ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ನಮ್ಮ ಮಕ್ಕಳು ಮಕ್ಕಳಲ್ಲ

ಸರಿತಾ ಮಧು ಮಕ್ಕಳಿಗಾಗಿ ಹಂಬಲ ಎಲ್ಲರದು. ಅಂದಿನಿಂದ ಇಂದಿನವರೆಗೂ ಮಕ್ಕಳು ಮನೆಯ ನಂದಾದೀಪ. ಮಕ್ಕಳಿರಲವ್ವ ಮನೆತುಂಬ ಎನ್ನುವ ಕಾಲ ಸರಿದು ಆರತಿಗೊಬ್ಬಳು ಕೀರ್ತಿ ಗೊಬ್ಬ , ತದನಂತರ ನಾವಿಬ್ಬರು ನಮಗೊಂದು ಮಗು ಅನ್ನುವ ಕಾಲಘಟ್ಟದಲ್ಲಿದ್ದೇವೆ. ಇದೆಲ್ಲವೂ ಸರಿಯಷ್ಟೇ ಆಧುನಿಕತೆಯ ಬೆನ್ನನೇರಿದ ಈಗಿನವರು ಮಗುವಿನ್ನೂ ಗರ್ಭದಲ್ಲಿರುವಾಗಲೇ ವಿದ್ಯಾಭ್ಯಾಸದ ವಿಚಾರಕ್ಕೆ ತಲೆಬಿಸಿ ಮಾಡಿಕೊಳ್ಳುತ್ತಾರೆ.ಮೊದಲೆಲ್ಲಾ ಹೀಗಿರುತ್ತಿತ್ತೇ? ಅವಿಭಕ್ತ ಕುಟುಂಬಗಳಲ್ಲಿ ಅನೌಪಚಾರಿಕವಾಗಿ ಪ್ರಾಥಮಿಕ ಶಿಕ್ಷಣ ಆರಂಭವಾಗುತ್ತಿತ್ತು.ಐದುವರ್ಷಗಳು ಪೂರ್ಣ ತುಂಬುವವರೆಗೂ ಬಾಲ್ಯಾವಸ್ಥೆಯ ಎಲ್ಲಾ ಸುಖಗಳನ್ನು ಸಂಪೂರ್ಣ ಬಾಚಿಕೊಳ್ಳುತ್ತಿದ್ದೆವು. ಮನೆಯ ಅಜ್ಜ ಅಜ್ಜಿ, ದೊಡ್ಡಪ್ಪ ದೊಡ್ಡಮ್ಮ, ಮಾವ ಅತ್ತೆ, ಚಿಕ್ಕಪ್ಪ ಚಿಕ್ಕಮ್ಮ ,ಅಣ್ಣ ಅಕ್ಕ , ಅಪ್ಪ ಅಮ್ಮ ರೊಂದಿಗೆ ನಲಿವಿನ ಸಮಯ ಕಳೆಯಲು ಅವಕಾಶವಿತ್ತು. ಹಗಲಿನಲ್ಲಿ ಹಾಡುವ ಹಕ್ಕಿಯೂ,ಓಡುವ ಎಳೆಗರುವೂ, ಮೂಡಣದ ಸೂರ್ಯ, ಹಸಿರೆಲೆಯ ಗಿಡಮರಗಳು, ಬಣ್ಣ ಬಣ್ಣದ ಹೂಗಳು, ಮಕರಂದ ಹೀರುವ ದುಂಬಿಗಳು ಒಂದಲ್ಲ ಎರಡಲ್ಲ . ಎಂಥ ಚಂದವಿತ್ತು ನಮ್ಮ ಬಾಲ್ಯ.ಸಂಜೆಯಾದೊಡನೆ ತಿಂಗಳ ಬೆಳಕಿನ ಅಂಗಳದಲ್ಲಿ ಅಜ್ಜನೇ ಮೇಷ್ಟ್ರು. ಅವನ ಬಾಯಿ ಲೆಕ್ಕಾಚಾರದ ಮುಂದೆ ಈಗಿನ ಕ್ಯಾಲ್ಕುಲೇಟರ್ ಸಹಾ ಹಿಂದೆಬೀಳುತ್ತಿತ್ತು.ಎಷ್ಟು ಸರಾಗವಾಗಿ ಮಗ್ಗಿಗಳನ್ನು ನನ್ನಜ್ಜ ಹೇಳುತ್ತಿದ್ದ. ಅಜ್ಜಿಯೇ ಕಥೆಯ ನಿರೂಪಕಿಯಾಗಿ ಲಾಲಿ ಹಾಡುವವರೆಗೂ ರಾತ್ರಿಯ ಸಮಯ ಕಳೆದದ್ದೇ ತಿಳಿಯುತ್ತಿರಲಿಲ್ಲ.    ಟಿವಿ, ಮೊಬೈಲ್ ಗಳ  ಹಾವಳಿಯಿಲ್ಲದ ನಿರಾತಂಕ ಜೀವನ. ಐದು ವರ್ಷಗಳ ನಂತರವೇ ಊರಿನ ಕನ್ನಡ ಶಾಲೆಗೆ ಹೋಗುವುದು. ಹೆಚ್ಚಿನ ಹೊರೆಯಿಲ್ಲದ ಸರಳ ಕಲಿಕೆ ಆದರೂ ಶಾಶ್ವತ ಕಲಿಕೆಯಾಗಿತ್ತು.   ಬದಲಾದ ಕಾಲಕ್ಕೆ ಎಲ್ಲವೂ ಮರೆಯಾಯಿತು.ಈಗಂತೂ ಹುಟ್ಟುವ ಮೊದಲೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಹೆಸರು ನೊಂದಾಯಿಸಿ ತಮ್ಮ ಮಗುವಿಗೆ ಸೀಟೊಂದನ್ನು ಕಾಯ್ದಿರಿಸಲಾಗುತ್ತದೆ. ರಾತ್ರಿಯಿಡೀ ಸರತಿಸಾಲಿನಲ್ಲಿ ನಿಂತು ತಾವು ಕಷ್ಟಪಟ್ಟ ಅನೇಕ ವರ್ಷಗಳ ದುಡಿಮೆಯನ್ನು ಕೇವಲ ಒಂದು ವರ್ಷದ ಶಾಲಾ ಶುಲ್ಕಕ್ಕಾಗಿ ಖರ್ಚುಮಾಡುತ್ತೇವೆ. ಎರಡೂವರೆ ಮೂರು ವರ್ಷದ ಮಕ್ಕಳ ಬೆನ್ನಿಗೆ ಬಣ್ಣದ ಬ್ಯಾಗನ್ನು ಏರಿಸಿ, ಕೈಗೊಂದು ಊಟದ ಬ್ಯಾಗನ್ನು ಇಳಿಬಿಟ್ಟು, ಹಳದಿ ಬಣ್ಣದ ಬಸ್ಸನ್ನು ಅವಸರದಿಂದಲೇ ಹತ್ತಿಸಿ ಟಾಟಾ, ಬೈಬೈ ಹೇಳಿ ನಿಟ್ಟುಸಿರು ಬಿಡುತ್ತೇವೆ. ಅಲ್ಲಿಗೆ ಒಂದು ದಿನದ ಮಗುವಿನ ಪಯಣ ಯಶಸ್ವಿಗೊಳಿಸಿದ ನಿರಾಳತೆ. ಆದರೆ ಒಲ್ಲದ ಮನಸ್ಸಿನಿಂದ ಶಾಲೆಗೆ ಹೊರಟ ಮಗುವಿನ ಮನಸ್ಸು ಅರಿಯಲು ನಾವು ವಿಫಲವಾದೆವಲ್ಲ! ಬಾಲ್ಯದ ಚಿಗುರುವ ಕನಸುಗಳ ಅಲ್ಲಿಯೇ ಹೊಸಕಿಹಾಕಿಬಿಟ್ಟೆವಲ್ಲ.ನಮ್ಮ ನಿರೀಕ್ಷೆಗಳಿಗಾಗಿ ಅವರ ಕನಸುಗಳನ್ನು ಸೀಲ್ ಮಾಡಿಬಿಟ್ಟೆವಲ್ಲ. ಖಲೀಲ್ ಗಿಬ್ರಾನ್ ಒಬ್ಬ ಅಮೆರಿಕದ ಕವಿ ತನ್ನ ಕವಿತೆಯೊಂದರಲ್ಲಿ ಹೇಳುವಂತೆ:    Your children are not children   They are the sons and daughters of life’s longing for itself   They come through you but not from you   And though they are with you ,   Yet they belong not to you “     ಹೀಗೆ ಸಾಗುವ ಪದ್ಯವೊಂದರಲ್ಲಿ “ನಿಮ್ಮ ಮಕ್ಕಳು , ಮಕ್ಕಳಲ್ಲ ಜೀವದ ಸ್ವಪ್ರೇಮದ ಪುತ್ರ ಪುತ್ರಿಯರು ಅವರು ನಿಮ್ಮ ಮೂಲಕ ಬಂದಿದ್ದಾರೆಯೇ ನಿಮ್ಮಿಂದಲ್ಲ ನಿಮ್ಮ ಜೊತೆ ಇರುವುದಾದರೂ ನಿಮಗೆ ಸೇರಿದವರಲ್ಲ”   ಹೌದು ಮಕ್ಕಳ ಮೇಲೆ ನಮ್ಮ ನಿರೀಕ್ಷೆ ಎಂದೂ ಅತಿಯಾಗಬಾರದು.ನಮ್ಮ ಕನಸುಗಳ ಈಡೇರಿಕೆಗೆ ಅವರನ್ನು ಬಳಸಿಕೊಳ್ಳಬಾರದು.ನಾವೆಂದೂ ಅವರನ್ನು ನಮ್ಮಂತೆ ಮಾಡಲು ಪ್ರಯತ್ನಿಸಬಾರದು.ಕಾರಣ ಅವರ ಕನಸಿನೊಳಗೆ ನಮ್ಮ ಪ್ರವೇಶವಿರಕೂಡದು.ನಮ್ಮ ಪ್ರೀತಿಯನ್ನು ಮಕ್ಕಳಿಗೆ ನೀಡಬೇಕೇ ಹೊರತು ಆಲೋಚನೆಗಳನ್ನಲ್ಲ.   ಡಾ||ಸಿ.ಆರ್.ಚಂದ್ರಶೇಖರ್ ರವರು ತಮ್ಮ ಮನಸ್ಸೇ ನೀ ಪ್ರಶಾಂತವಾಗಿರು ಪುಸ್ತಕದಲ್ಲಿ(ಪು.74) ಹೇಳುತ್ತಾರೆ ನಿರೀಕ್ಷೆಗಳನ್ನು ತಗ್ಗಿಸಿ, ಸಾಧ್ಯವಾದರೆ ನಿವಾರಿಸಿಕೊಳ್ಳಿ. ಅವರ ಮಾತಿನಂತೆ ಖಂಡಿತವಾಗಿ ನಿರೀಕ್ಷೆಗಳಿಂದ ನಿರಾಸೆಯೂ, ನಿರ್ಲಿಪ್ತತೆಯಿಂದ ನೆಮ್ಮದಿಯೂ ದೊರೆಯುತ್ತದೆ. ಮಕ್ಕಳ ಪಾಲನೆ, ಪೋಷಣೆ, ವಿದ್ಯಾಭ್ಯಾಸ,ಮದುವೆ, ಉದ್ಯೋಗ ಎಲ್ಲವೂ ನಮ್ಮ ಕರ್ತವ್ಯ. ಆದರೆ ಇದಕ್ಕೆ ಪ್ರತಿಫಲವಾಗಿ ಪ್ರೀತಿ, ಆಸರೆ,ಹಣ,ವೃದ್ಧಾಪ್ಯದಲ್ಲಿ ನೆರವನ್ನು ನಿರೀಕ್ಷಿಸಬೇಡಿ ಎನ್ನುತ್ತಾರೆ ಡಾಕ್ಟರ್. ಹಾಗಿದ್ದರೆ ಮಕ್ಕಳನ್ನು ಹೆತ್ತು ಹೊತ್ತು ಸಾಕಿದ್ದಕ್ಕೆ ನಿರೀಕ್ಷೆ ಇರಬಾರದೇ?        ಇರಲಿ, ಆದರದು ಒತ್ತಾಯಕ್ಕಲ್ಲ.ನಿಮ್ಮ ಆಸೆ ಆಕಾಂಕ್ಷೆಗಳನ್ನು ,ಗುರಿಗಳನ್ನು ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅವರ ಹುಟ್ಟು ನಿಮಗೆ ಅದೃಷ್ಟ ತಂದಿತೆಂದು , ಸಂಪತ್ತಿಗೆ ಅಧಿಪತಿಯಾದರೆಂದು ಯಾವುದೇ ಮಗುವನ್ನು ಮೆರೆಸುವುದಾಗಲೀ ಅಥವಾ ಉಂಟಾದ ಸಾಲ ನಷ್ಟಗಳಿಗೆ ಹುಟ್ಟಿದ ಮಗುವಿನ ಜಾತಕವೇ ಕಾರಣವೆಂದು ಹೀಗಳೆಯುವುದಾಗಲೀ ಸಲ್ಲದು. ಮಕ್ಕಳಿಗೆ ಅವರ ಆಸೆ ಆಕಾಂಕ್ಷೆಗಳಿಗೆ ಅನುಗುಣವಾದ ಶಿಕ್ಷಣ ನೀಡಿ, ಆದರೆ ಸಮಾಜದ ಇತರೆ ಮಕ್ಕಳೊಂದಿಗೆ ಹೋಲಿಕೆ ಖಂಡಿತಾ ಬೇಡ. ಜೀವನೋಪಾಯಕ್ಕಾಗಿ ಅವಶ್ಯಕವಾಗಿ ನ್ಯಾಯಯುತವಾದ ದುಡಿಮೆಯೊಂದನ್ನು ಮಾಡುವಂತಿರಲಿ. ದುಡಿಯದೇ ಅಥವಾ ಕೆಲಸ ಮಾಡದೇ ಸುಲಭ ಮಾರ್ಗದಲ್ಲಿ ಹಣ ಗಳಿಸುವುದನ್ನು ತಪ್ಪು ಎಂಬ ಅರಿವು ನೀಡಿದರೆ ಸಾಕು. ಮಕ್ಕಳೆಂದಿಗೂ ನಿಮ್ಮ ಹಣವನ್ನು ಹಿಂತಿರುಗಿಸುವ ಯಂತ್ರಗಳಲ್ಲ. ಬಂಡವಾಳ ಹೂಡಿ ಲಾಭವನ್ನು ನಿರೀಕ್ಷಿಸುವ ವ್ಯವಹಾರವಲ್ಲ.ಬದಲಾಗಿ ಪ್ರೀತಿ, ಸಂಸ್ಕಾರ , ಜವಾಬ್ದಾರಿ , ಶಿಕ್ಷಣ , ಮಾನವೀಯತೆ ನೀಡಿ ನಿರ್ಲಿಪ್ತವಾಗಿ ನೆಮ್ಮದಿಯಿಂದ ನಿಂತು ಬಿಡಿ ಕಾರಣ ಮಕ್ಕಳು ನಿಮ್ಮ ಮಕ್ಕಳಲ್ಲ, ನಿಮ್ಮ ಮೂಲಕ ಬಂದ ದೈವ ಸೃಷ್ಟಿಗಳು. ****************************************

ನಮ್ಮ ಮಕ್ಕಳು ಮಕ್ಕಳಲ್ಲ Read Post »

ಇತರೆ, ಜೀವನ

ಕ್ಷಮಯಾ ಧರಿತ್ರೀ …

ಕ್ಷಮಯಾ ಧರಿತ್ರೀ … ಲಕ್ಷ್ಮಿ ನಾರಾಯಣ ಭಟ್ ಜೀವನ ಪ್ರವಾಹ ನಿಂತ ನೀರಲ್ಲ; ಅದು ಚಿರಂತನ. ನಿರಂತರವಾಗಿ ಹರಿಯುತ್ತಲೇ ಇರುವುದು ಅದರ ಸ್ವ-ಭಾವ. ಯಾವುದು ವ್ಯಕ್ತಿ/ವಸ್ತುವೊಂದಕ್ಕೆ ಸಹಜ ಭಾವವಾಗಿರುತ್ತದೋ ಅದೇ ಅದರ ಸ್ವಭಾವ. ಆದರೆ ಸ್ವಭಾವವನ್ನು ಪರಿಶ್ರಮ, ಚಿಂತನೆಗಳಿಂದ ಪರಿಷ್ಕರಿಸಿಕೊಳ್ಳಬಹುದು. ಇದು ಮನುಷ್ಯನಾದವನಿಗೆ ಮಾತ್ರ ಪ್ರಕೃತಿಯೇ ಕರುಣಿಸಿದ ವಿಶೇಷ ಕರ್ತೃತ್ವ. ಇದರಿಂದ ಆತ ಪ್ರಕೃತಿಯನ್ನೂ ಮಣಿಸಬಲ್ಲ! ಉದಾಹರಣೆಗೆ, ಎತ್ತರದಿಂದ ತಗ್ಗಿಗೆ ಹರಿಯುವುದು ನೀರಿನ ಸ್ವಭಾವವಲ್ಲವೇ? ಆ ಸ್ವಭಾವವನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಪರಿರ್ತಿಸಿದಾಗ, ಜೋಗದಲ್ಲಿ ಜಲಪಾತವಾಗಿ ಧುಮುಕುವ ಶರಾವತಿ ನದಿ ನಮಗೆ ಅತ್ಯಾವಶ್ಯಕವಾದ ವಿದ್ಯುಚ್ಛಕ್ತಿಯನ್ನು ಕೊಡುವ ಅಪಾರ ಸಂಪನ್ಮೂಲವಾಗಿ ಬದಲಾಗುತ್ತಾಳೆ. ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಪರಿಷ್ಕರಣವಿಲ್ಲದೇ ಹೋಗುತ್ತಿದ್ದರೆ ಶರಾವತಿ ಹಾಗೆ ಹರಿದು, ಹೀಗೆ ಧುಮ್ಮಿಕ್ಕಿ ಸಾಗರವನ್ನು ಸೇರಿ ನಿರ್ಲಿಪ್ತ ಭಾವದಿಂದಿರುತ್ತಿದ್ದಳಲ್ಲವೇ? (ಮಹಾತ್ಮಾ ಗಾಂಧೀಜಿ ಶಿವಮೊಗ್ಗಕ್ಕೆ ಬಂದೂ ಜೋಗ ಜಲಪಾತ ನೋಡಲು ಹೋಗಿರಲಿಲ್ಲ! ಕಲೆ ಮತ್ತು ಪ್ರಕೃತಿ ಸೌಂರ್ಯದ ಬಗ್ಗೆ ಅವರ ನಿಲುವು ಬೇರೆಯೇ ಇತ್ತು; ಅದನ್ನು ವಿವರವಾಗಿ ಪ್ರಸ್ತಾಪಿಸಲು ಇದು ಸೂಕ್ತ ವೇದಿಕೆಯಲ್ಲ, ಅಷ್ಟೇ.) ಮನುಷ್ಯನ ಸ್ವಭಾವವೂ ಇದಕ್ಕೆ ವ್ಯತಿರಿಕ್ತವಾಗಿಲ್ಲ! ‘ಮಂಗನಿಂದ ಮಾನವ’ ಎಂಬ ಮಾತೊಂದಿದೆಯಲ್ಲವೇ? ಇದು ಸ್ಥೂಲವಾಗಿ ನಮ್ಮ ಬದುಕಿನ ರೀತಿಯನ್ನೇ ನರ್ದೇಶಿಸುತ್ತದೆ. ಬಾಲ್ಯದಿಂದ ತೊಡಗಿ ಹರೆಯದ ವರೆಗೂ – ಕೆಲವೊಮ್ಮೆ ಕೊನೆಗಾಲದ ವರೆಗೂ – ಚಿತ್ತ ಚಾಂಚಲ್ಯ, ಜಿಹ್ವಾ ಚಾಪಲ್ಯ, ಇಂದ್ರಿಯ ದೌರ್ಬಲ್ಯಗಳನ್ನು ಹದ್ದುಬಸ್ತಿನಲ್ಲಿಡದೇ ಹೋದರೆ ನಾವು ‘ಮರ್ಕಟ’ ಹಂತದಿಂದ ‘ಮಾನ’ವುಳ್ಳ – ಅಂದರೆ ಹದವರಿತು ಬಾಳಬಲ್ಲ ಮನುಷ್ಯತ್ವವನ್ನು ಪಡೆಯುವುದು ಅಸಾಧ್ಯ ಎಂದು ನನ್ನ ನಂಬಿಕೆ. ಇದು ಮಾನವೀಯತೆಯೆಡೆಗೆ ನಮ್ಮ ಮೊದಲ ದೃಢ ಹೆಜ್ಜೆ. ಮಾನವೀಯತೆಯ ಲಕ್ಷಣಗಳೆಂದರೆ ಪಕ್ವತೆ ಮತ್ತು ಆರ್ದ್ರತೆ. ಇದನ್ನೇ “ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು” ಎಂದು ಸರ್ವಜ್ಞ ಹೇಳಿದ್ದು. ಆದರೆ ಇದು ಬಡಪೆಟ್ಟಿಗೆ ಸಾಧಿತವಾಗುವುದಿಲ್ಲ. ಜೀವನದಲ್ಲಿ ಅನೇಕ ಅನುಭವಗಳ ಮೂಲಕ, ಪ್ರಾಯ ಸಂದಂತೆ ನಿಧಾನವಾಗಿ ಬರಬೇಕಾದದ್ದೇ ಹೊರತು ರಾತ್ರಿ ಬೆಳಗಾಗುವುದರೊಳಗೆ “ಓ ನಾನು ಈಗ ಪರಿಪಕ್ವತೆಯನ್ನು ಪಡೆದೆ” ಎಂದಂತಲ್ಲ. ಅದು ಅಕಾಲಿಕವಾಗಿ ಬರಲೂ ಬಾರದು. ಅದು ಲೋಕ ವ್ಯವಹಾರಕ್ಕೆ ವಿರುದ್ಧವಾದದ್ದು ಮತ್ತು ಜನಸಾಮಾನ್ಯರಾದ ನಮ್ಮ ನಿಮ್ಮಂತಹವರಿಗಲ್ಲ. ವಿರಳಾತಿವಿರಳವಾಗಿ ಮಹಾತ್ಮರಿಗೆ ಮಾತ್ರ ದಕ್ಕುವಂತದ್ದು. ಉದಾಹರಣೆಗೆ ಬುದ್ಧ: “ಜಗವೆಲ್ಲ ಮಲಗಿರುವಾಗ ಅವನೊಬ್ಬ ಎದ್ದ” ಅದಕೆಂದೇ ಅವನು “ಬುದ್ಧ”. ಎಲ್ಲರೂ ಹಾಗೆ ಮಾಡಕೂಡದು. ಹಾಗಾಗಿ ನಮ್ಮ ಭಾರತೀಯ ಪರಂಪರೆಯಲ್ಲಿ ಸನ್ಯಾಸಿಯಾಗಬೇಕಾದರೆ ಮದುವೆಯ ಮೊದಲು ತಾಯಿಯ ಒಪ್ಪಿಗೆ, ಮದುವೆಯ ಬಳಿಕವಾದರೆ ಹೆಂಡತಿಯ ಒಪ್ಪಿಗೆ ಕಡ್ಡಾಯ. ಒಬ್ಬನೇ ಮಗ ಸನ್ಯಾಸಿಯಾಗುವುದು ಶಂಕರರ ತಾಯಿಗೆ ಇಷ್ಟವಿರಲಿಲ್ಲ; ಆ ತಾಯಿಯ ಒಪ್ಪಿಗೆಯನ್ನು ಪಡೆಯಲು ಒಂದು ಮೊಸಳೆಯ ಕಥೆ ಬರುತ್ತದೆ. ಇದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಮೊಸಳೆ ಶಂಕರರ ಕಾಲನ್ನು ಹಿಡಿದಿದೆ ಎಂಬಾಗ ಶಂಕರರು ತಾಯಿ ಆರ್ಯಾಂಭ ಅವರಲ್ಲಿ “ತಾಯೇ, ನಾನು ಸನ್ಯಾಸಿಯಾಗಲು ನೀನು ಒಪ್ಪಿಗೆ ಕೊಟ್ಟರೆ ಈ ಮೊಸಳೆ ನನ್ನನು ಬಿಟ್ಟು ಬಿಡುವುದಂತೆ” ಎಂದಾಗ ತಾಯಿ ಕರುಳು ಚುರುಕ್ ಅಂದಿರಬೇಕು. ಮಗ ಬದುಕಿದರೆ ಸಾಕು ಎಂದ ತಾಯಿ ಒಪ್ಪಿಗೆ ಕೊಟ್ಟರಂತೆ. ಈ ಕಥೆಯ ಸತ್ಯಾಸತ್ಯತೆ ಇಲ್ಲಿ ಪ್ರಸ್ತುತವಲ್ಲ. ‘ಸನ್ಯಾಸತ್ವಕ್ಕೆ ತಾಯಿಯ ಒಪ್ಪಿಗೆ’ ಎಂಬ ತಾತ್ವಿಕತೆ ಮುಖ್ಯ, ಅಷ್ಟೇ. ಈ ಪದ್ಧತಿಯನ್ನು ಮಾಡಿದ ಉದ್ದೇಶವೆಂದರೆ ಯಾರೂ ಉಡಾಳರಾಗಿ ಸಂಸಾರದ ಜವಾಬ್ದಾರಿಯಿಂದ ಸುಖಾ ಸುಮ್ಮನೆ ಓಡಿ ಹೋಗಬಾರದು ಎನ್ನುವುದಷ್ಟೇ ಎಂದು ನನ್ನ ಅಭಿಪ್ರಾಯ. ಇರಲಿ. ಅದಕ್ಕೆ ಹೇಳಿದ್ದು ಅಕಾಲಿಕವಾಗಿ ವೈರಾಗ್ಯ ಬರಬಾರದು. ವಾತ್ಸಾಯನನನ್ನು ಓದುವ ಪ್ರಾಯದಲ್ಲಿ ವೇದಾಂತ, ಭಗವದ್ಗೀತೆ ಸಲ್ಲ. ಅಂದರೆ ಅದನ್ನು ಓದಲೇ, ಕಲಿಯಲೇ ಬಾರದು ಎಂಬ ನಿರ್ಬಂಧವಿಲ್ಲ; ಆದರೆ ಅದರಲ್ಲೇ ಮುಳುಗಿ ಹೋಗಬಾರದು ಎನ್ನುವ ಭಾವ. ಹಾಗಾದರೆ ಪಕ್ವತೆ, ಆರ್ದ್ರತೆಯನ್ನು ಸಾಧಿಸುವ ಬಗೆ ಹೇಗೆ? ಮನುಷ್ಯನ ಜೀವನದಲ್ಲಿ ಬಹುಶಃ ಕ್ಷಮಾಗುಣಕ್ಕಿಂತ ದೊಡ್ಡ ಮಾನವೀಯತೆ ಇಲ್ಲವೇನೋ! ಹಾಗಾಗಿ ವ್ಯಕ್ತಿತ್ವದ ಪಕ್ವತೆ,ಆರ್ದ್ರತೆಗಳ ಒಂದು ವಿಶೇಷ ಲಕ್ಷಣ ಅಂದರೆ ಕ್ಷಮಾಗುಣ ಎಂದು ನಾವು ತಿಳಿಯಬಹುದು. ತನ್ನ “ಶ್ರೀ ರಾಮಾಯಣ ದರ್ಶನಂ” ನಲ್ಲಿ ಕವಿ ಕುವೆಂಪು ಅವರು ಈ ಮಾತು ಹೇಳುತ್ತಾರೆ: “ಪಾಪಿಗುದ್ಧಾರಮಿಹುದೌ ಸೃಷ್ಟಿಯ ಈ ಮಹದ್ವ್ಯೂಹದೋಳ್” ಹೃದಯ ವೈಶಾಲ್ಯವನ್ನು ಬೆಳೆಸಿಕೊಳ್ಳದೆ ಕ್ಷಮಾಗುಣವನ್ನು ರೂಢಿಸಿಕೊಳ್ಳಲು ಅಸಾಧ್ಯ. ಶಿರಚ್ಛೇಧದ ಮೂಲಕ ಮರಣದಂಡನೆಯನ್ನು ಜಾರಿಗೊಳಿಸುವ ದೇಶದಲ್ಲೂ ಕ್ಷಮಾಗುಣಕ್ಕೆ ಆದ್ಯತೆ ಇದೆಯೆಂಬುದನ್ನು ನಾವು ಮರೆಯಬಾರದು. ಮತ್ತು ಈ ಕ್ಷಮಾದಾನದ ಪರಮಾಧಿಕಾರ ಕೊಡಲ್ಪಟ್ಟಿರುವುದು ಪ್ರಭುತ್ವಕ್ಕಲ್ಲ, ಬದಲಾಗಿ ಅನ್ಯಾಯಕ್ಕೊಳಗಾದ ವ್ಯಕ್ತಿ ಅಥವಾ ಆತನ ನಿಕಟ ಕುಟುಂಬ-ಸಂಬಂಧಿಗೆ ಮಾತ್ರ. [ಇದನ್ನು ಈಗ ಅಪರಾಧ ಶಾಸ್ತ್ರ ದಲ್ಲಿ  ಎಂಬ ಹೆಸರಿನಲ್ಲಿ ಅಧ್ಯಯನ ಮಾಡಲಾಗುತ್ತಿದೆ. ಇದು ಈ ಅಧ್ಯಯನ ಕ್ಷೇತ್ರವೊಂದರ ಇತ್ತೀಚಿಗಿನ ಹೊಸ ಬೆಳವಣಿಗೆ.] ಇದೊಂದು ಸತ್ಯ ಘಟನೆ. ಕೊಲ್ಲಿ ರಾಷ್ಟ್ರವೊಂದರಲ್ಲಿ ಒಂದು ಕುಟುಂಬದ ನಾಲ್ಕೈದು ಮಂದಿಯನ್ನು ಬರ್ಬರವಾಗಿ ಹತ್ಯೆಗೈದುದಕ್ಕಾಗಿ ಅಪರಾಧಿಗೆ ಮರಣದಂಡನೆ ವಿಧಿಸಲಾಗಿತ್ತು. ಆ ದೇಶದ ಪದ್ಧತಿಯಂತೆ ಸಾರ್ವಜನಿಕವಾಗಿ ಅಪರಾಧಿಯ ತಲೆ ಕಡಿದು ಮರಣದಂಡನೆಯನ್ನು ವಿಧಿಸುವುದು ರೂಢಿ. ಅಲ್ಲಿ ನೆರೆದಿದ್ದವರಲ್ಲಿ ಆ ಕುಟುಂಬದ ನಿಕಟ ಸಂಬಂಧಿಯೂ ಇದ್ದ. ಆತನಿಗೆ ಅಪರಾಧಿಯ ಬಗ್ಗೆ ಅತ್ಯಂತ ದ್ವೇಷ, ತಿರಸ್ಕಾರ, ಜಿಗುಪ್ಸೆ ಎಲ್ಲವೂ ಇತ್ತು. ಇದು ಸಹಜ ತಾನೇ? ಇನ್ನೇನು ಶಿಕ್ಷೆ ಜಾರಿಯಾಗಬೇಕೆನಿಸುವಷ್ಟರಲ್ಲಿ ಅಪರಾಧಿ ಆ ಕುಟುಂಬ ಸದಸ್ಯನ ಕಾಲಿಗೆ ಬಿದ್ದು ತನ್ನನ್ನು ಕ್ಷಮಿಸುವಂತೆ ಬಗೆ ಬಗೆಯಾಗಿ ಬೇಡಿಕೊಂಡ. ಯಾಕೋ ಏನೋ ಆ ಕ್ಷಣದಲ್ಲಿ ಆತನ ಮನ ಕರಗಿ ಕ್ಷಮಾದಾನ ಮಾಡಿದನಂತೆ. ಆ ಬಳಿಕ ಆತ ಹೇಳಿದ ಮಾತು ತುಂಬಾ ಅರ್ಥಪೂರ್ಣ ಮಾರ್ಮಿಕವಾಗಿತ್ತು: “ನನ್ನ ಹೃದಯದ ಕಹಿಯೆಲ್ಲಾ ಈಗ ಬತ್ತಿ ಹೋಗಿದೆ. ನನ್ನೊಳಗೆ ಅನಿರ್ವಚನೀಯ ಶಾಂತಿ ತುಂಬಿದ ಧನ್ಯತಾ ಭಾವ ಅರಳಿದೆ. ಕ್ಷಮಾಗುಣಕ್ಕೆ ಇಂತಹ ಶಕ್ತಿ ಇದೆಯೆಂದು ನನಗೆ ಈ ವರೆಗೂ ತಿಳಿದಿರಲಿಲ್ಲ! ಅಪರಾಧಿಯನ್ನು ಕ್ಷಮಿಸಲು ನನಗೆ ಪ್ರೇರಣೆ ನೀಡಿದ ಪರಮ ದಯಾಳು ದೇವರಿಗೆ ನಾನು ಚಿರಋಣಿ.” ಈ ತೃಪ್ತ ಭಾವವನ್ನು ಕಿಂಚಿತ್ ಪ್ರಮಾಣದಲ್ಲಾದರೂ ಅರ್ಥೈಸಿಕೊಳ್ಳಬೇಕಿದ್ದರೆ ನಾವೂ ಯಾರನ್ನಾದರೂ ಕ್ಷಮಿಸಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಪ್ರಾಮಾಣಿಕವಾಗಿ ವಿನಮ್ರತೆಯಿಂದ, ಸ್ವಾನುಭವದಿಂದ ನಾನು ಹೇಳಬಲ್ಲೆ. (ನನ್ನ ಅನುಭವ ಬಹಳ ದೊಡ್ಡ ಮಟ್ಟದ್ದು ಎಂದಾಗಲಿ, ನಾನು ಕ್ಷಮಾಗುಣದ ಸಾಕಾರಮೂರ್ತಿ ಎಂಬ ಅಹಂಕಾರವಾಗಲಿ ಒಂದಿಷ್ಟೂ ಇಲ್ಲದೆ ಈ ಮಾತನ್ನು ಬಹಳ ಸಂಕೋಚದಿಂದ ಹೇಳುತ್ತಿದ್ದೇನೆ. ಆ ಘಟನೆಯ ವಿವರಗಳನ್ನು ಮಾತ್ರ ಇಲ್ಲಿ ಈಗ ಹೇಳುವ ಸ್ಥಿತಿಯಲ್ಲಿ ನಾನಿಲ್ಲ, ಕ್ಷಮಿಸಿ.) ತನಗೆ ಕೇಡು ಬಗೆದವರಿಗೂ ಮನಸಾರೆ ಒಳಿತನ್ನು ಹಾರೈಸುವುದು ಮಾನವೀಯತೆಯ ಪರಾಕಾಷ್ಠೆಯಲ್ಲದೆ ಮತ್ತಿನ್ನೇನು? ನನಗೆ ತಿಳಿದಿರುವ ಎರಡು ಬದ್ಧ ದ್ವೇಷಿ ಕುಟುಂಬದ ಓರ್ವ ಹಿರಿಯ ಮರಣ ಹೊಂದಿದಾಗ ಜೀವನದುದ್ದಕ್ಕೂ ಆತನ ಕಡು ವೈರಿಯಾಗಿದ್ದಾತ ಶವ ಸಂಸ್ಕಾರಕ್ಕೆ ಬಂದು ಬಿಕ್ಕಿ ಬಿಕ್ಕಿ ಅತ್ತು (ಅದು ನಾಟಕವಾಗಿರಲಿಲ್ಲ ಎಂದು ನಾನು ನಿಸ್ಸಂಶಯವಾಗಿ ಹೇಳಬಲ್ಲೆ) ಕುಗ್ಗಿ ಹೋದ ಘಟನೆ ನನ್ನ ಮನಸ್ಸಿನಲ್ಲಿದೆ. ಅದನ್ನು ಆ ಸತ್ತ ವ್ಯಕ್ತಿ ಜೀವಂತವಾಗಿರುವಾಗಲೇ ಮಾಡಿದ್ದರೆ ಒಳಿತಿತ್ತು ಎನ್ನುವ ವ್ಯಾವಹಾರಿಕ ಮಾತು ಬೇರೆ. ಅದು ವ್ಯಕ್ತಿ ಬಹಳ ಆಳವಾಗಿ ಯೋಚಿಸಿ     ಮಾಡಿದ ಕೆಲಸವಾದ್ದರಿಂದ  ಮಹತ್ವದ್ದು ಎಂದು ನನ್ನ ಭಾವನೆ. ಸಾಯಿಸಲೆತ್ನಿಸಿದ ರಾಕ್ಷಸಿ ಪೂತನಿಗೂ ಶ್ರೀ ಕೃಷ್ಣ ಮೋಕ್ಷವನ್ನು ಕರುಣಿಸಿದ. ಆಕೆಯದು ತೋರಿಕೆಯ ಕಪಟ ಮಾತೃತ್ವವಾಗಿದ್ದರೂ ಕೃಷ್ಣ ಅದನ್ನು ನೋಡಿದ ಬಗೆ ಬೇರೆ. ಹಾಗೆಯೇ ತನ್ನನ್ನು ಶಿಲುಬೆಗೇರಿಸಿದವರ ಬಗ್ಗೆ “ಮರಣವೃಕ್ಷದೊಳಮೃತ ಫಲದಂತೆ” (‘ಗೊಲ್ಗೊಥಾ’ – ಮಂಜೇಶ್ವರ ಗೋವಿಂದ ಪೈ) ಕಾಣುತ್ತಿದ್ದ ಯೇಸುಸ್ವಾಮಿಯೂ “ತನ್ನ ಕಡಿರ್ಗೆ ತಣ್ಣೆಳಲೀವ ಮರದಂತೆ” (‘ಗೊಲ್ಗೊಥಾ’) ಈ ಮಾತನ್ನು ಹೇಳಿದ: “ತಂದೆಯೇ, ಅವರ ಅಪರಾಧಗಳನ್ನು ಕ್ಷಮಿಸು; ತಾವೇನು ಮಾಡುತ್ತಿದ್ದೇವೆ ಎಂಬುದನ್ನರಿಯರು” ಕ್ಷಮಾಗುಣದ ಚರಮ ಸೀಮೆ ಇದು ಎಂಬುದಕ್ಕೆ ಬೇರೆ ಉದಾರಹರಣೆ ಬೇಕೇ? ನೀವು ಹೇಳಬಹುದು ಇದು ಅಂತಹ ದೈವಾಂಶ ಸಂಭೂತರಿಗೆ ಮಾತ್ರ ಸಾಧ್ಯ. ನಮ್ಮಂತಹ ಹುಲು ಮಾನವರಿಗಲ್ಲ. ಒಪ್ಪಿದೆ. ನನ್ನ ಯೋಚನೆಯೂ ಇದಕ್ಕಿಂತ ಭಿನ್ನವಾಗಿರಲಿಲ್ಲ. ಆದರೆ ಇನ್ನೊಂದು ಸತ್ಯ ಘಟನೆಯನ್ನು ನಾನು ನಿಮ್ಮ ಮುಂದೆ ಇಡುತ್ತಿದ್ದೇನೆ. ಆ ಘಟನೆ ಹೀಗಿದೆ: ಒಮ್ಮೆ ನಮ್ಮ ಕಾಲೇಜಿಗೆ ಓರ್ವ ಅಮೇರಿಕನ್ ಮಹಿಳೆ ಬಂದಿದ್ದರು. ಇದು ನಮ್ಮ ಕಾಲೇಜಿಗೆ ವಿಶೇಷವೇನೂ ಅಲ್ಲ. ಅವರ ಭಾಷಣ ಪೂರ್ವಸೂಚನೆ ಇಲ್ಲದೆ ನಿಗದಿಯಾಯಿತು. ಎಲ್ಲರೊಂದಿಗೆ ನಾನೂ ಆ ಭಾಷಣ ಕೇಳಲು ಹೋಗಿದ್ದೆ. ಅವರು ಒಂದು ಘಟನೆಯನ್ನು ವಿವರಿಸಿದರು. ಅಮೇರಿಕಾದಲ್ಲಿ ಸಾಮಾನ್ಯವಾಗಿ ಎಲ್ಲರೂ ವಾರಾಂತ್ಯದಲ್ಲಿ ಸಕುಟುಂಬವಾಗಿ ಅವರು ಮನೆಯಿಂದ ದೂರ ಸಂಚಾರಕ್ಕೆ ಹೋಗುತ್ತಾರೆ. ಹಾಗೆಯೇ ಒಂದು ಕುಟುಂಬ ತನ್ನ ಐವರು ಮಕ್ಕಳೊಂದಿಗೆ ಊರ ಹೊರಗೆ ಹೋಗಿ ರಾತ್ರಿ ಕಾಲದಲ್ಲಿ ತೆರೆದ ಬಯಲಲ್ಲಿ ತಮ್ಮ ತಮ್ಮ ಸ್ಲೀಪಿಂಗ್ ಬ್ಯಾಗ್ ನಲ್ಲಿ ಮಲಗಿ ನಿದ್ರೆ ಮಾಡುತ್ತಿದ್ದರು. ಬೆಳಗ್ಗೆ ಎದ್ದು ನೋಡುವಾಗ ಅವರ ಕೊನೆಯ ಮಗಳು ಸುಮಾರು ಹದಿಮೂರು ವಯಸ್ಸಿನ ಹುಡುಗಿ ಕಾಣೆಯಾಗಿದ್ದಳು. ಎಲ್ಲೆಲ್ಲೋ ಹುಡುಕಿ ಸೋತ ಅವರಿಗೆ ಕೊನೆಗೆ ಆ ಹುಡುಗಿಯ ಮೃತ ದೇಹ ಒಂದು ಪೊದೆಯಲ್ಲಿ ಎರಡು ದಿನಗಳ ಬಳಿಕ ಸಿಕ್ಕಿತು. ಆಕೆಯನ್ನು ಅಮಾನುಷವಾಗಿ ಬಲಾತ್ಕರಿಸಿ ಕೊಂದು ಬಿಟ್ಟಿದ್ದ ಓರ್ವ ಪಾತಕಿ. ಆ ಕುಟುಂಬ ತನ್ನ ಶಾಂತಿ, ನೆಮ್ಮದಿಯನ್ನು ಕಳೆದುಕೊಂಡು ದು:ಖದಲ್ಲಿ ಮುಳುಗಿತ್ತು. ಆ ಮೇಲೆ ಗೊತ್ತಾಯಿತು ಇದು ಓರ್ವ ವಿಕೃತ ಕಾಮಿಯ ಕೆಲಸ; ಆತ ಈಗಾಗಲೇ ಸುಮಾರು ಹದಿನೈದು ಮಂದಿ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಲಾತ್ಕರಿಸಿ ಕೊಂದು ಹಾಕಿದ್ದ. ಸರಿ! ಕಾನೂನಿನ ಕೈಗಳಿಂದ ಅಪರಾಧಿ ಧೀರ್ಘ ಕಾಲ ತಪ್ಪಿಸಿಕೊಳ್ಳಲಾರ ಎಂಬುದು ಅಪರಾಧ ಶಾಸ್ತ್ರದ ಒಂದು ಪ್ರಮೇಯ. ಸ಼ುಮಾರು ಇಪ್ಪತ್ಮೂರು ವಯಸ್ಸಿನ ಓರ್ವ ಯುವಕ ಈ ಕೃತ್ಯ ಮಾಡಿದವನು ಎಂದು ಪೊಲೀಸರು ಸಾಕ್ಷ್ಯಾಧಾರಗಳ ಮೂಲಕ ಕಂಡು ಹಿಡಿದು ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು. ಇತ್ತ ಮಗಳನ್ನು ಕಳೆದುಕೊಂಡ ಆ ತಾಯಿ ಮಾನಸಿಕ ರೋಗಿಯಾಗಿ ಚಿಕಿತ್ಸೆ ಪಡೆಯಬೇಕಾಯಿತು. ಚಿಕಿತ್ಸೆಯ ಭಾಗವಾಗಿ ನೊಂದು, ಬೆಂದ ಆ ಮಹಿಳೆಗೆ ಮಾನಸಿಕ ತಜ್ಞರು ಆ ಅಪರಾಧಿಯನ್ನು ಕ್ಷಮಿಸಿದರೆ ಆಕೆಗೆ ಮಾನಸಿಕ ನೆಮ್ಮದಿ ಸಿಕ್ಕರೂ ಸಿಗಬಹುದು ಎಂದು ಹೇಳಿದರು. ಹಾಗೆ ಆಕೆಯ ಪತಿ ಆಕೆಯನ್ನು ಇದಕ್ಕೆ ಒಪ್ಪಿಸಿದರಂತೆ. ಆಗ ಆ ಮಹಿಳೆ ಆ ಬಗ್ಗೆ ಯೋಚಿಸಿ, “ನೋಡೋಣ. ಪ್ರಯತ್ನ ಪಡುವೆ” ಎಂಬ ಪ್ರಾಮಾಣಿಕತೆಯಿಂದ ಆ ಯುವಕನನ್ನು ಜೈಲಿನಲ್ಲಿ ಭೇಟಿಯಾಗುತ್ತಾಳೆ. ಮೊದಲಿಗೆ ಅವಳ ಮನವಿಯನ್ನು ತಿರಸ್ಕರಿಸಿದ ಅಪರಾಧಿ ಕೊನೆಗೂ ಮನಸ್ಸು ಬದಲಿಸಿ ಆಕೆಯನ್ನು ಭೇಟಿಯಾಗಲು ಒಪ್ಪುತ್ತಾನೆ. ಈ ಮಹಿಳೆ ಅಲ್ಲಿಗೆ ಹೋಗಿ ಆತನಲ್ಲಿ ಮಾತನಾಡಿ “ನಾನು ನಿನ್ನನ್ನು ಮನ:ಪೂರ್ವಕವಾಗಿ ಕ್ಷಮಿಸಿದ್ದೇನೆ” ಎಂದು ಹೇಳಿದರೂ ಆತ ಅದನ್ನು ನಿರ್ಭಾವುಕವಾಗಿ ಕೇಳಿಸಿಕೊಂಡನಂತೆ. ಅವನಲ್ಲಿ ಯಾವ ಬದಲಾವಣೆಯನ್ನೂ ಆ ತಾಯಿ ಕಾಣಲಿಲ್ಲವಂತೆ. ಆದರೆ ಆಕೆ ಆತನನ್ನು ಮನ:ಪೂರ್ವಕವಾಗಿ ಕ್ಷಮಿಸಿ ಹಿಂತಿರುಗಿ ಬಂದ ಮೇಲೆ ನಿಧಾನವಾಗಿ ಆಕೆಯ ಮಾನಸಿಕ ಸ್ವಾಸ್ಥ್ಯ ಮರುಕಳಿಸಿತಂತೆ. ಇಷ್ಟು ಹೇಳಿ ಆ ಅಮೇರಿಕನ್ ಮಹಿಳೆ ತನ್ನ ಮಾತು ಮುಗಿಸಿ “ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ನಿಸ್ಸಂಕೋಚವಾಗಿ ತಿಳಿಸಿ: ಎಂದಾಗ ಸಭೆಯಲ್ಲಿ ಒಂದು ಮೌನ ಆವರಿಸಿತ್ತು. ಆಗ ನಾನು ಹೇಳಿದೆ: “ಇದು ಕೇಳಲಿಕ್ಕೇನೋ ಬಹಳ ಚೆನ್ನಾಗಿದೆ. ಆದರೆ ನಿಜ ಜೀವನದಲ್ಲಿ ಹೀಗಾಗುವುದು ಸಾಧ್ಯವೇ ಎಂಬ ಬಗ್ಗೆ ನನಗೆ ಸಂದೇಹವಿದೆ” ಆ ಅಮೇರಿಕನ್ ಮಹಿಳೆ ತಕ್ಷಣ ಯಾವ ಉತ್ತರವನ್ನೂ ಕೊಡದೆ ಉಳಿದವರ ಅಭಿಪ್ರಾಯಗಳನ್ನು ಕೇಳತೊಡಗಿದರು. ವಿದ್ಯಾರ್ಥಿಗಳೂ, ಅಧ್ಯಾಪಕರೂ

ಕ್ಷಮಯಾ ಧರಿತ್ರೀ … Read Post »

ಇತರೆ, ಜೀವನ

ಯಡ್ರಾಮಿಯ ಉಡುಪಿ ಹೋಟೆಲ್

ಪ್ರಬಂಧ ಮಲ್ಲಿಕಾರ್ಜುನ ಕಡಕೋಳ   ಹಾಗೆ ನೋಡಿದರೆ ನಮ್ಮ ಯಡ್ರಾಮಿಗೆ  ಬೆಳ್ಮಣ್ಣು ಶಂಕರಭಟ್ಟರ ಉಡುಪಿ ಹೋಟೆಲ್ ಬರುವ ಪೂರ್ವದಲ್ಲೇ ನಿಯತ್ತಿನ ನಾಯಿಗುರುತು ಬ್ಯಾಂಕ್ ಬಂದಿತ್ತು. ಸುಂಬಡ ಹಾದಿಬದಿಯ ಬಹುಪಾಲು ಬೆಳಕಿಲ್ಲದ ಬ್ಯಾಂಕಿಗೂ ಭಟ್ಟರ ಹೋಟೆಲಿಗೂ ಕೂಗಳತೆ ದೂರ.  ಅಜಮಾಸು ಮುವತ್ತು ವರ್ಷಗಳ ಹಿಂದಿನ ಮಜಕೂರವಿದು. ಹಣಮಂದೇವರ ಗುಡಿ ಬಳಿಯ ಹಳೆಯ ಬಸ್ ನಿಲ್ದಾಣದಲ್ಲಿ ಉಡುಪಿ ಹೋಟೆಲ್. ಆಗೆಲ್ಲ ರುದ್ರಯ್ಯ ಮುತ್ಯಾನ ಹೋಟೆಲ್ ಹಾಗೂ ಹಲಕರ್ಟಿ ಶಿವಣ್ಣನವರ ಹೋಟೆಲಗಳದ್ದೇ ಸ್ಟಾರ್ ಹೋಟೆಲ್ ಹವಾ. ಯಥೇಚ್ಛ ಹೊಗೆಯುಂಡು ಮಸಿಬಟ್ಟೆ ಬಣ್ಣಕ್ಕಿಳಿದ ಪತರಾಸುಗಳು, ಹಳೆಯ ಮೇಜು, ಮುಪ್ಪಾನು ಮುರುಕು ಬೆಂಚುಗಳು, ಮಣ್ಣುನೆಲದ ದೇಸಿಯ ಈ ಹೋಟೆಲುಗಳೆದುರಿಗೆ “ಉಡುಪಿ  ಬ್ರಾಹ್ಮಣರ ಹೋಟೆಲ್ ” ಬೋರ್ಡ್ ಹೊತ್ತು ಆರ್ಸಿಸಿ ಬಿಲ್ಡಿಂಗಿನಲ್ಲಿ ಈಸ್ಟ್ ಇಂಡಿಯಾ ಕಂಪನಿ‌ಯಂತೆ ಯಡ್ರಾಮಿಯಲ್ಲಿ ಝಂಡಾ ಊರಿತು. ಅದು ಆಗ ಮದುವೆ ಹೆಣ್ಣಿನಂತೆ ಅಲಂಕರಿಸಿತ್ತು. ಕಲರ್ಫುಲ್ ಕುರ್ಚಿ, ಟೇಬಲ್ ಗಳು, ಚೆಂದನೆಯ ಗಲ್ಲಾಕುರ್ಚಿ, ಆ ಕುರ್ಚಿ ಮೇಲ್ಭಾಗದ ಮೆರುಗಿನ ಬಣ್ಣದ ಗೋಡೆಗೆ ಅಷ್ಟಮಠದ ಭಗವತ್ಪಾದರ ಫೋಟೋ. ಅದನ್ನು ನೋಡಿದರೆ ಸಾಕು ಇವರು ಮಂಗಳೂರು, ಉಡುಪಿ ಬ್ರಾಹ್ಮಣರೆಂದು ಹೇಳಬಹುದಿತ್ತು. ಉಡುಪಿ ಕಡೆಯಿಂದ ಬರುವಾಗಲೇ  ರುಚಿಕರವಾದ ಖಾದ್ಯ ತಯಾರಕ ಒಂದಿಬ್ಬರು ಅಡುಗೆ ಭಟ್ಟರು, ಸಪ್ಲಯರೊಂದಿಗೆ  ಹೊಸರುಚಿ ಬಡಿಸುವ ಸೌಟುಗಳನ್ನೂ ತಂದಿದ್ದರು. ಇನ್ನು ಕ್ಲೀನಿಂಗ್ ಗೆ ಲೋಕಲ್ ಕೆಲಸಗಾರರನ್ನು ನೇಮಿಸಿಕೊಂಡರು. ಬಿಳಿ ಆಫ್ ಶರ್ಟ್, ಅಚ್ಚ ಬಿಳಿ ಲುಂಗಿಯ ಭಟ್ಟರು ಗಲ್ಲಾ ಪೆಟ್ಟಿಗೆ ಮೇಲೆ ಕುಂತು ಸಂಜೀಮುಂದ ಬರುವ “ಉದಯವಾಣಿ”ಯಲ್ಲಿಯ ಕರಾವಳಿ ಸುದ್ದಿಗಳನ್ನು ಓದುವಲ್ಲಿ ತೋರುವಷ್ಟೇ ಆಸಕ್ತಿಯನ್ನು ಹೋಟೆಲಿನ ಶುಚಿ ಮತ್ತು ರುಚಿಯಲ್ಲೂ ತೋರಿಸುತ್ತಿದ್ದರು. ಹಾಡಿನ ಶೈಲಿಯ ಮಧುರ ಮೆಲುದನಿಯ ಭಟ್ಟರ ಮಾತುಗಳಿಗೆ ನಮ್ಮ ಮೊಗಲಾಯಿ ಸೀಮೆಯ ಹಳ್ಳೀಮಂದಿ ಮುರಕೊಂಡು  ಬಿದ್ದಿದ್ರು. ಯಡ್ರಾಮಿ ಅಷ್ಟೇಅಲ್ಲ ಸುತ್ತಮುತ್ತಲ ಹತ್ತಾರು ಹಳ್ಳಿಯ ನಾಲಗೆಗಳಿಗೆಲ್ಲ ಭಟ್ಟರ ಹೊಟೆಲಿನ ಅಕ್ಕಿ ಖಾದ್ಯಗಳ ಹೊಸರುಚಿಯದೇ ಬಿಸಿ – ಬಿಸಿ, ಮಾತು – ಮಾತು. ದೋಸೆ, ಇಡ್ಲಿ, ವಡೆ, ಭಟ್ಟರ ಕೇಸರಿಬಾತಿನ ಪರಿಮಳ ನಮ್ಮ ಸಿರಾಕ್ಕೆ ಇಲ್ಲದಿರುವುದು ಸಾಬೀತು ಮಾಡಿದಂಗಿತ್ತು. ಇಡ್ಲಿ ವಡಾ ತಿನ್ನಲು ಎರಡೆರಡು ಸ್ಟೀಲ್ ಚಮಚಗಳು. ಸ್ಟೀಲ್ ಗಿಲಾಸಿನಲ್ಲಿ ಕುಡಿಯುವ ನೀರು. ನೀರು ತುಂಬಿದ ಸ್ಟೀಲ್ ಜಗ್. ಅದುವರೆಗೆ ಪ್ಲಾಸ್ಟಿಕ್ ಮತ್ತು ಗಿಲಾಟಿ ಗಿಲಾಸುಗಳಲ್ಲಿ ನೀರು ಕುಡಿದ ಗಿರಾಕಿಗಳಿಗೆ ಇದೆಲ್ಲ ಹೊಸ ಮೇಜವಾನಿ, ಸಹಜವಾಗಿ ಖುಷಿಕೊಟ್ಟದ್ದು ಸುಳ್ಳಲ್ಲ. ನಮ್ಮ ದೇಸಿಯ ಹೋಟೆಲುಗಳಲ್ಲಿ ಚಾರಾಣೆಗೆ ಸಿಗುವ ಸಾದಾ ಚಹ ಇಲ್ಲಿ ಬಾರಾಣೆ. ಹೊಟ್ಟೆ ತುಂಬಾ ನಾಸ್ಟಾ ಮಾಡಿದ ಗಿರಾಕಿಗಳು ದೀಡು ರುಪಾಯಿಯ ಕೇಟಿ ಕುಡಿಯಲು ಹಿಂದೇಟು ಹಾಕುತ್ತಿರಲಿಲ್ಲ. ಆಗ ಬರೀ ಬಾರಾಣೆಗೆ ಕಟ್ಟಿಗೆ ಒಲೆ ಊದಿ ಗಟ್ಟಿಯಾದ ಕೇಟೀ ಮಾಡುತ್ತಿದ್ದ ಚಾ ದುಕಾನಿನ ಎಕ್ಸಕ್ಲೂಸಿವ್  ಕೇಟೀ ಸ್ಪೆಷ್ಲಿಸ್ಟಗಳಾದ ಮುಗಳಿ ದುಂಡಪ್ಪ, ರಾವೂರ ಬಸಣ್ಣ, ಬಸಗೊಂಡೆಪ್ಪ, ಬ್ಯಾಳಿ ಶಾಂತಪ್ಪನವರ ಕಿಟ್ಲಿ ಕೇಟೀಯ  ಖಾಸಬಾತ್ ಖಾಯಂ ಗಿರಾಕಿಗಳಿಗೂ ಉಡುಪಿ ಹೊಟೇಲಿನ ಕಾಸ್ಟಲೀ ಖಡಕ್ ಟೀ ಕುಡಿಯುವ ಖಾಯಷ್. ನಮ್ಮ ಗಾಂವಟೀ ಹೊಟೇಲುಗಳು ಮಾಡಿದ ಪೂರಿ ಭಾಜಿ ಪುಟಾಣಿ ಚಟ್ನಿಗೆ ಸಕ್ಕರೆ, ಸೂಸ್ಲಾದ ಮೇಲೂ, ಉಪ್ಪಿಟ್ಟಿನ ಮೇಲೂ ಸಕ್ಕರೆ ಉದುರಿಸಿಕೊಂಡು  ಹೀಗೆ ಎಲ್ಲದಕ್ಕೂ ಸಕ್ಕರೆ ಉದುರಿಸಿಕೊಳ್ಳುವ ಗೋಧಿ ಖಾದ್ಯದ ನಾಲಗೆಗಳಿಗೆ ಉಡುಪಿ ಖಾದ್ಯಗಳು ಬರೀ ರುಚಿಯನ್ನಷ್ಟೇ ಬರಿಸಲಿಲ್ಲ. ಉಡುಪಿ ಹೋಟೆಲಿಗೆ ಹೋಗುವುದು ಪ್ರತಿಷ್ಠೆಯ ವಿಷಯವಾಯಿತು. ಅಂತೆಯೇ ಕಡುಬಡವರು ಕೂಡ ಉಡುಪಿ ಹೋಟೆಲಿಗೆ ಹೋಗಿ ಉಡುಪಿ ಕೃಷ್ಣನ ದರ್ಶನ ಪಡಕೊಂಡು ಬಂದಷ್ಟೇ ಸಂತೃಪ್ತರಾಗುತ್ತಿದ್ದರು. ಜವೆಗೋಧಿಯ ಉದುರು ಉಪ್ಪಿಟ್ಟು ಕೊಡುತ್ತಿದ್ದ ಶಿವಣ್ಣನ  ಜವಾರಿ ರುಚಿಯ ಮುಂದೆ ಹೈಬ್ರಿಡ್ ರವೆಯ ” ಉಪ್ಮಾ “ಆರ್ಡರ್ ಮಾಡುವಲ್ಲಿ ನಮ್ಮ ನಾಲಗೆ ರುಚಿಗಳು ಕಲಕಾಗಿದ್ದವು ಎಂದರೆ ಉಡುಪಿ ಹೊಟೆಲ್ ಪ್ರಭಾವ ಯಾವ ಪ್ರಮಾಣದ್ದೆಂದು ಅರ್ಥೈಸಬಹುದು.  ಈಗ್ಗೆ ಎರಡು ವರ್ಷದ ಹಿಂದೆ ಯಡ್ರಾಮಿ ತಾಲೂಕು ಕೇಂದ್ರವಾಗಿದೆ. ಅಲ್ಲೀಗ ಫಿಜ್ಜಾ, ಬರ್ಗರ್, ದಾಬಾ ಕಲ್ಚರ್. ವೈನ್ ಸೆಂಟರ್, ರೆಸ್ಟುರಾಗಳು ಪ್ರವೇಶ ಪಡೆದಿವೆ. ಇದರ ನಡುವೆ ಉಡುಪಿ ಹೋಟೆಲ್ ಕಣ್ಮರೆಯಾಗಿದೆ. ಭಟ್ಟರ ವಯಕ್ತಿಕ ಕಾರಣಗಳಿಂದಾಗಿ ಕೆಲವು ವರ್ಷಗಳ ಹಿಂದೆಯೇ ನಾಪತ್ತೆಯಾಯಿತು. ಈಗೀಗ ಹೊಸ ಬಸ್ ಸ್ಟ್ಯಾಂಡ್ ಹತ್ತಿರದ ಹೋಟೆಲುಗಳ ಗೋಧಿ ಖಾದ್ಯಗಳಿಗೆ  ಬದಲು ಅಕ್ಕಿ ಖಾದ್ಯದ ವಿವಿಧ ತಿಂಡಿ ಪದಾರ್ಥಗಳು ಯಾಕೋ ಅನ್ನಭಾಗ್ಯದ ನೆನಪು ತರಿಸುತ್ತಿವೆ ? ಆದರೆ ಪಥ್ಯ ಮಾಡುವ ಉತ್ತಮರೆಲ್ಲ ಎತ್ತ ಹೋದರೋ ಎಂಬ ನಮ್ಮ ಕಡಕೋಳ ಮುತ್ಯಾ ಮಡಿವಾಳಪ್ಪನ ಹಾಡಿನಂತೆ  ನೆಲದ ನೆನಪಿನ ರುದ್ರಯ್ಯ ಮುತ್ಯಾ, ಹಲಕರಟಿ ಶಿವಣ್ಣನಂಥವರು ಎತ್ತ ಹೋದರೋ ಗೊತ್ತಿಲ್ಲ. ನಮ್ಮ ನಾಲಗೆಗಳು ಮಾತ್ರ ಹೊಸರುಚಿಯ ಬಲೆಯಲ್ಲಿ ಬಿದ್ದು ಜವಾರಿ ರುಚಿ ಮತ್ತು ಅಭಿರುಚಿಯನ್ನೇ ಕಳಕೊಂಡಿವೆ. ***************

ಯಡ್ರಾಮಿಯ ಉಡುಪಿ ಹೋಟೆಲ್ Read Post »

ಇತರೆ, ಜೀವನ

ವೃದ್ಧಾಶ್ರಮಗಳ ಸುತ್ತ

ಚಿಂತನೆ ಅರುಣ ರಾವ್ ನನ್ನ  ಶಾಲಾ ದಿನಗಳಲ್ಲಿ ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ, ಸನ್ಯಾಸ ಈ ನಾಲ್ಕು ಆಶ್ರಮಗಳನ್ನು ಕೇಳಿದ್ದ ನನಗೆ, ವೃದ್ಧಾಶ್ರಮ ಎಂಬ  ಹೊಸ ಆಶ್ರಮ ನವ  ಪ್ರಪಂಚವೊಂದನ್ನು ಪರಿಚಯಿಸಿತು. ನನ್ನ ಚಿಕ್ಕಂದಿನಲ್ಲಿ ವೃದ್ಧಾಶ್ರಮ ಎನ್ನುವ ಪದವನ್ನು ನಾನೆಂದೂ  ಕೇಳಿಯೇ  ಇರಲಿಲ್ಲ. ಆಗೆಲ್ಲಾ  ಒಂದು ಕುಟುಂಬದಲ್ಲಿ ತಂದೆ-ತಾಯಿ, ಅಜ್ಜ-ಅಜ್ಜಿ, ಮಕ್ಕಳು ಬಹಳ ಆನಂದದಿಂದ ಸಮರಸದಿಂದ ಕೂಡಿ ಬಾಳುವೆ ನಡೆಸುತ್ತಿದ್ದರು. ಇವರೆಲ್ಲರೂ ಇದ್ದಾಗ ಮಾತ್ರ ನಮ್ಮದೊಂದು ಸಂಸಾರವಾಗುತ್ತದೆ ಎಂದು ಎಲ್ಲರೂ ಬಲವಾಗಿ ನಂಬಿದ್ದರು. ವಯಸ್ಸಾದ  ತಂದೆ ತಾಯಿಗಳು ನಮಗೊಂದು ಹೊರೆ ಎಂದು ಮಕ್ಕಳು ಎಂದೂ ಭಾವಿಸುತ್ತಿರಲ್ಲಿಲ್ಲ‌.   ತಮ್ಮ ತಂದೆ ತಾಯಂದಿರು ಅಜ್ಜ -ಅಜ್ಜಿಯರನ್ನು ನೋಡಿಕೊಳ್ಳುವುದನ್ನು ನೋಡುತ್ತಲೇ ಬೆಳೆದ ಮಕ್ಕಳು, ತಮ್ಮ ತಂದೆ ತಾಯಿಗೆ ವಯಸ್ಸಾದಾಗ ತಾವು ನೋಡಿಕೊಳ್ಳಬೇಕೆಂಬ ಸಹಜ ಭಾವನೆಯಿಂದಲೇ ಬೆಳೆದು ದೊಡ್ಡವರಾಗುತ್ತಿದ್ದರು.  ಅವರನ್ನು ನೋಡಿಕೊಳ್ಳುವುದು  ಮಕ್ಕಳ ಆದ್ಯ ಕರ್ತವ್ಯವಾಗಿ, ಬಲವಂತ ಮತ್ತು ದಾಕ್ಷಿಣ್ಯ ರಹಿತವಾಗಿ ಸರಾಗವಾಗಿ ಸಾಗಿ ಹೋಗುತ್ತಿತ್ತು. ಭಾರತೀಯ   ಸಮಾಜದ ಒಟ್ಟಾರೆ ಚಿತ್ರಣ ಇದೇ ಆಗಿರುವಾಗ ಎಲ್ಲರೂ ಈ ವ್ಯವಸ್ಥೆಯನ್ನು ಯಥಾವಿಧಿ ಒಪ್ಪಿಕೊಂಡು, ಅದರಂತೆ ತಮ್ಮ ಮನಸ್ಥಿತಿಯನ್ನು ರೂಢಿಸಿಕೊಳ್ಳುತ್ತಿದ್ದರು.  ನಮ್ಮ ಪುರಾಣಗಳಲ್ಲಿ ಕಂಡು ಬರುವ ‘ಶ್ರವಣನ ಪಿತೃಭಕ್ತಿ’ ಕತೆಯೂ ಸಹ   ಇದನ್ನೇ ಒತ್ತಿಹೇಳುತ್ತದೆ.  ಶ್ರವಣಕುಮಾರನು ಕುರುಡರಾದ ತನ್ನ ತಂದೆ ತಾಯಿಯರ ಮನೋಭಿಲಾಷೆಯನ್ನು  ನೆರವೇರಿಸುವ ಸಲುವಾಗಿ,  ವಯಸ್ಸಾದ ಅವರನ್ನು  ಡೋಲಿಯಲ್ಲಿ ಕುಳ್ಳರಿಸಿಕೊಂಡು ಪುಣ್ಯಕ್ಷೇತ್ರಗಳಿಗೆ ಹೊತ್ತೊಯ್ದು ತೀರ್ಥಯಾತ್ರೆ ಮಾಡಿಸಿದ್ದು.  ನಂತರ ದಶರಥನ ಶಬ್ದವೇಧಿ ಬಾಣಕ್ಕೆ ಗುರಿಯಾಗಿ, ಸಾವಿನ ಅಂಚಿನಲ್ಲದ್ದಾಗಲೂ ಸಹ‌ ಅವನಿಗೆ ತನ್ನ ತಂದೆ-,ತಾಯಿಯರದೇ ಚಿಂತೆ. ಹಾಗಾಗಿ  ನಮ್ಮ ಇಂದಿನ ಯುವ ಜನಾಂಗ ಈ ಕತೆಯನ್ನು  ಮತ್ತೊಮ್ಮೆ ಕೇಳಬೇಕಿದೆ, ಮನವರಿಕೆ ಮಾಡಿಕೊಳ್ಳಬೇಕಿದೆ. ಏಕೆಂದರೆ  ಶ್ರವಣ ಕುಮಾರನು  ಸರ್ವಕಾಲಕ್ಕೂ, ಸರ್ವರಿಗೂ ಆದರ್ಶಪ್ರಾಯನಾಗಿದ್ದಾನೆ. ಉದಾಹರಣೆಗೆ ಸ್ವತ: ರಾಷ್ಟ್ರಪಿತ  ಮಹಾತ್ಮ ಗಾಂಧೀಜಿಯವರೇ ಈ ಕಥೆಯನ್ನು ಓದಿ, ಶ್ರವಣನಿಂದ ಪ್ರಭಾವಿತರಾಗಿ, ಕಾಯಿಲೆ ಪೀಡಿತರಾದ  ತಮ್ಮ ತಂದೆಯ ಸೇವೆಯನ್ನು  ಅವರ ಕೊನೆ ಉಸಿರಿರುವವರೆಗೂ ಮಾಡಿದರು.. ಆದರೆ  ಇಂದು ಎಲ್ಲವೂ ತಿರುಗು ಮರುಗಾಗಿದೆ. ಮಕ್ಕಳಿಗೆ ತಮ್ಮ ತಂದೆ ತಾಯಿ ತಮ್ಮ ಜೊತೆಯಲ್ಲಿದ್ದರೆ ಸರಿ‌ಬೀಳದು.  ಇದಕ್ಕೆ ಹಲವಾರು ಕಾರಣಗಳಿರಬಹುದು. ಅಜ್ಜ, ಅಜ್ಜಿಯರ  ಮುದ್ದಿನಿಂದಾಗಿ ತಮ್ಮ ಮಕ್ಕಳು ಹಾಳಾಗುತ್ತಿದ್ದಾರೆಂದೋ, ಸಂಜೆಯಾದರೆ ಧಾರಾವಾಹಿಗಳನ್ನು ನೋಡುವುದರಿಂದ ತಮ್ಮ ಮಕ್ಕಳು ಓದುತ್ತಿಲ್ಲವೆಂದೋ, ಅವರಿಂದಾಗಿ‌ ಮನೆಯಲ್ಲಿ ಪದೇಪದೇ ಜಗಳಗಳಾಗುತ್ತಿವೆಯೆಂದೋ  ಹೀಗೆ ಹತ್ತು ಹಲವು ಕಾರಣಗಳನ್ನು ನೀಡಿ,  ಮೊಮ್ಮಕ್ಕಳು ಅಜ್ಜಿ ಅಥವಾ ತಾತ ತಮ್ಮ  ಜೊತೆಯಲ್ಲಿ, ತಮ್ಮ ಮನೆಯಲ್ಲಿಯೇ  ಇರಬೇಕೆಂದು ಹಠ ಮಾಡಿ, ಅತ್ತು ಕರೆದು ಗೋಳಾಡಿದರೂ, ಮಕ್ಕಳ  ಮಾತನ್ನು‌ ಕೇಳದೆ ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು, ತಮ್ಮ ಜೊತೆಯಲ್ಲಿಟ್ಟುಕೊಳ್ಳದೆ ಬೇರೆ ಮನೆ ಮಾಡಿ ಇಡುವುದು  ವಿಪರ್ಯಾಸವೇ ಸರಿ. ತಮ್ಮ ಇಳಿ ವಯಸ್ಸಿನಲ್ಲಿ ಮಕ್ಕಳೊಂದಿಗೆ, ಮೊಮ್ಮಕ್ಕಳನ್ನು ಆಡಿಸುತ್ತಾ, ಕಾಲ ಕಳೆಯುವ ಕನಸನ್ನು ಹೊತ್ತ ವೃದ್ಧ ಜೀವಗಳು ವೃದ್ಧಾಶ್ರಮಕ್ಕೆ ಹೋಗಲು,   ತಾವೇ ಪ್ರತ್ಯೇಕವಾಗಿರಲು ಅದೆಷ್ಟು ನೊಂದುಕೊಂಡೀತೋ?   ಇಂದು ಇದು ಕೇವಲ  ಬಡವ ಹಾಗೂ ಮಧ್ಯಮ ತರಗತಿಯವರ ಸಮಸ್ಯೆಯಷ್ಟೇ ಅಲ್ಲದೆ, ಪ್ರತಿಯೊಬ್ಬರ ಸಮಸ್ಯೆಯಾಗಿ ಪರಿಣಮಿಸಿದೆ. ಮಕ್ಕಳ ಭವ್ಯ ಭವಿಷ್ಯದ ಬಗೆಗೆ ಕನಸು ಹೊತ್ತ ಪೋಷಕರು ಅವರಿಗಾಗಿ ಹಗಲಿರುಳು ಶ್ರಮಿಸಿ ಕಷ್ಟ ಪಡುತ್ತಾರೆ.  ಓದಿದ ಮಕ್ಕಳು  ಉದ್ಯೊಗಗಳನ್ನು ಅರಸುತ್ತಾ, ವಿದೇಶಕ್ಕೆ ಹೋಗುತ್ತಾರೆ. ನಂತರ ಅಲ್ಲಿಯೇ ಶಾಶ್ವತವಾಗಿ  ನೆಲೆನಿಂತು,  ತಿಂಗಳಿಗೆ ಲಕ್ಷಾಂತರ ರೂಪಾಯಿಗಳನ್ನು ಪೋಷಕರಿಗೆ ಕಳುಹಿಸಿ ಕೊಡುವುದರಲ್ಲಿಯೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ. ಆದರೆ  ಈ ಹಣ ಯಾವತ್ತಿಗೂ ಇವರನ್ನು ಪ್ರೀತಿಯಿಂದ ಮಾತನಾಡಿಸಲು ಸಾಧ್ಯವೇ?   ಇವರು ಅನಾರೋಗ್ಯ ಪೀಡಿತರಾದಾಗ  ಸೇವೆ ಮಾಡಲು ಸಾಧ್ಯವೇ? ಅವರು ಕಾಯಿಲೆ ಬಿದ್ದಾಗ ಅಕ್ಕರೆಯಿಂದ ಆರೈಕೆ ಮಾಡಲು ಸಾಧ್ಯವೇ?  ವಯಸ್ಸಾದಂತೆ ಮುದಿ ಜೀವಗಳು ಇತರರೊಂದಿಗೆ  ಮಾತುಕತೆಗಾಗಿ ಹಂಬಲಿಸುತ್ತಿರುತ್ತದೆ.ಆದರೆ ಮಕ್ಕಳಿಗಾಗಲೀ, ಮೊಮ್ನಕ್ಕಳಿಗಾಗಲೀ ಇವರೊಡನೆ ಮಾತನಾಡಲು‌ ಪುರುಸೊತ್ತೆಲ್ಲಿಯದು?  ಈಗ‌ಂತೂ ಮಗುವನ್ನು‌ ಯಾವ ಶಾಲೆಗೆ ಸೇರಿಸಿದಿರಿ ಎನ್ನುವಷ್ಟು ಸಹಜವಾಗಿ, ‘ ನಿಮ್ಮ ತಂದೇನ ಯಾವ ವೃದ್ಧಾಶ್ರಮಕ್ಕೆ ಸೇರಿಸಿದ್ರಿ? ಎಂದು ಕೇಳಲಾಗುತ್ತಿದೆ.ಪಟ್ಟಣ ಪ್ರದೇಶಗಳಿಗೆ ಹೋಲಿಸಿಕೊಂಡರೆ ಗ್ರಾಮೀಣ ಪ್ರದೇಶಗಳಲ್ಲಿ ಈ ಸ್ಥಿತಿ ವಿಭಿನ್ನವಾಗಿದೆ.  ವಯಸ್ಸಾದ ತಂದೆ ತಾಯಂದಿರು ಹಳ್ಳಿ ಗಳಲ್ಲಿ ವಾಸಿಸುತ್ತಿದ್ದರೆ, ಅವರ ಮಕ್ಕಳು ಕೆಲಸದ ಕಾರಣದಿಂದಲೋ ಮತ್ತೊಂದೋ ಆಗಿ ನಗರಗಳಲ್ಲಿ ನೆಲೆಸಿರುತ್ತಾರೆ.  ವರ್ಷದಲ್ಲಿ ಯಾವಾಗಲೋ ಒಮ್ಮೊಮ್ಮೆ ರಜಾ ದೊರೆತಾಗ ಊರಿಗೆ ಹೋದರೆ ಹೋದರು; ಇಲ್ಲದಿದ್ದರೆ ಇಲ್ಲ.  ತಮ್ಮ ಇಡೀ ಜೀವಮಾನ ಅದರಲ್ಲೂ ಯೌವ್ವನದ ಬಹು ಪಾಲು ಕುಟುಂಬದ, ಮಕ್ಕಳ ಏಳಿಗೆಗಾಗಿ ದುಡಿದು ಹಣ್ಣಾದ ಜೀವಗಳು ವೃದ್ಧಾಶ್ರಮದ ಬಾಗಿಲ ಬಳಿ ಕುಳಿತು ತಮ್ಮ ಮಕ್ಕಳು ಎಂದಿಗೆ ಬರುತ್ತಾರೋ?  ಎಂದು ಎದಿರು ನೋಡುವ ದೃಶ್ಯವಂತೂ ಕರುಳಿರಿಯುವಂತಹುದು.   ಹಾಗಿದ್ದರೂ  ವೃದ್ಧಾಶ್ರಮಗಳಲ್ಲಿನ ವಾಸ್ತವ್ಯ ಅಷ್ಟೇನೂ ಕಷ್ಟಕರವಾದುದಲ್ಲ. ಏಕೆಂದರೆ ಅಲ್ಲಿ ಅವರಿಗೆ ಅವರದೇ ವಯೋಮಾನದವರ ಜೊತೆ ಬೆರೆಯುವ, ತಮ್ಮ ಕಷ್ಟ-ಸುಖಗಳನ್ನು ಹಂಚಿಕೊಳ್ಳುವ ಅವಕಾಶ ಇಲ್ಲದಿಲ್ಲ. ಕಾಲಕಾಲಕ್ಕೆ ಊಟ, ನಿದ್ದೆ, ವಿಶ್ರಾಂತಿ, ಔಷಧ ಎಲ್ಲವೂ ದೊರಕುತ್ತದೆ. ಅದರೂ ಈ ಸೌಕರ್ಯಗಳು ಸ್ವಂತ ಮಕ್ಕಳ ಜೊತೆ ಇರುವ ನೆಮ್ಮದಿಯನ್ನು  ಸುಖ-ಸಂತೋಷವನ್ನು  ಎಂದಿಗೂ ಕೊಡಲಾಗದು. ” ದೋಸೆ ಮಗುಚಿ  ಹಾಕಿದಂತೆ”ಎನ್ನುವ ಗಾದೆ ಮಾತಿನಂತೆ   ಅಜ್ಜ,ಅಜ್ಜಿಯರನ್ನು ವೃದ್ಧಾಶ್ರಮದಲ್ಲಿಯೇ ನೋಡಿ ಅಭ್ಯಾಸವಿರುವ ಇವರ ಮಕ್ಕಳು  ತಮ್ಮ ತಂದೆ-ತಾಯಿಯರಿಗೆ ವಯಸ್ಸಾದ ಕಾಲಕ್ಕೆ ಅವರನ್ನೂ ಸಹ ವೃದ್ಧಾಶ್ರಮಕ್ಮೆ ಕಳುಹಿಸುವುದು ನೂರಕ್ಕೆ ನೂರರಷ್ಟು ನಿಜ.  ಏಕೆಂದರೆ ಮಕ್ಕಳು ನಾವು ಹೇಳಿಕೊಟ್ಟು ಕಲಿಯುವುದಕ್ಕಿಂತ ನಾವು ಮಾಡುವುದನ್ನು ನೋಡಿ ಕಲಿಯುತ್ತಾರೆ ಅಲ್ಲವೇ? ********************

ವೃದ್ಧಾಶ್ರಮಗಳ ಸುತ್ತ Read Post »

ಇತರೆ, ಜೀವನ

ಬಸವಣ್ಣನಿಗೊಂದು ಪತ್ರ

ಲೇಖನ ನೂತನ ದೋಶೆಟ್ಟಿ ಶರಣು ಶರಣಾರ್ಥಿಗಳು.ದಿನವೂ ಬೆಳಿಗ್ಗೆಇವನಾರವ ಇವನಾರವ ಎನ್ನದಿರಯ್ಯ,ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯಾ ಎಂಬ ನಿನ್ನ ವಚನವನ್ನು ಹೇಳಿಕೊಳ್ಳುವಾಗ ನಾಲಿಗೆ ತೊದಲುತ್ತದೆ. ಎಲ್ಲರನ್ನೂ ನನ್ನವರು ಎಂದು ಅಪ್ಪಿಕೊಂಡ ನಿನ್ನ ನಾಡಿನಲ್ಲೇ ಇವ ನಮ್ಮವನಲ್ಲ ; ನಾವೇ ಬೇರೆ ಅವನೇ ಬೇರೆ ಎಂದು ಪ್ರತಿಪಾದಿಸಲು, ತಮ್ಮ ಈ ಪ್ರತಿಪಾದನೆಯನ್ನು ಸ್ಥಾಪಿಸಲು ಜನ ಸಂಚು ಮಾಡುತ್ತಿದ್ದಾರೆ ! ನಿನ್ನ ಕಾಲದ ಇತಿಹಾಸ ಮರುಕಳಿಸಿಬಿಟ್ಟಿದೆ ಅಣ್ಣಾ.ಜಾತಿ ವಿಜಾತಿ ಎನಬೇಡ ಎಂದು ಕಳಕಳಿಸಿದ ನೀನು ಜಾತಿ ಆಧಾರದ ಮೇಲೆ ಒಡೆದು ಚೂರಾಗಿದ್ದ ನಮ್ಮ ಅಂದಿನ ಸಮಾಜಕ್ಕೆ ದಾರಿದೀವಿಗೆಯಾಗಿ ಬಂದು ಮೇಲು ಕೀಳೆಂಬುದನ್ನು ಧಿಕ್ಕರಿಸಿ ಕಾಯಕ ಮಂತ್ರದೀಕ್ಷೆ ಮಾಡಿದೆ. ಕಾಯಕವೇ ಧರ್ಮ ಎಂದು ಪ್ರತಿಪಾದಿಸುತ್ತಲೇ ಅಂದಿನ ಧಾರ್ಮಿಕತೆಗೆ ದಯವಿಲ್ಲದಾ ಧರ್ಮ ಅದೇವುದಯ್ಯಾ ?ಎಂದು ಪ್ರಶ್ನಿಸಿದೆ.ಇದು ಕೇವಲ ಪ್ರಶ್ನೆಯಾಗಿರದೆ ಸಹಸ್ರಾರು ಹಿಂದುಳಿದವರ, ಬಡಬಗ್ಗರ, ತುಳಿತಕ್ಕೆ ಒಳಗಾದವರ, ಶೋಷಿತರ, ದುರ್ಬಲ ವರ್ಗದವರ ಮನೋಬಲವನ್ನು ವೃದ್ಧಿಸಿ ಇತರರಂತೆ ತಾವೂ ಮನುಷ್ಯರು. ತಮಗೂ ಅವರಂತೆ ಬದುಕುವ ಹಕ್ಕಿದೆ.ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಒಕ್ಕೊರಲಿನಿಂದ ಹೇಳುವ ಧೈರ್ಯದ್ರವ್ಯವಾಯಿತು.ಅಂತಹ ಧೈರ್ಯವನ್ನು ಜನಸಾಮಾನ್ಯರಲ್ಲಿ ತುಂಬುವ ಮೊಟ್ಟಮೊದಲ ಪ್ರಯತ್ನ ನಿನ್ನಿಂದ ನಡೆಯಿತು.ನೀನು ಅವರೆಲ್ಲರ ಆರಾಧ್ಯಧೈವವಾದೆ. ನಿನ್ನ ಕಾಯಕ ನಿನ್ನನ್ನು ಆ ಎತ್ತರಕ್ಕೆ ಏರಿಸಿತು.ಆನಂತರ ನಡೆದದ್ದೆಲ್ಲ ಕ್ರಾಂತಿಯೇ.ಹೀಗಿದ್ದ ನೀನು ,ನಿನ್ನ ಜೀವಿತಕಾಲದಲ್ಲೇ ಆರಂಭಿಸಿದ ಸಾಮಾಜಿಕ ಚಳವಳಿಗೆ ವ್ಯತಿರಿಕ್ತ ಪರಿಣಾಮಗಳನ್ನು ಎದುರಿಸಬೇಕಾಯಿತು. ಪ್ರಬಲರು ದುರ್ಬಲರೊಂದಿಗೆತಮ್ಮನ್ನು ಗುರುತಿಸಿಕೊಳ್ಳಲು,ಅವರಿಗೆ ಸಮಾನ ಸ್ಥಾನ-ಮಾನಗಳನ್ನು ನೀಡಲು ವಿರೋಧ ವ್ಯಕ್ತಪಡಿಸಿದರು.ಈ ಪ್ರತಿರೋಧದ ಜ್ವಾಲೆ ನಿನ್ನನ್ನೂ ಸೇರಿಸಿದಂತೆ ನಿನ್ನ ಆದರ್ಶ ಸಮಾಜದ ಕನಸನ್ನೂ ಆಹುತಿ ತೆಗೆದುಕೊಂಡಿತು.ಅದೂ ಮತ್ತೊಂದು ರೀತಿಯ ಕ್ರಾಂತಿಯೇ.ಆನಂತರ ಮತ್ತೊಮ್ಮೆ ನೀನು ಆರಾಧ್ಯದೈವವಾದೆ.ಅಂದು ನೀನು ಬೆಳೆಸಿದ ನಿನ್ನ ಮಕ್ಕಳು ದಾಯಾದಿಗಳಾಗಿ ಹೊಡೆದಾಡುತ್ತಿದ್ದಾರೆ.ಅವರು ಏಕೆ ಹೊಡೆದಾಡುತ್ತಿದ್ದಾರೆ ಎಂದು ನನ್ನಂಥ ಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ. ಹಾಗೆ ನೋಡಿದರೆ ಅದು ನನ್ನಂಥ ಸಾಮಾನ್ಯರಿಗೆ ಸಂಬಂಧಿಸಿದ್ದೂ ಅಲ್ಲ. ಅದೇನಿದ್ದರೂ ರಾಜಕಾರಣಿಗಳಿಗೆ, ಧರ್ಮದ ಮುಂದಾಳುಗಳಿಗೆ ಸಂಬಂಧಿಸಿದ್ದು ಎಂದು ಜನ ಆಡಿಕೊಳ್ಳುತ್ತಿದ್ದಾರೆ.ಇವರಿಬ್ಬರ ನಡುವೆ ನೀನು ಹೇಗೆ ಮತ್ತು ಏಕೆ ಸಿಲುಕಿದೆ ಎಂಬುದು ನನಗೆ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.ನಿನ್ನನ್ನು ದೈವವಾಗಿ ಆರಾಧಿಸಬೇಕೆಂದು ನೀನೇನು ಅವರನ್ನು ಬೇಡಿಕೊಂಡಿದ್ದಿಲ್ಲ. ಅಥವಾ ನಿನ್ನನ್ನೇ ಆರಾಧಿಸಬೇಕೆಂದೂ, ಅವರು ನಿನ್ನ ನಂತರ ತಾವೇ ಒಪ್ಪಿಕೊಂಡು ಮುನ್ನಡೆಸಿದ ಧರ್ಮದ ಮೊದಲಿಗನೆಂದೂ ಹೇಳಿರಲಿಲ್ಲ. ಇದೆಲ್ಲ ಆ ಕಾಲದ ಸಾಮಾಜಿಕ ಹಾಗೂ ಧಾರ್ಮಿಕ ಅವಶ್ಯಕತೆಯಾಗಿತ್ತು.ಅದಕ್ಕೆ ನಿಮಿತ್ತವಾಗಿ ಬಂದ ನೀನು ಎಲ್ಲರನ್ನೂ ಒಂದಾಗಿಸಿ, ಮುನ್ನಡೆಸಲು ಹರಸಾಹಸ ಮಾಡಿ ಒಂದು ಹಂತದಲ್ಲಿ ಯಶಸ್ವಿಯಾದೆ. ಇದನ್ನು ಸಹಿಸದ ಜನ ಅಂದೂ ಇದ್ದರು ತಾನೆ?ಈ ನೋವು ನಿನ್ನನ್ನು ಅವರೆಲ್ಲರಿಂದ ದೂರ ಸರಿಯುವಂತೆ ಮಾಡಿತೋ ಅಥವಾ ಅವರೇ ನಿನ್ನನ್ನು ಕಾಣದ ಲೋಕಕ್ಕೆ ಕಳಿಸಿದರೋ ಆ ಕೂಡಲಸಂಗನಿಗೆ ಮಾತ್ರ ಗೊತ್ತು. ಅಣ್ಣಾ, ವಿದ್ಯೆಯಿರದ ಆ ಕಾಲದ ಜನರಲ್ಲಿ ಅರಿವು ಮೂಡಿಸಲು ನೀನು ಪಡಬಾರದ ಪಾಡು ಪಟ್ಟೆ.ಎಲ್ಲರ ವಿರೋಧದ ನಡುವೆ ಏಕಾಂಗಿಯಾದರೂ ಅಚಲನಾಗಿ ನಿಂತೆ.ಕಮ್ಮಾರ, ಕುಂಬಾರ ಮೊದಲಾದ ಕಾಯಕದವರ ಬಾಳು ಭಂಡವಲ್ಲ. ಕಾಯಕವೇ ಕೈಲಾಸ ಎಂದು ಸಾರಿ ಮೊಟ್ಟಮೊದಲ ಬಾರಿಗೆ, ‘ ಡಿಗ್ನಿಟಿ ಆಫ್ ಲೇಬರ್’ – ಶ್ರಮಜೀವಿಗಳಿಗೆ ಗೌರವ ಸಲ್ಲಲೇಬೇಕಾದ ಹಕ್ಕಿನ ಪ್ರತಿಪಾದನೆ ಮಾಡಿದೆ. ಅದಾಗಲೇಇಂತಹ ಅನೇಕಾನೇಕ ಕಾಯಕಗಳು ಜಾತಿಗಳಾಗಿ ಪರಿಗಣಿತವಾಗಿದ್ದವು. ಆ ಜಾತಿಗಳು, ಅವರ ಅನಿವಾರ್ಯತೆ ಹಾಗೂ ಅವರ ಬಡತನ, ಅಂದಿನ ಮೇಲ್ವರ್ಗದ ಸಮಾಜಕ್ಕೆ ಆಳುವ ವರ್ಗಕ್ಕೆ ಬೇಕಾಗಿತ್ತು.ಅವರು ಸಂಘರ್ಷಕ್ಕೆ ಇಳಿದಾಗ ಅವರೆದುರು ನಿನ್ನ ಹೋರಾಟ ನಿನ್ನ ಜೀವಿತಕಾಲದಲ್ಲಿ ಸಫಲವಾಗಲಿಲ್ಲ. ಇದೆಲ್ಲ ನಡೆದು ಈಗ ೯ ಶತಮಾನಗಳೇ ಕಳೆದಿವೆ. ಆದರೂ ಕಾಲ ಮುನ್ನಡೆಯದೆ ನಿಂತಲ್ಲೇ ನಿಂತಿದೆ ಎಂಬುದಕ್ಕೆ ಅನೇಕ ಉದಾಹರಣೆಗಳು ನಮ್ಮೆದುರಿಗೆ ಇವೆ.ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಬೇಕಾದ ಕಾಲಘಟ್ಟದಲ್ಲಿ ನಾನಿದ್ದೇನೆ. ಅಯ್ಯಾಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಕಕ್ಕುಲಾತಿಯಿಂದ ಕಲಿಸಿದ ನಿನ್ನನ್ನೇ ಎಲವೋ ಎನ್ನುವುದಕಿಂತ ವಿಪರ್ಯಾಸ ಬೇಕೆ? ನನ್ನಂಥ ಸಾಮಾನ್ಯರಿಗೆ ದಾರಿ ತೋರುವ ಗುರುವ ಎಲ್ಲಿ ಹುಡುಕಲಿ ?ಈಗ ನೀನೊಂದು ‘ಬ್ರ್ಯಾಂಡ್’ ಆಗಿದ್ದೀಯಾ ಬಲ್ಲೆಯಾ ?ನಿನ್ನ ವಚನಗಳನ್ನು ತಮಗೆ ಬೇಕಾದಂತೆ, ತಮಗೆ ಬೇಕಾದಲ್ಲಿ ಉದ್ಧರಿಸಿ ಚಪ್ಪಾಳೆ ಗಿಟ್ಟಿಸುವ ನಾಯಕರು ಹೆಚ್ಚುತ್ತಿದ್ದಾರೆ. ನಿನ್ನ ಮೂರ್ತಿಗಳು ಎಲ್ಲೆಡೆ ಪ್ರತಿಷ್ಠಾಪನೆಯಾಗುತ್ತಿವೆ. ಕಡಲಾಚೆಯೂ ನೀನು ಪ್ರಸಿದ್ಧ. ರಾಜಕೀಯ ಹವಣಿಕೆಗಳಿಗೆ ನೀನು ದಾಳವಾಗಿದ್ದು ಮಾತ್ರ ನನಗೆ ಸಂಕಟವುಂಟು ಮಾಡುತ್ತದೆ ಏಕೆಂದರೆ ನೀನು ನಿನ್ನ ಕಾಲದಲ್ಲೂ ರಾಜಕೀಯದಾಟಕ್ಕೆ ದಾಳವಾಗಿದ್ದಿ. ನೀನಾಗಲೀ, ನಿನ್ನ ವಚನಗಳಾಗಲೀ ಧರ್ಮದ ಸೋಂಕಿರದ ಜೀವನಕ್ರಮ, ಸ್ವಾಸ್ಥ್ಯ ಆದರ್ಶ ಸಮಾಜದ ಬೆನ್ನೆಲುಬು ಮತ್ತು ಒಂದು ಅನನ್ಯ ಸಂಸ್ಕೃತಿ ಎಂದು ನನ್ನಂಥ ಸಹಸ್ರಾರು ಸಾಮಾನ್ಯರು ನಂಬಿಕೊಂಡು ಅದನ್ನೇ ಬದುಕಾಗಿ ಮಾಡಿಕೊಂಡಿದ್ದೇವೆ. ಅಂತಹದರಲ್ಲಿ ನಮ್ಮ ಬದುಕನ್ನೇ ದಿಕ್ಕೆಡಿಸುತ್ತಿರುವ ವಿದ್ಯಾವಂತ, ಬುದ್ಧಿವಂತ, ಸುಶಿಕ್ಷಿತ ಎಂದು ಕರೆದುಕೊಳ್ಳುವ ಗುಂಪುಗಾರಿಕೆಯ ಜನರಿಗೆ ನನ್ನಂಥವರ ಧಿಕ್ಕಾರವಿದೆ.ಅಣ್ಣಾ, ಅಂಗೈಯಲ್ಲಿ ದೈವತ್ವವನ್ನು ಕಾಣಿಸಿದ ನಿನ್ನ ಉದಾರತೆ, ಹಿರಿತನ ಇಂಥವರಿಗೆ ಅಂದೂ ಅರ್ಥವಾಗಿರಲಿಲ್ಲ. ಈ ಲಾಭಕೋರ ಢೋಂಗಿಗಳ ನಡುವೆ ನೀನು ಮತ್ತೊಮ್ಮೆ ಹುಟ್ಟಿ ಬರಲು ಸಾಧ್ಯವೆ?

ಬಸವಣ್ಣನಿಗೊಂದು ಪತ್ರ Read Post »

ಇತರೆ, ಜೀವನ

ಬದುಕು ಕಠೋರ

ಅನುಭವ ನಾಗರಾಜ ಮಸೂತಿ ಇವತ್ತು ಬದುಕು ಬಹಳ ಕಠೋರ ಅನಿಸ್ತು. ನಾವೆಲ್ಲ ಮನೆ ಮುಂದಿನ ಗೇಟ್ ಕೂಡ ದಾಟದ ಹಾಗೆ ಮನೆಯಲ್ಲಿಯೇ ಕೂತಿವಿ. ಹಳ್ಳಿ ಹೆಣ್ಣು ಮಗಳು ಮೊಸರು ಮಾರ್ತಾ ಮನೆ ಬಾಗ್ಲಿಗೆ ಬಂದ್ಲು. ನಮವ್ವಗ ಒಂದು ಒಳ್ಳೆ ಅಭ್ಯಾಸ ಏನಂದ್ರ ಯಾರೇ ಬರ್ಲಿ ಕರದ ಕುಂಡರ್ಸಿ ನೀರ ಕೊಟ್ಟ ಮಾತಾಡ್ಸುದು. ವ್ಯಾಪಾರ ಎರಡನೆ ಮಾತು. ಇದು ನಮ್ಮ ಮನೆ ಮಂದಿಗೆ ಹಿರೆರಿಂದ ಬಂದ ಬಳುವಳಿ. ಇರ್ಲಿ ಹಾಂ ಮೊಸರ ಮಾರಕ ಬಂದಾಕಿ ಮಸರು ಕೊಟ್ಲ ರೊಕ್ಕಾನು ತಗೊಂಡು ಕಥೆ ಹೇಳಾಕ ಸುರು ಮಾಡಿದ್ಲ. ಬಾಗಲಕೋಟಿ ಹತ್ರ ಪಕ್ಕದ ಹಳ್ಳಿ ಆಕೆದು . ಕಾಯಿಪಲ್ಯ, ಮೊಸರ, ಹಾಲ ಮಾರೊರು ಎಂಟತ್ತ ಮಂದಿ ಸೇರಿ ಟಾಟಾ ಎಸಿ ಗಾಡಿ ಬಾಡಗಿ ಮಾತಡ್ಕೊಂದ ಬಂದಾರ. ಇಲ್ಲಿ ನವನಗರದಾಗ ಎಲ್ಲೀ ವ್ಯಾಪರಕ್ಕ ಬಿಡವಲ್ಲರು.  ಕೊರೊನಾ ಬಂದೈತಿ ಅಂತ ಹೇಳಿ ಪೋಲಿಸರ ಮುಂಜ ಮುಂಜಾನೆ ಲಾಠಿ ಏಟ್ ಕೊಡಾಕ ಸುರು ಮಾಡ್ಯರಬೆ ಎವ್ವ, ಬುಟ್ಯಾಗಿನ ಕಾಯಿಪಲ್ಯ ಚೆಲ್ಲಾಕತ್ತಾರ, ಗಡಿಗ್ಯಾಗಿನ ಮಸೂರ ಚೆಲ್ಲಿದ್ರ. ಒಬ್ಬ ಗನಮಾಗ ಬಂದ ಕೇಳಿದ ಬೆಣ್ಣಿ ಇತ್ತಬೆ ಅರ್ಧ ಕಿಲೋ ಕೊಟ್ಟ್ಯಾ ಪೋಲಿಸ್ ಬಂದ್ರ ಹಂಗ ಓಡಿ ಹೋದನಬೇ. ರೊಕ್ಕಾನು ಕೊಡ್ಲಿಲ್ಲ, ಡಬ್ಬಿನ ಒಯ್ದಾಬೇ. ಎಡ್ನೂರು ಮುನ್ನೂರ ರೂಪಾಯಿಬೇ ಎವ್ವಾ, ಏನ್ ಮಾಡಬೇಕ ನೋಡ. ಅವ್ವಗ ತಡ್ಯಾಕಾಗಲಿಲ್ಲ ಬೈದ್ಲು ಮನಸು ಹಗರು ಮಾಡ್ಕೊಂಡಳು. ಮೊಸರ ಮಾರಾಕಿಗಿ ಸಮಾಧಾನ ಮಾಡಿದ್ಲ. ಎವ್ವ ಈ ಗಲಾಟ್ಯಾಗ ಯಾಕ್ ಬರ್ತಿ ಸುಮ್ಮನ ಮನ್ಯಾಗ್ ಇರ್ಬಾರ್ದ ಅಂದ್ಲ್. ಎಷ್ಟೇ ಆಗಲಿ ಹಳೆ ಮನುಷ್ಯಾರ ಒಬ್ಬರ ಕಷ್ಟ ತಮ್ಮ ಕಷ್ಟ ಅನ್ನುವಷ್ಟರ ಮಟ್ಟಿಗೆ ಅವರ ಪ್ರತಿಕ್ರಿಯೆ ಇರುತ್ತ. ಅಷ್ಟಕ್ಕ ಸುಮ್ಮನಾಗಲಾರದ ಮೊಸರ ಮಾರೊ ಹಳ್ಳಿ ಹೆಣ್ಣು ಮಗಳು ಒಳ್ಳೆಯದಷ್ಟ ಗೊತ್ತ , ಯಾರಾರ ಏನರ ಅಂದ್ರ ಜಗಳ ಮಾಡ್ತಾರ, ಆದರ ಕೆಟ್ಟದ ಬಯಸಾಂಗಿಲ್ಲ. ನಾವು ಮನ್ಯಾಗ ಕುಂತರ ಜನ ಎಲ್ಲಾ ಏನ್ ತಿನಬೇಕಬೇ ಎವ್ವ , ಬೆಳದಿದ್ನ ಕೆಡಿಸಿ ಏನ ಮಾಡುದೈತಿ ಅಲ್ಲನ ಬೇ? ಏನ ಒಂದೀಟು ತ್ರಾಸ್ ಆದಿತ್ತ ಬಂದ ಹೋಗಾಕ ಅಂದ ಬುಟ್ಟಿ ತೆಲಿ ಮ್ಯಾಲಿ ಹೊತ್ತ ಹೊಂಟ್ಲ. ಅವ್ವ ಹೌದು ನೀ ಕರೆಕ್ಟ್ ಅದಿಯವ, ಕಲ್ತವಕ ಬುದ್ಧಿ ಕಡಿಮೆ ಆಗ ಕತ್ತೈತಿ ಏನ್ ಮಾಡುದವ, ಹುಷಾರ್ ಹೋಗವ ಅಂತ ಹೇಳಿ ಕಳಿಸಿದ್ಲ. ಬದುಕು ಕಠೋರ ನಮ್ಮಂತವರಿಗೆ, ಏನು ಅರಿಯದ ಮುಗ್ಧರಿಗೆ ಅಷ್ಟೇ ಸರಳ. *************

ಬದುಕು ಕಠೋರ Read Post »

ಇತರೆ, ಜೀವನ

ಆಚರಣೆಗಳಲ್ಲಿನ ತಾರತಮ್ಯ

ವಿಚಾರ ಜ್ಯೋತಿ ಡಿ.ಬೊಮ್ಮಾ ದೇವರನ್ನು ನಂಬಿ ಕೆಟ್ಟವರಿಲ್ಲ ಎಂಬ ವಾದವನ್ನು ಒಪ್ಪಬಹುದು.ಆದರೆ ದೈವದ ಹೆಸರಲ್ಲಿ ಆಚರಿಸುವ ಆಚರಣೆಗಳಲ್ಲಿನ ತಾರತಮ್ಯ ಒಪ್ಪಲಾಗದು. ಪೂಜೆಯ ಆಚರಣೆಗಳು ನಮ್ಮ ಮನಸ್ಸಿಗೆ ಸಮಾಧಾನವಾಗಿದ್ದರಷ್ಷೆ ಸಾಲದು ,ಆ ಆಚರಣೆಗಳು ಮತ್ತೊಬ್ಬರ ಮನಸ್ಸಿಗೆ ನೊವನ್ನುಂಟು ಮಾಡಬಾರದು. ನಿರಾಕಾರನನ್ನು ಒಂದೊಂದು ರೂಪ ಕೊಟ್ಟು ಬಟ್ಟೆ ತೊಡಿಸಿ ಅಲಂಕರಿಸಿ ಒಂದೊಂದು ಹೆಸರು ಕೊಟ್ಟು ಪೂಜಿಸುವರಿಗೆ , ದೇವರನ್ನು ತಾವೆ ಸೃಷ್ಟಿಸುತ್ತಿದ್ದೆವೆ ಎಂಬ ಅರಿವಾಗದೆ..! ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕ  ,ಈಗ ಬರುತ್ತಿರುವ ವರಮಹಾಲಕ್ಷಿ ಹಬ್ಬವೂ ಅದಕ್ಕೊಂದು ಉದಾಹರಣೆ.ಲಕ್ಷ್ಮಿ ಎಂದರೆ ಅಡಂಬರದ ಪ್ರತಿಕ , ಭಾರಿ ಸೀರೆ ಉಡಿಸಿ ಒಡವೆ ವಸ್ತ್ರ ಗಳ ಧಾರಣೆ ಮಾಡಿ , ಹೂವಿನ ಮಂಟಪದಲ್ಲಿವಿರಾಜಮಾನಳಾಗಿಸಿ ,ಸುತ್ತಲೂ ದೀಪಗಳ ಅಲಂಕಾರ  ,ತಹರೆವಾರಿ ಅಡುಗೆಗಳ ನೈವೇದ್ಯ ,ವೆರೈಟಿ ತಿಂಡಿಗಳನ್ನು ಮೂರ್ತಿಯ ಮುಂದಿಟ್ಟು ತೃಪ್ತಿ ಪಡಿಸಿ (ಬೇರೆಯವರಿಗೂ ಕರೆದು ತೋರಿಸಿ ) ಅಥವಾ ಪಟ್ಟುಕೊಂಡು ಪೂಜೆಯ ಕಾರ್ಯ ಕೈಗೊಳ್ಳುತ್ತಾರೆ. ಆದರೆ ಅರಸಿನ ಕುಂಕುಮಕ್ಕೆ ಕೇವಲ ಮುತೈದೆಯರನ್ನೂ ಮಾತ್ರ ಕರೆಯಬೇಕು ಎನ್ನುವ ನಿಯಮ ಎಷ್ಟು ಸಮಂಜಸ..,! ಕೇವಲ ಗಂಡನ ಇರುವಿಕೆಯಿಂದಲೆ ಅವಳ ಮೌಲ್ಯ ಅರಿಯುವ ಈ ಸಮಾಜದಲ್ಲಿ  ಹೆಣ್ಣಿಗೆ ತನ್ನದೆಯಾದ ಸ್ವಂತ ಅಸ್ತಿತ್ವ ವೆ ಇಲ್ಲವೆ. ಮದುವೆಯಾದ ಮೇಲೆ ಅವಳು ಗಂಡನಿಂದ ಮುತೈದೆ ಪಟ್ಟ ಪಡೆದುಕೊಳ್ಳುತ್ತಾಳೆ .ಅವನು ಅಳಿದ ಮೇಲೆ ಆ ಪಟ್ಟ ಅವಳಿಂದ ಕಿತ್ತುಕೊಳ್ಳಲ್ಪಡುತ್ತದೆ.ಸಮಾಜವು ಕೂಡ ಅವಳು ಮುತೈದೆಯಾಗಿದ್ದರೆ ಮಾತ್ರ ಅವಳಿಗೆ ಶುಭ ಕಾರ್ಯ ಗಳಲ್ಲಿ ಪ್ರಾಮುಖ್ಯತೆ. ಎಷ್ಟೋ ಮಠಗಳಲ್ಲಿ ಮುತೈದೆಯರ ಕುಂಭಮೇಳ ಮತ್ತು ಮುತೈದೆಯರ ಉಡಿತುಂಬುವ ಕಾರ್ಯ ಕ್ರಮ ಆಯೋಜಿಸುತ್ತವೆ ,ಇಂತಹ ಆಚರಣೆಗಳ ಉದ್ದೇಶ ವೇನು..? ಸಮಾಜದಲ್ಲಿನ ಮೌಡ್ಯಗಳನ್ನು ತೊಲಗಿಸುವ ಪ್ರಯತ್ನ ಮಾಡಬೇಕಾದ ಮಠಗಳೆ ಇಂತಹ ಮೌಡ್ಯಕ್ಕೆ ಒತ್ತು ಕೊಟ್ಟರೆ ,ಬೇಲಿಯೆ ಎದ್ದು ಹೋಲ ಮೈದಂತೆ ಅಲ್ಲವೆ..! ಪೂಜೆಯ ಹೆಸರಿನಲ್ಲಿ ಮುತೈದೆಯರನ್ನು ಮಾತ್ರ ಕರೆದು ಅವರಿಗೆ ಉಡಿ ತುಂಬಿ ಭಾರಿ ಭೋಜನ ಉಣಬಡಿಸಿ (ಮುತೈದೆಯರ ಉಟದ ತಯ್ಯಾರಿ ವಿಧವೆಯರು ಮಾಡಬಹುದು ಆದರೆ  ಅವರು ಬಡಿಸುವದು ಮಾತ್ರ ನಿಷಿದ್ದ ) ತಮ್ಮ ಮುತೈದೆತನ ಧೀರ್ಘ ವಾಗಲೆಂದು ಬೇಡಿಕೊಳ್ಳುತ್ತಾರೆ ,ಇದೊಂದು ಆಶಾದಾಯಕ ಆಚರಣೆ ಆಗಿರಬಹುದು ಅವರವರ ಭಾವದಲ್ಲಿ.ಆದರೆ ಗಂಡನನ್ನು ಕಳೆದುಕೊಂಡ ಸ್ತ್ರೀಯು ತನ್ನನ್ನು ಇಂತಹ ಆಚರಣೆಗಳಿಂದ ದೂರವಿಟ್ಟಿರುವದನ್ನು ಹೇಗೆ ಸಹಿಸಿಯಾಳು. ಒಂದು ಮೂರ್ತಿಗೆ ಅಲಂಕಾರಮಾಡಿ ನೋಡಿ ಸಂತೋಷ ಪಡುವ ನಾವು , ಜೀವಂತವಾಗಿರುವ ಒಂದು ಜೀವ ಈ ಪೂಜೆಯ ಒಂದು ಭಾಗವಾಗಲಾರದೆ ದೂರದಲ್ಲಿ ನಿಂತು ಮೂಕವಾಗಿ ರೋಧಿಸುವ ತಲ್ಲಣದ ಅರಿವು ನಮಗಾಗದೆ..! ಮುತೈದೆಯರಿಗೆ ಮಾತ್ರ ಪ್ರಾಶಸ್ತ್ಯ ಕೊಟ್ಟು ತನ್ನನ್ನು ಕಡೆಗಾಣಿಸುವದರಿಂದ ಅವಳು ಮಾನಸಿಕವಾಗಿ ಕುಗ್ಗತ್ತಾಳೆ ,ಖಿನ್ನಳಾಗುತ್ತಾಳೆ ,ಅವಳ ಇಂತಹ ಸ್ಥಿತಿಗೆ ಈ ರೀತಿಯ ತಾರತಮ್ಯ ದ ಆಚರಣೆಗಳು ಪರೋಕ್ಷವಾಗಿ ಕಾರಣವಾಗುತ್ತವೆ. ಗಂಡನನ್ನು ಕಳೆದುಕೊಂಡ ಹೆಣ್ಣಿಗೆ ಸ್ಥೈರ್ಯ ತುಂಬಿ ಅವಳಲ್ಲಿ ಜೀವನ್ಮುಖಿ ಹುಮ್ಮಸ್ಸು ತುಂಬುವತ್ತ ನಮ್ಮ ಪ್ರಯತ್ನ ವಾಗಬೇಕು.ಅದು ಬಿಟ್ಟು ವಿಧವೆಯರನ್ನೂ ಕಡೆಗಾಣಿಸಿ ಮುತೈದೆಯರನ್ನೂ ವೈಭವಿಕರಿಸುವದು ಯಾವ ನ್ಯಾಯ..! ಯಾವ ದೇವರು ಈ ತಾರತಮ್ಯ ಸೃಷ್ಟಿಸಿದ್ದು..! ದೇವರೆನಾದರೂ ಮಾತಾಡುವಂತಿದ್ದರೆ ಇಂತಹ ಆಚರಣೆಗಳನ್ನು ಅವನು ಖಂಡಿತ ಖಂಡಿಸುತಿದ್ದನೆನೋ.. ನಡೆಸಿಕೊಂಡು ಬಂದ ಪೂಜೆ ಆಚರಣೆಗಳು ಕೆಲವರ ಬದುಕಿನ ಭಾಗವೆ ಆಗಿರುತ್ತವೆ. ಅವನ್ನು ಅಲ್ಲಗಳೆಯಲು ಅವರ ಮನಸ್ಥಿತಿ ಒಪ್ಪದು.ಆದರೆ ಈಗ ಎಲ್ಲರೂ ವಿದ್ಯಾವಂತರು ,ಹಿಂದಿನಿಂದ ಆಚರಿಸಿಕೊಂಡು ಬಂದ ಸ್ಂಪ್ರದಾಯ ಮುಂದುವರೆಸಿಕೊಂಡು ಹೋಗಬೇಕು ಎಂಬ ನಿಯಮವೇನಾದರು ಇದೆಯೆ…! ಆಚರಣೆಗಳಲ್ಲಿನ ಒಳಿತು ಕೆಡಕುಗಳನ್ನರಿತು ಮತ್ತೊಬ್ಬರ ಮನಸ್ಸಿಗೆ ನೋವಾಗದಂತೆ ,ಅಡಂಬರವಿಲ್ಲದೆ ತೋರಿಕೆಯಿಲ್ಲದೆ ,ಪೂಜೆಮಾಡಬಹುದಲ್ಲವೆ. ನಮ್ಮೊಳಗಿನ ನಿರಾಕಾರನು ಅದೆ ಬಯಸುವನು. ***********************************   .

ಆಚರಣೆಗಳಲ್ಲಿನ ತಾರತಮ್ಯ Read Post »

ಇತರೆ, ಜೀವನ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ ಪ್ರಜ್ಞಾ ಮತ್ತಿಹಳ್ಳಿ            ತನ್ನೆಲ್ಲ ಎಲೆಗಳನ್ನುದುರಿಸಿಕೊಂಡು ಒಣಗಿ ನಿಟಾರನೆ ನಿಂತುಕೊಂಡ ಬಿದಿರು ಗಳದಂತಹ ಎಲುಬುಗಳಿಗೆ   ಚರ್ಮ ಸುತ್ತಿ ಇಟ್ಟ ಹಾಗೆ ಭಾಸವಾಗುವ ಅವಳ ಕುತ್ತಿಗೆಯ ನರಗಳು ಹಸಿರು ಕಾಡು ಬಳ್ಳಿಗಳಂತೆ ಉಬ್ಬುಬ್ಬಿ ಗಂಟಲು ಹರಿದು ಹೊರಬಂದು ಬಿಡುತ್ತವೋ ಎಂಬಂತೆ ಕಾಣುತ್ತಿದ್ದವು. ಹಕ್ಕಿಯೊಂದು ಮೊಟ್ಟೆಯಿಡಲು ಮರದ ಕಾಂಡದಲ್ಲಿ ಹುಡುಕಿಕೊಂಡ ಡೊಗರಿನ ಹಾಗೆ ಎಲುಬುಗಳ ನಡುವೆ ಖಾಲಿ ಜಾಗ ಎದ್ದು ಕಾಣುತ್ತಿತ್ತು.  ಬದುಕಿನ ನಲವತ್ತು ವರ್ಷ ಜೊತೆಗಿದ್ದ ಅಸ್ತಮಾ ಅವಳ ಉಸಿರಾಟದ ರೀತಿಯನ್ನೇ ಬೇರೆ ಮಾಡಿಬಿಟ್ಟಿತ್ತು.  ಸಾದಾ ಉಸಿರು ಎಂದರೂ ಅದಕ್ಕೊಂದು ಸುಂಯ್ ಸುಂಯ್ ಸಪ್ಪಳ ಇರುತ್ತಿತ್ತು. ಹಳೆಯ ಹಾರ್ಮೊನಿಯಂ ಜೋರುಜೋರಾಗಿ ತಿದಿಯೊತ್ತಿದರೆ ಬುಸುಗುಟ್ಟುವ ಹಾಗೆ  ಆ ನಲವತ್ತು ವರ್ಷವೂ ಪ್ರತಿ ಸೆಕೆಂಡೂ ಅವಳು ತನ್ನ ಉಸಿರನ್ನು ಪ್ರಯತ್ನಪೂರ್ವಕವಾಗೇ ತೆಗೆದುಕೊಳ್ಳಬೇಕಿತ್ತು. ಮತ್ತು ಆ ಪ್ರತಿ ಸಲದ ಉಸಿರು ಎಳೆಯುವ ಸದ್ದನ್ನೂ ಅವಳ ಕಿವಿಗಳು ಕೇಳಿಸಿಕೊಂಡಿದ್ದವು. ಅವಳನ್ನು ಮೊದಲ ಬಾರಿಗೆ ನೋಡಿದವರು ಥಟ್ಟನೆ ಈ ವಿಲಕ್ಷಣ ಉಸಿರಾಟದ ಸಪ್ಪಳ ಗಮನಿಸಿ ಅನಾರೋಗ್ಯದ ಕುರಿತು ಕೇಳದೇ ಇರಲು ಸಾಧ್ಯವಾಗದಿರುವಷ್ಟರ ಮಟ್ಟಿಗೆ ಆ ಸದ್ದು ತನ್ನ ಇರುವಿಕೆಯನ್ನು ತೋರುತ್ತಿತ್ತು. ಅವಳು ನಾಕು ಮೆಟ್ಟಿಲು ಹತ್ತಿದಾಗಲಂತೂ ಅವಳ ನಾಕಡಿಯ ಪುಟ್ಟ ದೇಹದ ಪ್ರತಿ ಕಣ ಕಣವೂ ಉಸಿರಿಗಾಗಿ ಹಪಹಪಿಸುತ್ತಿರುವಂತೆ ಅನ್ನಿಸಿದರೆ ಆಳಕ್ಕಿಳಿದ ಕಣ್ಣುಗಳು ನೀರಿಂದ ಹೊರತೆಗೆದ ಮೀನುಗಳಂತೆ ಚಡಪಡಿಸುತ್ತಿದ್ದವು.  ಅವಳ ಪುಪ್ಪುಸದಲ್ಲಿ ಸದಾ ತುಂಬಿರುತ್ತಿದ್ದ ಕಫ ಖಾಲಿಯಾಗದ ಅಕ್ಷಯ ಭಂಡಾರದಂತೆ ಕೂತಿದ್ದು ಧಾವಂತದ ಘಳಿಗೆಗಳಲ್ಲಿ ಕೆಮ್ಮಿನ ಕೊನೆಯಲ್ಲಿ ಹೊರಬರುತ್ತಿತ್ತು. ನಿರಂತರ ಸ್ಟೆರಾಯ್ಡಿನ ಸೇವನೆಯ ಅಡ್ಡ ಪರಿಣಾಮವಾಗಿ ಸೊಟ್ಟ ಸೊಟ್ಟಗೆ ಬಗ್ಗಿ ಹೋದ ಬೆರಳುಗಳು ಅವಳು ಬದುಕಿಡೀ ಉಳಿಸಿಕೊಳ್ಳಲು ಹೆಣಗುತ್ತಿದ್ದ ಬಾಂಧವ್ಯಗಳ ಬೇರಂತೆ ನೇತಾಡುತ್ತಿದ್ದವು. ಅದೇ ಬೆರಳಿಂದಲೇ ದೊಡ್ಡ ದೊಡ್ಡ ತಪ್ಪಲೆಗಳ ಹೊತ್ತು ಓಡಿದಂತೆ ದಾಪುಗಾಲಿಕ್ಕುತ್ತ ಬುಸುಬುಸು ಉಸಿರೆಳೆದುಕೊಳ್ಳುತ್ತಲೇ ಕೂಡೊಲೆಗೆ ಬೆಂಕಿ ಹಾಕುತ್ತ ಸೊಟ್ಟ ಬೆರಳಿಂದಲೇ ಕಡುಬಿನ ಕೊಟ್ಟೆ ಕಟ್ಟಿ ಮೊಮ್ಮಕ್ಕಳು ಮರಿಮಕ್ಕಳಾದಿಯಾಗಿ ಹಿಂಡುಗಟ್ಟಲೆ ಜನರನ್ನು ಅನಾಮತ್ತಾಗಿ ಎಪ್ಪತ್ತು ವರ್ಷ ಸಾಕಿಬಿಟ್ಟಳು ಸೀರೆಯುಟ್ಟುಕೊಂಡು ಬಂದ ಇಣಚಿಯಂತಿದ್ದ ನಮ್ಮಜ್ಜಿ.                 ಅಸ್ತಮಾ ಕಾಟಕ್ಕೆ ಅವಳಿಗೆ ರಾತ್ರಿ ಗಡದ್ದು ನಿದ್ದೆ ಅಂತ ಬರುತ್ತಲೇ ಇರಲಿಲ್ಲ. ಒಂದು ರೀತಿಯ ಮಂಪರಿನಲ್ಲೇ ಇರುತ್ತಿದ್ದಳು. ಯಾವುದಾದರೂ ಸಣ್ಣ ಸಪ್ಪಳವಾದರೂ ಎದ್ದು ಬಿಡುತ್ತಿದ್ದಳು. ಅವಳ ಮಂಚದ ಪಕ್ಕದಲ್ಲಿ ಕಿಡಕಿಯ ಮೇಲೆ ಯಾವಾಗಲು ಒಂದು ಬ್ಯಾಟರಿ, ಅಮ್ರತಾಂಜನದ ಡಬ್ಬಿ, ಬಾಯೊಳಗೆ ಸ್ಪ್ರೇ ಮಾಡಿಕೊಳ್ಳುವ ಅಸ್ತಮಾದ ಔಷಧಿ ಇರುತ್ತಿದ್ದವು. ಹಾಗೆ ನಿದ್ದೆಯಲ್ಲದ ಎಚ್ಚರವಲ್ಲದ ಮಂಪರಿನಲ್ಲಿ ತೆರೆದಿಟ್ಟ ಕಿಡಕಿಯಾಚೆಗಿನ ನಿಶಾ ಜಗತ್ತಿನ ಶಬ್ದಗಳನ್ನು ಆಲಿಸುತ್ತ ತನ್ನ ಉಸಿರಿಗೆ ತಾನೇ ಕಾವಲೆಂಬಂತೆ ಅಷ್ಟೆಲ್ಲ ವರ್ಷ ಬದುಕಿದರೂ ಒಂದೇ ದಿನಕ್ಕೂ ರೋಗ ಕೊಟ್ಟ ವಿಧಿಯನ್ನಾಗಲೀ, ಗುಣ ಮಾಡದ ಔಷಧಿಯನ್ನಾಗಲೀ, ತನ್ನ ಸ್ಥಿತಿಯ ಸಂಕಟವನ್ನಾಗಲೀ ಬೈದಿದ್ದು ಇಲ್ಲವೇ ಇಲ್ಲ. ಇದು ಹೀಗೇ ಇರಬೇಕು ಮತ್ತು ಇದು ಹೀಗಿದ್ದರೇ ಸರಿ ಎನ್ನುವಷ್ಟು ಒಗ್ಗಿಕೊಂಡು ಅದರಲ್ಲೇ ಮನಸ್ವೀ ಕೆಲಸ, ತಿರುಗಾಟ, ಕಾರ್ಯ-ಕಟ್ಟಲೆ ಓಡಾಡಿದ್ದೆಂದರೆ ಅದಕ್ಕೆ ಅವಳ ನಾಕಡಿ ದೇಹದ ಪ್ರತಿ ಅಣುಅಣುವಿನಲ್ಲಿ ತುಂಬಿದ್ದ ಜೀವಶೃದ್ಧೆ ಮತ್ತು ಏಳು ಜನ್ಮಕ್ಕಾಗುವಷ್ಟಿದ್ದ ಆತ್ಮವಿಶ್ವಾಸ ಕಾರಣ.              ಆ ಕಾಲಕ್ಕೆ ಮನೆಪಾಠ ಮಾಡಿಸಿಕೊಂಡು ಎಲ್ ಎಸ್ ಓದಿದ್ದಳು. ಆದ್ದರಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಹಿಂದಿಗಳೂ ಬರುತ್ತಿದ್ದವು. ತೀರಾ ಸಣ್ಣ ವಯಸ್ಸಿಗೆ ಮದುವೆಯಾಗಿ ಬಂದು ಏಳು ಜನ ಮೈದುನ, ನಾಲ್ವರು ನಾದಿನಿಯರ ಸಂಸಾರ ಸೇರಿಕೊಂಡು ಅತ್ತೆ ಮಾವನ ಮನೋಭಿಲಾಷೆ ತಿಳಿದು ವ್ಯವಹರಿಸುತ್ತ ನಾಲ್ಕು ಮಕ್ಕಳ ತಾಯಾಗಿ ಆಮೇಲೆ ಗಂಡ ಪ್ರತ್ಯೇಕ ಜಮೀನು ಮಾಡಲು ಹೊರಟಾಗ ಅಲ್ಲಿಯ ಅಟ್ರಾಕಣಿ ಬಿಡಾರಕ್ಕೆ ಸ್ಥಳಾಂತರಗೊಂಡು ಒಂದಿದ್ದರೆ ಒಂದಿಲ್ಲದ ಸಂಸಾರ ನಡೆಸುತ್ತ ಬದುಕು ಕಳೆದಳು. ತೋಚಿದ್ದನ್ನು ಆ ಕ್ಷಣಕ್ಕೆ ಮಾಡಿಬಿಡುವ ಅಜ್ಜ ಪರಿಣಾಮಗಳನ್ನು ಆದಮೇಲೆ ಅನುಭವಿಸುವ ಜಾಯಮಾನದವ. ಯೋಜನೆ, ಸಮಾಲೋಚನೆ, ಯಾರನ್ನಾದರೂ ಹೇಳಿ ಕೇಳುವ ಪ್ರವೃತ್ತಿ ಇಲ್ಲವೇ ಇಲ್ಲ. ಅವನ ಎಲ್ಲಾ ಯಡವಟ್ಟುತನಗಳ ಪರಿಣಾಮ ಉಣ್ಣುವಾಗ ಮಾತ್ರ ಅಜ್ಜಿಗೆ ಪಾಲು. ಮಾಡುವಾಗ ಅವಳೇನಾದರೂ ಸಲಹೆ ಸೂಚನೆ ಕೊಟ್ಟರೆ ಹೀನಾಯದ ಮೂದಲಿಕೆ ಕಟ್ಟಿಟ್ಟ ಬುತ್ತಿ. ಆರಡಿ ಎತ್ತರದ ದೊಡ್ಡ ಗಂಟಲಿನ ಪ್ರಚಂಡ ಧೈರ್ಯದ ಆಸಾಮಿ. ಹಾಗೊಮ್ಮೆ ಎಂದಾದರೂ ಜೋಗದ ತಡಸಲಿಗೆ ಬಂಡೆಯಿಂದ ಧುಮುಕಲು ಭಯವಾದರೆ ತನ್ನ ಧೈರ್ಯ ಕಡ ಕೊಡುವಂತಿದ್ದ.  ಇವಳು ಅವನೆದುರಿಗೆ ಬಿರುಮಳೆಯಲ್ಲಿ ತೊಯ್ದ ಗುಬ್ಬಚ್ಚಿ. ಹಾಗಂತ ಅವಳು ಅನ್ನಿಸಿದ್ದನ್ನು ಆಡದೇ ಬಿಟ್ಟವಳೇ ಅಲ್ಲ. ಅವನೆಷ್ಟೇ ಬೈದು ಕೂಗಿದರೂ ತನ್ನ ಅನಿಸಿಕೆಯನ್ನು ಹೇಳಿಯೇ ಸಿದ್ದ. ಅವನ ಕಿವಿಯೋ ಯಾವುದೋ ಅವಘಡದಲ್ಲಿ ಕೆಪ್ಪಾಗಿತ್ತು. ಇವಳು ಅವನ ಮತ್ತೊಂದು ಕಿವಿಯ ಹತ್ತಿರ ಕೂಗಿಕೂಗಿ ಹೇಳಬೇಕು. ಅವನು ಮೊದಲು ಆಂ ಆಂ ಎಂದು ಆಮೇಲೆ ಕೇಳಿದ ನಂತರ ಅವಳಿಗೆ ಯದ್ವಾ ತದ್ವಾ ಬಯ್ಯಬೇಕು. ನಾವೆಲ್ಲ ಮೊಮ್ಮಕ್ಕಳು ದೊಡ್ಡವರಾದಮೇಲೂ ಹೀಗೇ. ಪಾಪ ನಮ್ಮೆದುರಿಗೆ ಅವಳಿಗೆ ಪ್ರಚಂಡ ಅವಮಾನ ಆಗುತ್ತಿತ್ತು. ಹೆಂಡತಿಯ ಮಾತನ್ನು  ಎಂದೆಂದೂ ಕೇಳತಕ್ಕದ್ದಲ್ಲ ಅಂತ ಅದ್ಯಾವ ಪುರುಷೋತ್ತಮ ದೇವರು ಅವನಿಗೆ ಪ್ರಮಾಣ ಮಾಡಿಸಿ ಕಳಿಸಿದ್ದನೋ ಕಡೆತನಕ ಹಾಗೇ ಇದ್ದ. ತನ್ನ ನಿರ್ಧಾರವನ್ನು ಖಡಕ್ಕಾಗಿ ಹೇಳಿ ಮಾತ್ರ ರೂಢಿಯಿರುವ, ಯಾರ ಮಾತನ್ನು ಕೇಳಿ ಗೊತ್ತಿಲ್ಲದವರಿಗೆ ತಾವು ಕೆಪ್ಪರಾಗಿದ್ದೂ ಗೊತ್ತಾಗುವ ಸಂಭವ ಕಡಿಮೆ. ಯಾಕೆಂದರೆ ಅವರು ಕಿವಿಯನ್ನು ಬಹಳ ಕಡಿಮೆ ಮತ್ತು ಗಂಟಲನ್ನು ಬಹಳ ಜಾಸ್ತಿ ಉಪಯೋಗಿಸುತ್ತಿರುತ್ತಾರೆ.            ಆರಂಭದ ದಿನಗಳಲ್ಲಿ ಬ್ರಿಸ್ಟಾಲ್ ಸಿಗರೇಟು ಸೇದುತ್ತಿದ್ದ ಅಜ್ಜ ಸಾಕಷ್ಟು ಖಾರ ಕೂಡ ತಿನ್ನುತ್ತಿದ್ದ. ಆಮೇಲೆ ಅಸಿಡಿಟಿ ಹೆಚ್ಚಾಗಿ ಕರುಳು ಹುಣ್ಣು ಆದಮೇಲೆ ಎಲ್ಲಾ ಬಿಟ್ಟ. ಮಲ್ಲಾಡಿಹಳ್ಳಿಗೆ ಹೋಗಿ ಯೋಗಾಸನ ಕಲಿತು ಬಂದ. ಒಂದು ದಿನವೂ ತಪ್ಪಿಸಲೇ ಇಲ್ಲ. ಅಜ್ಜಿ ತನ್ನ ಅಸ್ತಮಾಕ್ಕಾಗಿಯೂ ಔಷಧ ಪಡೆದು ಪ್ರಾಣಾಯಾಮ, ಯೋಗಾಸನ ಕಲಿತಳು. ಹೋದಹೋದಲ್ಲಿ ಹೆಂಗಸರಿಗೆಲ್ಲ ಕರೆಕರೆದು ಕಲಿಸುತ್ತಿದ್ದಳು. ಮಗಳ ಮನೆ, ಮೊಮ್ಮಗಳ ಮನೆ ಅಕ್ಕಪಕ್ಕದ ಹೆಂಗಸರೆಲ್ಲ ಅವಳ ಶಿಷ್ಯರೇ. ಅಜ್ಜ ಪ್ರತಿ ರಾತ್ರಿ ಏಳುವರೆಯೊಳಗೆ ಊಟ(ಒಣ ರೊಟ್ಟಿ, ಕಾಯಿಸುಳಿ, ಬಿಸಿ ಅನ್ನ-ಹಾಲು)ಮುಗಿಸಿ ಮಲಗಿ ಬಿಡುತ್ತಿದ್ದ. ಒಂಬತ್ತೆಂದರೆ ಅವನಿಗೆ ಮಧ್ಯರಾತ್ರಿ. ಬೆಳಿಗ್ಗೆ ನಾಕೂವರೆಗೆ ಎದ್ದು ದಡ ದಡ ಬಾಗಿಲು ಹಾಕಿ ತೆಗೆದು ಯೋಗಾಸನ ಮಾಡುತ್ತಿದ್ದ. ಓಂ ಎಂದು ಧ್ಯಾನ ಶುರು ಮಾಡಿದನೆಂದರೆ ಜೋಗದ ಕಾಡಿನ ಪ್ರಾಣಿಗಳಿಗೆಲ್ಲ ಅಲಾರಾಂ ಕೂಗಿದಂತಾಗುತ್ತಿತ್ತು. ಅಜ್ಜಿ ಎದ್ದು ಕೆಂಪಕ್ಕಿ ಗಂಜಿ ತಿಂಡಿ ಚಾ ಅಂತೆಲ್ಲ ತಯಾರಿ ಮಾಡಬೇಕು. ಬೆಳಿಗ್ಗೆ ಏಳೆಂದರೆ ಎಲ್ಲಾ ರೆಡಿ. ನಸುಕಿನ ಆರು ಗಂಟೆಗೆ ಅಜ್ಜನ ರೆಡಿಯೊ ಶುರುವಾಗುತ್ತಿತ್ತು. ದಟ್ಟ ಕಾಡಿನ ಕಣಿವೆಯೊಳಗೆ ಅದು ಹೇಗೆ ರೆಡಿಯೊ ತರಂಗಗಳು ಬರಲು ಸಾಧ್ಯ? ಗೊರಗೊರ ಸಪ್ಪಳದ ನಡುನಡುವೆ ಚಿಂತನ. ರೈತರಿಗೆ ಸಲಹೆ, ಪ್ರದೇಶ ಸಮಾಚಾರ ಇಷ್ಟನ್ನು ಕೇಳಿ ಅಜ್ಜ ತಿಂಡಿಗೆ ಬರುತ್ತಿದ್ದ. ಸಂಜೆ ಏಳಕ್ಕೆ ಮತ್ತೆ ರೇಡಿಯೊ ಗೊರಗೊರ. ಕೃಷಿರಂಗದಲ್ಲಿ ಬಂದಲಿ ಎತ್ತ ಕಾಳಿಂಗ ಎತ್ತ ಮಾಲಿಂಗ ಅಂತೆನೋ ಅದರ ಟೈಟಲ್ ಹಾಡು ಬರುತ್ತಿತ್ತು. ಯುವವಾಣಿಯ ಹಿನ್ನೆಲೆ ಸಂಗೀತ ಬಹಳ ಚೆನ್ನಾಗಿರುತ್ತಿತ್ತು. ಆದರೆ ಅದು ಅಜ್ಜನ ಊಟದ ಹೊತ್ತು ಪಟ್ಟನೆ ರೆಡಿಯೊ ಆರುತ್ತಿತ್ತು. ಬೀಟೆಯ ಹಳೆ ಕುರ್ಚಿ ಹಿಂದಕ್ಕೆ ಸರಿದ ಸಪ್ಪಳ. ಆ ಕೋಣೆಯ ಲೈಟು ಆರಿಸಿ ಡಬಾರನೆ ಅಜ್ಜ ಬಾಗಿಲು ಹಾಕುತ್ತಿದ್ದ. ತಕ್ಷಣ  ಒಳಗಿನ ಹೆಣ್ಣು ಮಕ್ಕಳಿಗೆ ಸಿಗ್ನಲ್. ಒರೆದಿಟ್ಟ ರೊಟ್ಟಿ ಕಾವಲಿಗೆ ಹಾಕಿ ತಾಟು ರೆಡಿ ಮಾಡಿ ಅಂತ. ಇಬ್ಬಿಬ್ಬರು ಸೊಸೆಯರಿದ್ದರೂ ಅಜ್ಜ ಬದುಕಿದ್ದ ಅಷ್ಟೂ ದಿನ ಅವನ ಕಿರಿಕಿರಿಯ ಸೇವೆಗೆ ಅಜ್ಜಿ ತಾನೇ ಹೋಗುತ್ತಿದ್ದಳು. ಅವಳು ಮಗಳ ಮನೆಗೆ ಹೋದಾಗ ಅಜ್ಜ ಸಾಕಿದ ಬೆಕ್ಕಿನ ಹಾಗಿರುತ್ತಿದ್ದ. ಸೊಸೆಯರಿಗೆ ಚೂರೂ ಕಿರಿಕಿರಿ ಮಾಡುತ್ತಿರಲಿಲ್ಲ. ಅದಕ್ಕೆ ದೊಡ್ಡ ಸೊಸೆ ಅವನ ಕಾಟ ಹೆಚ್ಚಾದಾಗ ಅತ್ತೆಗೆ ನೀವು ಮಗಳ ಮನೆಗೆ ಹೋಗಿದ್ದು ಬನ್ನಿ ಎಂದು ಸಲಹೆ ಕೊಡುತ್ತಿದ್ದಳು. ಅಜ್ಜಿ ಅಜ್ಜನಿಗೂ ಉಳಿದ ಜಗತ್ತಿಗೂ ಮಧ್ಯದ ಸ್ಟೆಬಿಲೈಸರ ಇದ್ದ ಹಾಗಿದ್ದಳು. ಅವನ ಕೋಪ ತಾಪ ತಿಕ್ಕಲುಗಳನ್ನೆಲ್ಲ ತಾನೇ ಪಡೆದು ತಡೆದು ಬಿಡುತ್ತಿದ್ದಳು. ಉಳಿದವರು ಸುರಕ್ಷಿತರಾಗುತ್ತಿದ್ದರು. ಹಾಗಂತ ಗಂಡ ಹೇಗಿದ್ದರೂ ಏನು ಮಾಡಿದರೂ ಸರಿ ಎನ್ನುವ ಸತಿ ಶಿರೋಮಣಿ ಖಂಡಿತ ಆಗಿರಲಿಲ್ಲ. ಅವನ ಲೋಪದೋಷಗಳ ಸಂಪೂರ್ಣ ಅರಿವಿತ್ತು. ಯಾರ ಜೊತೆಗಾದರೂ ಅಜ್ಜ ಜಗಳಾಡಿದರೆ ಅಥವಾ ಅಕ್ಸಿಡೆಂಟ ಮಾಡಿಕೊಂಡು ಬಂದರೆ ಇವನದೇ ತಪ್ಪಿರುತ್ತದೆಯೆಂದು ಅಂದಾಜು ಮಾಡಿ ಹೇಳುತ್ತಿದ್ದಳು. ಎಂಭತ್ತರ ಇಳಿ ವಯಸ್ಸಿನಲ್ಲೂ ತಲೆಗೆ ರುಮಾಲು ಸುತ್ತಿಕೊಂಡು ಯಮವೇಗದಲ್ಲಿ ಬೈಕು ಹತ್ತಿ ಹೊಂಟು ಬಿಡುತ್ತಿದ್ದ. ಡುಗುಡುಗು ಶಬ್ದ ಕೇಳಿ ಕಿಡಕಿಯಲ್ಲಿಣುಕಿ ಬೈಕು ಹೋದ ದಿಕ್ಕು ನೊಡಿ ಅವನೆಲ್ಲಿಗೆ ಹೋಗಿರಬಹುದು ಅಂತ ಅಂದಾಜು ಮಾಡಬೇಕಿತ್ತೇ ಹೊರತು ಹೇಳಿಕೇಳಿ ಹೋಗುವ ಕ್ರಮ ಇರಲೇ ಇಲ್ಲ. ಆಸುಪಾಸಿನ ಜನ ಅವನ ಬೈಕಿಗೆ ದಾರಿ ಕೊಟ್ಟು ತಾವಾಗೇ ಸರಿಯುತ್ತಿದ್ದರು. ಗೌರವದಿಂದಲ್ಲ ಪ್ರಾಣದಾಸೆಗೆ. ಸಣ್ಣಪುಟ್ಟ ಕೋಳಿ ದನ ತಾಗುವುದು ಎಲ್ಲಾದರೂ ಡಿಕ್ಕಿಯಾಗುವುದು ಮಾಮೂಲೇ ಆಗಿತ್ತು. ಯಾರೂ ಅವನ ಹಿಂದೆ ಕೂರಬಾರದೆಂದು ಹೆಂಗಸರು ಮಕ್ಕಳಿಗೆ ತಾಕೀತು ಮಾಡಲಾಗಿತ್ತು. (ಈ ರೀತಿಯ ಆತ್ಮರಕ್ಷಣೆಯ ಕ್ರಮಗಳ ವಕ್ತಾರ ಅವನ ಅಳಿಯನಾಗಿದ್ದ)               ಕಾಡಿನ ನಡುವೆ ಪೇಟೆಯ ಸವಲತ್ತುಗಳಿಂದ ದೂರವಾಗಿ ಬದುಕುತ್ತಿದ್ದ ಕಾರಣಕ್ಕೋ ಅಥವಾ ಯಾವುದಕ್ಕೂ ಕಾಯದ ಜೀ ಎನ್ನದ ಸ್ವಭಾವಕ್ಕೋ ಅಜ್ಜ ಸ್ವಾವಲಂಬಿಯಾಗಿದ್ದ. ಹಳೆ ಟಯರಿನಿಂದ ಚಪ್ಪಲಿ ಮಾಡಿಕೊಳ್ಳುತ್ತಿದ್ದ. ಹರಿದ ಕಂಬಳಿ ಕತ್ತರಿಸಿ, ಹೊಲಿದು ಕೋಟು ಟೊಪ್ಪಿ ಮಾಡಿಕೊಳ್ಳುತ್ತಿದ್ದ. ಬೈಕು, ಪಂಪುಸೆಟ್ಟು, ಟ್ರಾನ್ಸಫರ‍್ಮರು ಎಲ್ಲದರ ರಿಪೇರಿ ಅತಿ ಚೆನ್ನಾಗಿ ಮಾಡುತ್ತಿದ್ದ. ಅವನ ಗಂಡು ಮಕ್ಕಳು ಈ ಎಲ್ಲಾ ವಿದ್ಯೆಗಳಲ್ಲಿ ಪಾರಂಗತರೇ. ಆದರೆ ಎಲ್ಲರಿಂದಲೂ ಸಾಮೂಹಿಕ ನಿಂದನೆಗೆ ಗುರಿಯಾದ ಅಜ್ಜನ ವಿದ್ಯೆಯೆಂದರೆ ಮೊಮ್ಮಕ್ಕಳ ಕೂದಲು ಕತ್ತರಿಸುವ ಹಜಾಮತಿ. ಅವನಿಗೆ ಗಂಡು ಹುಡುಗರು ಉದ್ದ ಕೂದಲು ಬಿಟ್ಟುಕೊಂಡು ತಿರುಗಿದರೆ ಕಂಡಾಪಟ್ಟೆ ಸಿಟ್ಟು ಬರುತ್ತಿತ್ತು. ಬಾರಾ ಎಂದು ಕರೆದು ಕೂರಿಸಿಕೊಂಡು ಕೈಗೆ ಸಿಕ್ಕಿದ ಕತ್ತರಿಯಿಂದ ನಿರ್ದಯವಾಗಿ ಕತ್ತರಿಸುತ್ತಿದ್ದ. ಕತ್ತರಿಯ ಮೊಂಡುತನ, ಅಜ್ಜನ ನೇತ್ರಗಳ ಮಂದತನ ಎರಡೂ ಕೂಡಿ ಭಯಂಕರವಾದ ಆಕಾರದಲ್ಲಿ ಮೆಟ್ಟಿಲು ಮೆಟ್ಟಿಲಾಗಿ ಅಲ್ಲಲ್ಲಿ ವಿರಳ ಭೂಮಿಯಾಗಿ ಮೊಮ್ಮಕ್ಕಳ ತಲೆ ತಯಾರಾಗುತ್ತಿತ್ತು. ಅಜ್ಜನ ಗಂಟಲಿಗೆ ಹೆದರುವ ಆ ಹುಡುಗರು ಉಕ್ಕಿ ಬರುವ ಅಳುವನ್ನು ಭಯಕ್ಕೆ ವರ್ಗಾಯಿಸಿ ನಡುಗುತ್ತ ಕೂರುತ್ತಿದ್ದರು. ಮತ್ತೆ ಅವರನ್ನು ಪಾರು ಮಾಡಲು ಅಜ್ಜಿಯೇ ಓಡಿ ಬರಬೇಕಿತ್ತು. ಕಡೆಗೆ ಅವಳೇ ಮೊಮ್ಮಕ್ಕಳಿಗೆ ಎಂದೆಂದೂ ಅಜ್ಜ ಹಜಾಮತಿಗೆ ಕರೆದರೆ ಹೋಗಬಾರದೆಂದು ತಾಕೀತು ಮಾಡಬೇಕಾಯಿತು. ಕಡೆಗಾಲದಲ್ಲಿ ಅಜ್ಜನಿಗೆ ಕ್ಯಾನ್ಸರ್ ಆದಾಗ ಅವನ ತಿಕ್ಕಲು ನಿರ್ಧಾರಗಳನ್ನು ಸಹಿಸಿಕೊಂಡು ಕ್ಯಾನ್ಸರ್ ಆಸ್ಪತ್ರೆ ರೇಡಿಯೇಷನ್ ಅಂತೆಲ್ಲಾ ಅಲೆಯುವಾಗ ಅವಳಿಗೆ ತನ್ನ ರೋಗದ ಬಗ್ಗೆ ಮರೆತೇ ಹೋಗಿತ್ತು. ಮುರುಟಿದ ಬೆರಳುಗಳ ಕಾಲನ್ನು ಅಡ್ಡಡ್ಡ ಹಾಕುತ್ತ ಏದುಸಿರು ಬಿಡುತ್ತ ಆಸ್ಪತ್ರೆಯ ಮೆಟ್ಟಿಲನ್ನು ಗೊಣಗದೇ ಹತ್ತಿಳಿದಳು.                ಅನಾಮತ್ತಾಗಿ ಅರವತ್ತು ವರ್ಷ ಸಂಸಾರ ಮಾಡಿದ ಅಜ್ಜನ ಜೊತೆಗೆ ಅವನೆಲ್ಲ ಗುಣಸ್ವಭಾವಗಳೊಂದಿಗೆ ಏಗುವುದೇ ಬದುಕಾಗಿಬಿಟ್ಟವಳಿಗೆ ಅವನ ಇಲ್ಲದಿರುವಿಕೆಯಿಂದ ಉಂಟಾದ ಶೂನ್ಯ ತುಂಬಿಕೊಳ್ಳುವುದು ಕಷ್ಟವಾಗಿರಬೇಕು. ಅಜ್ಜನ ಸೇವೆ ಅವಳ ದಿನಚರಿಯ ಎಷ್ಟು ದೊಡ್ಡ ಭಾಗವಾಗಿತ್ತೆಂದು ಗೊತ್ತಾಗುವಾಗ ಅದರ ಖಾಲಿತನ ಭರಿಸುವುದು ಸಮಸ್ಯೆಯಾಗಿಬಿಟ್ಟಿತು. ನಿಧಾನಕ್ಕೆ ಅಸ್ತಮಾ ನೆನಪಾಯಿತು. ದುಡಿಯಲಿಕ್ಕೇನು ಉಳಿದಿಲ್ಲವೆಂಬಂತೆ ಅಶಕ್ತತೆ ಆವರಿಸಿತು. ಸ್ಟೆರಾಯ್ಡಿನ ಧಾಳಿಗೆ ಶರಣಾದ ಎಲುಬುಗಳು ನೋಯಲು

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ Read Post »

ಇತರೆ, ಜೀವನ

ಕಾಲ ಎಂದಿಗೂ ನಿಲ್ಲುವದಿಲ್ಲ

ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ. ಹೀಗಿತ್ತು,ಹಾಗಿತ್ತು,ಏನೋ ನಡೆದಿತ್ತು, ಎಂದು ಇತಿಹಾಸ ಪುಟಗಳಿಂದ ಅಷ್ಟೊ ಇಷ್ಟೊ ತಿಳಿಯುತ್ತೇವೆ,ಮತ್ತೊಂದಿಷ್ಟು ನಮ್ಮ ಊಹೆ. ಕಾಲದ ಜೊತೆಗೆ ಎಲ್ಲವೂ ಉರುಳುತ್ತವೆ ಎನ್ನುವದು ನಿತ್ಯ ಸತ್ಯ. ಸವೆದ ಹೆಜ್ಜೆಗಳ ಜಾಡು ಎಷ್ಟರ ಮಟ್ಟಿಗೆ ಇಂದು ಉಳಿದುಕೊಂಡಿದೆ.ಎಲ್ಲವೂ ಮಸುಕಾಗುತ್ತಲೇ ಹೋಗುತ್ತದೆ. ಹೊಸ ನೀರಿಗೆ ಹಳೆಯ ನೀರು ಕೊಚ್ಚಿಹೋಗಿ ಸಮುದ್ರಸೇರಿ ಅಸ್ತಿತ್ವವನ್ನೇ ಕಳೆದುಕೊಂಡಂತೆ. ಆಳಿದ ರಾಜ, ಕಟ್ಟಿದ ಕೋಟೆ,ಜಾರಿಯಾದ ನಿಯಮ,ತ್ಯಾಗದ ಬದುಕು,ಮಾಡಿದ ಯುದ್ಧ ಮಹಾ ಮಹಾ ರೋಗ, ಪ್ರತಿಯೊಂದು ಅಂದರೆ ಪ್ರತೀಯೊಂದೂ ಕಾಲ ತನ್ನ ಗರ್ಭದೊಳಗೆ ಎಲ್ಲವನ್ನೂ ಕರಗಿಸಿ ಬಿಡುತ್ತದೆ.ಮರೆಸಿ ಬಿಡುತ್ತದೆ. ಕಾಲಕ್ಕೆ ಮಾತ್ರ ಆ ಶಕ್ತಿ ಇರುವದು. ಇಷ್ಟೆಲ್ಲ ಗೊತ್ತಿದ್ದೂ ನಾವೇಕೆ ಪ್ರತೀ ಸಂದರ್ಭದಲ್ಲೂ ಭಯ ಬೀಳುತ್ತೇವೆಯೋ ಗೊತ್ತಿಲ್ಲ. ಇಂದು ಇದ್ದಂತೆ ನಾಳೆ ಇರಲಾರದು ನಿತ್ಯವೂ ಬೆಳಗುವ ಸೂರ್ಯ ಹೊಸಭರವಸೆಯನ್ನಂತೂ ತರುತ್ತಾನೆ. ಆದರೆ ಅದಕ್ಕೆ ತರೆದುಕೊಳ್ಳುವ ಮನಸ್ಥಿತಿಯಾಗಲಿ, ದಾರಿಯಾಗಲಿ ನಮಗೆ ಗೋಚರಿಸುವದೇ ಇಲ್ಲ. ನಾಳೆ ನಮಗೇನಾಗುತ್ತದೋ,ನೌಕರಿ ಉಳಿಯುತ್ತದಾ? ಮನೆ ಖರೀದಿಸಲು ಆಗುತ್ತದಾ? ಏನೇನೋ ಕೆಲಸಗಳನ್ನು ಎತ್ತಿಟ್ಟುಕೊಂಡಿದ್ದೆ ಅದನ್ನೆಲ್ಲ ಮುಗಿಸುತ್ತೇನಾ? ಅಕಸ್ಮಾತ್ ಸತ್ತೇ ಹೋದರೆ!? ನಮ್ಮ ಆಲೋಚನೆಗಳು ಹೀಗೆ ಒಂದರ ಹಿಂದೊಂದು ಗಿರಕಿ ಹೊಡೆಯುತ್ತಲೇ ಹೋಗುತ್ತದೆ. ಬೇಕು ಎಲ್ಲವೂ ಬದುಕಿರುವವರೆಗೆ ನಿಜ ಆದರೆ ಬದುಕುವದೇ ಆಸೆಗಳಿಗೆ ಅಂತಾಗಬಾರದು ನಮ್ಮ ಸಮಯ ಯಾವ ಕ್ಷಣ ಬೇಕಾದರೂ ಮುಗಿಯಬಹುದು ಅದಕ್ಕೊಂದು ಸಿದ್ದತೆ ಸದಾ ಬೇಕು. ಬದುಕು ನಶ್ವರ ಎಂದು ಎದ್ದು ಹೊರಟ ಬುದ್ದನನ್ನು ನಾವು ಪ್ರೀತಿಸುತ್ತೇವೆ, ಆದರೆ ಅವನ ತತ್ವಗಳನ್ನು ಮರೆಯುತ್ತೇವೆ. ಜಗತ್ತಿಗೆ ಬರುವ ಅಪಾಯಗಳು ಇಂದು ನಿನ್ನೆಯದಲ್ಲ ಅಯಾಯಾ ಕಾಲಕ್ಕೆ ತಕ್ಕಂತೆ ಗಂಡಾಂತರಗಳು,ಅವಘಡಗಳು, ಪ್ರಕೃತಿ ವಿಕೋಪಗಳು,ಸಾವು ನೋವುಗಳು ಸಂಭವಿಸುತ್ತಲೇ ಬಂದಿದೆ. ಮತ್ತೆ ಹೊಸದಾಗಿ ರೂಪಗೊಂಡಿದೆ ಕೂಡಾ ಒಮ್ಮೆ ಪ್ರಳಯ ಕಾಲ ಸನ್ನಿಹಿತ ವಾದಾಗ  ವೈವಸ್ವತ ಮನುವನ್ನು ಕುರಿತು ವಿಷ್ಣು ಹೇಳುತ್ತಾನೆ. ಸದ್ಯದಲ್ಲೇ ಮಹಾ ಪ್ರಳಯ ವೊಂದು ಸಂಭವಿಸಲಿದೆ ಒಂದು ದೊಡ್ಡ ಹಡಗನ್ನು ತೆಗೆದುಕೊಂಡು ಅದರಲ್ಲಿ ವೇದಗಳನ್ನೂ, ಕೆಲವು ಪ್ರಾಣಿಗಳನ್ನೂ,ಸಸ್ಯಗಳ ಬೀಜಗಳನ್ನೂ, ಶೇಖರಿಸಿಡು. ನೀನು ಮತ್ತು ನಿನ್ನ ಪತ್ನಿ ಅದರೊಳಗೆ ಜೀವಿಸಿ.  ಆ ಹಡಗಿನ ರಕ್ಷಣೆ ನನ್ನದು ಎನ್ನುತ್ತಾನೆ. ಒಂದು ದಿನ ಇಡೀ ಭೂಮಿಯೇ ನೀರಿನಿಂದ ತುಂಬಿ ಮಹಾಪ್ರಳಯವೊಂದು ಸಂಭವಿಸಿಯೇ ಬಿಡುತ್ತದೆ. ವಿಷ್ಣು ಮೀನಿನ ರೂಪದಲ್ಲಿ ಬಂದು ಹಡಗನ್ನು ತನ್ನ ಕೋರೆಹಲ್ಲಿಗೆ ಕಟ್ಟುವಂತೆ ಮನುವಿಗೆ ಹೇಳಿ ಪ್ರವಾಹಕ್ಕೆ ನುಚ್ಚು ನೂರಾಗುವಂತಿದ್ದ ಹಡಗಿಗೆ ರಕ್ಷಣೆ ಕೊಡುತ್ತಾನೆ.  ವರ್ಷಗಳ ನಂತರ ಪ್ರವಾಹ ತಗ್ಗಿದ ಮೇಲೆ ಮತ್ತೆ ಸೃಷ್ಟಿಯ ಕಾರ್ಯ ನಿಧಾನವಾಗಿ ಆರಂಭವಾಗುತ್ತದೆ. ಅದೇ ಕೂಡಿಟ್ಟ ಬೀಜಗಳು ಮನುವಿನ ಸಂಸಾರ. ಅಲ್ಲಿಂದ ದ್ವಿಗುಣವಾಗುತ್ತ ದ್ವಿಗುಣವಾಗುತ್ತ  ಬಂದ ಪ್ರತೀ ಸೃಷ್ಟಿ ಬ್ರಹತ್ ಬ್ರಹ್ಮಾಂಡವೇ ಆಗಿ ನಿಲ್ಲುತ್ತದೆ. ಸಂಪೂರ್ಣ ನಾಶ ಎನ್ನುವದು ಎಂದಿಗೂ ಅಗಿಲ್ಲ. ಅತಿ ಆಯಿತು ಎಂದು ಅನ್ನಿಸಿದಾಗೆಲ್ಲ  ಕಾಲಚಕ್ರದ ಸುಳಿಗೆ ಸಿಲುಕಿಸಿ ಮತ್ತೆ  ಗರ್ಭದೊಳಗೆ ಎಳೆದುಕೊಂಡೇ ಬಿಡುತ್ತದೆ ಭೂಮಿ. ಇಂತಹದ್ದೊಂದು ಸಮತೋಲನದಿಂದಲೇ ಮಿಲಿಯನ್ ಗಟ್ಟಲೆ ವರ್ಷಗಳಿಂದಲೂ ಭೂಮಿ  ತನ್ನ ಅಸ್ತಿತ್ವವನ್ನು ಕಾಪಾಡಿಕೊಂಡೇ ಬಂದಿದೆ. ಸೃಷ್ಟಿ, ಸ್ಥಿತಿ, ಲಯ,ಗಳ ಜವಾಬ್ಧಾರಿ ಹೊತ್ತ ತ್ರಿಮೂರ್ತಿಗಳು ಒಬ್ಬರಿಗೊಬ್ಬರು ಪೂರಕವಾಗಿಯೇ ನಡೆದುಕೊಳ್ಳುತ್ತಾರೆ ಎನ್ನುವ ನಂಬಿಕೆಯಮೇಲೆ ನಮ್ಮ ಧರ್ಮ ನಿಂತಿದೆ. ಅದು ಸತ್ಯ ಕೂಡಾ ಆಗಿದೆ. ಈಗ ಬಂದಿರುವ ಕರೋನಾ ಎಂಬ ಮಹಾಮಾರಿಯಂತ ರೋಗದಿಂದ ಜಗತ್ತೇ ನಾಶವಾಯಿತು,ಇನ್ನು ಮನುಷ್ಯ ಭೂಮಿಯ ಮೇಲ ಬದುಕುವದೇ ಅಸಾಧ್ಯ,ಹಾಗಾಯಿತು ಹೀಗಾಯಿತು ಜನರು ಖಾಲಿಯೇ ಆದರು ಎನ್ನುವಂತೆ ಭಯಬೀಳಿಸುವ ಟಿ,ವಿ ಚಾನಲ್ಗಳನ್ನು ಮೈಮೇಲೆ ಎಳೆದುಕೊಂಡು ನಾವೂ ದೆವ್ವ ಬಂದವರಂತೆ ಆಡುತ್ತಿದ್ದೇವೆ. ಚಿಂತಾಜನಕರಾಗಿದ್ದೇವೆ.ಮಾನಸಿಕ ಅಸ್ವಸ್ಥರಾಗಿದ್ದೇವೆ.  ಹಿಂದೊಮ್ಮೆ ನಾವೆಲ್ಲ ಪ್ರಳಯವೇ ಸಂಭವಿಸುತ್ತದೆ ಸಂಪೂರ್ಣ ಭೂಮಿಯೇ ನಾಶವಾಗುತ್ತದೆ ಎಂದು ಅದೆಷ್ಟು ಬೊಬ್ಬೆ ಹೊಡೆದು ಕೊಂಡಿಲ್ಲ ಹೇಳಿ. ಅಯ್ಯೋ ಅಜ್ಜೀ ಇದೆಲ್ಲ ಯಾವಾಗ ಮುಗಿತದ್ಯೋ ಏನ್ ಕಥೆನೋ ಎಷ್ಟೊಂದು ಕಷ್ಟ ಅನುಭವಿಸುತ್ತಿದ್ದಾರೆ. ಎಲ್ಲಾ ವಿಚಿತ್ರ ಆಗೋಯ್ತು ಜಗತ್ತೇ .ಅಂತ ಗೊಣಗುತ್ತಿದ್ದೆ.  ಸುಮಾರು 85 ವರ್ಷದ ಅಜ್ಜಿ ಹೇಳುತ್ತಿದ್ದರು. ಅಯ್ಯೊ ಕೂಸೇ ನನ್ನ ಅಜ್ಜಿಯ ಕಾಲದಲ್ಲಿ ಇಂತಹದ್ದೇ ಒಂದು ಮಹಾ ಮಾರಿ ರೋಗ ಬಂದಿತ್ತಂತೆ. “ಗಾಂಡ್ ಗುಂದಿಗೆ” ರೋಗ ಅಂತಿದ್ರು ಅದಕ್ಕೆ. ಊರಿಗೆ ಊರೇ ಖಾಲಿ ಅಗ್ತಿತ್ತು. ಸುಡೋಕು ಯಾರೂ ಇರ್ತಿರಲಿಲ್ಲ ಗೊತ್ತಾ!? ಏನೂ ಔಷಧ ಇಲ್ಲದೇ ಇರೋ ಕಾಲ್ದಲ್ಲೇ ಅದನ್ನೇ ಗೆದ್ದು ಬಂದಿಲ್ವ ನಾವೆಲ್ಲ. ಮತ್ತೆ ಎಷ್ಟು ಬೆಳೆದಿದೆ ನೋಡು ಜನಸಾಗರ.ಸುಮ್ನೇ ಚಿಂತೆ ಮಾಡ್ತಾರೆ ಜನ.ಏನೂ ಆಗಲ್ಲ ಭಗವಂತಂಗೆ ಎಲ್ಲ ಗೊತ್ತಿರ್ತದೆ ಸುಮ್ಕಿರು ಅಂದ್ಬಿಟ್ಲು. ಯಾವ ರೋಗದ ಕುರಿತು ಅಜ್ಜಿ ಮಾತಾಡಿದ್ಲು ಗೊತ್ತಿಲ್ಲ. ಅದ್ರೆ ಬಂದಿದ್ದು ಸತ್ಯ ಅದಕ್ಕೆ ಪುರಾವೆಗಳನ್ನೂ ಕೊಡುತ್ತಿದ್ರೆ ಮೈ ಜುಂ ಎಂದಿತು ಆಗಲೇ ಅನ್ನಿಸಿದ್ದು ಆಗಬಾರದ್ದು ಏನು ಆಗಿದೆ ಈಗ. ನಿಜ ಜನರ ಸಾವು, ನೋವು, ಆಕ್ರಂದನ, ಮನಸನ್ನು ಘಾಸಿಗೊಳಿಸುತ್ತವೆ. ಆದರೆ ಬದುಕಿರುವವರು ನಮ್ಮಿಂದ ಸಾದ್ಯವಾದಷ್ಟು ಮಾನವೀತೆಯಿಂದ, ವಿಧೇಯರಾಗಿ ಯೋಚಿಸಿದರೆ, ನಡೆದುಕೊಂಡರೆ ಸಾಕಲ್ಲವೇ ಇನ್ನೊಂದು ಜೀವ ತನ್ನಿಂದ ತಾನೇ ಉಸಿರಾಡುತ್ತದೆ. ಸಾಯುವ ಪ್ರತೀ ಜೀವವನ್ನು ರಕ್ಷಿಸಲು ಯಾರಿಂದಲೂ ಸಾದ್ಯವಿಲ್ಲ ಸಾದ್ಯವಿದ್ದಷ್ಟು ಮಾಡ ಬಹುದಲ್ಲ. ಆ ನಿಟ್ಟಿನಲ್ಲಿ ಸಾಕಷ್ಟು ಜನ ಡಾಕ್ಟರ್ ಗಳು ಪೋಲೀಸರು ದಾದಿಯರು ಕಾರ್ಮಿಕರು ದಿನ,ರಾತ್ರಿ ಇಲ್ಲದೇ ದುಡಿಯುತ್ತಲೇ ಇದ್ದಾರೆ. ಕೇವಲ ಅವರಷ್ಟೇ ದುಡಿದರೆ ತ್ಯಾಗ ಮಾಡಿದರೆ ಸಾಕೇ? ಪ್ರತಿಯೊಬ್ಬ ಮನುಷ್ಯನಿಗೂ ಅವನದೇ ಆದ ಕರ್ತವ್ಯಗಳಿದೆ ಅದನ್ನು ನಿಸ್ವಾರ್ಥತೆಯಿಂದ ಮಾಡಬೇಕಿದೆ. “ಕರ್ಮಣ್ಯೇವಾ ದಿಕಾರಸ್ತೇ ಮಾ ಫಲೇಷು ಕದಾಚನ” ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ಹೇಳಿದ್ದಾನೆ ಫಲಾ ಫಲಗಳ ಅಪೇಕ್ಷೆ ಬೇಡಾ ಕೇವಲ ಕರ್ಮಗಳನ್ನು ಮಾಡು ಎಂದು ಅವರವರ ಕರ್ಮಳಿಗನುಸಾರ ಬದುಕನ್ನು ಭಗವಂತ ಕರುಣಿಸಿಯೇ ಕರುಣಿಸುತ್ತಾನೆ ಮತ್ತೇಕೆ ಭಯ. ಆಡಂಬರವಿಲ್ಲದೇ ಜೀವಿಸುವುದ ಕಲಿಯಬೇಕಿದೆ. ಮನುಕುಲಕ್ಕೊಂದು ಪಾಠ ಕಲಿಸಲೆಂದೇ ಈ ಕರೋನಾ ಬಂದಿದೆಯೇನೋ ಅನ್ನಿಸುತ್ತದೆ ಬಹಳ ಸಲ. ಸುಮ್ಮನೇ ಭಯಬೀಳುವದರಲ್ಲಿ ಅರ್ಥವಿಲ್ಲ ಒಂದಿಷ್ಟು ಜಾಗೃತೆಯಲ್ಲಿ ಜೀವಿಸಿದರೆ ಆಯಿತು. ಮುಂದಿನದು ದೈವ ಚಿತ್ತ ಎನ್ನುವ ಮನೋ ಬಲ ತಂದುಕೊಳ್ಳಬೇಕು. ಮನುಷ್ಯರಿಗಿಂತಲೂ ಅಬಲರಾದ, ಯಾವ ಪ್ರಾಣಿ, ಪಕ್ಷಿ ,ಮರಗಳು, ಯಾರಿಂದಲೂ ಏನನ್ನೂ ಬೇಡುವದಿಲ್ಲ, ತಮ್ಮ ತಮ್ಮ ಸ್ವಪ್ರಯತ್ನದಿಂಲೇ ಬದುಕುತ್ತವೆ. “ಸರ್ವೆವೈಲ್ ಆಪ್ ದಿ ಫಿಟ್ಟೆಸ್ಟ್”ಎನ್ನುವ ಡಾರ್ವಿನ್  ಸಿದ್ದಾಂತ ಎಂದಿಗೂ ಸತ್ಯವೇ ಆಗಿದೆ. ಹುಟ್ಟು ಸಾವುಗಳಿಂದ ಯಾರೂ ತಪ್ಪಿಸಿಕೊಳ್ಳಲಾರರು. ಬಂದೊದಗಿದ ಭಯದಿಂದ ಹೊರಗೆ ಬನ್ನಿ ವಿಷಾಲವಾಗಿ ಯೋಚಿಸಿ ಹೊಸಬೆಳಕಿನ ಕಿರಣವೊಂದು ನಮಗಾಗಿ ಸ್ವಾಗತಿಸುತ್ತದೆ. *************

ಕಾಲ ಎಂದಿಗೂ ನಿಲ್ಲುವದಿಲ್ಲ Read Post »

ಇತರೆ, ಜೀವನ

ಕೋವಿಡ್-19,ಆತ್ಮಾವಲೋಕನ

ಸುರೇಶ್ ಎನ್.ಶಿಕಾರಿಪುರ ಕೋವಿಡ್ -೧೯ ಆತ್ಮಾವಲೋಕನದ ಅದೃಶ್ಯ ದೂತ. ತೊಂಬತ್ತರ ದಶಕದಿಂದ ಇಲ್ಲಿಯ ವರೆಗೆ ಅಂದರೆ ಸುಮಾರು ಮೂವತ್ತು ವರ್ಷಗಳಿಂದ ಈ ದೇಶದಲ್ಲಿ ಮಂದಿರ – ಮಸೀದಿಗಾಗಿ ನಡೆದ ಕಲಹ ಕಿತ್ತಾಟ ಹೋರಾಟ ರಾಜಕೀಯ ಈಗ ಫಲ ನೀಡುತ್ತಿದೆ. ಬಿತ್ತಿದ್ದೇ ಬೆಳೆಯುವುದು. ಜ್ಞಾನವನ್ನು ಬಿತ್ತಿದರೆ ಜ್ಞಾನ ಅಜ್ಞಾನವನ್ನು ಬಿತ್ತಿದರೆ ಅಜ್ಞಾನ. ಈ ದೇಶದ ಬಹುದೊಡ್ಡ ಯುವ ಸಮುದಾಯವನ್ನು ಮಂದಿರ ನಿರ್ನಾಮ ಮತ್ತು ನಿರ್ಮಾಣಕ್ಕೆ ಹುರಿದುಂಬಿಸಿ ನಾನಾ ಬಗೆಯ ಧಾರ್ಮಿಕ ತಳಹದಿಯ ಸಂಘಟನೆಗಳನ್ನು ಕಟ್ಟಿ ಹಿಂದೂ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ಯೋಧರನ್ನಾಗಿ ಪ್ರಯೋಗಿಸಲಾಯಿತು. ಈಗಲೂ ಅದು ಮುಂದುವರೆದೇ ಇದೆ. ಈ ಮತೀಯ ಹೋರಾಟಗಳು ಸೃಷ್ಟಿಸಿದ ಹಿಂಸೆ ಒಡಕು ಅಶಾಂತಿ ಅಂಧಕಾರ ಅಪನಂಬಿಕೆ ಅಂತಿಂಥಾದ್ದಲ್ಲ. ಪ್ರಗತಿಪರವಾಗಿ ಯುವ ಸಮುದಾಯವನ್ನು ಕಟ್ಟದೇ ಹೋದರೆ ಏನೇನು ಯಡವಟ್ಟುಗಳಾಗಬೇಕೊ ಅವೆಲ್ಲವೂ ಆಗುತ್ತವೆ‌ ಎಂಬುದಕ್ಕೆ ನಮ್ಮ ದೇಶದ ಇಂದಿನ ಸ್ಥಿತಿ ತಾಜಾ ಉದಾಹರಣೆ. ರಾಜಕೀಯ ಪಕ್ಷಗಳು ಧರ್ಮಾಧಾರಿತವಾದಾಗ ಅವು ಮಂದಿರ ಮಸೀದಿ ಇಗರ್ಜಿ, ಮಠಗಳು, ಬಾಬಾಗಳು, ದೇವರು ದಿಂಡಿರುಗಳ ಕಡೆಗೇ ಯೋಚಿಸುತ್ತವೋ ಹೊರತು ಒಂದು ಸಶಕ್ತ ವೈಜ್ಞಾನಿಕ ವೈಚಾರಿಕ ಸಮಾಜವನ್ನು ದೇಶವನ್ನು ಕಟ್ಟಲು ಅವುಗಳಿಂದ ಸಾಧ್ಯವಿಲ್ಲ‌. ಅದರ ಪ್ರತಿಫಲವೇ ಇಂದು ಭಾರತ ಎದುರಿಸುತ್ತಿರುವ ಕೋವಿಡ್-19 ಸಮಸ್ಯೆ. ಇದು ಒಂದು ಉದಾಹರಣೆಯಷ್ಟೆ. ಭಾರತದ ದಾರಿದ್ರ್ಯದ ಹಿಂದೆ ಇರುವುದೂ ಈ ವಿಚಾರಗಳೇ. ಈ ದೇಶದಲ್ಲಿ ಮಂದಿರ ಮಸೀದಿಗಾಗಿ ನಡೆದ ಮೆರವಣಿಗೆ, ಹೊಡೆದಾಟ, ವಾಗ್ವಾದ, ವಿಮರ್ಶೆ, ಊರು, ದೇಶ, ರಾಜ್ಯಗಳ ಬಂದ್ ಗಳು, ಸಮಾವೇಷಗಳು, ಬೈಟಕ್ ಗಳು, ರ್ಯಾಲಿಗಳು, ಭಾಷಣಗಳು, ಚುನಾವಣಾ ಪ್ರಣಾಳಿಕೆಗಳು, ಘೋಷಣೆಗಳು, ಶಂಕನಾದಗಳು, ರಥ ಯಾತ್ರೆಗಳು, ರಸ್ತೆ ತಡೆಗಳು, ಬಯ್ಕಾಟುಗಳು, ಆರೋಗ್ಯ ಶಿಕ್ಷಣ, ಸದೃಢ ಆರೋಗ್ಯ ವ್ಯವಸ್ಥೆ, ಆಸ್ಪತ್ರೆಗಳ ನಿರ್ಮಾಣ, ಸಂಶೋಧನೆಗಳು, ಪ್ರಯೋಗಾಯಲಗಳು, ಹೊಸಹೊಸ ವೈದ್ಯಕೀಯ ಆವಿಷ್ಕಾರಗಳು, ಔಷಧ, ಅಂಬ್ಯುಲೆನ್ಸ್, ಸಿಬ್ಬಂಧಿ ನೇಮಕಾತಿ ಮೊದಲಾದ ಮೂಲಭೂತ ಸೌಕರ್ಯಗಳು, ಶಿಕ್ಷಣ ಮೊದಲಾದವಕ್ಕಾಗಿ ನೆಡೆದಿದ್ದರೆ ಇಂದು ಭಾರತ ಅತ್ಯಂತ ಮುಂದುವರೆದ ದೇಶಗಳೆನಿಸಿಕೊಳ್ಳುತ್ತಿರು ಯಾವುದೇ ರಾಷ್ಟ್ರಗಳಿಗಿಂತ ಉನ್ನತ ಸ್ಥಿತಿಯಲ್ಲಿರುತ್ತಿತ್ತು. ಚಿಕಿತ್ಸೆ ಸಿಗದೆ, ಅನ್ನ ಸಿಗದೆ, ಆಶ್ರಯ ಸಿಗದೆ ಜನರು ಗುಳೇ ಹೋಗುವ, ಬೀದಿ ಬೀದಿಯಲ್ಲಿ ಬಿದ್ದು ಸಾಯುವ ಸ್ಥಿತಿ ಬರುತ್ತಿರಲಿಲ್ಲ. ಕೋವಿಡ್ – 19ರ ಈ ತುರ್ತು ಪರಿಸ್ಥಿತಿಯಲ್ಲಿ ಮಂದಿರ ಮಸೀದಿಗಳು ಜನರನ್ನು ರಕ್ಷಿಸಲಾರವು ಎಂಬುದನ್ನು ಈಗಲಾದರೂ ನಮ್ಮ ಯುವ ಸಮುದಾಯ ಅರ್ಥ ಮಾಡಿಕೊಳ್ಳಬೇಕು‌. ದಶಕಗಳಿಂದ ಯುವಕರನ್ನು ಧಾರ್ಮಿಕ ವಿಚಾರಗಳಿಗೆ ಪ್ರಚೋದಿಸಿ ಬಳಸಿಕೊಂಡದ್ದೇನಾದರೂ ಇಂದು ಉಪಯೋಗಕ್ಕೆ ಬರುತ್ತಿದೆಯೇ ಎಂಬುದನ್ನು ಆಲೋಚಿಸಬೇಕು. ಮನುಷ್ಯರ ಜೀವವನ್ನು ಉಳಿಸಲು, ರಕ್ಷಿಸಲು ಉಪಯೋಕ್ಕೆ ಬಾರದ ಮಂದಿರ – ಮಸೀದಿ ಧರ್ಮಗಳ ಗುಂಗಿನಿಂದ ಈಗಲಾದರೂ ಹೊರಬರಬೇಕು. ನಮ್ಮ ದೇಶ ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವ ಪ್ರಯತ್ನ ಮಾಡುತ್ತಿದೆ. ನಮಗೆ ಸರಿಯಾದ ಸುರಕ್ಷತಾ ವ್ಯವಸ್ಥೆಗಳು ಇಲ್ಲ ಎಂದು ವೈದ್ಯಕೀಯ ವಲಯದಿಂದ ಹತಾಷೆಯ ಕೂಗುಗಳು ಅಲ್ಲಲ್ಲಿ ಕೇಳಬರುತ್ತಿವೆ. ಯಾರನ್ನು ಯೋಧರು ಎಂದು ಈಗ ಪರಿಗಣಿಸಲಾಗಿದೆಯೋ ಅವರು ಚಿಕಿತ್ಸೆ ನೀಡಲು ಹೆದರುತ್ತಿದ್ದಾರೆ ಹಿಂಜರಿಯುತ್ತಿದ್ದಾರೆ. ಜನ ಭೀತಿಯಿಂದ ಕಂಗಾಲಾಗಿದ್ದಾರೆ. ಖಾಸಗೀ ಆಸ್ಪತ್ರೆಗಳು ಕೊರೋನಾ ರೋಗಿಗಳಿಗಾಗಿ ಬಿಲ್ ಬುಕ್ಕು ಹಿಡಿದು ರೆಡ್ ಕಾರ್ಪೆಟ್ ಹಾಸಿ ಕಾಯುತ್ತಿವೆ‌. ಸರ್ಕಾರಿ ವ್ಯವಸ್ಥೆ ವಿಫಲವಾಗಿದೆ, ಸೋತು ಕೈ ಚೆಲ್ಲವ ಹತಾಶ ಹಂತ ತಲುಪಿಯಾಗಿದೆ. ಇದೆಲ್ಲವೂ ಅವಿವೇಕದ ಅವೈಜ್ಞಾನಿಕ ಹಾಗೂ ಅವೈಚಾರಿಕ ವಿಚಾರಗಳಿಗೆ ಮನ್ನಣೆ ಕೊಟ್ಟದ್ದರ ಫಲ. ಭ್ರಷ್ಟಾಚಾರದ ಫಲ ಹಾಗೂ ಹೊಣೆಗೇಡಿತನದ, ಸ್ವಾರ್ಥದ ಫಲ. ಸರ್ಕಾರವೂ ವಿಫಲವಾಗಿದೆ. ಹಣವೂ ಇಲ್ಲ ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳೂ ಇಲ್ಲ. ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಕೂಗೂ ಎದ್ದಿದೆ. ಇದೇ ಸರಿಯಾದ ಹೊತ್ತು ಎಂದು ಕೊರೋನಾಕ್ಕೆ ಮದ್ದು ಕಂಡು ಹಿಡಿದಿರುವುದಾಗಿ ಸುಳ್ಳು ಪ್ರಚಾರ ಮಾಡಿ ಆ ಮೂಲಕ ಜನರ ಆರೋಗ್ಯದ ಜೊತೆ ಆತಂಕದ ಜೊತೆ ಚಲ್ಲಾಟವಾಡುತ್ತಾ ಅವರ ಮಾನಸಿಕ ದೌರ್ಬಲ್ಯವನ್ನೇ ಬಂಡವಾಳ ಮಾಡಿಕೊಂಡು ಕೋಟಿ ಕೋಟಿ ಹಣ ಲಪಟಾಯಿಸುವ ಔಷಧ ದಂಧೆ ಕೋರರು ಕುಣಿದಾಡುತ್ತಿದ್ದಾರೆ. ಹಾಗಿದ್ದರೂ ಆಳುವ ವ್ಯವಸ್ಥೆ ಅಂತವರ ಮೇಲೆ ಮೃದು ಧೋರಣೆಯನ್ನು ತಾಳಿದೆ. ಇದರ ವಿರುದ್ಧ ಯುವ ಸಮುದಾಯ ಜನತೆ ದಂಗೆ ಏಳುವುದಿಲ್ಲ ಎಂಬ ಖಾತ್ರಿ ಮೇಲಿನವರಿಗಿದೆ ಏಕೆಂದರೆ ಜನತೆಯನ್ನು ಹೇಗೆ ಭಾವನಾತ್ಮಕವಾಗಿ ವಂಚಿಸಿದ್ದೇವೆ ಅದು ಯಾವ ರೀತಿಯ ಕೆಲಸ ಮಾಡುತ್ತಿದೆ ಎಂಬ ಸತ್ಯ ಅವರಿಗೂ ಚನ್ನಾಗಿಯೇ ಗೊತ್ತಿದೆ. ಒಂದು ಸಂಸ್ಥೆಯಂತೂ ಈಗಾಗಲೇ ಕೋವಿಡ್ ಗೆ ತಾನು ಔಷಧ ಕಂಡು ಹಿಡಿದಿದ್ದು ಮುಂಬರು ಅಗಸ್ಟ್ ೧೫ ಕ್ಕೆ ಅದನ್ನು ಬಿಡುಗಡೆ ಮಾಡುವುದಾಗಿಯೂ ಘೋಷಿಸಿದೆ ಅದರ ವೈಜ್ಞಾನಿಕ ಸಾಧ್ಯಾಸಾಧ್ಯತೆಗಳ ವಿರುದ್ಧ  ದನಿ ಎದ್ದಾಗ ಎಚ್ಚೆತ್ತು ಮುಂಬರುವ ವರ್ಷಕ್ಕೆ ಔಷದ ಲಭ್ಯತೆಯ ಸಾಧ್ಯತೆಯನ್ನು ಮುಂದೂಡಿದೆ. ಯೋಗ ಗುರುವೊಬ್ಬರು ಕೆಮ್ಮು ಮತ್ತು ಜ್ವರಕ್ಕೆ ತಾನು ಔಷಧ ತಯಾರಿಸಿರುವುದಾಗಿ ಕೇಂದ್ರ ಆಯುಷ್ ಇಲಾಖೆಗೆ ಅನುಮತಿ ಕೋರಿ ಅರ್ಜಿ ಹಾಕಿ ಇತ್ತ ತಾನು ಕೊರೋನಾ ಜ್ವರಕ್ಕೆ ಕೊರೋನಿಲ್ ಎಂಬ ಔಷಧ ತಯಾರಿಸಿರುವುದಾಗಿ ದೊಡ್ಡ ಜಾಹಿರಾತು ನೀಡುವ ಮೂಲಕ ಲಾಭಿಗೆ ನಿತ್ತಿದೆ. ಆಯುಷ್ ಇಲಾಖೆ ನೋಟಿಸ್ ನೀಡಿದ್ದರೂ, ಬಾಬಾ ರಾಮದೇವ ಅವರ ಮೇಲೆ ಹಾಗೂ ಅವರ ಆಪ್ತರೊಬ್ಬರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿರುವುದಾಗಿ ಹೇಳುತ್ತಿದ್ದರೂ ಕೇಂದ್ರದ ಮಂತ್ರಿಗಳು ಮಾತ್ರ ವಿಶ್ವಾಸಾರ್ಹವಲ್ಲದ ಲಾಭದ ದಂಧೆಯಾಗಿರುವ ಇದನ್ನು ಸಮರ್ಥಿಸಿಕೊಳ್ಳುತ್ತಾರೆ‌. ಇದನ್ನೆಲ್ಲ ಹ್ಞೂ ಎನ್ನಲು ದೇಶದ ಮೂಲೆ ಮೂಲೆಯಲ್ಲಿ ಅಂಧಾಭಿಮಾನಿಗಳ ದೊಡ್ಡಪಡೆಯೂ ಅವರ ಬೆನ್ನಿಗೆ ಇದೆ. ಅಂತಿಮವಾಗಿ ಇದರ ಫಲಿತಾಂಶ ಪ್ರಜಾ ಸಮೂಹದ ಮೇಲೆಯೇ. ವೈಜ್ಞಾನಿಕ ಮನೋಭಾವವನ್ನು ದೇಶದ  ಯುವಕರಲ್ಲಿ ಸಮಸ್ತ ಪ್ರಜಾ ಸಮೂಹದಲ್ಲಿ ಬೆಳೆಸದೆ ಧಾರ್ಮಿಕ ಮನೋಭಾವವನ್ನು ಬಿತ್ತಿ ಬೆಳೆದಿದ್ದರ ಫಲ ಇಂದು ಕಣ್ಣೆದುರೇ ಕಾಣುತ್ತಿದೆ. ಬಾಲ್ಕನಿಗೆ ಬಂದು ಚಪ್ಪಾಳೆ ಹೊಡೆದೂ ಆಯಿತು, ಮನೆ ಮನೆಯಲ್ಲಿ ಹಣತೆ ಹಚ್ಚಿಯೂ ಆಯಿತು. ಬಾಲ್ಕನಿಗೆ ಬಂದು ಚಪ್ಪಾಳೆ ತಟ್ಟಿದರೆ ಊರೊಳಗೆ ನುಗ್ಗಿದ ಮಾರಿ ಹೆದರಿ ಓಡಿ ಹೋಗಲು ಅದೇನು ಗದ್ದೆಯ ಫಸಲಿಗೆ ಮುತ್ತಿದ ಹಕ್ಕಿಯ ಹಿಂಡೇ…? ಕೊನೆಗೆ ಇದೆಲ್ಲವನ್ನೂ ಮಾಡಲು ಹೇಳಿ ಮಾಡಿಸಿದ ಆಳುವ ನಾಯಕ ‘ಕೋವಿಡ್ ನೊಂದಿಗೆ ಜೀವಿಸುವುದ ಕಲಿಯಿರಿ’ ಎಂದುಬಿಟ್ಟ. ಇಂತಹ ಸ್ಥಿತಿ ನಿರ್ಮಾಣವಾಗುವುದು ದೌರ್ಬಲ್ಯದಿಂದ. ದೌರ್ಬಲ್ಯವು ಬರುವುದು ಮೌಢ್ಯ ಮತ್ತು ಮತೀಯ ಸೈದ್ಧಾಂತಿಕತೆಯನ್ನು ಬಿತ್ತಿ ವೈಜ್ಞಾನಿಕತೆಯನ್ನು ಉದಾಸೀನ ಮಾಡುವುದರಿಂದ. ಲಂಕೇಶ್ ಅಂದೇ ಹೇಳಿದ್ದರು ‘ಇಟ್ಟಿಗೆ ಪವಿತ್ರವಲ್ಲ ಜೀವ ಪವಿತ್ರ’ ಎಂದು. ಆ ಮಾತು ಈಗ ನೆನಪಾಗುತ್ತಿದೆ. ಪವಿತ್ರವಾದ ಜೀವಗಳನ್ನು ಉಳಿಸಲು ಈಗ ಯಾವ ಮಂದಿರ ಮಸೀದಿಗಳೂ ಆ ಕುರಿತ ರಾಜಕೀಯ ವಿಚಾರ ವಾಗ್ವಾದಗಳೂ ಬರುವುದಿಲ್ಲ ಹಾಗೂ ಸಶಕ್ತವಾಗಿಲ್ಲ. ಜಢ ಸಿದ್ಧಾಂತಗಳಿಂದ ಹೊರಬಂದು ನಾವೀಗ ಅವಲೋಕಿಸಬೇಕಾಗಿದೆ. ನಾವು ಮಾತ್ರವಲ್ಲ ನಮ್ಮನ್ನಾಳುವ ನಾಯಕರೂ… “ಓ ಬನ್ನಿ ಸೋದರರೆ ಬೇಗ ಬನ್ನಿ ಗುಡಿ ಚರ್ಚು  ಮಸಜೀದಿಗಳ ಬಿಟ್ಟು ಹೊರ ಬನ್ನಿ ಬಡತನವ ಬುಡಮಟ್ಟ ಕೀಳ ಬನ್ನಿ ಮೌಡ್ಯತೆಯ ಮಾರಿಯನು ಹೊರದೂಡಲೈ ತನ್ನಿ ವಿಜ್ಞಾನ ದೀವಿಗೆಯ ಹಿಡಿಯ ಬನ್ನಿ ಓ ಬನ್ನಿ ಸೋದರರೆ ಬೇಗ ಬನ್ನಿ……. ಸಿಲುಕದಿರಿ ಮತವೆಂಬ ಮೊಹದಜ್ಞಾನಕ್ಕೆ ಮತಿಯಿಂದ ದುಡುಯಿರೈ ಲೋಕ ಹಿತಕೆ ಆ ಮತದ ಈ ಮತದ ಹಳೆಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕ್ಕೆ ಓ ಬನ್ನಿ ಸೋದರರೇ ವಿಶ್ವ ಪಥಕೆ…..” ಎಂದು ಕವಿ ಕುವೆಂಪು ಸುಮ್ಮನೇ ಕರೆ ನೀಡಲಿಲ್ಲ. ದೇಶದ ಯುವಕರನ್ನು ಕುರಿತು ವಿವೇಕಾನಂದರು ಸುಮ್ಮಸುಮ್ಮನೇ ಕಂಠಶೋಷಣೆ ಮಾಡಿಕೊಂಡು ಕರೆನೀಡಲಿಲ್ಲ. ಅವರೆಲ್ಲರ ಧಾರ್ಮಿಕ ದೃಷ್ಟಿ ವೈಜ್ಞಾನಿಕತೆಯಿಂದ ಕೂಡಿತ್ತು. ದೇಶ ಮತ್ತು ಅದರ ಸಮಸ್ತ ಅಭಿವೃದ್ಧಿಯ ಕುರಿತು ಅವರ ದಾರ್ಶನಿಕತೆ ದೂರದೃಷ್ಟಿಯಿಂದ ಕೂಡಿತ್ತು. ಅದೆಂದೂ ಅವೈಜ್ಞಾನಿಕವೂ ಮತೀಯಾಂಧಕಾರಿಯೂ ಆಗಿರಲಿಲ್ಲ. ಅವರು ಬದುಕಿದ್ದ ಕಾಲದಲ್ಲೂ ಸಾಂಕ್ರಾಮಿಕ ರೋಗಗಳು ದೇಶವನ್ನು ನುಗ್ಗಿ ಜನರನ್ನು ಇನ್ನಿಲ್ಲದಂತೆ ಬಾದಿಸಿದ್ದವು. ದೇಶದ ವಿಜ್ಞಾನಿಗಳು ಆಗ ಔಷಧ ಶೋಧದಲ್ಲಿ ತೊಡಗಿದರು. ಸರ್ಕಾರಗಳು ನೈಜ ಕಾಳಜಿಯಿಂದ ಕೆಲಸ ಮಾಡಿದವು. ಭಾರತವೇ ಕ್ಷಯ ರೋಗಕ್ಕೆ, ರೇಬಿಸ್ಸಿಗೆ, ಪ್ಲೇಗ್, ಕಾಲರಾ, ಪೋಲಿಯೋ ಮೊದಲಾದ ಖಾಯಿಲೆಗಳಿಗೆ ಮದ್ದು ಅರೆಯಿತು. ಇದು ಸಾಧ್ಯವಾದದ್ದು ವಿಜ್ಞಾನಕ್ಕೆ ನೀಡಿದೆ ಒತ್ತಿನಿಂದ ಪ್ರಾಮುಖ್ಯತೆಯಿಂದ. ಇಂದು ಭಾರತ ಮೇಲ್ಕಂಡ ಕಾಯಿಲೆಗಳನ್ನು ಯಶಸ್ವಿಯಾಗಿ ಎದುರಿಸಿದೆ. ಈಗ ಬಂದಿರುವ ಕೊರೋನಾ ಹಾಗೆ ನೋಡಿದರೆ ಹಿಂದಿನ ವಿನಾಶಕಾರಿ ಸಾಂಕ್ರಾಮಿಕಗಳ ಸ್ವರೂಪದ್ದಲ್ಲ ‘ಹುಲಿಗಿಂತ ಹುಲಿಯ ಬಣ್ಣನೆಯೇ ಹೆದರಿಸಿತ್ತು’ ಎಂಬ ಗಾದೆ ಮಾತಿನಂತೆ ಕೊರೋನಾಕ್ಕಿಂತ ಅದರ ಬಗೆಗಿನ ವರ್ಣನೆಗಳು, ಭಯಾನಕ ಸುದ್ಧಿಗಳು ಎಬ್ಬಿಸುವ ಬೊಬ್ಬೆಯೇ ಇಂದು ಭಯಾನಕತೆಯನ್ನು ಸೃಷ್ಟಿಸಿದೆ. ಇಲ್ಲಿಯೂ ಆಳುವ ವ್ಯವಸ್ಥೆ ಕೋಮು ರಾಜಕೀಯವನ್ನೇನೂ ಬಿಡಲಿಲ್ಲ. ಮಾದ್ಯಮಗಳು ಮುಸ್ಲಿಮ್ ತಬ್ಲಿಘಿಗಳನ್ನು  ಕೊರೋನಾ ಪ್ರಸಾರಕರು ಎಂಬಂತೆ ಬಿಂಬಿಸಿದವು. ಹಳ್ಳಿಹಳ್ಳಿಗಳಲ್ಲಿ ಡಂಗುರ ಹೊಡೆಸಿದರು, ಸಣ್ಣಪುಟ್ಟ ಬಡ ವ್ಯಾಪಾರಿಗಳನ್ನು ಹೆದರಿಸಿ ಗದರಿಸಿ ಹೊಡೆದು ಬಡಿದು ಓಡಿಸಿದರು. ಎಸ್ಟೋ ಬಡವರು ಮನೆ ಹೊಟ್ಟೆಗಿಲ್ಲದೆ ನರಳುವ ಸ್ಥಿತಿ ಸೃಷ್ಟಿ ಮಾಡಿದರು. ಕೊರೋನಾದ ಹೆಸರಲ್ಲಿ ಒಂದು ಸಮುದಾಯವನ್ನು ಅಸ್ಪೃಷ್ಯರನ್ನಾಗಿಸುವ, ಪರಕೀಯರರನ್ನಾಗಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿ ಮುಗಿಸಿದರು. ಇದು ಧಾರ್ಮಿಕ ಮನೋಭಾವ ಎಂಥಹಾ ಅಮಾನವೀಯ ಮನಸ್ಥಿತಿಗಳನ್ನು ಪರಿಸ್ಥಿತಿಗಳನ್ನು ಸೃಷ್ಟಿಸಬಲ್ಲದು ಎಂಬುದಕ್ಕೆ ಉದಾಹರಣೆ. ಈಗಾಗಲೇ ದ್ವೇಷದ ಮೂಟೆಗಳಾಗಿರುವ ಯುವ ಸಮುದಾಯ ಒಂದು ನಿರ್ದಿಷ್ಟ ಸಮುದಾಯದ ಮೇಲೆ ಕೃದ್ಧರಾಗಿ ಕುದಿಯುವಂತಾಯಿತು. ಸಾಂಕ್ರಾಮಿಕ ರೋಗದಲ್ಲೂ ಧರ್ಮದ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರದ ಫಸಲು ತೆಗೆಯುವ ಕೃಷಿಯನ್ನು ಭಲೆ ನಾಜೂಕಿನಿಂದ ನಿರ್ವಹಿಸಲಾಯಿತು. ಕೋಟ್ಯಾಂತರ ಕಾರ್ಮಿಕರು ಅನ್ನ ಆಶ್ರಯವಿಲ್ಲದೆ ಗುಳೇ ಹೊರಟು ಹಾದಿಬೀದಿಯಲ್ಲಿ ಬಿದ್ದು ಸತ್ತದ್ದು ಲೆಕ್ಕಕ್ಕಿಲ್ಲವಾಯಿತು.‌ ದೇಶ ಕಟ್ಟಿದವರು ಸೋಂಕಿತರಾದರು ದೇಶ ದೋಚಿದವರು ತಮ್ಮ ಬಹು ಮಹಡಿಯ ಕಟ್ಟಡಗಳಲ್ಲಿ ಸುರಕ್ಷಿತರಾದರು. ಒಟ್ಟಿನಲ್ಲಿ ಅವಿವೇಕದ ಪರಮಾವಧಿ, ಅಲಕ್ಷ್ಯ, ಬಡವರು ದುಡಿಯುವ ವರ್ಗದ ಬಗೆಗಿನ ಅಸಡ್ಡೆ ತಿರಸ್ಕಾರ ಮನೋಭಾವಗಳು ಈ ದೇಶದಲ್ಲಿ ಕಾಯಿಲೆ ವ್ಯಾಪಕವಾಗಿ ಹಬ್ಬಲು ಕಾರಣವಾದವು. ವಿಶ್ವ ಆರೋಗ್ಯ ಸಂಸ್ಥೆಯು ಭಾರತದಂತಹಾ ದೇಶದಲ್ಲಿ ಸೋಂಕು ಸಮುದಾಯದ ಹಂತವನ್ನು ತಲುಪಿದರೆ ಏನು ಅನಾಹುತ ಆಗಬಹುದು ಎಂದು ಎಚ್ಚರಿಸಿತ್ತೋ ಅದು ನಮಗೆ ಎಚ್ಚರವಾದಂತೆ ಕಾಣಲಿಲ್ಲ. ನಾವು ಯಾವುದನ್ನು ಪ್ರಶ್ನಿಸಬೇಕೊ ಅದನ್ನು ಪ್ರಶ್ನಿಸಲಿಲ್ಲ ಯಾವುದನ್ನು ಬೆಂಬಲಿಸ ಬಾರದೊ ಯಾವುದನ್ನು ಒಪ್ಪ ಬಾರದೊ‌ ಯಾವುದನ್ನು ಹಿಂಬಾಲಿಸಬಾರದೋ ಅವುಗಳನ್ನು ಬೆಂಬಲಿಸಿದ್ದರ ಹಿಂಬಾಲಿಸಿದ್ದರ ಒಪ್ಪಿದ್ದರ ಫಲವನ್ನೀಗ ಉಣ್ಣುತ್ತಿದ್ದೇವೆ. ದಶಕಗಳಿಂದ ಧರ್ಮದ ನಿದ್ದೆ ಗುಳಿಗೆ ನುಂಗಿ ಮತ್ತೇರಿ ನಿಶೆಯೊಳಗೆ ನಿದ್ದೆಹೋದದ್ದರ ಫಲ ಇಂದು ಅಸಹಾಯಕ ಸ್ಥಿತಿಗೆ ಸೃಷ್ಟಿಯಾಗುವಂತೆ ಮಾಡಿದೆ. ಇನ್ನಾದರೂ ಈ ಅವಿಚಾರಗಳಿಂದ ಹೊರ ಬಂದು ಪ್ರಗತಿಪರವಾಗಿ ಯೋಚಿಸುವುದನ್ನು ಕಲಿಯಬೇಕು ವೈಜ್ಞಾನಿಕ ಮನೋಧರ್ಮವನ್ನು ರೂಢಿಸಿಕೊಳ್ಳುವ ಮೂಲಕ ಧರ್ಮ ದೇವರು ಜಾತಿಗಳೆಂಬ ಶ್ರೇಷ್ಟತೆಯ ವ್ಯಸನಗಳಿಂದ ಹೊರಬಂದು ದೇಶವನ್ನು ಆಂತರಿಕವಾಗಿ ಬಲಪಡಿಸಬೇಕು. ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುಸಿದರೆ ಅಂತಹಾ ದೇಶಕ್ಕೆ ಯಾವತ್ತಿಗೂ ಭವಿಷ್ಯವಿಲ್ಲ. ಧರ್ಮದ ಅಂಧಾಕಾರದ ತಳಹದಿಯ ಮೇಲೆ ದೇಶ ಕಟ್ಟಲು ಹೊರಟರೆ ಅಂತಹಾ ದೇಶ ಎಂದಿಗೂ ಸದೃಢ ದೇಶವಾಗಲಾರದು. *******************

ಕೋವಿಡ್-19,ಆತ್ಮಾವಲೋಕನ Read Post »

You cannot copy content of this page

Scroll to Top