ್ತೇನೋ ಎಂಬ ಸೋಲಿನ ಆತಂಕ, ನನಗಾರೂ ಇಲ್ಲ ನಾನು ಏಕಾಂಗಿ ಎಂಬ ಭಾವ, ಪರರು ನನಗಿಂತ ಮುಂದೆ ಹೋಗುತ್ತಿದ್ದಾರೆ ಎಂಬ ಮತ್ಸರ ಭಾವ ನಮ್ಮಲ್ಲಿ ಭಯವನ್ನು ಹುಟ್ಟು ಹಾಕುತ್ತವೆ. ನಾವು ಅಪಾಯದಲ್ಲಿ ದ್ದಾಗ ನಮ್ಮ ಜೀವನದ ಬಗ್ಗೆ ಹೆದರಿಕೆಯಾಗುತ್ತದೆ. ಯಾವುದಕ್ಕೆ ಭಯಗೊಳ್ಳುತ್ತೇವೆ? ಚಿಕ್ಕ ಪುಟ್ಟ ವಿಷಯಗಳಿಗೂ ಮನಸ್ಸು ಭಯಗೊಳ್ಳುತ್ತದೆ. ಇದು ಒಂದು ತೆರನಾದ ಮಾನಸಿಕ ಸಂಘರ್ಷ. ಇದಕ್ಕೆ ಫೋಬಿಯೋ ಅಂತಲೂ ಕರೆಯುತ್ತಾರೆ. ಕೆಲವರಿಗೆ ಕಾಡುಪ್ರಾಣಿಗಳೆಂದರೆ ಭಯ. ಇನ್ನೂ ಕೆಲವರಿಗೆ ಸಾಕು ಪ್ರಾಣಿಗಳಾದ ನಾಯಿ ಬೆಕ್ಕು ಕಂಡರೂ ಭಯ. ಮಳೆ ಗುಡುಗು ಮಿಂಚಿಗೂ ಹೆದರುತ್ತಾರೆ. ವಿಚಿತ್ರವೆಂದರೆ ಕೆಲವರು ಜನರನ್ನು ಕಂಡರೆ ಕಾಡು ಪ್ರಾಣಿ ನೋಡಿದ ಥರ ಭಯಗೊಳುತ್ತಾರೆ. ಆಹಾರದ ಭಯ, ಎತ್ತರ ಜಾಗದ ಭಯ, ಬಸ್ಸಿನಲ್ಲಿ , ರೈಲಿನಲ್ಲಿ ವಿಮಾನದಲ್ಲಿ ಪ್ರಯಾಣ ಮಾಡುವುದೆಂದರೆ ಭಯ ಇನ್ನು ಕೆಲವರು ನೀರು ಕಂಡರೆ ಹೆದರುತ್ತಾರೆ. ಅಂದರೆ ಭಯ ಎಲ್ಲ ಹಂತಗಳಲ್ಲಿ ಇದ್ದೇ ಇರುತ್ತದೆ.ಒಬ್ಬೊಬ್ಬರಿಗೆ ಒಂದೊಂದನ್ನು ಕಂಡರೆ ಭಯ. ಆಫೀಸಿಗೆ ಹೋದ ಗಂಡ, ಸ್ಕೂಲಿಗೆ ಹೋದ ಮಕ್ಕಳು ಮನೆಗೆ ಸರಿಯಾದ ಸಮಯಕ್ಕೆ ಮರಳಿ ಬರದಿದ್ದರೂ ಭಯಗೊಳ್ಳುವ ಪ್ರಸಂಗಗಳಿವೆ. ನಾವು ಧೈರ್ಯವಂತರು ಎಂದು ಎಷ್ಟೋ ಜಂಭ ಕೊಚ್ಚಿಕೊಂಡರೂ ಭಯಗೊಳ್ಳುತ್ತೇವೆ ಎಲ್ಲಕ್ಕಿಂತ ದೊಡ್ಡ ಭಯ ಎಂದರೆ ಸಾವಿನ ಭಯ. ಈ ಭಯ ನಮ್ಮ ಅಸ್ತಿತ್ವಕ್ಕೆ ಸಂಬಂಧಿಸಿದ್ದು. ಎಲ್ಲಿ ನಮ್ಮ ಪ್ರಾಣಕ್ಕೆ ಸಂಚಕಾರ ಬರುತ್ತೇನೋ ಎಂದು ಎಷ್ಟೋ ಬಾರಿ ಭಯಗೊಳ್ಳುತ್ತೇವೆ. ಭಯದ ಲಕ್ಷಣಗಳೇನು? ಭಯವುಂಟಾದಾಗ ಮೈಂಡ್ ಫುಲ್ ಬ್ಲಾಂಕ್ ಆಗಿರುತ್ತೆ ಯಾವುದೇ ವಿಚಾರಗಳು ಆಲೋಚನೆಗಳು ಹೊಳೆಯುವುದಿಲ್ಲ. ಮೈಯೆಲ್ಲ ಬೆವರುತ್ತೆ.ಕೈ ಕಾಲುಗಳಲ್ಲಿ ಶಕ್ತಿಯಿಲ್ಲದಂತೆ ಭಾಸವಾಗುತ್ತೆ. ಮಾತೇ ಹೊರಡೋದಿಲ್ಲ. ಹೊರಡಿದರೂ ತೊದಲುತ್ತೆ. ಭಯದ ವಿಚಾರವನ್ನು ಹೊರತುಪಡಿಸಿ ಬೇರೆ ಯಾವ ವಿಚಾರಗಳು ಮನಸ್ಸಿನಲ್ಲಿ ಸುಳಿಯಲಾರವು. ವಿಚಾರಗಳೆಲ್ಲ ಅಸ್ತವ್ಯಸ್ತವಾಗುವುವು. ಅಂದುಕೊಂಡ ಯಾವ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ಸಣ್ಣ ಪುಟ್ಟ ವಿಷಯಗಳಿಗೆ ಬೆಚ್ಚಿ ಬೀಳುವುದು ಅಥವಾ ಇದಕ್ಕೆ ತದ್ವಿರುದ್ಧವಾಗಿ ಗಂಭೀರ ವಿಷಯಗಳಿಗೂ ಪ್ರತಿಕ್ರಿಯಿಸದೆ ಮೌನವಾಗಿರುವದು ಇವೆಲ್ಲ ಭಯದ ಮುಖ್ಯ ಲಕ್ಷಣಗಳು. ಭಯ ತಡೆಯೋಕೆ ಏನು ಉಪಾಯ ? ಪ್ರತಿಯೊಂದು ಭಯದಿಂದಲೂ ನಾವು ಮುಕ್ತರಾಗಬಹುದು. ಭಯ ತಡೆಯುವ ಉಪಾಯಗಳು ಕಠಿಣವೆನಿಸಿದರೂ ಅಸಾಧ್ಯವೇನಲ್ಲ. ನಾವು ಭಯಗೊಳ್ಳುತ್ತೇವೆ ಎನ್ನುವ ಸಂಗತಿಯನ್ನು ಒಪ್ಪಿಕೊಳ್ಳುವುದು.ಯಾವ ವಿಷಯದ ಬಗ್ಗೆ ಭಯವಿದೆಯೋ ಎಂಬುನ್ನು ತಿಳಿದು ಅದನ್ನು ಮುಕ್ತವಾಗಿ ಆತ್ಮೀಯರೊಂದಿಗೆ ಚರ್ಚಿಸುವದು.ಯಾವಾಗಲೂ ಕೆಲಸದಲ್ಲಿ ತೊಡಗಿಸಿಕೊಳ್ಳುವದು. ಮೂಢನಂಬಿಕೆ ಮತ್ತು ಅಪಶಕುನಗಳನ್ನು ನಂಬದೆ ಇರುವದು. ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳುವುದು. ಪರಿಸ್ತಿತಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುವದು ಅನುಮಾನಕ್ಕೆ ಆಸ್ಪದ ಕೊಡದಿರುವದು ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ನಮಗೆ ಎಚ್ಚರಿಕೆಯಂತೆ ವರ್ತಿಸುತ್ತದೆ ಎಂದು ತಿಳಿದುಕೊಳ್ಳುವುದು.ಭಯ ನಿವಾರಿಸುವುದಕ್ಕೆ ಪ್ರಯತ್ನಿಸಿ ತಜ್ಞ ವೈಜ್ಞರನ್ನು ಭೇಟಿ ಮಾಡುವುದು. ನಿಜವಾದ ಧೈರ್ಯವನ್ನು ಮನಸ್ಸಿಗೆ ತುಂಬಿಕೊಳ್ಳುವದು ಆಶಾವಾದಿಯಾಗಿರುವದು. ನಾನು ಧೈರ್ಯವಂತ ಎಂದು ನನ್ನಷ್ಟಕ್ಕೆ ನಾವೇ ಹೇಳಿಕೊಳ್ಳುವದು ಎಂದರೆ ಸೆಲ್ಪ್ ಹಿಪ್ನಾಟಿಸಂ ಮಾಡಿಕೊಳ್ಳುವದು. ವಿವೇಕಾನಂದರ ವಾಣಿಯಂತೆ ‘ನಿಮ್ಮಿಂದ ನೀವೇ ಉದ್ದಾರವಾಗಬೇಕು. ಸ್ನೇಹಿತನೆ ನಿನಗೆ ಯಾರೂ ಸಹಾಯ ಮಾಡಲಾರರು. ನಿನಗೆ ನೀನೇ ದೊಡ್ಡ ಶತ್ರು . ನಿನಗೆ ನೀನೇ ದೊಡ್ಡ ಮಿತ್ರ ಹಾಗಾದರೆ ನೀನು ಆತ್ಮವನ್ನು ದೃಢವಾಗಿ ಹಿಡಿದುಕೊ ಎದ್ದು ನಿಲ್ಲು ಅಂಜಬೇಕಾಗಿಲ್ಲ. ನೀನು ಜಗತ್ತನ್ನೇ ಅಲ್ಲಾಡಿಸಲು ಸಮರ್ಥನಾಗುವೆ. ಶಕ್ತಿಯ ರಹಸ್ಯ ವ್ಯಕ್ತಿ ಮತ್ತು ಆತನ ಜೀವನವೇ ಹೊರತು ಮತ್ತಾವುದು ಅಲ್ಲವೆಂಬುವುದನ್ನು ನೆನಪಿನಲ್ಲಿಡಿ’. ಸ್ವಾಮಿ ವಿವೇಕಾನಂದರ ವಿವೇಕಭರಿತವಾದ ಈ ವಾಣಿಯನ್ನು ಮೈಗೂಡಿಸಿಕೊಳ್ಳಲು ಪ್ರಯತ್ನಿಸುತ್ತ ಕೇವಲ ದೈಹಿಕ ಆರೋಗ್ಯದ ಕಡೆಗೆ ಗಮನ ಕೊಡದೆ ಮಾನಸಿಕ ಆರೋಗ್ಯದ ಬಗೆಗೆ ಗಮನವಹಿಸಿ ಆಗಾಗ ತಜ್ಞ ವೈದ್ಯರನ್ನು ಭೇಟಿಯಾಗಿ ನಮ್ಮ ವರ್ತನೆಯಲ್ಲಾದ ಬದಲಾವಣೆಯ ಕುರಿತು ಚರ್ಚಿಸಿ, ಅವರ ಸಲಹೆಗಳನ್ನು ಪಾಲಿಸಿದರೆ, ಭಯ ಮಂಗಮಾಯವಾಗುವದು ಖಚಿತ. ***************
ಶಾಂತಿ ಬೀಜಗಳ ಜತನ’
ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ ಡಾ. ಪ್ರಕಾಶ ಗ. ಖಾಡೆ ಬಾಗಲಕೋಟೆಯಲ್ಲಿ ಅಧ್ಯಾಪಕರಾಗಿರುವ ಡಾ. ಪ್ರಕಾಶ ಗಣಪತಿ ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ೧೦-೦೬-೧೯೬೫ ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ , ೨೦೦೫ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ “ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ” ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ ಸಕ್ರಿ ಪತ್ರಿಕೋದ್ಯಮ ವಿಭಾಗ ಮತ್ತು ಇಳಕಲ್ಲ ವಿಜಯ ಚಿತ್ರಕಲಾ ಸ್ನಾತಕೋತ್ತರ ಕಾಲೇಜು ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಮಾಡುತ್ತಿದ್ದಾರೆ. ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ಜಾನಪದ, ಶಿಕ್ಷಣ, ಸಂಶೋಧನೆ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಸದಾ ಕ್ರಿಯಾಶೀಲ ವ್ಯಕ್ತಿತ್ವ, ಕನ್ನಡದ ಪ್ರಮುಖ ಪತ್ರಿಕೆ, ಆಕಾಶವಾಣಿ, ದೂರದರ್ಶನಗಳಲ್ಲಿ ನಿರಂತರವಾಗಿ ಲೇಖನ, ಕವಿತೆ, ಕಥೆ, ವಿಮರ್ಶೆ ಪ್ರಕಟ ಮತ್ತು ಪ್ರಸಾರವಾಗಿವೆ. ಈವರೆಗೆ ಗೀತ ಚಿಗಿತ, ಪ್ರೀತಿ ಬಟ್ಟಲು, ತೂಕದವರು, ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ, ಕೃಷ್ಣಾ ತೀರದ ಜನಪದ ಒಗಟುಗಳು, ಮುನ್ನುಡಿ ತೋರಣ, ಜತ್ತಿ ಕಾವ್ಯಾಭಿವಂದನ, ನೆಲಮೂಲ ಸಂಸ್ಕೃತಿ, ಕನ್ನಡ ಪತ್ರಿಕೆ ಮತ್ತು ಸಾಹಿತ್ಯ, ಜಾನಪದ ಕೋಗಿಲೆ ಗೌರಮ್ಮ ಚಲವಾದಿ, ಸಾಹಿತ್ಯ ಸಂಗತಿ ,ಮೌನ ಓದಿನ ಬೆಡಗು,ಕಣ್ಣುಗಳಿಗೆ ಮೌನ ಅರ್ಥವಾಗುತ್ತದೆ,ಶಾಂತಿ ಬೀಜಗಳ ಜತನ ಸೇರಿದಂತೆ ೨೭ ಕೃತಿಗಳನ್ನು ಪ್ರಕಟಿಸಿದ್ದಾರೆ. ಮುಧೋಳ,ಶಿವಮೊಗ್ಗ, ವಿಜಾಪುರ ಮತ್ತು ಮೈಸೂರುಗಳಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಹಂಪಿ ಉತ್ಸವ,ಮೈಸೂರು ದಸರಾ,ನವರಸಪುರ ಉತ್ಸವಗಳಲ್ಲಿ ಕವಿತೆ ವಾಚನ. ಕೇರಳದಲ್ಲಿ ಜರುಗಿದ ಕನ್ನಡ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ. ಉತ್ತಮ ವಾಗ್ಮಿ, ಅಪರೂಪದ ಶಿಕ್ಷಣ ಚಿಂತಕ ಡಾ. ಪ್ರಕಾಶ ಖಾಡೆ ಬಾಗಲಕೋಟ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿಯೂ ಕಾರ್ಯನಿರ್ವಹಿದ್ದಾರೆ. ಶಾಂತಿ ಬೀಜ ಜತನದ ಕವಿ …………………………………. ನಾಗರಾಜ ಹರಪನಹಳ್ಳಿ : ಕತೆ, ಕವಿತೆಗಳನ್ನು ಯಾಕೆ ಬರೆಯುತ್ತೀರಿ? ಪ್ರಕಾಶ್ ಖಾಡೆ ; ಮೊದಲೆಲ್ಲ ಹೆಸರಿಗಾಗಿ ಬರೆಯಬೇಕೆನಿಸುತ್ತಿತ್ತು, ಈಗ ಹಾಗಿಲ್ಲ. ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ, ನನಗೂ ಆಗಿದ್ದು ಅದೇ. ಒಂದು ಕತೆ, ಒಂದು ಕವಿತೆ ಉಂಟು ಮಾಡುವ ಪರಿಣಾಮವಿದೆಯಲ್ಲ ಅದು ಬೆರಗು ಹುಟ್ಟಿಸುವಂಥದು. ನನ್ನ ರಚನೆಯ ಇಂಥ ಸಾಲುಗಳನ್ನು ನಾನೇ ಅನೇಕ ಬಾರಿ ಓದಿ ಬೆರಗುಗೊಂಡಿದ್ದೇನೆ. ಸಾಹಿತ್ಯ ಸಾರ್ಥಕತೆ ಕಂಡಾಗ ಅದರ ಮೌಲ್ಯ ಹೆಚ್ಚುತ್ತದೆ, ರಚನೆ ಗಂಭೀರವಾಗಿ ಸಾಗುತ್ತದೆ, ಬರಹ ತನ್ನಿಂದ ತಾನೆ ಬರೆಸಿಕೊಳ್ಳುತ್ತದೆ, ಇಲ್ಲಿ ಕವಿ ಸಣ್ಣವನಾಗಬೇಕು, ಕವಿತೆ ದೊಡ್ಡದಾಗಬೇಕು, ಇಂಥ ಭಾವ ನನ್ನಲ್ಲಿ ಬಂದ ಘಳಿಗೆಯಿಂದ ನಾನೇ ಮತ್ತೆ ಮತ್ತೇ ಕೇಳಿಕೊಳ್ಳುತ್ತೇನೆ, ಹೌದು ನಾನೇಕೆ ಬರೆಯುತ್ತೇನೆ,ಕ್ಷಮಿಸಿ ಉತ್ತರಕ್ಕಾಗಿ ಇನ್ನೂ ಹುಡುಕುತ್ತಿದ್ದೇನೆ. ಪ್ರಶ್ನೆ ; ಕತೆ ಅಥವಾ ಕವಿತೆ ಹುಟ್ಟುವ ಕ್ಷಣ ಯಾವುದು. ಉತ್ತರ : ಅದೊಂದು ಕ್ಷಣಿಕದ ಸಂದರ್ಭ,ಅದು ಹುಟ್ಟಿದ ಘಳಿಗೆಯೇ ಗೊತ್ತಾಗೊಲ್ಲ,ಒಂದು ಕತೆ ,ಒಂದು ಕವಿತೆ ಹುಟ್ಟುತ್ತಿದೆ ಎಂದರೆ ,ಅದರ ಹಿಂದೆ ನಮಗರಿವಿಲ್ಲದೇ ಅನೇಕ ಅನುಭವಗಳು ,ಸಂದರ್ಭಗಳು ರೂಪು ಪಡೆದುಕೊಳ್ಳತ್ತಿರುತ್ತವೆ,ಒಂದು ರಚನೆ ಪೂರ್ಣವಾದಾಗ ಅದರ ನಿಲುಗಡೆ,ಈ ನಿಲುಗಡೆಯ ಹಿಂದಿನ ಚಲನೆಗಳು ಇವತ್ತಿಗೂ ಲೆಕ್ಕಕ್ಕೆ ಸಿಗುತ್ತಿಲ್ಲ,ಹಾಗಾಗಿ ಆ ಕ್ಷಣ ಎಂಬುದು ಒಂದು ಬಯಲು,ಒಂದು ಬೆಳಕು. ಪ್ರಶ್ನೆ ; ನಿಮ್ಮ ಕವಿತೆಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು ? ಪದೇ ಪದೇ ಕಾಡುವ ವಿಷಯ ಯಾವುದು.? ಉತ್ತರ : ಮೂರು ದಶಕಗಳ ಕಾಲ ನನ್ನ ಕಾವ್ಯದ ಪಯಣ, ನಾನು ಬರೆವ ಹೊತ್ತಿಗೆ ನವ್ಯ ಮರೆಯಾಗಿ ,ಬಂಡಾಯ ಕಾವ್ಯದ ಬಿರುಸು ವಿಜೃಂಭಿಸುತ್ತಿತ್ತು. ಈಗ ಎಲ್ಲ ನಿರಾಳ ಹೊಸ ಕಾಲ, ಹೊಸ ಓದುಗ ಬಳಗ, ಅದರಲ್ಲೂ ವಿಶ್ವವ್ಯಾಪಿ. ಬಹುಬೇಗ ಕಾವ್ಯ ತಲುಪುವ ಕಾಲ.ಈಗಂತೂ ತುಂಬಾ ಅವಸರದ ಜಗತ್ತು, ಎಲ್ಲವನ್ನೂ ಅಂದರೆ ಮೇಘಸ್ಪೋಟ ಮಳೆ, ಪ್ರವಾಹ, ಪ್ರಳಯ ಇಂಥ ಪ್ರಾಕೃತಿಕ ಅವಘಡಗಳನ್ನೂ ಕಾಣಬೇಕಾದ ಕೆಟ್ಟ ಕಾಲ.ಜನತೆಯ ನೆಮ್ಮದಿ ಕೆಡಿಸುವ ಆಗುಂತಕ ವಿಷಯಗಳು,ಹಿಂಸೆ,ದುರಾಡಳಿತ,ಭ್ರಷ್ಟಾಚಾರ ಸಾರ್ವತ್ರಿಕ,ಇಂಥ ಹೊತ್ತಲ್ಲಿ ಶಾಂತಿ,ಪ್ರೀತಿ ಹುಡಕ ಹೊರಟಿರುವುದು ನನ್ನ ಕವಿತೆಗಳ ವಸ್ತು ಮತ್ತು ವ್ಯಾಪ್ತಿ.ನನ್ನ `ಶಾಂತಿ ಬೀಜಗಳ ಜತನ’ ಕಾವ್ಯ ಸಂಕಲನವು ಇಂಥ ಆಶಯಗಳನ್ನು ಹೊತ್ತ ಮೊತ್ತ.’ ಪ್ರಶ್ನೆ ; ಕತೆ,ಕವಿತೆಗಳಲ್ಲಿ ಬಾಲ್ಯ ,ಹರೆಯ ಇಣುಕಿದೆಯೇ ? ಉತ್ತರ : ಖಂಡಿತ ಸರ್,ಈಗಲೂ ಬಾಲ್ಯವನ್ನು ಕಳೆದ ನನ್ನ ತೊದಲಬಾಗಿಯ (ಜಮಖಂಡಿ ತಾಲೂಕು) ಹಳ್ಳಿಯ ನೆನಪುಗಳು ಕಾಡುತ್ತವೆ, ನನ್ನ ‘ಸೂರ್ಯ ಚಂದ್ರರು ಕಾವಲೋ’ ಕಥೆಯಂತೂ ನನ್ನೂರ ಪಾತ್ರಗಳನ್ನು,ಸಂದರ್ಭಗಳನ್ನು ಕಟ್ಟಿಕೊಡುತ್ತದೆ, ನನ್ನ ‘ಮತ್ತೆ ಬಾಲ್ಯಕ್ಕೆ..’ ಕವಿತೆಯಂತೂ ಬಾಲ್ಯದ ದಿನಗಳ ಆಡೊಂಬಲ ಸಾರುತ್ತದೆ,ಸ್ವರ್ಗಕ್ಕಿಂತಲೂ ಮಿಗಿಲಾದ ಹುಟ್ಟಿಸಿದ ತಾಯಿ, ಹುಟ್ಟಿದ ಊರು ಮರೆಯಲಾದೀತೆ.? ಪ್ರಶ್ನೆ ; ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ? ಉತ್ತರ : ಇಂದು ರಾಜಕೀಯ ಪರಿಕಲ್ಪನೆಯೇ ಬೇರೆ ಯಾಗಿದೆ,ನಾವೆಲ್ಲ ಕನ್ನಡದೊಂದಿಗೆ ರಾಜಕೀಯ ಶಾಸ್ತ್ರವನ್ನು ಒಂದು ವಿಷಯವಾಗಿ ಪದವಿ ತರಗತಿಯಲ್ಲಿ ಓದಿದವರು, ಅಲ್ಲಿ ಓದಿದ್ದು , ಈಗ ನಡೆಯುತ್ತಿರುವುದು ತುಂಬಾ ಆತಂಕಾರಿಯಾಗಿದೆ. ಈಗ ಬದ್ಧತೆ ಎಂಬುದು ಉಳಿದಿಲ್ಲ,ಅಧಿಕಾರ ಹಣವುಳ್ಳವರ ಸೊತ್ತಾಗಿದೆ . ಮಠಗಳು ಸ್ವಂತದ ಕುಲ ,ಕುಲದವರನ್ನು ಉದ್ಧರಿಸಲು ಲಕ್ಷ್ಮಣ ರೇಖೆ ಹಾಕಿಕೊಂಡಿವೆ, ಬಲಿಷ್ಠ ಜಾತಿ,ಪಂಗಡ ನಾಯಕರು ಮುಂಚೂಣಿಯಲ್ಲಿದ್ದಾರೆ,ಸಣ್ಣ ಪುಟ್ಟ ಜಾತಿ ಜನಾಂಗದವರನ್ನು ಕೇಳುವವರೇ ಇಲ್ಲ,ಅಧಿಕಾರಕ್ಕಾಗಿ ಹೂಡುವ ತಂತ್ರಗಳು,ಬೆಳವಣಿಗೆಗಳು ಮಾನವತ್ವವನ್ನೂ ಮೀರಿ ಬೆಳೆದಿವೆ. ಭವಿಷ್ಯವಂತೂ ಬಹಳ ಕರಾಳವಾಗಿದೆ. ಕವಿಗಳು ಎಚ್ಚರವಾಗಿರಬೇಕು. ಪ್ರಶ್ನೆ ; ಧರ್ಮ,ದೇವರು ವಿಷಯದಲ್ಲಿ ನಿಮ್ಮ ನಿಲುವೇನು.? ಉತ್ತರ : ಧರ್ಮ ಮತ್ತ ದೇವರು ವಿಷಯ ನಮ್ಮ ತಿಳುವಳಿಕೆ ಹೆಚ್ಚಿದಂತೆಲ್ಲಾ ಬದಲಾಗುತ್ತಾ ಹೋಗುತ್ತದೆ. ಕಂದಾಚಾರ, ಡಾಂಭಿಕತೆಗಳನ್ನು ನಮ್ಮ ತಂದೆ ವಿರೋಧಿಸುತ್ತಿದ್ದರು,ನಮ್ಮಲ್ಲೂ ಅಂಥ ಆಲೋಚನೆಗಳನ್ನು ಬಿತ್ತಿದರು,ಹೀಗಾಗಿ ದೇವರು ಧರ್ಮದ ಬಗೆಗೆ ನಮಗೊಂದು ಸ್ಪಷ್ಠ ಕಲ್ಪನೆ ಇತ್ತು.ಕಲ್ಲು ದೇವರುಗಳಿಗಿಂತ ಮನುಷ್ಯರೊಳಗಿನ ದೇವರನ್ನು ಇವತ್ತಿಗೂ ಹುಡುಕುತ್ತಿದ್ದೇನೆ,ಅನೇಕರು ಸಿಕ್ಕಿದ್ದಾರೆ,ಹೀಗಾಗಿ ಬದುಕು ಸುಂದರವಾಗಲು ನಮಗೆ ನಂಬುಗೆ ಇರಬೇಕು, ಅದು ವಾಸ್ತವದ ನೆಲೆಯಲ್ಲಿದಷ್ಟೂ ದೇವರು ಎಂಬುದು ಆಪ್ತವಾಗುತ್ತದೆ. ಪ್ರಶ್ನೆ ; ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತದೆ.? ಉತ್ತರ : ಪ್ರಸ್ತುತ ಸಾಂಸ್ಕೃತಿಕ ವಾತಾವರಣ ಗಬ್ಬೆದ್ದು ಹೋಗಿದೆ.ನಿಜವಾದ ಸಾಂಸ್ಕೃತಿಕ ರಾಯಭಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಪ್ರಶಸ್ತಿಗಳು ಮೌಲ್ಯ ಕಳೆದುಕೊಳ್ಳುತ್ತಿವೆ. ಗೌರವ ಡಾಕ್ಟರೇಟುಗಳ ಹೆಸರಿನಲ್ಲಿ ಯಾರು ಯಾರೋ ಪದವಿ ಕೊಡುತ್ತಿದ್ದಾರೆ, ಅಪಾತ್ರರು ಪಡೆದುಕೊಳ್ಳುತ್ತಿದ್ದಾರೆ, ಯಾವುದೇ ಪ್ರಶಸ್ತಿ ಘೋಷಣೆಯಾದರೂ ‘ಅರ್ಹರಿಗೆ ಮುಂದಿನ ಬಾರಿ’ ಎನ್ನುವಂತಾಗಿದೆ. ಸಂಸ್ಕೃತಿ ಇಲಾಖೆಯ ಅನುದಾನ ನಿಜ ಕಲಾವಿದರಿಗೆ ಸಿಗುತ್ತಿಲ್ಲ, ಇಲ್ಲಿಯೂ ಬ್ರೋಕರುಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಪ್ರಶ್ನೆ ; ಸಾಹಿತ್ಯ ವಲಯದ ರಾಜಕಾರಣದ ಬಗೆಗೆ ನೀವು ಹೇಗೆ ಪ್ರತಿಕ್ರಿಯಿಸುತ್ತೀರಿ.? ಉತ್ತರ : ಈಗಂತೂ ರಾಜಕಾರಣ ಎಲ್ಲ ಕ್ಷೇತ್ರವನ್ನೂ ವ್ಯಾಪಿಸಿದೆ, ಅದರ ರಾಕ್ಷಸ ಬಾಹುಗಳು ಎಲ್ಲವನ್ನೂ ಆಪೋಶನ ಮಾಡುತ್ತಾ ಸಾಗಿವೆ. ಕವಿ ಬರಹಗಾರರಿಗೆ ಯಾವ ಪಂಥವೂ ಇರಬಾರದು, ಆತ ಸಮಾಜವನ್ನು ಎಚ್ಚರಿಸುತ್ತ ಜನತೆಯನ್ನು ಸರಿಮಾರ್ಗಕ್ಕೆ ತರುವ ಕೆಲಸ ಮಾಡಬೇಕು. ಇಂಥ ಹೊತ್ತಲ್ಲಿ ಕವಿ ಸಮಾಜದೊಂದಿಗೆ ನಿಲ್ಲಬೇಕು, ಸಮಾಜದೊಂದಿಗೆ ಬೆರೆಯಬೇಕು, ಆದರೆ ಆಗುತ್ತಿರುವುದೇನು, ರಾಜಕಾರಣಿಗಳ ಸುತ್ತ ಗಿರಕಿ ಹೊಡೆಯತ್ತಾ, ಬೇಳೆ ಬೇಯಿಸಿಕೊಳ್ಳತ್ತಿರುವ ಇಂಥಹವರಿಂದ ನಿಜ ಸಾಹಿತಿಗಳು ಮರೆಯಲ್ಲಿಯೇ ಉಳಿಯುವ ಸಂದರ್ಭ ಬಂದಿದೆ, ಪ್ರಶಸ್ತಿಗಾಗಿ, ಪಠ್ಯ ಪುಸ್ತಕಗಳಲ್ಲಿ ಪದ್ಯ ಸೇರಿಸುವದಕ್ಕಾಗಿ, ಅಧಿಕಾರಕ್ಕಾಗಿ ಹಪಹಪಿಸುವ ಸಾಹಿತಿಗಳು ಸಮಾಜಕ್ಕೆ ಏನೂ ಸಂದೇಶ ಕೊಡಬಲ್ಲರು, ಕಾಲವೇ ಎಲ್ಲವನ್ನೂ ಉತ್ತರಿಸುತ್ತದೆ. ಹೊಸ ಬರಹಗಾರರು ಎಚ್ಚರದಿಂದಿರಬೇಕು. ಪ್ರಶ್ನೆ ; ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳು ಏನು.? ಉತ್ತರ : ವಾಸ್ತವದ ನೆಲೆಯಲ್ಲಿ ಬದುಕುತ್ತಿರುವ ನಮಗೆ ಆಶಾದಾಯಕವಾಗಿ ಒಂದಿಷ್ಟು ಕನಸುಗಳಿರಬೇಕು. ‘ಕವಿತೆಯ ಜೀವಂತಿಕೆಯಲ್ಲಿ ಕವಿ ಬದುಕಿದ್ದಕೆ ಸಾಕ್ಷಿಯಿದೆ’ ಎಂದು ನಂಬಿದವ ನಾನು, ಹಾಗಾಗಿ ನನ್ನ ಬರವಣಿಗೆ ಓದುಗರಲ್ಲಿ ಒಂದಿಷ್ಟು ಪರಿವರ್ತನೆ ತಂದರೆ ಅದೇ ನನ್ನ ಸಾರ್ಥಕತೆ ಎಂದುಕೊಂಡಿದ್ದೇನೆ, ನನಗೆ ಕನಸುಗಳಿವೆ ಒಂದು ಕಾದಂಬರಿ ಬರೆಯಲು ಆರಂಭಿಸಿದ್ದೇನೆ, ಬರೆಸಿಕೊಳ್ಳುತ್ತಾ ಸಾಗಿದೆ ಮುಗಿಯಬೇಕಷ್ಟೇ.. ಪ್ರಶ್ನೆ ; ನಿಮ್ಮ ಇಷ್ಟದ ಕವಿ,ಸಾಹಿತಿ ಯಾರು ? ಉತ್ತರ : ನನಗೆ ಲಂಕೇಶ, ಕಂಬಾರ, ತೇಜಸ್ವಿ ಅವರ ಬರಹಗಳು, ಬರಗೂರು,ಚಂಪಾ,ದೇವನೂರು,ಕಾಟ್ಕರ್ ಅವರ ಚಿಂತನೆಗಳು ತುಂಬಾ ಪ್ರಭಾವಿಸಿವೆ. ಜನಪದ ಹಾಡು,ಕಥೆಗಳಂತೂ ನನಗೆ ಜೀವದ್ರವ್ಯ. ಪ್ರಶ್ನೆ ; ಈಚೆಗೆ ಓದಿದ ಕೃತಿಗಳಾವವು ? ಉತ್ತರ : ಡಾ,ಸರಜೂ ಕಾಟ್ಕರ್ ಅವರ ಅನುವಾದಿತ ಕೃತಿಗಳನ್ನು ಓದುತ್ತಿದ್ದೇನೆ, ಅಲಕ್ಷಿತ ಸಾಹಿತ್ಯವನ್ನು ,ಸಾಹಿತಿಗಳನ್ನು ಮುಖ್ಯವಾಹಿನಿಗೆ ತರುವ ಅವರ ಕೆಲಸ ಮಾದರಿಯಾದುದು, ಹಾಗಾಗಿ ಅವರ ಬರಹಗಳು ಕುತೂಹಲದಿಂದ ಓದಿಸಿಕೊಂಡು ಹೋಗುತ್ತವೆ.ಹೊಸಬರ ಕಾವ್ಯಗಳನ್ನು ತಪ್ಪದೇ ಓದುತ್ತೇನೆ. ಪ್ರಶ್ನೆ ; ನಿಮಗೆ ಇಷ್ಟವಾದ ಕೆಲಸ ಯಾವುದು.? ಉತ್ತರ : ನನ್ನ ಕೆಲಸದಿಂದ ಇನ್ನೊಬ್ಬರು ಖುಷಿಯಿಂದಿರುವುದು. ಪ್ರಶ್ನೆ ; ನಿಮಗೆ ಇಷ್ಟವಾದ ಸ್ಥಳ ಯಾವುದು.? ಉತ್ತರ : ಬಾದಾಮಿ ಪರಿಸರ, ಕೊಡಗಿನ ಪ್ರಕೃತಿ, ಸಮುದ್ರದ ದಂಡೆ. ಪ್ರಶ್ನೆ ; ನಿಮ್ಮ ಪ್ರೀತಿಯ ,ನೀವು ಇಷ್ಟ ಪಡುವ ಸಿನಿಮಾ ಯಾವುದು ? ಉತ್ತರ : ಡಾ.ರಾಜಕುಮಾರ,ಮಾಧವಿ ಅಭಿನಯದ ‘ಭಾಗ್ಯದ ಲಕ್ಷ್ಮೀ ಬಾರಮ್ಮ’. ಪ್ರಶ್ನೆ ; ನೀವು ಮರೆಯಲಾಗದ ಘಟನೆ ಯಾವುದು ? ಉತ್ತರ : ನಮ್ಮ ತಂದೆ ಬದುಕಿನ ಅನೇಕ ಪಾಠಗಳನ್ನು ಹೇಳಿಕೊಟ್ಟರು,ಅವು ಯಾವ ಪಠ್ಯದಲ್ಲೂ ಇರಲಿಲ್ಲ,ಬದುಕು ಕಟ್ಟಿಕೊಳ್ಳಲು ಅಣ್ಣ ಮತ್ತು ಈಚೆಗೆ ಅಗಲಿದ ತಂದೆ ಅನೇಕ ಮರೆಯಲಾಗದ ಘಟನೆಗಳಿಗೆ ಸಾಕ್ಷಿಯಾಗುತ್ತಾರೆ. ************ ******** ಲೇಖಕರ ಬಗ್ಗೆ: ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸ್ವಾತ್ಮಗತ
ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು ಮರದ ತಿಮ್ಮಕ್ಕನೆಂದೇ ಕರೆಯಬೇಕು.ಇವರ ಬಗ್ಗೆ ತಿಳಿದೇ ಇಲ್ಲ ಅನ್ನೋ ಜನ ಬಹಳ ಕಡಿಮೆ. ನಮಗೆ ತಿಳಿದ ಪ್ರಕಾರ, ಸಾಲು ಮರದ ತಿಮ್ಮಕ್ಕ ಎಂದರೆ ನಾಲ್ಕು ಕಿಲೋಮೀಟರ್ ಉದ್ದಕ್ಕೂ ಮರ ನೆಟ್ಡಿದ್ದಾರೆ. ಪೃಕೃತಿ ಮಾತೆಯನ್ನೇ ಬೆಳೆಸಿ ಪೋಷಿಸುವ ಮಹತ್ಕಾರ್ಯ ಮಾಡಿರುವ ಸಾಲು ಮರದ ತಿಮಕ್ಕ. ಅವರು ನಮ್ಮೆಲ್ಲರ ಹೆಮ್ಮೆ ಹಾಗೂ ಆದರ್ಶವಾದ ಪರಿಸರವಾದಿ. ತಿಮ್ಮಕ್ಕ ಮೂಲತಃ ಬೆಂಗಳೂರು ಹತ್ತಿರದ, ಮಾಗಡಿ ತಾಲ್ಲೂಕಿನ ಹುಳಿಕಲ್ ಗ್ರಾಮದವರು. ತಿಮಕ್ಕನರವರು ಹೆಚ್ಚು ಓದಿಲ್ಲದ ಕಾರಣ ದಿನಗೂಲಿ ಕೆಲಸಕ್ಕೆ ಹೋಗುತ್ತಿದ್ದರು. ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಮಕ್ಕಳಾಗದಿದ್ದರೆ ಎಂತವರಿಗೂ ಬೇಸರವಾಗುತ್ತದೆ. ಹಾಗೆಯೇ ತಿಮ್ಮಕ್ಕನವರಿಗೂ ಈ ಕೊರತೆ ಕಾಡುತ್ತಲೇ ಇತ್ತು. ಆದರೆ ತಿಮ್ಮಕ್ಕ ಕುಗ್ಗಲಿಲ್ಲ. ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು. ಮರಗಳನ್ನೇ ಮಕ್ಕಳಂತೆ ಪ್ರೀತಿಯಿಂದ ಬೆಳೆಸಿದರು ಅವರ ಈ ಮಹಾನ್ ಕೆಲಸಕ್ಕೆ, ಪತಿ ಚಿಕ್ಕಯ್ಯ ಅವರೂ ಸಹ ಕೈ ಜೋಡಿಸಿದರು. ತಿಮ್ಮಕ್ಕ ಹುಟ್ಟುತ್ತಲೇ ಬಡತನವನ್ನು ಹಾಸಿ ಹೊದ್ದು ಬಂದವರು. ಬಡತನದ ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ ಅವರದು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಡಲಾಯಿತು. ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ‘ನೆರಳು ನೀಡುವ ಮರಗಳೆ ನನ್ನ ಮಕ್ಕಳು, ಅವುಗಳನ್ನು ಬೆಳೆಸಿ ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದ ಈ ವೃಕ್ಷ ಮಹಿಳೆ ತಿಮ್ಮಕ್ಕರವರಿಗೆ 100 ವರ್ಷ ತುಂಬಿದೆ. ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಹಲವು ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇವರಿಗೆ, ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆರವರಿಂದ ಮಾನ್ಯತೆಯ ಪ್ರಮಾಣ ಪತ್ರ, ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಕಡೆಯಿಂದ ಶ್ಲಾಘನೆಯ ಪ್ರಮಾಣ ಪತ್ರ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಮಾಗಡಿ ವ್ಯಕ್ತಿ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ಮಹಿಳಾರತ್ನ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಟ ಆಫ ಲೀವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010 ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿಗಳು ಲಭಿಸಿವೆ. ಸಾಲು ಮರದ ತಿಮ್ಮಕ್ಕ ಅವರ ಸಾಧನೆಯಿಂದ ಸ್ಪೂರ್ತಿ ಪಡೆದಾದರೂ ನಾವು ಪರಿಸರವನ್ನು ಉಳಿಸುವಲ್ಲಿ ನಮ್ಮ ಕಾರ್ಯ ನಿರ್ವಹಿಸಬೇಕು. ಗಿಡ ಮರಗಳನ್ನು ನಮ್ಮ ಮನೆ ಸುತ್ತ ಬೆಳೆಸೋಣ. ಕಸ-ಕಡ್ಡಿ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಹಾಕೋದನ್ನು ನಿಲ್ಲಿಸೋಣ. ಶಬ್ದ ಮಾಲಿನ್ಯ ಕಡಿಮೆ ಮಾಡೋಣ. ಜಲಮಾಲಿನ್ಯ ಆದಷ್ಟು ತಡೆಯೋಣ. ನದಿ, ಭಾವಿ, ಕೆರೆ, ಕೊಳ್ಳಗಳನ್ನು ಉಳಿಸಿ ಮಾಲಿನ್ಯದಿಂದ ತಡೆಗಟ್ಟೋಣ. ನಮ್ಮ ಪರಿಸರವನ್ನು ಶುದ್ಧಿಯಾಗಿ ಉಳಿಸಲು ಇನ್ನು ಏನೇನು ಸಾಧ್ಯವೋ ಅದನ್ನು ಮಾಡೋಣ. ಇದೇ ನಾವು ಈ ಅಜ್ಜಿಗೆ ಸಲ್ಲಿಸುವ ಸನ್ಮಾನ- ಗೌರವ. ಸಾಲುಮರದ ತಿಮ್ಮಕ್ಕ ನಮಗೆಲ್ಲ ಮಾದರಿಯಾಗಲಿ. ********* ಕೆ.ಶಿವು.ಲಕ್ಕಣ್ಣವರ
ಕಬ್ಬಿಗರ ಅಬ್ಬಿ – ಸಂಚಿಕೆ – ೨
ಚೊಕ್ಕಾಡಿಯ ಹಾಡುಹಕ್ಕಿ ಮಹಾದೇವ ಕಾನತ್ತಿಲ ಎರಡು ದಶಕಗಳ ಹಿಂದೆ, ಹಿಮಾಲಯದ ತಪ್ಪಲಿನ, ರಾಣೀಖೇತ್ ಎಂಬ ಜಾಗದಲ್ಲಿ, ಚಾರಣ ಮಾಡುತ್ತಿದ್ದೆ. ಬೆಟ್ಟ ಹತ್ತುತ್ತಾ, ಓರ್ವ ಬೆಟ್ಟದ ಜೀವಿ ಜತೆಯಾದ. ಆತನ ಮನೆ ಬೆಟ್ಟದ ತುದಿಯ ಹತ್ತಿರ. ಬರೇ ಕಾಲುದಾರಿ,ಸುತ್ತೀ ಬಳಸೀ, ಮರ ಹತ್ತುವ ಲತೆಯಂತೆ ಗುಡ್ಡ ಹತ್ತುತ್ತೆ. ಆಸ್ಪತ್ರೆಗೆ ಬೇಕಾದಲ್ಲಿ ಹತ್ತಾರು ಕಿಲೋಮೀಟರ್ ದೂರ. ಆತನ ಹತ್ತಿರ, ನಾನು ಕೇಳಿದೆ, ಅನಾರೋಗ್ಯವಾದಾಗ ಏನು ಮಾಡುತ್ತೀರಿ ಅಂತ. ಆತ ಅಂದ, “ಇಧರ್ ವನಸ್ಪತಿಯೋಂ ಕೀ ಹವಾ ಹೈ, ಹಮ್ ಹಮೇಷಾ ಸ್ವಸ್ತ್ ರೆಹ್ ತೇ ಹೈ” ಅಂತ. ( ಇಲ್ಲಿ ವನಸ್ಪತಿಗಳ ಗಾಳಿ ತುಂಬಿದೆ, ನಾವು ಯಾವಾಗಲೂ ಆರೋಗ್ಯದಿಂದಿರುತ್ತೇವೆ). ಕನ್ನಡ ಕಾವ್ಯ ಸಂದರ್ಭದಲ್ಲಿ, ಚೊಕ್ಕಾಡಿಯವರ ಕಾವ್ಯ, ಹೀಗೆಯೇ ವನಸ್ಪತಿಯ ಗಾಳಿಯ ಹಾಗೆ, ಕಾವ್ಯಲೋಕದೊಳಗೆ ಪ್ರೀತಿ ತುಂಬಿ, ಕವಿಗಳನ್ನು, ಓದುಗರನ್ನು, ದಷ್ಟಪುಷ್ಟವಾಗಿರಿಸಿ, ಕಾವ್ಯ ಪ್ರಜ್ಞೆಗೂ ಆರೋಗ್ಯ ತುಂಬಿದ ಸತ್ವವದು. ಗಿಡಮರಗಳು ನೆಲದ ಸಾರಹೀರಿ ಬೆಳೆಯುವಂತೆಯೇ, ಕಾವ್ಯವೂ ಕವಿ ಬೆಳೆದ ನೆಲದ ಅಷ್ಟೂ ರಸ ಹೀರಿ ಘಮಘಮಿಸುತ್ತದೆ. ಬೇಂದ್ರೆಯವರ ಕವಿತೆಯಲ್ಲಿ ಧಾರವಾಡ ಫೇಡಾದ ಸಿಹಿ, ರವೀಂದ್ರನಾಥ ಟಾಗೋರ್ ಅವರ ಕವಿತೆಯಲ್ಲಿ ಹೂಗ್ಲೀ ನದಿಯ ಮೆಕ್ಜಲು ಮಣ್ಣಿನ ತತ್ವ , ಹಾಗೇ ಚೊಕ್ಕಾಡಿಯವರ ಕವಿತೆಗಳಲ್ಲಿ ವನಸ್ಪತಿಯ ‘ಹವಾ’ ಈ ಚೊಕ್ಕಾಡಿ, ಪಶ್ಚಿಮ ಘಟ್ಟಗಳ ಮಡಿಲಿನ ಪುಟ್ಟ ಊರು. ಜಗತ್ತಿನ ಅತ್ಯಂತ ವೈವಿಧ್ಯಮಯ ಜೀವಜಾಲಗಳ ತವರು, ಪಶ್ಚಿಮ ಘಟ್ಟಗಳ ಸಾಲುಗಳು ಎಂದು ಪ್ರಕೃತಿ ಸಂಶೋಧನೆ ಹೇಳಿದೆ. ಇಲ್ಲಿ ವರ್ಷದ ನಾಲ್ಕು ತಿಂಗಳು ಸುರಿವ ವರ್ಷಧಾರೆಯಿಂದ, ವ್ಯೋಮಾನಂತಕ್ಕೆ ಬಾಯಿತೆರೆದು ಬೆಳೆದ ಅಸಂಖ್ಯ ಸಸ್ಯ ಸಂಕುಲ, ಮಣ್ಣು, ಮತ್ತು ವಾತಾವರಣದ ಜೀವ-ತೇವಾಂಶದಲ್ಲಿ ವಂಶ ಚಿಗುರಿಸುವ ಬಗೆ ಬಗೆಯ ಪ್ರಾಣಿಗಳು, ಬಯೋಡೈವರ್ಸಿಟಿಯ ಪ್ರತೀಕವಾಗಿದೆ. ಇದೆಲ್ಲವೂ ಚೊಕ್ಕಾಡಿಯ ನೆಲದ ಗುಣ ಹೇಗೆಯೋ, ಹಾಗೇ ಕಾವ್ಯದ ಘನವೂ ಹೌದು!. ಕವಿ,ಸುಬ್ರಾಯ ಚೊಕ್ಕಾಡಿಯವರ ಕಾವ್ಯದ ಪ್ರತಿಮೆಗಳು ಈ ವನಜನ್ಯ ಜೀವಜಾಲದ ಗರ್ಭಕೋಶದಲ್ಲಿ ಬಸಿರಾದವುಗಳು. ಅವರ ಪ್ರಕೃತಿ ಎಂಬ ಕವನದ ಸಾಲುಗಳು ಇದನ್ನೇ ಧ್ವನಿಸುತ್ತೆ. “ಹಸುರ ದಟ್ಟಣೆ , ಕೆಳಗೆ ವಿಸ್ಮೃತಿಯ ಪ್ರತಿರೂಪದಂತೆ ಮಲಗಿದ ನೆರಳು ಅಂತಸ್ಥಪದರದಲಿ ಬೀಜರೂಪದ ಹಾಗೆ” ಮರಗಿಡ ಪ್ರಾಣಿ ಪಕ್ಷಿಗಳನ್ನು ತನ್ನದೇ ಭಾಗವಾಗಿ ನೋಡುವ ಕವಿ, ತನ್ನದೇ ಒಂದು ಪುಟ್ಟ ಪ್ರಪಂಚದಲ್ಲಿ ಬದುಕುತ್ತಾನೆ. ಪ್ರಾಣಿ ಪಕ್ಷಿಗಳ ಲೋಕ ಅಮಾಯಕತೆಯ ನೇರ ಸರಳತೆಯ ಪ್ರತಿಮೆ. ಅವರ “ಪುಟ್ಟ ಪ್ರಪಂಚ” ಹೀಗಿದೆ ನೋಡಿ “ಮರಗಿಡ ಪ್ರಾಣಿಪಕ್ಷಿಗಳ ನನ್ನ ಪುಟ್ಟ ಪ್ರಪಂಚದ ಒಳಗೆ ಒಮ್ಮೊಮ್ಮೆ ಮನುಷ್ಯರೂ ನುಸುಳಿಕೊಳ್ಳುತ್ತಾರೆ ಅನಾಮತ್ತಾಗಿ- ಸುತ್ತ ಸೇರಿದ್ದ ಮರಗಿಡ ಬಳ್ಳಿಗಳು, ಅಳಿಲು, ಗುಬ್ಬಿ, ಬೆಳ್ಳಕ್ಕಿಗಳು ಸುತ್ತ ಮಾಯೆಯ ಬಟ್ಟೆ ನೇಯುತ್ತಿರಲು, ಅಪರಿಚಿತರಾಗಮನಕ್ಕೆ ಗಡಬಡಿಸಿ, ಚೆಲ್ಲಾಪಿಲ್ಲಿಯಾಗುತ್ತಾವೆ. ನಾಚಿಕೆಯಿಂದ ಮುದುಡಿಕೊಳ್ಳುತ್ತಾ, ಅವನತಮುಖಿಗಳಾಗಿ ಕುಗ್ಗುತ್ತ, ಕುಗ್ಗುತ್ತ ಇಲ್ಲವಾಗುತ್ತಾವೆ” ಅಂತಹ ಪ್ರಪಂಚಕ್ಕೆ ಮನುಷ್ಯ ನುಗ್ಗಿದಾಗ, ಬಟ್ಟೆ ನೇಯುತ್ತಿರುವ ಸಸ್ಯ ಪ್ರಾಣಿ ಸಂಕುಲಗಳು ಚಲ್ಲಾಪಿಲ್ಲಿಯಾಗುತ್ತವೆ. ಕುಗ್ಗುತ್ತ ಕುಗ್ಗುತ್ತ ಇಲ್ಲವಾಗುತ್ತವೆ. ಇಲ್ಲಿ ಮನುಷ್ಯ ಅನ್ಬುವ ಪ್ರತಿಮೆ, ಆಕ್ರಮಣಕಾರಿ. ತನ್ನಷ್ಟಕ್ಕೇ, ಶಾಂತವಾಗಿ, ಮುಕ್ತವಾಗಿ ಸ್ವತಂತ್ರವಾಗಿ ಬದುಕುವ ಒಂದು ಮಲ್ಟಿಪೋಲಾರ್ ವ್ಯವಸ್ಥೆಯನ್ನು ಒಂದು ಆಕ್ರಮಣಕಾರಿ, ಯುನಿಪೋಲಾರ್ ತತ್ವ ಹೇಗೆ ನಾಶಮಾಡುತ್ತೆ,ಎಂಬ ಸಮಾಜ ತತ್ವವನ್ನು ಕವಿ ಚೊಕ್ಕಾಡಿಯ ಪುಟ್ಟ ಪ್ರಪಂಚ ತೆರೆದಿಡುತ್ತೆ. ಒಂದು ನದಿ ಹರಿಯುತ್ತಾ ಅದರ ಪ್ರವಾಹದಲ್ಲಿ ಒಂದು ಎಲೆ ತೇಲಿ, ವನಕವಿಗೆ ಎಲೆಯೂ ಕವಿತೆಯಾಗುತ್ತೆ, ಹರಿಯುವ ನದಿ, ನದಿಯ ಇಕ್ಕೆಲದ ದಡಗಳು, ನದಿಯ ಪ್ರವಾಹ ಮತ್ತು ತೇಲುವ ಎಲೆ, ಇವೆಲ್ಲಾ ಕಾವ್ಯದ ಬೀಜಾಕ್ಷರಗಳು. “ಮೇಲೆ ಆಕಾಶಕ್ಕೆ ಹಾರದೆ ಕೆಳಗೆ ತಳಕ್ಕಿಳಿಯದೆ ನದಿ ನಡುವೆ ತಿರುಗಣಿ ಮಡುವಿಗೆ ಸಿಲುಕಿಯೂ ಒಳಸೇರದೆ ಅಂಚಿನಲ್ಲೇ ಸುತ್ತು ಹಾಕುತ್ತಾ ದಂಡೆಯ ಗುಂಟ ಚಲಿಸುತ್ತಿದೆ ದಡ ಸೇರದೆ” ಬದುಕು ಕಾಲದ ಪ್ರವಾಹದಲ್ಲಿ ತೇಲುತ್ತಿದೆಯೇ?, ಭಾವದ ಅಲೆಗಳಲ್ಲಿ ಕವಿ ತೇಲುತ್ತಿದ್ದಾನೆಯೇ?. ಮುಳುಗದೆ, ಆಕಾಶಕ್ಕೆ ಹಾರದೆ ದಂಡೆಯಗುಂಟ ತೇಲಿ ಸಾಗುವ ಎಲೆ, ವಾಸ್ತವ ತತ್ವವೇ, ನಿರ್ಲಿಪ್ತತೆಯೇ? ಚೊಕ್ಕಾಡಿಯ ಹಳ್ಳಿಯ ಕವಿಗೆ ಕಾಡುಮರದೆಲೆಯೂ, ಮಹಾಕಾವ್ಯ ಬರೆಯಲು ಪತ್ರವಾಯಿತು ನೋಡಿ! ಅವರ ಇನ್ನೊಂದು ಕವಿತೆ ಹಕ್ಕಿ ಮತ್ತು ಮರದ ಬಗ್ಗೆ ( ದ್ವಾ ಸುಪರ್ಣಾ). ಹಕ್ಕಿ, ಮರದ ಆಸರೆಯಲ್ಲಿ ಗೂಡುಕಟ್ಟಿ ಒಂದರೊಳಗೊಂದಾಗಿ ಜೀವಿಸುವ ವಸ್ತು ಈ ಕವಿತೆಯದ್ದು. ಜಗತ್ತಿನಲ್ಲಿ ಯಾರೂ, ಯಾವ ತತ್ವವೂ ಇಂಡಿಪೆಂಡೆಂಟ್ ಅಲ್ಲ, ಇಂಟರ್ಡಿಪೆಂಡೆಂಟ್ ಎಂಬ ಆಧುನಿಕ ಮ್ಯಾನೇಜ್ಮೆಂಟ್ ತತ್ವವೂ ಇದೇ. “ಸ್ಥಗಿತ ಕಾಲದ ಆಚೆ,ಹುತ್ತ ಕಟ್ಟಿದ ಹಾಗೆ ಮರಕ್ಕೆ ಹಕ್ಕಿಯ ರೆಕ್ಕೆ ಎಲೆ ಮೂಡಿ ಹಕ್ಕಿ ದೇಹಕ್ಕೆ ಹಕ್ಕಿ ಮರವಾಗಿ,ಮರವೇ ಹಕ್ಕಿಯಾಗಿ” ಮರ ಸ್ಥಿರ ಚೇತನ, ಹಕ್ಕಿ ಚರ ಚೇತನ. ಮರ ಸ್ಥಿರ ವ್ಯವಸ್ಥೆ, ಹಕ್ಕಿ ಹೊಸತಿಗಾಗಿ ಚಾಚುವ ಪ್ರಯೋಗ ಮರ ಸ್ಥಿರ ಮನಸ್ಸು, ಹಕ್ಕಿ ಗಗನಕ್ಕೆ ಲಗ್ಗೆ ಹಾಕುವ ಕನಸು. ಆದರೆ ಇವೆರಡೂ ಒಂದಕ್ಕೊಂದು ಪೂರಕವಾಗಿ ಒಂದರೊಳಗೊಂದು ಅನ್ಯೋನ್ಯವಾಗಿ ಸಹಬಾಳ್ವೆ ನಡೆಸುವ ಸಮತತ್ವ ಪ್ರಕೃತಿಯದ್ದೂ ಚೊಕ್ಕಾಡಿಯ ಕಾವ್ಯದ್ದೂ. ನೆಲ ಹಸನು ಮಾಡಿ, ಮಗು ಬೀಜ ಬಿತ್ತಿ ಮೊಳಕೆ ಬರುವುದನ್ನು,ಬೆರಗುಗಣ್ಣಿಂದ ಕಾದು ನೋಡುತ್ತೆ, ಒಂದೊಂದಾಗಿ ಎಲೆಗಳನ್ನು, ಟಿಸಿಲೊಡೆಯುವ ಗೆಲ್ಲುಗಳನ್ನು ನೋಡಿ ಇದೇಕೆ ಹೀಗೆ ಎಂದು ಅನ್ವೇಷಣೆ ಮಾಡುತ್ತೆ. ಅಂತಹ ಒಂದು ಮಗುವಿನ ಪಕ್ಷಪಾತರಹಿತ ಮುಗ್ಧ ಅನ್ವೇಷಣೆ ಕೂಡಾ ಚೊಕ್ಕಾಡಿಯವರ ಕಾವ್ಯದ ಮೂಲಸೆಲೆ. ಅವರ ‘ಪರಿಚಯ’ ಎಂಬ ಕವಿತೆ, ಇದಕ್ಕೊಂದು ನೇರ ಉದಾಹರಣೆ. ಈ ಕವಿತೆಯಲ್ಲಿ, ಕವಿ, ತನ್ನ ಪಕ್ಕದ ಮನೆಗೆ ಬಾಡಿಗೆಗೆ ಬಂದ ವ್ಯಕ್ತಿಯ ಮನೆಯ ಕದ ತಟ್ಟಿ, ಆತ ಯಾರು, ಎಂದು ತಿಳಿಯುವ ಮುಗ್ಧ ಪ್ರಯತ್ನ ಮಾಡುತ್ತಾನೆ. ಕವಿ ಮತ್ತು ಆ ವ್ಯಕ್ತಿಯ ಸಂಭಾಷಣೆ ಕವಿತೆಯಲ್ಲಿ ಹೀಗೆ ಕೊನೆಯಾಗುತ್ತದೆ. “ಪೆಚ್ಚುಪೆಚ್ಚಾಗಿ ಕೊನೆಯ ಯತ್ನವಾಗಿ ಕೇಳಿದೆ ಸ್ವಾಮೀ, ಇಷ್ಟಕ್ಕೂ ತಾವು ಯಾರು? ನಾನೇ? – ಅಂದ – ನಾನೇ ನೀನೂ ಅಂದು ಫಳಕ್ಕನೆ ಬಾಗಿಲು ಮುಚ್ಚಿದ ಅಯ್ಯಾ , ನಾನು ಯಾರು?” ನೀವು ಯಾರು? ಎಂದು ಶುರುವಾಗುವ ಕವಿತೆ ಕೊನೆಯಾಗುವುದು, ನಾನು ಯಾರು? ಎಂಬ ಪ್ರಶ್ನೆಯೊಂದಿಗೆ. ಈ ಕವಿತೆಯಲ್ಲಿ ಬರುವ ನಾನು, ನೀನು, ಬಾಡಿಗೆ ಮನೆ, ತಟ್ಟುವ ಕದ, ಮುಚ್ಚುವ ಬಾಗಿಲು, ಸಂವಾದ ಎಲ್ಲವೂ ಆಳಚಿಂತನೆ ಬೇಡುವ ಪ್ರತಿಮೆಗಳಲ್ಲವೇ. ಚೊಕ್ಕಾಡಿಯವರಿಗೆ ಎಂಭತ್ತು ವರ್ಷ ತುಂಬಿ ಕೆಲವೇ ದಿನಗಳು ಕಳೆದವು. ಅಡಿ ಚೊಕ್ಕವಾಗಿದ್ದರೆ, ಶಿರ ಶುಭ್ರ, ಮನಸ್ಸು ನಿರ್ಮಲ ಎಂದು ಬದುಕಿದ, ಹಾಡುಹಕ್ಕಿ ಅವರು. ಹಳ್ಳಿಯಲ್ಲಿ ಗೂಡು ಕಟ್ಟಿ, ಪಟ್ಟಣಕ್ಕೆ, ಸಮಗ್ರ ಹೃದಯ ಪಟ್ಟಣಕ್ಕೆ, ಪ್ರೀತಿರೆಕ್ಕೆ ಬೀಸಿ ಹಾರಿ, ರಾತ್ರೆಯೊಳಗೆ ಪುನಃ ಗೂಡು ಸೇರುವ ಮತ್ತು ತಮ್ಮ “ವನಸ್ಪತೀ ಹವಾ” ದಿಂದ ಸ್ವಸ್ಥ ಸಾರಸ್ವತ ಲೋಕದ ವಾತಾವರಣ ನಿರ್ಮಾಣ ಮಾಡಿದ ಅವರಿಗೆ ಎಂಭತ್ತರ ಶುಭಾಶಯಗಳು. **********
ಕಬ್ಬಿಗರ ಅಬ್ಬಿ – ಸಂಚಿಕೆ – ೨ Read Post »








