ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಮಕ್ಕಳ ಸಾಹಿತ್ಯ

ಆಯ್ಕೆ ಅವ್ಯಕ್ತ ನನ್ನಹೆಚ್ಚಿನ ಸಮಯವನ್ನು ನಾನು ಮಕ್ಕಳೊಂದಿಗೆ ಕಳೆಯುತ್ತಿರುವುದು.ಅವರೊಂದಿಗೆ ಆದ ಅನುಭವಗಳನ್ನು ಸಣ್ಣ ಸಣ್ಣ ಕಥೆಗಳ ಮೂಲಕ ಬರೆಯುತ್ತೇನೆ. ಅಂತ ಕಥೆಗಳಲ್ಲಿ ಇದೂ ಒಂದು) ಆಯ್ಕೆ ಒಳಗೆ ತಲೆಯಾಡಿಸುತ್ತಾ ನಡೆದು ಬಂದ್ಲು. ನಾನು ನೋಡಿ ಮುಗುಳ್ನಗೆ ಬೀರಿದೆ. ಜ್ವಾಲಾಮುಖಿ ಬಚ್ಚಿಟ್ಟಿದ್ದಂತೆ“ನಾನು ಅವರನ್ನೆಲ್ಲ ದ್ವೇಷಿಸುತ್ತೇನೆ”, “ಇನ್ಯಾವತ್ತೂ ಅವರೊಂದಿಗೆ ಮಾತಾಡೋದಿಲ್ಲ”. ನಾನು ತಾಳ್ಮೆಯಿಂದ “ಏನಾಯ್ತೆ ನನ್ ರಾಣಿ?”. ಅಂತ ಕೇಳ್ದೆ. ನನ್ನ ಪ್ರಶ್ನೆಗೆ ಕಾಯ್ತಿದ್ಲೆನೋಅನ್ನೋ ಹಾಗೆ“ನನಗೆ ನೋವಾಗಿದೆ, ನನ್ನ ಆಡ್ಕೋತಾರೆ,ನನ್ನ ನೋಡಿ ನಗ್ತಾರೆ,ನಾನು…. ನನ್ನ…. ನನಗೆ…”ನಿಲ್ಲೋಮಾತೇ ಇಲ್ಲ ! ನಾನುಸ್ವರ ಸ್ವಲ್ಪ ಏರಿಸಿ, ಮೃದುವಾಗಿ ಹೇಳಿದೆ “ಸ್ಟಾಪ್!”. ಅವಳ ಕಣ್ಣಂಚಲ್ಲಿ ನೋವು ಸಿಟ್ಟು ಎರಡೂ ಸೇರಿ ಕಣ್ಣೀರು ಬರದಷ್ಟು ನಿರಾಸೆ ನನಗೆ ಭಾಸವಾಗಿತ್ತು! ಮೆಲ್ಲನೆ ನಾನೇ ಹತ್ತಿರ ಹೋಗಿ ಮುದ್ದಾಗಿ ತಲೆಸವರಿ ಕೇಳಿದೆ. “ಸರೀ…ಅವರು ಎಷ್ಟು ಸಾರಿ ನಿನ್ನ ನೋಡಿ ನಕ್ಕರು? ಎಷ್ಟು ಸಾರಿಛೇಡ್ಸಿದ್ರು?”ಸಿಟ್ಟಿನಲ್ಲಿ “ಒಂದು ಸಾರಿ ಅಲ್ಲ ಎರಡು ಅಲ್ಲ ಮೂರು ಅಲ್ಲ…” ಲೆಕ್ಕ ಮಾಡಲು ಶುರುಮಾಡಿದಳು.“10 ಬಾರಿ”ಎನ್ನುವಷ್ಟರಲ್ಲಿ ಸ್ವಲ್ಪ ಶಾಂತಿ ತುಂಬಿತ್ತು ಅವಳ್ಮನ್ಸಲ್ಲಿ. ನಾನು ಸುಮ್ಮ್ನೆ“ಈಗ ನಿನ್ನ ಮನಸ್ಸಲ್ಲಿ ಅದೇ ವಿಷಯ ಎಷ್ಟು ಬಾರಿ ನೆನೆಸಿಕೊಂಡು ಸಿಟ್ ಮಾಡ್ಕೊಂಡೆ?” ಅಂತ ಕೇಳ್ದೆ. ಯೋಚಿಸಿ ಅಳೆದು ಸುರಿದು ಲೆಕ್ಕ ಮಾಡಿ ಅವರು ಇವರು ಕಥೆ ಹೇಳ್ತಾ ಕೊನೆಗೆ 25 ಎಂದ್ಲು. ನಾನು ೨೫+೧೦+೨ಬಾರಿನನ್ಹತ್ರ,ಒಟ್ಟು ೩೭ ಬಾರಿ…ಈಗ ಹೇಳು “ನಿನ್ನನ್ನು ಹೆಚ್ಚು ನೋವಿಸಿದ್ದು ಯಾರು ಬಂಗಾರಿ?” ಸ್ವಲ್ಪ ಹೊತ್ತು ಸುಮ್ಮನೇ ನಿಂತು ಮತ್ತೆ ನಾಚಿಕೆಯಿಂದ“ನಾಆಆಆನೇಏಏಏಏಎಂದು ಹೇಳಿ ನಕ್ಕುಬಿಟ್ಟಳು. ನಾನು ಎಲ್ಲರ ಕಡೆ ತಿರುಗಿ ಹೇಳಿದೆ.. “ಸಂತೋಷವಾಗಿರುವುದು ನಮ್ಮ ಆಯ್ಕೆ ಯಾಗಿರಲಿ…, ಕ್ಷಮಿಸಿಬಿಡಿ… ಆದರೆ,ನೋವುತಂದಅನುಭವ ಮರೆಯದಿರಿ!” ==================================== ಪರಿಚಯ: ವಿದ್ಯಾಭ್ಯಾಸ: ಎಂ.ಎಸ್ಸಿ.(ರಸಾಯನಶಾಸ್ತ್ರ) ಬಿ.ಎಡ್, ವೃತ್ತಿ: MAGMA COACHING ZONE ನನಡೆಸುತ್ತಿದ್ದೇನೆ. (ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಮಾಡಿರುವಂತಹ ತಾಣ)ಹವ್ಯಾಸಗಳು: ಬರೆಯೋದು, ಪ್ರಕೃತಿಗೆ ಹತ್ತಿರವಾಗುವಂಥ ತಾಣಗಳಿಗೆ ಹೋಗುವುದು, ಹಾಡು ಕೇಳುವುದು, ಕರಕುಶಲ ಕೆಲಸಗಳನ್ನು ಮಾಡುವುದು,ಇತ್ಯಾದಿ.

ಮಕ್ಕಳ ಸಾಹಿತ್ಯ Read Post »

ಇತರೆ

ಭಾಷೆ

ಕನ್ನಡದ ಕಲಿಸುವಿಕೆಯ ಒಂದು ಅನುಭವ ದಾಕ್ಷಾಯಣಿ ನಾಗರಾಜ್            ಭಾಷೆಯೂ ಮಾನವನಿಗೆ ಒದಗಿಬಂದ ಅತ್ಯಾದ್ಭುತವಾದ ಶಕ್ತಿಯಾಗಿದೆ.ಅದನ್ನು ಬಳಸಿ ರೂಢಿಸಿಕೊಂಡು ಸಿದ್ದಿಸಿದರೆ ಅದು ಮಾಂತ್ರಿಕ ಶಕ್ತಿಯಾಗಿ ಪರಿವರ್ತಿನೆಯಾಗಿ ಅವನಿಗೆ ಜೀವಂತಿಕೆಯನ್ನು ತಂದುಕೊಡುತ್ತದೆ. ಭಾಷಾ ಕಲಿಕೆಯನ್ನು ಕಲಿಸುವ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಶಿಕ್ಷಕನು ಮಹತ್ವದ ಪಾತ್ರ ನಿರ್ವಹಿಸಬೇಕಾಗುತ್ತದೆ.          ಮಗುವಿನ ಸರ್ವತೋಮುಖ ಬೆಳೆವಣಿಗೆಯಲ್ಲಿ ಮಾತೃಭಾಷೆಯ ಪಾತ್ರ ಮುಖ್ಯವಾಗಿದೆ. ಆದ್ದರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡಬೇಕು.            ಮಗು,ಮನೆ ,ಪರಿಸರ ,ಕೌಟುಂಬಿಕ ಸದಸ್ಯರು, ಸಹಪಾಠಿಗಳು ಸಮಾಜದ ಇತರರೊಂದಿಗೆ ಎಳವೆಯಿಂದಲೇ ಹಲವಾರು ಭಾಷಿಕ ಸಾಮರ್ಥಗಳನ್ನು ಸ್ವಾಭಾವಿಕವಾಗಿ ರೂಢಿಸಿಕೊಂಡೇ ಶಾಲೆಗೆ ಬಂದಿರುತ್ತದೆ.                   ವಸ್ತುಗಳನ್ನು ಗುರುತಿಸುವ,ಗ್ರಹಿಸುವ,ಸಂಬಂಧಕಲ್ಪಿಸುವ,ನೆನಪಿಟ್ಟುಕೊಂಡು ಅರ್ಥೈಸುವ,ವಿಶ್ಲೇಷಿಸುವ,ಬಳಸುವ,ಹೊಂದಾಣಿಕೆ ಮಾಡುವ,ಕಲ್ಪಿಸುವ ಕಲ್ಪನೆಯಾಚೆಗೆ ಯೋಚಿಸುವ,ತನ್ನ ಅಗತ್ಯತೆಗೆ ತಕ್ಕಂತೆ ಬಳಸುವ ,ಹೋಲಿಕೆ ಮಾಡುವ, ವ್ಯತ್ಯಾಸೀಕರಿಸುವ,ಸಮಗ್ರವಾಗಿ ನೋಡಿ ಗ್ರಹಿಸುವ ,ದಿಕ್ಕು ಬಣ್ಣ ಗಾತ್ರ ಗುರುತಿಸುವ ಇನ್ನೂ ಮುಂತಾದ ಭಾಷಾ ಸಾಮರ್ಥಗಳನ್ನು ಮಾತೃಭಾಷೆಯಲ್ಲಿ ಸ್ವಾಭಾವಿಕವಾಗಿ ಕಲಿತಿರುತ್ತದೆ.ಆದ್ದರಿಂದ ಕನ್ನಡಭಾಷೆಯ ಕಲಿಕೆಯಿಂದಲೇ ಈ ಎಲ್ಲಾ ಸಾಮರ್ಥಗಳು ಹೊರತರಲು ಸಾಧ್ಯ.           ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ನಾನು ನನ್ನ ವೃತ್ತಿಯಲ್ಲಿ ಗಮನಿಸಿದ ಒಂದು ಅಂಶವೆಂದರೆ ಯಾವ ಮಗು ಕನ್ನಡ(ಮಾತೃಭಾಷೆ)ವನ್ನು ಸ್ಪಷ್ಟವಾಗಿ ಓದುತ್ತಾ,ತಪ್ಪಿಲ್ಲದಂತೆ ಬರೆಯುತ್ತದೆಯೋ ಆ ಮಗು ಇತರ ವಿಷಯಗಳ ಮತ್ತು ಭಾಷೆಗಳ ಕಲಿಕೆಯಲ್ಲಿ ಸಕಾರಾತ್ಮಕವಾಗಿರುತ್ತದೆ.ಒಬ್ಬ ಒಳ್ಳೆಯ ಕನ್ನಡ ಶಿಕ್ಷಕ ಮಗುವಿನಲ್ಲಿ ಓದುವ ರುಚಿಯನ್ನು,ಪ್ರಶ್ನೆ ಮಾಡುವ ಬಾಯಿಯನ್ನು,ಮತ್ತು ಸೃಜನಾತ್ಮಕತೆಯನ್ನು ಬೆಳೆಸಬಲ್ಲ.ನಮ್ಮ ಯೋಚನೆಯ ಲಹರಿ ಮೂಡುವುದು ಮಾತೃಭಾಷೆಯಲ್ಲಿ.ಆದ್ದರಿಂದ ಕನ್ನಡದ ಕಲಿಕೆಯೂ ಗುಣಮಟ್ಟದ್ದಾಗಿರಬೇಕು.           ನಮ್ಮ ಕರುನಾಡು ವಿಭಿನ್ನ ಕನ್ನಡಗಳ ಆಮೂಲ್ಯ ಸಂಗಮ.ಆ ನೆಲದ ಸೊಗಡಿನಂತೆ ಕನ್ನಡ ಅಲ್ಲಿನವರ ಜೀವನಾಡಿಯಾಗುತ್ತಾ ಹೋಗುತ್ತದೆ.         ನಾನು ವೃತ್ತಿಯ ಪ್ರಾರಂಭದ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಗಡಿನಾಡ ಒಂದು ಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ. ಅಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಲೂ ಹರಸಾಹಸ ಪಡಬೇಕಾಯಿತು. ಕಾರಣವೆಂದರೆ ಅಲ್ಲಿ ಇಡೀ ಊರಿನ ತುಂಬಾ ಅವರ ಮಾತೃ ಭಾಷೆ ಮಠಾಠಿ ಆಗಿತ್ತು.ಕೆಲವೇ ಕುಟುಂಬಗಳ ಮಾತೃಭಾಷೆ ಮಾತ್ರ ಕನ್ನಡ‌.ಅಂಥಾ ಮಕ್ಕಳು ಮಾತ್ರ ನಮ್ಮ ಕನ್ನಡ ಶಾಲೆಗೆ ದಾಖಲಾಗುತ್ತಿದ್ದರು. ಅಲ್ಲಿ ಕೆಲಸ ನಿರ್ವಹಿಸಲು ಹೋದ ಶಿಕ್ಷಕರು ತಾವೇ ಮಠಾಠಿ ಕಲಿತು ಮಕ್ಕಳಿಗೆ ಕನ್ನಡ ಅರ್ಥ ಮಾಡಿಸಬೇಕಾದ ಪರಿಸ್ಥಿತಿ.      ಆದರೆ ನನಗೆ ಬರುತ್ತಿದ್ದು ಕನ್ನಡ ಮಾತ್ರ!        -ನಮ್ಮ ಮಕ್ಕಳಿಗೆ ಕನ್ನಡವನ್ನು ಕೇಳಿಸಿಕೊಳ್ಳುವ ಕೌಶಲ‌ ಗೊತ್ತಿದ್ದರೂ ಅದನ್ನು ಸಮರ್ಥವಾಗಿ ಬಳಸಲು ಗೊತ್ತಿರಲಿಲ್ಲ. ಅಂತಹ ವಾತಾವರಣದ ಕೊರತೆ ಕಂಡುಬರುತ್ತಿತ್ತು.        -ನಮ್ಮ ಮಕ್ಕಳಿಗೆ ಒಂದೆರಡು ವಾಕ್ಯಗಳ ಅರ್ಥ ಗೊತ್ತಿದರೂ,ಒಂದು ಇಡೀ ಪ್ಯಾರದ ಭಾವಾರ್ಥ ಅವರಿಗೆ ಆಗುತ್ತಿರಲಿಲ್ಲ.        -ಮಾತನಾಡಲು ಹಿಂಜರಿತ ಇರುವುದರ ಜೊತೆಗೆ ಕೆಲವರು ಮಾತನಾಡಿದರೂ ಬರೀ ತುಂಡು ವಾಕ್ಯಗಳನ್ನು ಮಾತನಾಡುತ್ತಿದ್ದರು.ಪೂರ್ತಿ ವಾಕ್ಯ ಬಳಸಲು ಗೊತ್ತಿರಲಿಲ್ಲ.       ಹಾಗಾಗಿ ಮಕ್ಕಳಿಗೆ ನಾನು ಹೊಸಶಿಕ್ಷಕಿಯಾಗಿದ್ದರಿಂದ ಮಾತನಾಡಿಸುವ ತವಕ ಬಹಳಷ್ಟು ಇದ್ದರು ಭಾಷೆ ಬರದೆ ಒದ್ದಾಡುತ್ತಿದ್ದವು. ನನ್ನ ಪರಿಸ್ಥಿತಿ ಅವರಿಗಿಂತ ಭಿನ್ನವಾಗಿರಲಿಲ್ಲ. ಪ್ರಾರಂಭದ ದಿನಗಳಲ್ಲಿ ನಾನು ಹೇಳಿದ ಮಾತುಗಳನ್ನು ನಮ್ಮ ಮುಖ್ಯ ಶಿಕ್ಷಕರು ಮಕ್ಕಳಿಗೆ ಮರಾಠಿಯಲ್ಲಿ ತರ್ಜುಮೆ ಮಾಡಿ ಹೇಳುತ್ತಿದ್ದರು.ಅವರು ಹೇಳಿದ್ದನ್ನು ನನಗೆ. ಕನ್ನಡ ಮಾತುಗಳು ಕೇಳದೆ ನಮಗೆ ಏನೋ ಕಳೆದುಕೊಂಡ ಭಾವ. ಆದ್ದರಿಂದ ಕನ್ನಡವನ್ನು ಕನ್ನಡದಲ್ಲಿ ಹೇಳಲೇಬೇಕು ಅನ್ನುವ ಮನಸ್ಸು ಮಾಡಿದೆ.     ಕೊನೆಗೆ ಅವರಿಗೆ ಎಷ್ಟು ಅರ್ಥ ಆಗುತ್ತೋ ಅಷ್ಟೇ ಆಗಲಿ ಅಂತ ಆ ಮಕ್ಕಳ ಜೊತೆ ಬರೀ ಕನ್ನಡ ಮಾತ್ರ ಮಾತನಾಡಲು ಶುರು ಮಾಡಿದೆ.       ಕೆಲವೊಮ್ಮೆ ಸನ್ನೆಗಳ ಮೂಲಕ ಪದಗಳನ್ನು ಉಚ್ಚರಿಸುತ್ತಾ ಕಲಿಸಲು ಶುರುವಿಟ್ಟುಕೊಂಡೆ.         ಅವರ ಪೋಷಕರನ್ನು ಕರೆಸಿ ಮನೆಯಲ್ಲಿ ಹೆಚ್ಚಾನುಹೆಚ್ಚು ಕನ್ನಡ ಮಾತನಾಡಲು ತಿಳಿಸಿದೆ.        ಮಕ್ಕಳಿಗೆ ಕನ್ನಡದಲ್ಲೇ ಸಣ್ಣ ಸಣ್ಣ ಸಂಭಾಷಣೆಗಳ ಇರುವ ನಾಟಕ ಮಾಡಿಸಿದೆವು.           ಶಿಶುಗೀತೆ,ಪದಗಳ ಆಟ,ಕನ್ನಡದಲ್ಲೇ ಮಾತುಕತೆ, ಹೀಗೆ ಬೇರೆ ಬೇರೆ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿದೆವು.        ಅವರು ನಿತ್ಯ ಜೀವನದ ಘಟನೆಗಳನ್ನು ಕನ್ನಡದಲ್ಲಿ ಹೇಳಲು ಪ್ರೇರೆಪಿಸಿದೆವು. ಉದಾಹರಣೆಗೆ ಸಂತೆಗೆ ಹೋದಾಗ ಅವರ ಅನುಭವ,ಅವರ ಮನೆಯಲ್ಲಿ ಆಚರಿಸುವ ಹಬ್ಬ, ದಿನಸಿ ಅಂಗಡಿಯಲ್ಲಿನ ಅನುಭವ,, ಹೀಗೆ ಹಲವಾರು. ಮೊದಮೊದಲು ಅವರ ಮಾತುಗಳ ಇಪ್ಪತ್ತು ಶಬ್ದಗಳಲ್ಲಿ ಹತ್ತಕ್ಕಿಂತ ಹೆಚ್ಚು ಮರಾಠಿ ಪದಗಳು ನುಸುಳಿದ್ದವು. ಹಲವಾರು ಚಟುವಟಿಕೆಗಳ ಮೂಲಕ ಅವರನ್ನು ಪ್ರೇರೆಪಿಸಿದ ಬರುಬರುತ್ತಾ ಅವುಗಳ ಸಂಖ್ಯೆ ಇಳಿಕೆಯಾಗಿತ್ತು. ಅಂತೂ ನಮ್ಮ ಮಕ್ಕಳು ನನ್ನ ಜೊತೆ ಮಾತ್ರ ಕನ್ನಡ ಮಾತನಾಡಲು ಶುರು ಮಾಡಿದರು,,ಮುದ್ದಾಗಿ ,,ಕನ್ನಡ್ ಟೀಚರ್ ಅನ್ನುತ್ತಾ. ಕನ್ನಡ ಅಂದರೆ ಸಾಕು “ಮಲ ಕಾಯ್ ಸಮಜಲೆ ನಹೀ”(ನನಗೆ ಅರ್ಥ ಆಗುತ್ತಿಲ್ಲ) ಅನ್ನುತ್ತಿಲ್ಲ ನಮ್ಮ ಮಕ್ಕಳು “ಕನ್ನಡ್ ಮಲ ಯೇತೆ” (ಕನ್ನಡ ನನಗೆ ಬರುತ್ತೆ) ಅನ್ನುವಂತದರು.        ಶಾಲೆಗಳಲ್ಲಿ ಕೆಲವು ಮಕ್ಕಳ ಮಾತೃಭಾಷೆ ಬೇರೆಯದೇ ಆಗಿರುತ್ತದೆ.ಆದ್ದರಿಂದ ಅಂಥಾ ಮಕ್ಕಳ ಕನ್ನಡ ಕಲಿಕೆಯಲ್ಲಿ ನಾವು ಹೆಚ್ಚಿನ ಗಮನ ನೀಡಬೇಕಾಗುತ್ತದೆ.       ಕನ್ನಡದ ಉಚ್ಚಾರಣೆಯನ್ನು ಮೊದಲು ನಾವು ಸರಿಯಾಗಿ ಮಾಡಬೇಕು.ಅಂತೆಯೇ  ಮಕ್ಕಳಿಗೆ ಸರಿಯಾದ ಉಚ್ಚಾರಣೆ ಕಲಿಸಬೇಕು.       ಇನ್ನು ಕೆಲವು ಮಕ್ಕಳು ವ್ಯಾಕರಣವನ್ನು ಬಳಸುವಲ್ಲಿ ಎಡವುತ್ತಾರೆ.ಉದಾಹರಣೆಗೆ ವಾಕ್ಯಗಳಲ್ಲಿ ಏಕವಚನ ಬಹುವಚನಗಳನ್ನು,ಲಿಂಗಗಳನ್ನು  ಬಳಸುವಲ್ಲಿ‌ ಗೊಂದಲಕ್ಕೀಡಾಗುತ್ತಾರೆ. ಅಂತಹ ಸಂದರ್ಭಗಳಲ್ಲಿ ಈ ಕ್ರಿಯಾತ್ಮಕ ವ್ಯಾಕರಣದ ಚಟುವಟಿಕೆಗಳ ಮೂಲಕ ನಾವು ಅರಿವು ಮೂಡಿಸಬಹುದು.      ಆಲಿಸುವಿಕೆ,ಮಾತನಾಡುವುದು,ಓದುವುದು, ಬರೆಯುವುದು ಮತ್ತು ಕ್ರಿಯಾತ್ಮಕ ವ್ಯಾಕರಣದ  ಕೌಶಲಗಳು ಸಮರ್ಪಕವಾಗಿ ಮಕ್ಕಳಿಂದ ಬಳಕೆ ಆಗಬೇಕು.         ಇಂಗ್ಲಿಷ್ ನಲ್ಲಿ ಕಲಿತ ಮಕ್ಕಳು ಬರೆಯಲು ಓದಲು ಶಕ್ತರಾಗಿರುತ್ತಾರೆ.ಆದರೆ ಆಲಿಸಿದ್ದನ್ನು ಅರ್ಥ   ಅರ್ಥಮಾಡಿಕೊಳ್ಳುವಲ್ಲಿ ಮತ್ತು   ಸನ್ನಿವೇಷಕ್ಕೆ ತಕ್ಕಂತೆ ಕನ್ನಡವನ್ನು ಬಳಸಿ ಮಾತನಾಡುವಲ್ಲಿ ಸೋಲುತ್ತಾರೆ.     ಇಂಥ ಸನ್ನಿವೇಶಗಳಲ್ಲಿ ಮಕ್ಕಳಿಗೆ ಅಗತ್ಯ ಪೂರಕ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಅವರು ಸಹಜವಾಗಿ ಆಲಿಸಿ ಅರ್ಥೈಸಿಕೊಳ್ಳಲು,ಮಾತನಾಡಲೂ ಸಹಾಯ ಮಾಡಬೇಕಾಗುತ್ತದೆ.     ಹೀಗೆ ಬೊಧನೆಯಲ್ಲಿ ಹಲವಾರು ಎಡರತೊಡರುಗಳು ಬಂದೇ ಬರುತ್ತವೆ.ಅವುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವುದರೊಂದಿಗೆ ಮಾತೃಭಾಷೆಯನ್ನು ಕಲಿಸಬೇಕಾಗಿದೆ.      ಒಟ್ಟಾರೆ ಕನ್ನಡ ಶಿಕ್ಷಕರ ಜವಾಬ್ದಾರಿ ಕನ್ನಡ ಕಲಿಸುವಲ್ಲಿ ಬಹಳಷ್ಟು ಇದೆ ಎಂದರೆ ತಪ್ಪಾಗಲಾರದು.ಇಂದಿನ ಅಗತ್ಯ ಕೂಡ ಇದು. ===================

ಭಾಷೆ Read Post »

ಇತರೆ

ಬಾಲ್ಯದ ದೀಪಾವಳಿ

ಅಪ್ಪ ಸಿಡಿಸಿದ ಪಟಾಕಿ ಸಿಂಧು ಭಾರ್ಗವ್. ದೀಪಾವಳಿ ಬಂತೆಂದರೆ ಎಲ್ಲಿಲ್ಲದ ಸಂಭ್ರಮ, ಸಡಗರ. ಪುಟಾಣಿಗಳಿಗೆ ಹೊಸ ಝಯಿತಾರಿ ಅಂಗಿ ಕೊಡಿಸುವರು. ಬೊಗಸೆ ತುಂಬಾ ಸಿಹಿಯನ್ನು ನೀಡುವರು. ಯಾರ ಮನೆಗೆ ಹೋದರೂ ಸಿಹಿತಿಂಡಿ ನೀಡಿ ಆ ಪುಟ್ಟ ಮಕ್ಕಳ ಖುಷಿಯನ್ನು ತಾವೂ ಅನುಭವಿಸುವರು. ಅದಲ್ಲದೇ ಇದಕ್ಕಿಂತ ಹೆಚ್ಚೆಂದರೆ ಅಪ್ಪ ಪಟಾಕಿ ತರುವುದು ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಕುಣಿದು ಕುಪ್ಪಳಿಸುತ್ತಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಕಟ್ಟಡಗಳ ಹಾವಳಿಯೇ ವಿನಃ, ಮಕ್ಕಳಿಗೆ ಆಡಲು ಅನುಕೂಲವಾಗುವಂತಹ ವಾತಾವರಣ ಕಡಿಮೆ. ಆದರೂ ಈ ದೀಪಾವಳಿ ಹಬ್ಬ ಬಂತೆಂದರೆ ಎಲ್ಲರೂ ರಸ್ತೆಯಲ್ಲೇ ಇರುತ್ತಾರೆ. ಯಾವ ವಾಹನಗಳಿಗೂ ಹೋಗಲು ಬಿಡುವುದಿಲ್ಲ. ಓಣಿಯ ಮಕ್ಕಳೆಲ್ಲ ಒಂದಾಗಿ ರಾಕೇಟ್, ಬಿರ್ಸು, ನಕ್ಷತ್ರ ಕಡ್ಡಿ, ಬಾಳೆಮರ, ಲಕ್ಷ್ಮೀ ಪಟಾಕಿ, ನೆಲಚಕ್ರ, ಆಟಂಬಾಂಬ್ ಹೀಗೆ ಬಗೆಬಗೆಯ ಪಟಾಕಿಗಳ ಸಿಡಿಸುತ್ತಾ ಸಂಭ್ರಮ ಪಡುತ್ತಾರೆ. ಅಲ್ಲದೇ ಸಂಜೆ ಆದ ಮೇಲೆ ಎಲ್ಲರ ಮನೆಯ ಗಂಡಸರು ಅಂದರೆ ಅಪ್ಪಂದಿರು ರಸ್ತೆಗಿಳಿದು ತಮ್ಮ ಮಕ್ಕಳ ಜೊತೆ ಪಟಾಕಿ ಸಿಡಿಸಿ ಸಂಭ್ರಮ ಹೆಚ್ಚಿಸುತ್ತಾರೆ. ಹೀಗಿರುವಾಗ ಒಮ್ಮೆ ಪಕ್ಕದ ಮನೆಯ ಅಂಕಲ್ ಸಂಜೆ ವೇಳೆಗೆ ಒಂದು ದೊಡ್ಡ ಬಾಕ್ಸ್ ಪಟಾಕಿ ತಂದಿದ್ದರು. ಮಕ್ಕಳನ್ನೆಲ್ಲ ದೂರ ನಿಲ್ಲಲು ಹೇಳಿ ಒಂದೊಂದೇ ಜಾತಿಯ ಪಟಾಕಿ ಸಿಡಿಸುತ್ತಾ ಮಕ್ಕಳಲ್ಲಿ ಮೋಜು ಹೆಚ್ಚಿಸುತ್ತ ಇದ್ದರು. ಅದೊಂದು ಹೀರೋತನ ಪ್ರದರ್ಶನ ನಡೆಯುತ್ತಾ ಇತ್ತು. ಇದನ್ನೆಲ್ಲ ಹೆಚ್ಚಿನವರು ಅವರವರ ಮನೆಯ ಮಹಡಿ ಮೇಲಿಂದಲೂ ನೋಡುತ್ತ ಇದ್ದರು. ಹೀಗಿರುವಾಗ, ಅಂಕಲ್ ಮೊದಮೊದಲು ಸಣ್ಣಗಿನ ನೆಲಚಕ್ರ, ನಕ್ಷತ್ರ ಕಡ್ಡಿ , ಬಾಳೆಗಿಡ ಎಲ್ಲವನ್ನೂ ಹಚ್ಚುತ್ತ ಬಂದರು. ಈ ನಡುವೆ ಒಂದು ರಾಕೆಟ್ ತುದಿಗೆ ಬೆಂಕಿ ಹಚ್ಚಿಯೇ ಬಿಟ್ಟರು. ಮಕ್ಕಳು ವರ್ಣಮಯ ಬೆಳಕನ್ನು ನೋಡುವುದರಲ್ಲೇ ತಲ್ಲೀನ‌‌. ಕುಣಿಯುತ್ತ ಚಪ್ಪಾಳೆ ತಟ್ಟುತ್ತಾ ಕೇಕೆ ಹಾಕುತ್ತಿರುವಾಗಲೇ ಆಗಸಕ್ಕೆ ಹಾರಬೇಕಿದ್ದ ಆ ರಾಕೇಟ್ ಸರಕ್ಕನೆ ಮಕ್ಕಳು ಇರುವ ಜಾಗಕ್ಕೆ ಬಂದು ಒಂದು ಪುಟಾಣಿ ಹುಡುಗಿಯ ಎದೆಯನ್ನು ಸೀಳಿ ರಸ್ತೆ ಮೇಲೇಯೇ ನೇರವಾಗಿ ಹೋಗಿ ಒಂದು ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದಿತು. “ಏನಾಯಿತು….?? ಓ ಮೈ ಗಾಡ್…” ಎಂದು ನೋಡುವಷ್ಟರಲ್ಲೇ ಆ ಮಗು ಪ್ರಜ್ಞೆ ತಪ್ಪಿ ಬಿದ್ದತು. ಮುಂಜಾಗ್ರತೆಗಾಗಿ ಏನನ್ನು ಹತ್ತಿರದಲ್ಲಿ ಇಟ್ಟುಕೊಂಡಿರಲಿಲ್ಲ. ಗಾಬರಿಯಾಗಿ ಆ ಮಗುವನ್ನು ಎತ್ತಿಕೊಂಡು ಮನೆ ಕಡೆ ಓಡತೊಡಗಿದರು‌. ಮಹಡಿ ಮೇಲೆ ನಿಂತು ನೋಡುತ್ತಿದ್ದವರೆಲ್ಲ ಭಯದಿಂದ “ಮಗು…ಮಗು…” ಎಂದು ಕಿರುಚುತ್ತ ಇದ್ದರು. ಕೊನೆಗೆ ಆ ಅಂಕಲ್ ಮನೆಯೊಳಗೆ ಹೋದಾಗ ಮಗುವ ನೋಡಿ ಅದರ ತಾಯಿಗೆ ಭಯವಾಗಿ ಅವರೂ ಕಿರುಚಿದರು. ಹೀಗೆ ಯಾರಿಗೂ ಏನು ಮಾಡಬೇಕು ಎಂದು ಅರಿವಾಗುತ್ತಲೇ ಇರಲಿಲ್ಲ. ಭಯದಿಂದ ಕೈಕಾಲುಗಳು ನಡುಗುತ್ತಿದ್ದವು. ನಂತರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತದೆ. ಮಗುವಿನ ಎದೆಯ ಭಾಗ ಸುಟ್ಟು ದೊಡ್ಡ ಗುಳ್ಳೆಯೊಂದು ಮೂಡುತ್ತದೆ. ಆ ಕಿರುಚಾಟ, ನೋವು ಒಂದೆರಡು ತಿಂಗಳುಗಳ ಕಾಲ ಎಲ್ಲರ ನಿದ್ರೆ ಕೆಡಿಸಿತ್ತು. ಹಾಗೆಯೇ ಅದೊಂದು ಕಲೆಯಾಗಿ ಆ ಮಗುವಿನ ಎದೆಯಲ್ಲಿ ಹಾಗೆಯೆ ಉಳಿದಿದೆ. ಸ್ನೇಹಿತರೇ, ಪಟಾಕಿ ಸಿಡಿಸುವುದು ತಪ್ಪಲ್ಲ. ಪುಟಾಣಿ ಮಕ್ಕಳ ಎದುರು ಹೀರೋ ಎಂದು ತೋರಿಸಲು ಹೋಗಿ ಅವಘಡಕ್ಕೆ ಸಿಲುಕಬೇಡಿ. ಮುಂಜಾಗ್ರತೆಗಾಗಿ ಒಂದು ಬಕೇಟು ಮರಳು, ನೀರು, ಐಸ್ ಕ್ಯೂಬ್, ಜೇನುಪುಪ್ಪ, ಬರ್ನಾಲ್ ಮುಲಾಮು ಸಗಣಿ, ಒಂದು ಪಾತ್ರೆ ಹುಣಸೆರಸ ಹೀಗೆ ಒಂದಿಲ್ಲೊಂದನ್ನು ಹತ್ತಿರದಲ್ಲೇ ಇರಿಸಿಕೊಂಡಿರಿ. ಈ ಎಂಟು ಹತ್ತು ವರುಷದ ಮಕ್ಕಳೋ ಇಲ್ಲ ಹದಿಹರೆಯದವರೂ ಕೂಡ ಪಟಾಕಿಗಳ ಜೊತೆ ಸರಸವಾಡುವುದನ್ನು ಕಡಿಮೆ ಮಾಡಿ. ನಿಮ್ಮ ಮೋಜು ಮಸ್ತಿ ಇನ್ನೊಬ್ಬರ ಭವಿಷ್ಯವನ್ನೇ ಹಾಳು ಮಾಡಬಹುದು. ಕಣ್ಣುಗಳು ಕುರುಡಾಗಲೂ ಬಹುದು. ದೇಹದ ವಿವಿಧ ಅಂಗಗಳ ಮೇಲಾಗುವ ಸುಟ್ಟಗಾಯ, ಕಲೆ ಎಂದೂ ಮರೆಯಲು ಸಾಧ್ಯವಿಲ್ಲ. ಆ ವಿಷಮದ್ದನ್ನು ಒಳಗೊಂಡ ಸುಟ್ಟಗಾಯ ತುಂಬಾ ಉರಿ ಕೊಡುತ್ತದೆ. ಕ್ಯಾಂಡಲ್ ಉರಿಸುವ ಬದಲು ಮಣ್ಣಿನ ಹಣತೆಯಿಂದ ದೀಪವ ಹಚ್ಚಿರಿ. ಸಿಹಿಯ ಹಂಚಿ ಸಂಭ್ರಮಿಸಿರಿ. ಎಲ್ಲರಿಗೂ ಹಬ್ಬದ ಶುಭಾಶಯಗಳು.

ಬಾಲ್ಯದ ದೀಪಾವಳಿ Read Post »

ಇತರೆ

ಲೇಖನ

ಆ ದೃಶ್ಯಗಳನ್ನು ಅಲಂಕರಿಸಿ ಹಂಚುತ್ತಿದ್ದಾರೆ! ಪಿಎಂ ಇಕ್ಬಾಲ್ ಕೈರಂಗಳ ಕೆಲವು ದೌರ್ಜನ್ಯದ ವಾರ್ತೆಗಳು, ವೀಡಿಯೋಗಳು FB ಮತ್ತು ವಾಟ್ಸಪಲ್ಲಿ ಷೇರು ಆಗಿ ನಮ್ಮ ಕಣ್ಣಿಗೆ ಬೀಳುತ್ತಿರುವುತ್ತವೆ. ನೋಡಕ್ಕಾಗದೇ ನೋಡುತ್ತೇವೆ. ಆಗೆಲ್ಲಾ ಮನಸ್ಸು ವಿಪರೀತ ಹರ್ಟುಗೊಳ್ಳುತ್ತದೆ. ಹೃದಯವನ್ನು ಯಾರೋ ಹಿಂಡಿದಂತಾಗುತ್ತದೆ. ಕೆಲವು ನಮ್ಮನ್ನು ಅಳಿಸಿಯೇ ಬಿಡುತ್ತವೆ. ವಿಕೃತ ಮನಸ್ಸಿನ ಪೈಶಾಚಿಕ ಮನುಷ್ಯರ ವಿರುದ್ಧ ರಕ್ತ ಕುದಿಯುತ್ತದೆ. ಅವರನ್ನು ಜೀವಂತ ಸುಡಬೇಕೆಂದು ಅನಿಸುತ್ತದೆ. ಕ್ರೌರ್ಯ, ದೌರ್ಜನ್ಯಗಳ ತಾಕತ್ತೇ ಹಾಗೆ. ಒಂದೆರಡು ನಿಮಿಷದ ವಾರ್ತೆಯಾಗಿ ಅಥವಾ ವೀಡಿಯೋ ಆಗಿ ಸಿಕ್ಕರೆ ನಮಗೆ ಹೀಗಾಗುತ್ತವೆ. ಅವನ್ನು ಅನುಭವಿಸಿದ ಆ ಜೀವಗಳ ಪರಿಸ್ಥಿತಿಯೆಷ್ಟು ಘೋರ ಇದ್ದೀತು! ಉಹುಂ, ಕಲ್ಪನೆ ಮಾಡೋಕೂ ಆಗುವುದಿಲ್ಲ. ಈ ಲೋಕವೇ ಬೇಡ, ಲೋಕವು ಒಮ್ಮೆ ಅವಸಾನ ಕಾಣಲಿ ಎಂದು ಅನಿಸುತ್ತದೆ. ಇತ್ತೀಚೆಗೆ ಹೊಸ ಬೆಳವಣಿಗೆಯೊಂದು ಕಾಣಸಿಗುತ್ತಿವೆ. ಗಾಯಕ್ಕೆ ಬರೆ ಹಾಕುವುದು ಅನ್ತಾರಲ್ಲಾ ಹಾಗೆ. ದೌರ್ಜನ್ಯಗಳ ವೀಡಿಯೋಗಳ ಜೊತೆಗೆ ಕೋಮುಪ್ರಚೋದಿತ ಕೆಲವು ವಾಕ್ಯಗಳು ಸೇರಿ ಷೇರ್ ಆಗುತ್ತಿವೆ. ‘ತಮ್ಮ ಧರ್ಮೀಯರ ವಿರುದ್ಧ ಇಂತಹ ಧರ್ಮೀಯರ ದೌರ್ಜನ್ಯ ಇದು’ ಎನ್ನುತ್ತಾ ಒಂದಷ್ಟು ವಾಕ್ಯಗಳು ಇರುತ್ತವೆ. ಕೆಲವು ವಾಕ್ಯಗಳಂತೂ ಅತಿ ಅಸಹ್ಯವಾಗಿರುತ್ತವೆ. ‘ಕೋಮು ಅಸಹನೆಯನ್ನು ಪ್ರಚೋದಿಸುವುದೇ ಧರ್ಮರಕ್ಷಣೆ’ಯೆಂಬ ವ್ಯಾಧಿಗೆ ತುತ್ತಾದವರು ಕಂಡುಕೊಂಡ ಹೊಸ ಫಾರ್ಮುಲಾ ಇವು. ಒಂದೇ ವೀಡಿಯೋ ಒಂದು ಕಡೆ ಮುಸ್ಲಿಮರ ಮೇಲಿನ ಹಿಂದೂಗಳ ದೌರ್ಜನ್ಯವಾಗಿಯೂ, ಮತ್ತೊಂದು ಕಡೆ ಹಿಂದುಗಳ ಮೇಲಿನ‌ ಮುಸ್ಲಿಮರ ದೌರ್ಜನ್ಯವಾಗಿಯೂ ಬರೆಯಲ್ಪಟ್ಟು ಷೇರ್ ಆಗುತ್ತಿರುವುದು ನನ್ನ ಗಮನಕ್ಕೆ ಎಷ್ಟೋ ಬಂದಿದೆ. ವೀಡಿಯೊ- ಫೋಟೋಗಳಲ್ಲಿರುವ ಬರ್ಬರತೆಯೇ ಸಾಕಾಗುತ್ತೆ ನಮ್ಮ ಮನಸ್ಸನ್ನು ಗಾಯಗೊಳಿಸಿಬಿಡಲು. ಇಂತಹ ಬರಹಗಳು ಗಾಯದ ಮೇಲಿನ ಬರೆಯಾಗಿ ಪರಿಣಮಿಸುತ್ತದೆ. ಅಂತಹ ವೀಡಿಯೋಗಳಲ್ಲಿ ಕಾಣುವ ಕ್ರೂರಿಗಳದ್ದು ಒಂದು ಮನಸ್ಥಿತಿಯಾದರೆ ಅವನ್ನು ಕೋಮು ಅಸಹನೆಗೆ ಉಪಯೋಗಿಸಲು ಉದ್ರೇಕಕಾರಿಯಾಗಿ ಬರಹದೊಂದಿಗೆ ಅಲಂಕರಿಸುವವರದ್ದು ಇನ್ನೊಂದು ಮನಸ್ಥಿತಿ. ವೀಡಿಯೋ ಜೊತೆಗೆ ಇರುವ ಬರಹ ಕನ್ಫರ್ಮಾ, ಬಹುಶ ಕನ್ಫರ್ಮು ಆದರೂ ಅದು ಆ ಪುಂಡರ ಹೆಸರು ಪ್ರತಿನಿಧಿಸುವ ಧರ್ಮದ ಎಲ್ಲರ ಕೃತ್ಯವಾ ಎಂದು ಯೋಚಿಸುವ ಗೋಜಿಗೇ ಹೋಗದೇ ಹಾಗೇ ಷೇರ್ ಮಾಡುವವರದ್ದು ಮತ್ತೊಂದು ಮನಸ್ಥಿತಿ. ಇಂತಹ ಕೋಮೋದ್ರೇಕ ಬರಹದೊಂದಿಗಿನ ವೀಡಿಯೋಗಳನ್ನು ನಾನು ವರ್ಷಗಳಿಂದ ನೋಡುತ್ತಿದ್ದೇನೆ. ಅವುಗಳಲ್ಲಿರುವ ಸಂತ್ರಸ್ತರ ಪರವಾಗಿ ಮನಸ್ಸು ಮರುಗಿ, ಆ ರಾಕ್ಷಸರ ವಿರುದ್ಧವಾಗಿ ರೋಷ ಉಕ್ಕುತ್ತದೆಯೇ ಹೊರತು ಬರಹವನ್ನು ನಂಬಿ ಆ ಕೆಟ್ಟವರ ಹೆಸರುಗಳು ಪ್ರತಿನಿಧಿಸುವ ಧರ್ಮದ ಮೇಲೋ, ಧರ್ಮೀಯರ ಮೇಲೋ ಅಸಹನೆ ಒಮ್ಮೆಯೂ ಬಂದದ್ದಿಲ್ಲ. ವಾಟ್ಸಪ್, fbಯಲ್ಲಿ ವೀಡಿಯೋ ಜೊತೆ ಅಂತಹ ಬರಹ ಷೇರ್ ಮಾಡಿದವರೊಂದಿಗೆ ನನ್ನ ರಿಯಾಕ್ಟು, “ಈ ಘಟನೆಯ ರಾಕ್ಷಸರ ಮತ್ತು ಸಂತ್ರಸ್ತರ ಧರ್ಮ ಯಾವುದೆಂದು ನಿಮಗೆ ಕನ್ಫರ್ಮಾ, ಕನ್ಫರ್ಮಾದರೆ ಹೇಗೆ? ಇರೋದನ್ನು ಹಾಗೇ ನಂಬಿ ಷೇರ್ ಮಾಡಬೇಡಿ. ವೀಡಿಯೋವನ್ನು ಷೇರ್ ಮಾಡುವುದಾದರೆ ಅದರ ಜೊತೆಗಿರುವ ಬರಹವನ್ನು ದಯವಿಟ್ಟು ಅಳಿಸಿ’ ಎಂದಾಗಿರುತ್ತದೆ. ‘ಬಹುಶ ವೀಡಿಯೋ ಜೊತೆಗಿರುವ ಬರಹ ಪ್ರಕಾರ ಅದು …ಇಂತಹ ಧರ್ಮೀಯರು ಎಂಬುದು ನಿಮಗೆ ಪಕ್ಕಾ ಆದರೂ ಅದಕ್ಕೆ ಅವರ ಇಡೀ ಧರ್ಮೀಯನ್ನು ಹೊಣೆಗಾರರನ್ನಾಗಿ ಮಾಡಬೇಡಿ” ಎಂದೂ ಹೇಳುತ್ತೇನೆ. ಕೆಲವರು ನನ್ನ ಮಾತನ್ನು ಅನುಮೋದಿಸಿದರೆ ಕೆಲವರು ಜಗಳಕ್ಕೆ ನಿಂತದ್ದು ಇವೆ. ಜಗಳ ಮಾಡಿದವರಲ್ಲಿ ನಾನು “ ‘ನಿಮ್ಮ ಅರಿವು ನಿಜವೇ ಆದರೂ ಲೋಕದಲ್ಲಿ ಕಾಣುವ ಅಮಾನುಷ ಕಾರ್ಯಗಳನ್ನೆಲ್ಲ ಒಮ್ಮೆ ಪಟ್ಟಿ ನೋಡಿ. ಆ ಕೃತ್ಯಗಳ ಇಡೀ ಧರ್ಮೀಯರನ್ನೋ ಅಥವಾ ಸಿದ್ಧಾಂತವನ್ನೋ ಹೇಗೆ ಅಪರಾಧಿ ಮಾಡೋಕ್ಕಾಗುತ್ತೆ? ಹಾಗೆ ಮಾಡೋದಾದರೆ ಲೋಕದ ಅಷ್ಟೂ ಧರ್ಮ, ಸಿದ್ಧಾಂತಗಳನ್ನು ಅಪರಾಧಿ ಮಾಡಲೇಬೇಕಾಗುತ್ತದೆ ಎಂಬುದು ನಮಗೆ ಗೊತ್ತಿರಲಿ” ಎನ್ನುತ್ತೇನೆ. ಹೆಚ್ಚಿನವರು ಕನ್ವಿನ್ಸು ಆಗ್ತಾರೆ. ತೊಟ್ಟಿಲ ಮಗುವನ್ನೂ ಹೆಣವನ್ನೂ, ಪ್ರಾಣಿಯನ್ನೂ ರೇಪು ಮಾಡುವವರಿದ್ದಾರೆ. ಸ್ವಂತ ಕರುಳ ಕುಡಿಯನ್ನೇ ಕೊಲ್ಲುವ ತಾಯಿ, ಅಪ್ಪನನ್ನೇ ಕೊಲ್ಲುವ ತಂದೆ, ಸೋದರಿಯನ್ನೇ ಬಲಾತ್ಕರಿಸುವ ಸೋದರ, ನಿಧಿಗಾಗಿ ತಾಯಿಯನ್ನೇ ಬಲಿ ಕೊಡುವ ಮಗ, ಹತ್ಯಾ ಸರಮಾಲೆಯನ್ನೇ ಮಾಡುವ ಸರಣಿ ಹಂತಕ…‌ಹೀಗೆ ನಾವು ನ್ಯೂಸುಗಳನ್ನು ಕೇಳುತ್ತಿದ್ದೇವೆ. ಇಂತಹ ಕೃತ್ಯಗಳಲ್ಲಿ ಅಪರಾಧಿಗಳ ಹೆಸರು ನೊಡಿ.. ಎಲ್ಲಾ ಧರ್ಮಗಳಲ್ಲಿರುವ ಹೆಸರಿನವರಿಂದಲೂ ಅಪರಾಧ ನಡೆಯುತ್ತವೆ. ಆದರೆ ಆಕಸ್ಮಾತ್ ಕೆಲವು ಸಂದರ್ಭಗಳಲ್ಲಿ ಅಪರಾಧಿ ಮತ್ತು ಅಪರಾಧಗೊಳಪಟ್ಟವರ ಧರ್ಮ ಬೇರೆ ಆಗಿರುತ್ತವೆ! ಅಪರಾಧಗೊಳಪಟ್ಟವರು ಮತ್ತು ಅಪರಾಧಿಗಳು ಒಂದೇ ಧರ್ಮದವಾದರೆ ಅವು ಆ ಅಪರಾಧಿಗಳ ಮಾತ್ರ ಕೃತ್ಯಗಳಾಗಿಯೂ, ಅಪರಾಧಗೊಳಪಟ್ಟವರು ಅಪರಾಧಿಗಳ ಧರ್ಮದವರಲ್ಲವಾದರೆ ಆ ಕೃತ್ಯಗಳು ಅಪರಾಧಿಗಳ ಧರ್ಮೀಯರ ಎಲ್ಲರ ಕೃತ್ಯಗಳಾಗಿಯೂ ಆಗಿ ನಮಗೆ ಕಾಣೋದು ಯಾವ ನ್ಯಾಯ? ನಾವು ಯಾವ ಮನಸ್ಥಿತಿಯಲ್ಲಿ ಹೂತುಹೋಗಿದ್ದೇವೆ? 99 ಪರ್ಸೆಂಟ್ ಜನರು ಸತ್ಯ, ನ್ಯಾಯದ ದಾರಿಯಲ್ಲಿ‌ಸಾಗಿ ಭಗವಂತನ ಕೃಪೆ ಸಿಗಬೇಕೆಂದು ಬಯಸಿ ಆ ಉದ್ದೇಶಕ್ಕಾಗಿ ಅವರು ಹುಟ್ಟಿದ ಧಾರ್ಮಿಕ ನಂಬಿಕೆಯಲ್ಲಿ ಜೀವನದ ಏರಿಳಿತವನ್ನು ಎದುರಿಸೋದರಲ್ಲೇ ಸುಸ್ತಾಗಿ ಬದುಕುತ್ತಿದ್ದಾರೆ. ಅವರಲ್ಲಿ ಕೆಲವರಂತೂ ನರಳುತ್ತಾ ‘ಯಾರಿಲ್ಲ ನಮಗೆಂದು’ ಫೀಲಾಗುತ್ತಾ ಜೀವನ ದೂಡುತ್ತಿದ್ದಾರೆ. ಅವರಲ್ಲಿ ಕೆಲವರಷ್ಟೇ ಆರ್ಥಿಕ ಸಬಲರಿದ್ದರೆ ಅವರೂ ಸೇವೆ, ದಾನ, ಪ್ರೆಸ್ಟೀಜು ಅಂತ ಬಿಝಿಯಾಗಿರ್ತಾರೆ. ಅದರೆ ಒ ಮಾನವಕುಲದ ಒಟ್ಟು ಜನರ ಒಂದು ಪರ್ಸೆಂಟು ಜನರು ವಿಕೃತರಾಗಿ ತಯಾರಾಗಿರುತ್ತಾರೆ. ಅವರು ವಿಕೃತ ಮೆರೆಯೋದು ಅವರದ್ದಲ್ಲದ ಧರ್ಮೀಯಲ್ಲಿ ಮಾತ್ರ ಅಲ್ಲ! ಪೋಲೀಸ್ ಠಾಣೆಗಳ ಕೇಸುಗಳ ಪಟ್ಟಿ ನೋಡಿ. ಕೋರ್ಟುಗಳಲ್ಲಿರುವ ಪಟ್ಟಿಗಳನ್ನು ಅವಲೋಕಿಸಿ. ಮಾಧ್ಯಮಗಳಲ್ಲಿ ಬರುತ್ತಿರುವ ವಾರ್ತೆಗಳನ್ನು ನೋಡಿ. ಏನನ್ಸುತ್ತದೆ? ಕೊಲೆ, ಅತ್ಯಾಚಾರ, ಹಿಂಶೆ ಮುಂತಾದ ಅಪರಾಧಗಳೆಲ್ಲದರಲ್ಲಿ ಅಪರಾಧಿಗಳ ಮತ್ತು ಅಪರಾಧಗೊಳಪಟ್ಟವರ ಧರ್ಮಗಳು ಬೇರೆ ಬೇರೆಯಾಗಿಯೇ ಇರುತ್ತಾ? ಒಂದು ಧರ್ಮದವರು ಒಂದಾಗಿ ಇನ್ನೊಂದು ಧರ್ಮದವರ ವಿರುದ್ಧ ಮಾಡಿದ ಯುದ್ಧವಾಗಿರುತ್ತವಾ ಅವುಗಳು? ನಮ್ಮ ಉತ್ತರ ‘ಅಲ್ಲ’ ಎಂದಾಗಿಯೇ ಇರುತ್ತದೆ! ಹಾಗಿರುವಾಗ ಕೆಲವು ಘಟನೆಗಳಲ್ಲಿ ಮಾತ್ರ ಅಪರಾಧಿ ಮತ್ತು ಅಪರಾಧಿಗಳ ಹೆಸರಿನವರ ಧರ್ಮಗಳು ಬೇರೆಯಾದರೆ ಅಪರಾಧ ಜಗತ್ತಿನ ಆಕಸ್ಮಿಕಗಳಷ್ಟೇ ಅವೆಂದು ತಿಳಿದುಕೊಳ್ಳದೆ ಅಪರಾಧಿಗಳ ಇಡೀ ಧರ್ಮೀಯರ ಮನಸ್ಥಿತಿಯ ಪ್ರತಿಬಿಂಬವೆಂದು ನಮಗೆ ಯಾಕೆ ಅನಿಸಬೇಕು? ನಮ್ಮಲ್ಲಿ ಹಿಂದುಗಳ ಬಗ್ಗೆ ಮುಸ್ಲಿಮರಿಗೆ ಮತ್ತು ಮುಸ್ಲಿಮರ ಬಗ್ಗೆ ಹಿಂದುಗಳಿಗೆ ಭಯವನ್ನು ಇಂಜೆಕ್ಟು ಮಾಡಲು ತಮ್ಮ ಆರಾಧನಾಲಯಗಳನ್ನು ತಾವೇ ಮಲಿನಗೊಳಿಸುತ್ತಾರೆ. ವಾಸ್ತವ ಏನು ಅಂತ ಗೊತ್ತಿಲ್ಲದ ಹಿಂಶಾತ್ಮಕ ವೀಡಿಯೋಗಳು ಸಿಕ್ಕಿದರೂ ಬಳಸುತ್ತಾರೆ. ಅಮಾನುಷ ಘಟನೆಗಳು‌ ನಡೆದಾಗ ಅಥವಾ ತಿಳಿದಾಗ ಆ ಅಪರಾಧಿಗಳ ಹೆಸರಿನ ಧರ್ಮದ 99.9 ಪರ್ಸೆಂಟ್ ಜನರ ಮನಸ್ಸೂ ಕರೆಳಿ ನಿಲ್ಲುತ್ತವೆ. ಅಪರಾಧಿಗಳ ವಿರುದ್ಧ ಹಿಡಿಶಾಪ ಹಾಕುತ್ತವೆ.‌ ಸಂತ್ರಸ್ತರಿಗಾಗಿ ಮರುಗುತ್ತವೆ. ಆ ನರರೂಪಿ ಚಿಶಾಚಿಗಳಿಗೆ ಶಿಕ್ಷೆ ಆಗಲು ಮನಸಾರೆ ಬಯಸುತ್ತವೆ. ಒಂದು ಧರ್ಮೀಯರು ಒಂದಾಗಿ, ಪ್ಲಾನ್ ಮಾಡಿದ ಕೃತ್ಯಗಳು ಅವುಗಳಲ್ಲ. ಅವು ಅಪರಾಧಿಗಳ ಹೆಸರುಗಳು ಪ್ರತಿನಿಧಿಸುವ ಧರ್ಮೀಯರಿಂದ ಶಹಬಾಸ್ ಪಡೆಯುವುದಿಲ್ಲ. ಅವೆಲ್ಲಾ ಧರ್ಮಯುದ್ದವಲ್ಲ, ವಿಕೃತರ ಅಟ್ಟಹಾಸವಷ್ಟೇ. ಹಿಂಶಾಪ್ರಿಯರ ಕೃತ್ಯಗಳನ್ನು ಕೋಮು ಬಣ್ಣದಿಂದ ಆಲಂಕರಿಸಬೇಡಿ. ಹಾಗೆ ಮಾಡಿದರೆ ಅದು ಆ ಹಿಂಶಾಪ್ರಿಯರಿಗೆ ಮತ್ತಷ್ಟು ಆನಂದ ತಂದುಕೊಡಬಲ್ಲದು. ಅಷ್ಟೂ ಸಮಸ್ಯೆಗಳಿಂದ ನರಳುತ್ತಿರುವ ಮನುಷ್ಯರ ನಡುವೆ ಕೋಮುರಾಕ್ಷಸನನ್ನು ಇನ್ನಷ್ಟು ಬೆಳೆಸಬೇಡಿ. ಅಪರಾಧಿಗಳನ್ನು ಅಪರಾಧವಾಗಿ ನೋಡದೇ ಅವರ ಹೆಸರು ಪ್ರತಿನಿಧಿಸುವ ಧರ್ಮದವರ ಮನಸ್ಥಿತಿ ಅಥವಾ ಕೃತ್ಯಗಳಾಗಿ ಕಂಡರೆ ಈ ಲೋಕದಲ್ಲಿ ಯಾವ ಧರ್ಮವನ್ನು ಸಾಚಾ ಅನ್ನೋಕೆ ಸಾಧ್ಯ ಎಂದು ಎದೆಯಲ್ಲಿ ಕೈಯಿಟ್ಟು ಚಿಂತಿಸಿನೋಡಿ. ================= ಪರಿಚಯ: ಮಂಗಳೂರು ಸಮೀಪದ ಕೈರಂಗಳದವರು.. ವಾರ್ತಾಭಾರತಿಯಲ್ಲಿ ಪ್ರೂಫ್ ರೀಡರ್ ಆಗಿದ್ದವನು

ಲೇಖನ Read Post »

ಇತರೆ

ಮೀನು ಶಿಕಾರಿಯ ಸಂಭ್ರಮ

ಮಳೆಗಾಲದ ಆರಂಭ ಮತ್ತು ಮೀನು ಶಿಕಾರಿ… ರಮೇಶ್ ನೆಲ್ಲಿಸರ ‘ಮಳ್ಗಾಲ ಅನ್ನೋದ್ ಯಾವಾಗ್ ಬಂದ್ ಈ ಸುಡ್ಗಾಡ್ ಶೆಕೀನ ಹೊತ್ಕಂಡ್ ಹೋಯ್ತದೋ ಆ ದ್ಯಾವ್ರೆ ಬಲ್ಲ’, ಅಂತ ಬೇಸ್ಗೀಲಿ ಹಾಗೇಯ “ಈ ಹಾಳಾದ್ ಮಳಿ ದಸೇಂದ್ ಮನೆ ಹೊರ್ಗ್ ಕಾಲಿಡಕ್ ಆಗ್ದು” ಅಂತ ಮಳ್ಗಾಲದಾಗೆ , ಈ ಬಗೀ ಮಾತು ನಮ್ ಮಲ್ನಾಡ್ ಕಡೆ ಎಲ್ರೂ ನಾಲ್ಗಿ ಮೇಲೂ ನಲೀತರ‌್ದದೆ. ಏನ್ ಶೆಕಿ ಅಂತೀರಾ, ಹೋದ್ ಮಳ್ಗಾಲ‌್ದಲ್ ಆ ನಮೂನಿ ಮಳೆ ಹೊಯ್ದ್ರು ನೀರ್ ಅನ್ನದ್ ಪಾತಾಳ್‌ಮಟ ಇಳ್ದು ತುಂಗಾ ನದಿ ಅನ್ನೋದು ಬೇಗೊಳ್ಳಿ ಹಳ್ದಂಗ್ ಆಗಿ ಆಚಿದಡ ಈಚಿದಡಕ್ಕೆ ‌ನಡ್ಕೊತಾನೆ ದಾಟಾಡೊಂಗ್ ಆಗಿತ್ತು. ಮುುುಂಗಾರಲ್ ಮಳಿ ಹೆಂಗಪ್ಪ ಅಂದ್ರೆ ಅತ್ಲಾಗೂ ಬಂದಂಗೂ ಅಲ್ಲ, ಇತ್ಲಾಗ್ ಬರ್ದೀತೆ ಇರಂಗು ಅಲ್ಲ, ಒಂದ್ ಸರಿ ಹೊಯ್ತದೆ,ಮಾರ‌್ನೆ ಗಳ್ಗೆಗ್ ಬಿಸ್ಲ್ ಮೂಡತ್ತೆ, ಮಳಿ ಹಿಡ್ಕಳಾ ಒಳ್ಗೇನೆ ದರ‌್ಗು, ಒಣ ಹುಲ್ಲು,ಕಟ್ಗಿ ಎಲ್ಲಾ ಕೊಟ್ಗೆಗ್ ಸೇರ್ಸಿದ್ವೊ ಆತು ಇಲ್ಲಾಂದ್ರೆ ಆ ಯಮ ಮಳೀಲಿ ಹೊರ್ಗ್ ಹೊಂಡಾಕ್ ಆಗ್ತ?, ಊಹುಂ ಅದ್ ಕೇಣ್ಬೇಡಿ. ಬೇಸ್ಗಿ ಮುಗ್ಯೋವರ್ಗು ಕೇಸಿನ್ ಸೊಪ್ಪು, ಬಸ್ಲೆ ದಂಟು, ಸೂರೇನ್‌ಗೆಡ್ಡೆ, ಅಂತ ಚಪ್ಪೆ ತಿನ್ಕುಂಡು ನಾಲ್ಗಿ ಕೆಟ್ಟೋಗಿರೋ ಟೇಮಿಗ್ ಈ ಮಳಿ ಅನ್ನೊದ್ ನಮ್ಗೆ ಅಮೃತ ಇದ್ದಂಗೆ,ಇಷ್ಯ ಏನಪ್ಪ ಅಂದ್ರೆ ಚೂರ್ ಮಳಿ ಬಂದು ಕೊನೇಗ್ ಗದ್ದೆ ಬದಿ ಹಳ್ಳನಾರು ಬಂದಿದ್ರೆ ನಾಕ್ ಸೊಸ್ಲು ಹಿಡ್ಕಂಡ್ ಬಂದ್ರೆ ಪಲ್ಯಾಕಾದ್ರೂ ಆದೀತು ಅಂತ. ಈ ಸಮುದ್ರದ್ ಮೀನ್ನ ನಮ್ಗ್ ಕೊಣ್ಣಾಕ್ ಆದೀತಾ ಊಹುಂ, ಆ ಪಾಟಿ ರೇಟು!, ಏನಾರ್ ಅರ್ಧಕೇಜಿ ತಕ್ಕಂಬದು ಆದ್ರೆ ಅದೂ ಕೊನ್ಕೊನೆಗೆ ಚಪ್ಪೇಯ, ಭೂತಾಯಿ ಬಂಗ್ಡೆ ಎಲ್ಲಾರ್ ತೀರ್ಥಳ್ಳಿ ಪೇಟೆ ಕಡೆ ಹ್ವಾದ್ರೆ ಹ್ವಾಟ್ಲಲ್ ತಿನ್ಕಬರ್ಬೋದು, ಅದೂ ದೊಡ್ಡೋರ್ ಮಾತ್ರ. ಆಗಿಂದನೂ ಅಷ್ಟೇ ಅಪ್ಪಯ್ಯ, ದೊಡ್ಡಪಯ್ಯೋರು ಮಳಿ ಬಂತು ಅಂದ್ರೆ ಗದ್ದೆ ಬದ ಕೆತ್ತೋದು, ಗೊಬ್ರ ಹರ‌್ಡೋದು, ಬೀಜದ್ ಭತ್ತ ಬಿತ್ತಕ್ ಅಣಿ ಮಾಡೋದು ಅವ್ರ್‌ ಅವ್ರು ಅವರ್ ಕೆಲ್ಸ್ದಾಗ್ ಇದ್ರೆ ನಮ್ ಮಂಜ್ ಚಿಕ್ಕಪ್ಪಯ್ಯ ನಾವ್ ಹುಡುಗ್ರು ಮಕ್ಕಳನ್ನ ಸೇರ್ಸೊಂಡು ಬಿದ್ರಳ್ಳ ತುದೀಗ್ ಹೋಗಿ ಸೋಸ್ಲು ಮೀನ್ ಹಿಡೀತಾ ಕೂಕಂತಿದ್ರು. ಚಿಕ್ಕಪ್ಪಯ್ಯ ಸಿಕ್ದಷ್ಟ್ ಮೀನ್ ಹಿಡ್ಕಣಕ್ ಒದ್ದಾಡ್ತಿದ್ರೆ ನಾನು ಮತ್ತೆ ತಮ್ಮಣ್ಣಿ, ಆಚೆಮನಿ ರಾಜು, ದೊಡ್ಡಪ್ಪಯ್ಯನ್ ಮಗ ವಿನಯ ಮತ್ತೆ ನಾಗತ್ತೆ ಮಗ್ಳು ಜಲಜ ಎಲ್ಲಾ ಕೆಸ್ರು ನೀರಾಗ್ ಬಿದ್ದ್ ಒದ್ದಾಡೊದೇ!, ಒಳ್ಳೆ ಹಾಲಂಗ್ ಇರೋ ಮಳೆ ನೀರ‌್ನ ಕೆಸ್ರು ರಾಡಿ ಎಬ್ಸ್ತಿದ್ದೋ. ಪಾಪದ್ ಚಿಕ್ಕಪಯ್ಯಂಗ್ ಎಲ್ಲಾ ಬಯ್ಯೋರೆ,ಆದ್ರೆ ಮೀನಿನ್ ಸಾರಿನ್ ಘಾಟಿಗ್ ಒಲಿ ಹತ್ರನೇ ಬಂದ್ ಕೂರವ್ರು ಎಲ್ಲರೂವೆ. ಮಂಜ್ ಚಿಕ್ಕಪಯ್ಯಂಗೆ ತಲಿ ಕೆಟ್ಟದೆ ಅಂತ ಅವ್ರಿಗ್ ಜಾಸ್ತಿ ಕೆಲ್ಸ ಏನೂ ಕೊಡ್ತ ಇರ್ಲಿಲ್ಲ, ಅದ್ಕೆ ಬರೀ ಇಂತವ್ವೆ ಕೆಲ್ಸ ಹಲ್ಸಿನ್ ಬೀಜ ಒಟ್ಟಾಕದು, ಮುರ್ಗನ್ ಹುಳಿ ಒಣಗ್ಸಿ ಇಡೋದು (ಮೀನ್ ಪಲ್ಯಕ್ ಭಾರಿ ಮಸ್ತಾತದೆ), ಏಡಿ ಹಿಡ್ಯಾಕ್ ಹೋಗದು, ಅಳ್ಬಿ ಹುಡ್ಕಂಡು ಕಾನಿನ್ ಬದಿ ತಿರ್ಗಾದು, ನಾಕ್ ರುಪಾಯ್‌ಗೆ ಹಲ್ಸಿನ್ ಕಾಯ್ ಕೊಯ್ದ್ ಮಾರದು ಇವೇಯ. ಚಿಕ್ಕಪಯ್ಯ ನಮ್ಗೆ ಕೆಲವ್ ಅಸಾಮಾನ್ಯ ಕೆಲ್ಸಗಳ್ ಕಲ್ಸ್‌ಕೊಟೈತೆ, ಅವ್ ಏನಂದಿರಾ? ನಮ್ಮವ್ ಅಸಾಮಾನ್ಯ ಕೆಲ್ಸಗಳ್ ಅಂದ್ರೆ ಇವೇಯ, ಸೊಳ್ಳೆ ಪರ್ದೆ ಒಟ್ಟಾಕದು, ಯಾದಾದ್ರೂ ಬಲೆ ಇದ್ರೆ ಅದ್ನ ಸರಿ ಮಾಡ್ಕಣದು, ಅವ್ವನ್ ಹತ್ರ ಉಗ್ಸ್ಕೊಂಡು ಹಳೆ ಸೀರೆಲಿ ಮೀನ್ ಹಿಡ್ಯಾದು. ಅದ್ರಲ್ ಈ ರಾತ್ರಿ ಮೀನ್ ಹಿಡ್ಯಾಕ್ ಹೋಗೋದ್ ತಾಪತ್ರಯ ಯಾರಿಗೂ ಬ್ಯಾಡ, ಅಪ್ಪಯ್ಯ ಬೆಳ್ಗಾತಿಂದ ಸಂಜೆಮಟ ಗದ್ದೆ,ತ್ವಾಟ ರಾತ್ರಿ ಶಿಕಾರಿಗ್ ಹತ್ಯಾರ ಜೋಡ್ಸುದ್ ನೋಡುದೆ ಚಂದ, ಉದ್ದದ್ ಕತ್ತಿ ಮಸ್ಕಂಡು, ಬ್ಯಾಟ್ರಿಗ್ ಶೆಲ್ ಹಾಕಿಟ್ಕೊಣದು, ಕಂಬ್ಳಿ ಕೊಪ್ಪೆಗ್ ತೇಪೆ ಹಾಕಿ ರೆಡಿ ಮಾಡ್ಕೊತಿದ್ರು. ಅಪ್ಪಯ್ಯೋ ನಾನು ಬತ್ತೀನೋ ಅಂದ್ರು ಇದ್ ಅಪ್ಪಯ್ಯ ಕೇಣ್ಬೇಕಲ್ಲ, ‘ಮೈ ಎಲ್ಲಾ ತೊಪ್ಪೆ ಆತದ್ ಮುದ್ರ್ಕೊಂಡು ಉಂಡ್ಕಂಡ್ ಬಿದ್ಕೋ ಅಂತ ಹೇಳ್ ಹೊಂಡೋರು. ಅಪ್ಪಯ್ಯ ಮತ್ತೆ ಅವ್ರು ಪ್ರೆಂಡ್‌ಗಳ್ದು ಮೀನ್ ಹಿಡ್ಯೋ ನಮೂನಿನೆ ಬೇರೆ, ಹಳ್ಳದ್ ಬದಿ ಹೋಗಿ ಆಯ್ಕಟ್ಟಲಿ ಕುಣಿ ಹಾಕಿ ಈ ಕಡೆ ಕತ್ತಿಂದ ಬ್ಯಾಟ್ರಿ ಬೆಳ್ಕ್ ನೀರಲ್ ಬಿಟ್ಟು ಮೀನ್ ಕಾಣ್ಸಿದ್ ಕೂಡ್ಲೆ ಎತ್ತಿದ್ ಏಟಿಗ್ ಕತ್ತಿ ಬೀಸಿದ್ರೆ ಆ ಮೀನು ಇಲ್ಲೋ ಎರಡ್ ಪೀಸ್ ಆಗೋವು ಇಲ್ದಿದ್ರೆ ತಪ್ಸ್‌ಕೊಂಡ್ ಪಾರಾಗೋವು. ರಾತ್ರಿ ಕಳೆಯೋ‌ದೆ ಕಾಯ್ತ ಕೂಕಣದ್ ಯಮ ಯಾತ್ನೆ ಯಾವಂಗು ಬ್ಯಾಡ, ಸೊಳ್ಳೆ ಕಚ್ಚುಸ್ಕುತ ಹುಯ್ಯೋ ಮಳೇಲಿ ನೆನೀತ ಇರ್ಬೇಕು, ಹಾಕಂಡಿರೋ ಕಂಬ್ಳಿ ಆ ಗಾಳಿಮಳೆಗ್ ಯಾವ್ ಲೆಕ್ಕಾನು ಅಲ್ಲ, ಹಳ್ಳದ್ ನೀರು ಏರ್ತಿದ್ದಂಗೆ ಮುರ್ಗೋಡು, ಚೇಳಿ, ಗೊಜ್ಲೆ ,ಗೌರಿ ಮತ್ತೆ ಏಡಿ ದಡಕ್ಕೆ ಬತ್ತಿದಂಗೆ ನಮ್ಮ್ ಕೆಲ್ಸ ಸುರು, ಚೂರು ಸೌಂಡ್ ಮಾಡ್ದೆ ಬ್ಯಾಟ್ರಿ ಬೆಳ್ಕ್ ಬಿಟ್ರೆ ಮೀನ್ ಅಲ್ಲೆ ಬೆಳ್ಕ್ ನೋಡ್ಕುತಾ ನಿಲ್ತವೆ ಆಗ್ಲೆ ಕತ್ತಿಲ್ ರಪ್ ಅಂತ್ ತಾಗೂ ಹಾಗೋ ಮಂಡೆ ಬುಡ್ದಲ್ ಹೊಡ್ಯಾದು ಇನ್ನುಬ್ರು ಹೊಡ್ದಿದ್ ಏಟಿಗ್ ಮೇಲ್‌ಬರೋ ಮೀನ್ ಹಿಡ್ಕಂಡು ಚೀಲಕ್ ತುರ‌್ಕದು. ಈ ಹತ್ಮೀನ್ ಮಾತ್ರ ಸೊಳ್ಳೆಪರ್ದೇಲ್ ಸೋಸಿದ್ರೆ ಕೆಲೋ ಬಾರಿ ಮೂಟೆಗಟ್ಲೆನೂ ಸಿಕ್ತಾವೆ. ನಾನೂ ಐದ್ನೇ ಕ್ಲಾಸ್ ಅಗೋವರ್ಗೂ ಅಪ್ಪಯ್ಯ ರಾತ್ರಿ ಶಿಕಾರಿಗ್ ನಂಗ್ ಕರ್ಕೊಂಡ್ ಹೋಗ್ನಿರ್ನಿಲ್ಲ, ಆಮೇಲಾಮೇಲೆ ನಾನೆ ಬಯ್ದ್ರು ಓಡ್ ಹೋಗ್ತಿದ್ರೆ , ಏನ್ ನಾಕೇಟ್ ಹೊಡೆಯವ್ರು ಆದ್ರೆ ಮೀನ್ ಹಿಡ್ಯೋ ಖುಷಿ ಮುಂದೆ ಅವೆಲ್ಲಾ ಹೊಡ್ತ ಎಂತದೂ ಅಲ್ಲ ಬಿಡಿ. ಕಾಲೇಜಿಗ್ ಹೋಗ್ವಾಗ ಮಂಜ್ ಚಿಕ್ಕಪಯ್ಯ ಹೋದ್ರು, ಆಮೇಲ್ ಅಪ್ಪಯ್ಯ ಮೀನ್ ಶಿಕಾರಿ ಕಡ್ಮೆ ಮಾಡ್ತು, ಹೆಂಗು ಹಿಡ್ದೋರ್ ಯಾರಾರು ಸ್ವಲ್ಪ ಕೊಡೋರು, ನಾನುವೆ ಆಗಾಗ ದೊಡ್ಡಪ್ಪಯ್ಯನ್ ಜೊತೆ ಹೋಗ್ತಿದ್ದೆ‌. ಒಂದೊಂದ್ ಸರಿ ಹ್ವಾದ್ರು ಒಂದೊಂದ್ ಅನುಭವ ಆಗದು, ಕೆಲ ಸಲ ಏನೂ ಸಿಗ್ದೆ ನಾಕ್ ಏಡಿ ಹಿಡ್ಕ ಬಂದಿದ್ದೂ ಅದೆ.ಸರಿ ರಾತ್ರಿ ಆದ್ರೂ ಅಮ್ಮ ಕಾಯ್ಕೊತಾ ಇದ್ದು ಎರ್ಡ್ ಗಂಟೆ ಆದ್ರೂ ವಾಟೆಹುಳಿ ಹಾಕ್ ಘಮ್ ಅನ್ನೋ ಬಿಸಿಬಿಸಿ ಮೀನ್ ಸಾರ್ ಮಾಡ್ ಹಾಕ್ತಿತ್ತು ,ಆಗ್ಲೆ ನಮ್ ಶಿಕಾರಿನು ಸಾರ್ಥಕ ಆಗೋದು. ಈಗ್ ಎಲ್ಲೆಲ್ಲೋ ಪೇಟೆಲ್ ಕೆಲ್ಸ ಮಾಡ್ಕುತ ಇರೋ ನಮ್ಗೆ ಯಾರಾದ್ರು ಹತ್ಮೀನ್ ಕಡಿಯೋ ಪೋಟೋ ಹಾಕಿದ್ರೆ ಹಳೆ ನೆಂಪೆಲ್ಲಾ ಅಂಗೆ ಕಣ್ ಮುಂದೇನೆ ಬಂದಂಗ್ ಆತದೆ. ಈಗ್ಲೂವೆ ಮಲ್ನಾಡ್ ಬದಿ ಮೀನ್‌ಶಿಕಾರಿ ಅಂದ್ರೆ ಅದೊಂಥರ ಹಬ್ಬಾನೆ… ರಮೇಶ್ ನೆಲ್ಲಿಸರ ಪರಿಚಯ: ಮೂಲತಃ ತೀರ್ಥಹಳ್ಳಿ,ಪ್ರಸ್ತುತ ಸರ್ಕಾರಿ ಪ್ರೌಢ ಶಾಲೆ ಯಡೂರು, ಹೊಸನಗರ ತಾಲ್ಲೂಕು, ಇಲ್ಲಿ ಇಂಗ್ಲಿಷ್ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಓದಿದ್ದು ಆಂಗ್ಲ ಸಾಹಿತ್ಯ, ಕತೆ ,ಕವನ ಮತ್ತು ಲಲಿತ ಪ್ರಬಂಧಗಳನ್ನು ಬರೆಯುವ ಹವ್ಯಾಸವಿದ್ದು. ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಮೀನು ಶಿಕಾರಿಯ ಸಂಭ್ರಮ Read Post »

ಇತರೆ

ಲಹರಿ

ಒಮ್ಮೆ ತಿರುಗಿ ನೋಡು ನನ್ನ ಕೊನೆಯ ತಿರುವು ಬರುವ ಮುನ್ನ. ವಿಷ್ಣು ಭಟ್ ಹೊಸ್ಮನೆ ನನ್ನ ಮನಸ್ಸು ಅವಳು ತಿರುಗಿ ನೋಡಲೇಬಾರದು. ಮುಂದೆ ಎಂದಿಗೂ ಸಂಧಿಸದ ಹಾದಿಯಲ್ಲಿ ನಾನು ಮತ್ತು ಅವಳು ಸಾಗುತ್ತ ಇರಬೇಕು ಅಂದುಕೊಂಡಿತ್ತು. ಅವತ್ತು ತಿರುಗಿ ನೋಡದೇ ಹೋದರೂ ಎರಡು ದಿನ ಬಿಟ್ಟು ಮತ್ತೆ ಅವಳು ಬಂದಿದ್ದಳು. ಅವಳನ್ನು ಮತ್ತೆ ನೋಡಿದೆ ಎಂಬೊಂದು ಖುಷಿ ಬಿಟ್ಟರೆ ಮತ್ತೇನೂ ನನ್ನಲ್ಲಿ ಹುಟ್ಟಲಿಲ್ಲ. ಆದರೆ ಅವಳು ಎದೆ ತುಂಬ ಪ್ರೀತಿಯನ್ನು ಹೊತ್ತು ತಂದಿದ್ದಳು. ಅವಳು ಕಾದುಕಾದು ಕೇಳಿದ್ದು ಒಂದೇ ಮಾತು “ನನ್ನನ್ನು ಪ್ರೀತಿಸುತ್ತೀಯಾ? ಪ್ಲೀಸ್..” ಇದು ನನಗೆ ಅನಿರೀಕ್ಷಿತ. “ಇಲ್ಲ” ಎಂದು ಬಿಟ್ಟೆ. ಎರಡು ದಿನ ತಲೆ ಕೆಟ್ಟುಹೋಗಿತ್ತು. ಈ ನಿರಾಕರಣೆಗೆ ಕಾರಣವಿರಲಿಲ್ಲ. ಎಷ್ಟು ನೊಂದುಕೊಂಡಳೋ? ಇಲ್ಲ ಎನ್ನುವುದಕ್ಕಾದರೂ ಕೊನೆಯ ಪಕ್ಷ ಎರಡು ದಿನ ಸಮಯ ಕೊಡು ಎಂದು ಬಿಡಬಹುದಿತ್ತು. ಮತ್ತೆ ಎರಡು ದಿನ ಬಿಟ್ಟು ನನ್ನ ಬಳಿ ಬಂದು ನಿಂತಿದ್ದಳು. ಈ ಬಾರಿ ಅವಳು ಕೇಳಲಿಲ್ಲ; ಹೇಳಿದಳು. “ನೀನು ನನ್ನನ್ನು ಪ್ರೀತಿಸಲೇ ಬೇಕು, ಇಲ್ಲ ಅನ್ನಬೇಡ” ಎನ್ನುತ್ತ ನನ್ನ ಕೈಯನ್ನು ಎಳೆದು ಹಿಡಿದುಕೊಂಡು ನಿಂತೇ ಇದ್ದಳು; ಕಣ್ಣಲ್ಲಿ ನೀರು ತುಂಬಿತ್ತು. ಅವಳೆದೆಯಲ್ಲಿ ಮೊಗೆದಷ್ಟೂ ಪ್ರೀತಿ. ನಾನು ಒಪ್ಪಿಕೊಂಡೆ. ನನ್ನ ಹಣೆಗೊಂದು ಮುತ್ತಿಕ್ಕಿ ಹೊರಟು ಹೋದಳು. ನನ್ನಲ್ಲಿ ನಿಜವಾಗಿ ಪ್ರೀತಿ ಹುಟ್ಟಿತ್ತಾ? ಅವಳನ್ನು ನಿರಾಕರಿಸಲಾಗದೇ ಒಪ್ಪಿಕೊಂಡೇನಾ? ಅಥವಾ ಒಳ ಮನಸ್ಸಿನಲ್ಲಿ ಅವಳನ್ನು ಇಷ್ಟ ಪಡದೆ ಒಪ್ಪಿಕೊಳ್ಳಲು ಸಾಧ್ಯವಾ? ಎಂದು ಕೇಳಿಕೊಳ್ಳುತ್ತಾ ಹೋದೆ. ಎಲ್ಲವೂ ಗೊಂದಲ. ಮುಂದೇನು? ಎಂಬ ಪ್ರಶ್ನೆ. ಪ್ರೀತಿಗೆ ಕಾರಣಗಳನ್ನು ಹುಡುಕಬಾರದು; ಪ್ರೀತಿ ಬೇಗನೆ ಸತ್ತು ಬಿಡುತ್ತದೆ. ನಾನೂ ಪ್ರೀತಿಸಿದೆ; ಮುಂದಿನದನ್ನು ಯೋಚಿಸದೆ. * “ಇನ್ನು ಹದಿನೈದು ದಿನಕ್ಕೆ ನನ್ನ ಮದುವೆ. ನನ್ನನ್ನು ಹುಡುಕಿಕೊಂಡು ಮನೆಯ ತನಕ ಬರಬೇಡ. ನಮ್ಮದು ಮರ್ಯಾದಸ್ಥ ಕುಟುಂಬ. ನೀನು ಬಂದರೂ ನೀನು ಯಾರೆಂದು ಗೊತ್ತಿಲ್ಲ ಎಂದೇ ಹೇಳುವ ಪರಿಸ್ಥಿತಿಯಲ್ಲಿ ನಾನಿದ್ದೇನೆ. ಹೇಳಿದರೂ ನಿನಗೆ ನನ್ನನ್ನು ಕೊಟ್ಟು ನನ್ನಪ್ಪ ಮದುವೆ ಮಾಡುವುದಿಲ್ಲ. ನೀನು ನನ್ನನ್ನು ಪ್ರೀತಿಸಿದ್ದು ನಿಜವೇ ಆಗಿದ್ದರೆ ನನ್ನನ್ನು ಮರೆತು ಬಿಡು. ಸಾಧ್ಯವಾದರೆ ಕ್ಷಮಿಸಿಬಿಡು.” ಇದು ಅವಳ ಕೊನೆಯ ಮಾತು. ಅದೂ ಫೋನಿನಲ್ಲಿ. ಅವತ್ತೇ ಅವಳ ಮೊಬೈಲ್ ನಂಬರ್ ಬದಲಾಗಿತ್ತು. ನನಗೆ ಸಿಟ್ಟು ಬರಬೇಕಿತ್ತು. ಆದರೆ ಅಳು ಬರುತ್ತಿತ್ತು. ಗಂಡಸು ಅಳಬಾರದಂತೆ. ನೋವು ಮತ್ತು ಸಾವಿಗೆ ಗಂಡು ಹೆಣ್ಣೆಂಬ ಭೇದವಿಲ್ಲ. ಪ್ರೀತಿ ಸತ್ತು ಶವವಾಗಿ ಬಿದ್ದ ಮೇಲೆ, ಅಳುವೊಂದೇ ಉಳಿದ ಭಾವ. ಕಣ್ಣಿಗೆ ಕಣ್ಣಿಟ್ಟು ಬಂದವಳೇ ಕೊಟ್ಟ ಕಣ್ಣೀರು. ನನ್ನ ನೆನಪುಗಳೊಂದಿಗೆ ನಾನು ಏಕಾಂಗಿ. * ಅವಳಲ್ಲಿ ಕೇಳಬೇಕಿತ್ತು. ಈ ಪ್ರೀತಿಯನ್ನು ಹೇಗೆ ಕೊಂದುಕೊಳ್ಳಲಿ? ನೀನಾದರೂ ಹೇಗೆ ಅಷ್ಟು ಸುಲಭವಾಗಿ ಸಾಯಿಸಿಬಿಟ್ಟ? ಕಾರಣವೇ ಅಲ್ಲದ ಕಾರಣಗಳನ್ನು ಕೊಟ್ಟು ಹೊರಟು ಬಿಟ್ಟೆ? ಆದರೆ ನಿಜವಾದ ಕಾರಣಗಳನ್ನು ಕೇಳಿಯಾದರೂ ಏನು ಮಾಡಲಿ? ಬನದ ತುಂಬ ಘಮವ ಪಸರಿಸಿ ತೊಟ್ಟು ಕಳಚಿಕೊಂಡು ಬಿದ್ದ ಹೂವಿನಂಥಾದ ಪ್ರೀತಿಗೆ ಇನ್ನು ಏನೆಂದು ಕರೆಯಲಿ? ಕರೆಯದೇ ಕಾಯದೇ ಬಂದವಳು ತೊರೆದ ರೀತಿಗೆ ನಾನೀಗ ನನ್ನ ಪ್ರೀತಿಯನ್ನು ಕೊಲ್ಲಬೇಕು. ಆದರೆ ಅವಳ ನೆನಪುಗಳು ಸಾಯುವುದಿಲ್ಲ. ಕನಸುಗಳನ್ನು ಕಸಿದುಕೊಂಡು ನೆನಪುಗಳನ್ನು ಬಿಟ್ಟುಹೋಗಿದ್ದು ಸರಿಯೇನು? ಎಷ್ಟೊಂದು ಕನಸುಗಳು ಹುಟ್ಟಿದ್ದವು. ನಾನು ಅವಳು ಒಟ್ಟೊಟ್ಟಿಗೆ ಪೇರಿಸಿ ಇಟ್ಟ ಕನಸುಗಳಿಗೆ ಲೆಕ್ಕವಿಲ್ಲ. ಇವತ್ತು ಎಲ್ಲವೂ ಹಾಗೇ ಸುರುಳಿ ಸುತ್ತಿಕೊಂಡು ನೆನಪಿನ ಮೂಟೆಯಾಗಿ ಮನದೊಳಗೆ ಕಾಡುತ್ತಿವೆ. ನೆನಪಿನ ಮೊಟ್ಟೆಯೊಡೆದ ಕವನ ಕಣ್ಣಿರು. ಅವಳ ನೆನಪುಗಳಿಂದ ಬಿಡಿಸಿಕೊಳ್ಳಲು ಮಾಡಿದ ಸಾಹಸಗಳು ಸಾವಿರಾರು. ಒಂದಿಷ್ಟು ದಿನ ಯಾರ ಜೊತೆಗೂ ಮಾತನಾಡಲಿಲ್ಲ. ಅದಕ್ಕಿಂತ ಹೆಚ್ಚಾಗಿ ನನ್ನ ದನಿಯಲ್ಲಿ ನೋವಿತ್ತು. ಇವತ್ತಿನಿಂದ ಅವಳು ನನ್ನ ಜೊತೆಗಿಲ್ಲ ಎಂದುಕೊಳ್ಳುವಾಗಲೆಲ್ಲ ಎದೆನೋವು. ಹೃದಯಯವೂ ಅಷ್ಟೊಂದು ಭಾರ ಎಂಬುದು ಅರಿವಾದದ್ದೇ ಅವಳು ಹೋದ ಬಳಿಕ. ಈ ನೋವು ಸಾವಿಗಿಂತಲೂ ತೀವ್ರ ಮತ್ತು ಭಯಾನಕ. ಎದೆಗೆ ಚುಚ್ಚಿಕೊಂಡೇ ನಲಿವ ಮುಳ್ಳುಗಳು. ನನಗೆ ಒಂದು ಸಂಶಯ ಕಾಡುತ್ತಿದೆ; ಈ ಪ್ರೀತಿ ಎಂದರೇ ನೆನಪುಗಳಾ? ಅಥವಾ ಸತ್ತ ಕನಸುಗಳು ಭೂತವಾಗಿ ಕಾಡುವ ಬಗೆಯಾ? ಇವತ್ತಿನಿಂದ ಅವಳನ್ನು ಮರೆತು ಈ ನೋವುಗಳನ್ನೇ ಪ್ರೀತಿಸಬೇಕು. ಅಂದು ನೀನಿತ್ತ ಮುತ್ತಿನ ಅಮೃತ ಬಿಂದು ಎದೆ ಚುಚ್ಚಿ ಕೊಲ್ಲುತಿದೆ ನೀ ಮರಳ ಬಾರದೇ ಸಾವುಯುವುದರ ಒಳಗೆ. ಅವಳನ್ನು ಕರೆಯುತ್ತಲೇ ಇದ್ದೆ. ಖಾಲಿ ಬಿದ್ದಿದ್ದ ಹೃದಯದಲ್ಲಿ ಉಳಿದುಕೊಂಡು ಈಗ ಅನಾಥವಾಗಿಸಿ ಹೋದದ್ದು ಅವಳಿಗೆ ಕಾಡದೇ ಹೋಯಿತೇಕೋ? ಒಮ್ಮೆ ತಿರುಗಿ ನೋಡು ನನ್ನ ಕೊನೆಯ ತಿರುವು ಬರುವ ಮುನ್ನ ‘ಒಮ್ಮೆ ತಿರುಗಿ ನೋಡು, ಈಗ ಹುಟ್ಟಿಕೊಂಡ ಪ್ರೀತಿ ಏಳೂ ಜನ್ಮಗಳಿಗೆ ಸಾಕು. ನಾನು ನಾನಾಗಿ, ನೀನು ನೀನಾಗಿ, ನಿನ್ನೊಳಗೆ ನಾನೂ ನನ್ನೊಳಗೆ ನೀನೂ, ಇಬ್ಬರೂ ಒಂದೇ ಆಗಿ ಬದುಕಿ ಬಿಡೋಣ. ಈ ಪ್ರೀತಿ ಸಹಿ ಇಲ್ಲದ ಒಪ್ಪಿಗೆ, ಬಾ ಹಿಂದಿರುಗು’ ಎಂದು ಹೇಳಲು ಕಾಯುತ್ತಲೇ ಇದ್ದೆ. ಅವಳು ಹೋಗಿಯಾಗಿತ್ತು. ತಿರುಗಬಾರದ ತಿರುವ ದಾಟಿ; ಎದೆಯೊಳಗಿನ ತಂತಿಯ ಮೀಟಿ. * ಅವಳು ಬರೆದ ಪತ್ರಗಳ ರಾಶಿಯಲ್ಲಿ ನಾನು ಕಳೆದು ಹೋಗಿದ್ದೆ. ಮರೆಯಲೇ ಬೇಕೆಂದು ನಿರ್ಧರಿಸಿದೆ. ಅವಳು ಕೊಟ್ಟ ಗಿಫ್ಟುಗಳು ನನ್ನ ಕಣ್ಣ ದಂಡೆಯನ್ನು ಚುಚ್ಚುತ್ತಿದ್ದವು. ಎದೆನೋವು ಸ್ವಲ್ಪ ಕಡಮೆಯಾದಂತೆ ಕಂಡುಬಂದ ಬೆಳದಿಂಳಿಲ್ಲದ ಒಂದು ರಾತ್ರಿ ಅವಳು ಕೊಟ್ಟಿದ್ದೆಲ್ಲವನ್ನು ಮನೆಯ ಅಂಗಳದಲ್ಲಿ ಚೆಲ್ಲಿ ಬೆಂಕಿಕೊಟ್ಟೆ. ಎದೆಯೊಳಗೆ ಉರಿ ಹೆಚ್ಚಿತು. ಎದೆ ಬರಿದಾಗಲೇ ಇಲ್ಲ. ಆ ರಾತ್ರಿ ನಿದ್ರೆ ಬರಲಿಲ್ಲ. ಮರೆಯಲಾಗದ ಹೊತ್ತಲ್ಲಿ ದ್ವೇಷಿಸಬೇಕೆಂಬ ಹಠಕ್ಕೆ ಬಿದ್ದೆ. ಈ ಪ್ರೀತಿ ದ್ವೇಷಿಸಲೂ ಬಿಡಲೊಲ್ಲದು. ಮತ್ತೆ ಎದೆನೋವು. ಎದೆಯನ್ನು ಹಗುರ ಮಾಡಿಕೊಳ್ಳಲೇ ಬೇಕಿತ್ತು. ಒಂದು ಡೈರಿಯನ್ನು ಎತ್ತಿಕೊಂಡು ಗೀಚಿದೆ. ಪದಪದಗಳ ನಡುವೆ ಕಾಡಿದ ಅವಳು ವಿರಹದ ವಿರಾಟ್ ರೂಪ. ಕನವರಿಕೆಯ ಹೋಯ್ದಾಟದಲ್ಲಿ ಒದ್ದೆಯಾಗುತ್ತಲೇ ಇದ್ದೆ. ಕತ್ತಲಲ್ಲಿ ಬಿಟ್ಟು ಹೋಗ ಬೇಡ ನನಗೆ ಭಯ ಇರುವುದು ಹಗಲಿನಲ್ಲೇ.. ತೊರೆದವರ ಬಗೆಗೆ ಬರೆದರೆ ಬರುವರೇನು? ಬರೆಯುತ್ತ ಹೋದಂತೆ ನಾನು ಖಾಲಿಯಾಗಬೇಕಿತ್ತು. ಆದರೆ ನೆನಪುಗಳು ಮತ್ತೆಮತ್ತೆ ಸುತ್ತಿಕೊಂಡವು. ಮೊದಲು ಈ ನೆನಪುಗಳಿಂದ ಬಿಡುಗಡೆ ಹೊಂದಬೇಕೆಂಬ ನಿರ್ಧಾರಕ್ಕೆ ಬಂದೆ. ಸಾಯದ ನೆನಪುಗಳಿಗೆ ಅಹಂಕಾರ ಜಾಸ್ತಿ. ಅವಳು ಬಂದಲ್ಲಿಂದ ಹೋದಲ್ಲಿಯ ತನಕ ಬರೆದೆ. ಆ ಡೈರಿ ಕಣ್ಣಿಗೆ ಬಿದ್ದಾಕ್ಷಣ ಮತ್ತೆ ಮತ್ತೆ ಸಾಯುತ್ತಿದ್ದೆ. ಮತ್ತೊಂದು ಕಪ್ಪಗಿನ ರಾತ್ರಿಗಾಗಿ ಕಾದೆ. ಒಂದೊಂದೇ ಪುಟವನ್ನು ಹರಿದು ಬೆಂಕಿಗೆ ಹಾಕುತ್ತ ಪೂರ್ತಿಯಾಗಿ ಸುಟ್ಟುಬಿಟ್ಟೆ. ನೆನಪುಗಳು ಸುಟ್ಟು ಹೋಗಲಿಲ್ಲ. ಮಂದಾಗ್ನಿ ಎದೆಯೊಳಗೆ ಉರಿಯುತ್ತಲೇ ಇದೆ! ========================================== ವಿಷ್ಣು ಭಟ್ ಹೊಸ್ಮನೆ. ಪರಿಚಯ: ಲಘು ಹಾಸ್ಯದ ಲೇಖನ ಮತ್ತು ಇತರ ಲೇಖನಗಳನ್ನು ಬರೆಯುವುದು, ಓದುವುದು ಹಾಗೂ ಚಿತ್ರ ಬಿಡಿಸುವುದು, ಜೇಡಿಮಣ್ಣಿನಲ್ಲಿ ಗಣಪತಿ ಮಾಡುವುದು ನನ್ನ ಹವ್ಯಾಸ. ಹುಟ್ಟಿದ ಊರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಂಡೀಬೈಲ್ ಎಂಬ ಹಳ್ಳಿ. ಪ್ರಸ್ತುತ ಮಣಿಪಾಲ್ ಟೆಕ್ನೋಲೋಜೀಸ್ ಲಿಮಿಟೆಡ್ ನಲ್ಲಿ ಉದ್ಯೋಗಿ.

ಲಹರಿ Read Post »

ಇತರೆ

ಸಂಪ್ರದಾಯದ ಸೊಬಗು

ಅರುಣ್ ಕೊಪ್ಪ ಊರ ಬಾಗಿಲು ಮುಂದೆ ಭಯಭಕ್ತ ಕಲ್ಲುಗಳು, ತೀರಾ ಹಳೆಯವು ಅಲ್ಲಲ್ಲಿ ಹಾಲು ಸೋಕುವ ಮರಗಳು, ಮುಗಿದರೆ ಕೈ ದೇವರು, ಹಾಗೋ ಹೀಗೋ ಗಾಳಿ ಬಂದಾಗ ಬುಡಸಡಿಲವಾಗುವ ಭಯ ಮಹಾಮಯ ! ಮುಂಗಾರಮುಂದೆ ಮಾತು ಕಥೆ, ಅಂತೂ ಕುದುರಿಸಿಯೇ ಬಿಟ್ಟರು ಮಾರಿ ಹಬ್ಬವಂತೆ, ಕುರಿ ಕೋಳಿಯ ಜಾತ್ರೆ ಊರೊಳಗೆ, ಮುಟ್ಟು ಮೈಲಿಗೆ ಹೆಂಗಸರ ಸ್ಥಳಾಂತರ ಒಪ್ಪ, ವಾಗತಿಯಲಿ ಹಬ್ಬ ಸಜ್ಜು ಊರ ಹಬ್ಬದ ಸಲುವಾಗೆ ಶಣ್ಣಿ ಮದುವಿ ಮುಂದಾತು ಕಿವಿಗಿಲ್ಲ ಮೂಗಿಗಿಲ್ಲ ಎಲ್ಲ ದುಬಾರಿಮಯ.. ಇದ್ದದ್ದು ನಾಕು ಬತ್ತದ ಕಾಳು, ಕೂಲಿ ಹುಟ್ಟದು ಅರ್ದಮ್ಮುರ್ದಬಣ್ಣ ಅಡಿಕೆ ಅದೆಷ್ಟು? ಕವಳಕ್ಕೆ ಹೆಚ್ಚು ಮಾರಕೆ ಕಡಿಮೆ ಮನೆ ಮುಗಿದಿಲ್ಲ ಬಿಲ್ಲೂ ಆಗಿಲ್ಲ, ಪಿಡಿಓ, ಪಂಚಾಯತಿ ಅಲೆದಾಟ, ಆಗೇ ಹೋತು ಹನಿ ಹಿಡಿತು ಜಡಿ ಕಟ್ಟಿಲ್ಲ ಜಾತ್ರೆ ಮುಗಿಸಿ ಬತ್ತ ನೆನಸಿ, ಊರ ದೇವರ ಹಬ್ಬ ಮುಗ್ಸಿ ಹ್ವಾಕೆ ಹೊಡಿಯೋ ಎತ್ತುಗಳು ಈ ವರುಸ ಕೆಟ್ಟಿಲ್ಲ ಮೈ ತುಂಬಿದಾವ ದಡ್ಡಿ ಗೊಬ್ಬರ ಚೆಲ್ಲಿ, ಒಣ ಕಟ್ಟಿಗೆ ಸರಿದು, ಗ್ಯಾಸ್ ಇದ್ದರೂ ಬೇಕು ಬೆಂಕಿ ಕಾಸಲು ತಾಸೊತ್ತು ಹೊದ್ದ ಕಂಬಳಿ ಕೊಪ್ಪೆಗೆ, ಹೊಡುಚುಲು ಹಾಕಿ ಸುತ್ತ ಕೂತು ಚುಟ್ಟಿ ಸೇದು ಕಫ ವ್ಯಾಕರಿಸಿ ಗರಟಿ ತುಂಬಿಸಿದ ಅಜ್ಜ ಶೇಂಗಾ ಹುರಿದು ವಡಚುವಾಗ ಗುಡುಗಿನ ಶಬ್ಧ ಮಂಗಮಾಯ (ಹ್ವಾಕೆ =ಮೊದಲ ನೇಗಿಲ ಸಾಲು ಹೊಡುಚುಲು =ಬೆಂಕಿ ಗುಡ್ಡೆ, ಕಂಬಳಿ ವಣಸಲು ಹಳ್ಳಿಯಲ್ಲಿ ಮಾಡುವದು ಕೊಪ್ಪೆ =ಮಳೆಗೆ ತಲೆಗೆ ಹಾಕುವ ಸಾಧನ ) ======================== ಅರುಣ್ ಕೊಪ್ಪ ಕವಿ ಪರಿಚಯ: ಯುವ ಬರಹಗಾರರು ಕೃಷಿಕರು, ಔಷಧಿ ವ್ಯಾಪಾರಿಗಳು, ಸಂಘಟಕರು ಬಿ ಎ. ಪದವಿ ಪ್ರಥಮ ಕವನ ಸಂಕಲನ ಭಾವಗಳು ಬಸುರಾದಾಗ (2018)ಪ್ರಕಟಣೆ ಹಂತದಲ್ಲಿ ಹನಿಗಳ ಹಂದರ ಎಂಬ ದ್ವಿತೀಯ ಹನಿ ಗವನಗಳ ಸಂಕಲನ ಅನೇಕ ಪತ್ರಿಕೆಗಳಲ್ಲಿ ಕವಿತೆ ಪ್ರಕಟ ಆಕಾಶವಾಣಿಯಲ್ಲಿ ಕವಿತೆ ವಾಚನ, ಸಂದರ್ಶನ ತಾಲ್ಲೂಕು ಕಬಡ್ಡಿ ಅಮೇಚೂರ್ ಶಿರಸಿ ಪ್ರಧಾನ ಕಾರ್ಯದರ್ಶಿಯಾಗಿ ಕ್ರೀಡಾ ಸಂಘಟನೆ 

ಸಂಪ್ರದಾಯದ ಸೊಬಗು Read Post »

ಇತರೆ

ಪ್ರಬಂದ

ಶ್ರಮಜೀವಿ ಜೇನ್ನೊಣಗಳು ನಾಗರಾಜ ಮಸೂತಿ ಶ್ರಮಜೀವಿಗಳಲ್ಲಿ ಒಂದಾದ ಜೇನುಹುಳು ಶ್ರಮದಿಂದಲೇ ತನ್ನ ಆಯಸ್ಸನ್ನು ಕಡಿಮೆ ಮಾಡಿಕೊಳ್ಳುವಂತೆ ಶ್ರಮವಹಿಸಿ ದುಡಿಮೆ ಮಾಡುತ್ತದೆ. ಇದರ ಆಯಸ್ಸು ಸುಮಾರು ಒಂದು ತಿಂಗಳು ಅಥವಾ ಮೂವತ್ತು ದಿನಗಳು ಮಾತ್ರ. ಚಗಳಿ ಇರುವೆಯ ಜೀವನ ಶೈಲಿಯನ್ನು ಹೋಲುವ ಜೇನುಹುಳು ಎಲ್ಲರ ಕೋಪಕ್ಕೆ ತುತ್ತಾದರೆ ಅದರ ಶ್ರಮದ ಫಲ ಜೇನು ಹನಿ ಮಾತ್ರ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಬಹುಶಃ ಜೇನುತುಪ್ಪ ಇಷ್ಟ ಪಡದ ವ್ಯಕ್ತಿ ಭೂಮಿಯ ಮೇಲೆ ಇರಲಿಕ್ಕಿಲ್ಲ. ಈ ಜೇನುಹನಿಯನ್ನ ಪೇರಿಸಲು ಅದು ಪಡುವ ಕಷ್ಟ ಅಷ್ಟಿಷ್ಟಲ್ಲ. ತರಹೆವಾರಿ ಗಿಡಗಳು ಮೊಗ್ಗು ಬಿಟ್ಟು ಹೂವಾಗಿ ಮೈದಳಿದು ಅರಳಿ ನಾಕವೇ ಧರೆಗಿಳಿದಂತೆ ಶೃಂಗಾರಗೊಳ್ಳುವ ಸಮಯಕ್ಕಾಗಿ ಹುಳುಗಳು ಹಾತೊರೆದು ಕಾಯ್ದು ಕೂಳಿತಿರುತ್ತವೆ. ಮಕರಂದವನ್ನು ಹೀರಲು ಹೂಗಳಿಗೆ ಮುತ್ತಿಗೆ ಹಾಕಿ ಕಾರ್ಯಾರಂಭ ಮಾಡುತ್ತವೆ.      ಆದರೆ ಎಲ್ಲವೂ ಇದೇ ಕೆಲಸಕ್ಕೆ ಇಳಿಯದೆ ಚಗಳಿ ಇರುವೆಯಂತೆ ಕೆಲಸದ ಹಂಚಿಕೆ ಮಾಡಿಕೊಳ್ಳುವ ಬುದ್ಧಿವಂತಿಕೆಗೆ ಮುಂದಾಗುತ್ತವೆ. ಒಂದೇ ಕುಟುಂಬದ ಒಂದೇ ಗೂಡಿನ ಲಕ್ಷಾಂತರ ಹುಳುಗಳಲ್ಲಿ ಒಂದು ಮಾತ್ರ ರಾಣಿಜೇನು ಗೂಡು ಕಟ್ಟುವ ಸ್ಥಳವನ್ನು ಗುರುತಿಸುತ್ತದೆ. ಸಾವಿರಾರು ಕಿರಿಯ ಜೇನುಗಳು ಮನೆಯ ಶುಚಿತ್ವ ಕಾಯ್ದುಕೊಳ್ಳುವ ಹಾಗೂ ಸರಾಗವಾದ ಗಾಳಿಯ ಚಲನವಲನ ನೋಡಿಕೊಳ್ಳುವ ಕೆಲಸ ನಿರ್ವಹಿಸುತ್ತವೆ. ಇನ್ನೂ ಬಾಕಿ ಇರುವ ಹಿರಿಯ ಹಾಗು ಅನುಭವಿ ಹುಳುಗಳು ಪುಷ್ಪಗಳನ್ನು ಅರಸಿಕೊಂಡು ಕಿಲೋಮೀಟರ್ ಗಟ್ಟಲೆ ಸಂಚರಿಸಿ ಹುಡುಕಿ ಹೂಗಳ ಮಕರಂದ ಹೀರುವ ಕೆಲಸವನ್ನು ಮಾಡುತ್ತವೆ.      ಜೇನು ನೊಣಗಳು ತಮ್ಮ ಟ್ಯೂಬ್ ಆಕಾರದ ಅಥವಾ ಸೀರಂಜ್ ರೀತಿಯಲ್ಲಿರುವ ತಮ್ಮ ಕೊಂಡಿಯಿಂದ, ಆಡು ಭಾಷೆಯಲ್ಲಿ ಹೇಳುವುದಾದರೆ ಅದು ತನ್ನ ಮುಳ್ಳಿನಿಂದ ಮಕರಂದವನ್ನು ಹೀರಿಕೊಂಡು ಜಠರದಲ್ಲಿ ಶೇಖರಿಸಿಕೊಳ್ಳುತ್ತದೆ. ಶೇಖರಿಸಿಕೊಂಡ ಮಕರಂದದಲ್ಲಿ ಶೇಕಡಾ ೮೦ % ರಷ್ಟು ನೀರಿನಂಶ ಇರುತ್ತದೆ. ಹಾರುವಾಗ ಫ್ಯಾನ್ ನಂತೆ ರಭಸವಾಗಿ ರೆಕ್ಕೆ ಬೀಸುವುದು ಉದ್ದೇಶ ಭರಿತವಾಗಿದೆ. ಹೀಗೆ ವೇಗವಾಗಿ ರೆಕ್ಕೆ ಬಡಿದು ತಾನು ಹೀರಿದ ಮಕರಂದದಲ್ಲಿನ ನೀರಿನಂಶವನ್ನು ಶೇಕಡ ೬೨% ರಿಂದ ೬೬% ರಷ್ಟು ಆವಿಯಾಗುವಂತೆ ಮಾಡುತ್ತದೆ. ಹೀಗೆ ನೀರಿನಂಶ ಕಡಿಮೆ ಆದ ಮಕರಂದ ಗಟ್ಟಿಯಾದ ದ್ರವ ಪದಾರ್ಥ(liquid) ಆಗಿ ಪರಿವರ್ತನೆ ಮಾಡುವುದರ ಜೊತೆ ಜೊತೆಯಲ್ಲಿ ತನ್ನ ದೇಹದಿಂದ ಸಕ್ಕರೆ(sugar),  ಕಬ್ಬಿಣಾಂಶ(Iron content) ಹಾಗೂ ಪ್ರೋಟಿನ್ (protein) ಅಂಶಗಳನ್ನು ಸೇರ್ಪಡೆ ಮಾಡುತ್ತದೆ. ಈ ಕಾರ್ಯಕ್ಕೆ  ಅದಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ಬೇಕಾಗುತ್ತದೆ. ಹೀಗೆ ಹೂವಿಂದ ಹೂವಿಗೆ ಹಾರಿ ಮಕರಂದವನ್ನು ಹೀರಿಕೊಂಡು ಜೇನುಗೂಡಿಗೆ ಮರಳುತ್ತವೆ. ತನ್ನ ಜಠರದಲ್ಲಿ ಪೇರಿಸಿದ ಮಕರಂದವನ್ನು ಜೇನುತುಪ್ಪವಾಗಿ ಪರಿವರ್ತಿಸಿ ಜೇನುಗೂಡಿನ ಸಾವಿರಾರು ಮಣಿಗಳನ್ನು ಹನಿ ಹನಿಯಾಗಿ ತುಪ್ಪದಿಂದ ಭರ್ತಿಯಾಗಿಸುವ ಕೆಲಸ ಭರದಿಂದ ಬಿಡುವಿಲ್ಲದಂತೆ ಶ್ರಮವಹಿಸಿ ದುಡಿಮೆ ಮಾಡಿ ಪ್ರಾಣ ತ್ಯಾಗ ಮಾಡುತ್ತವೆ. ಇವುಗಳ ಮಧ್ಯೆ ಇರುವ ರಾಣಿಜೇನು ಮಾತ್ರ ಮೊಟ್ಟೆಯನ್ನು ಇಡುತ್ತ ಸಂತಾನೋತ್ಪತ್ತಿ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುತ್ತದೆ. ಈ ಜೀವನ ಶೈಲಿಯನ್ನು ಚಗಳಿ ಇರುವೆಗಳಲ್ಲಿ ಕಾಣಸಿಗುತ್ತದೆ. ರಾಣಿ ಇರುವೆ ಕೂಡ ಸಂತಾನೋತ್ಪತ್ತಿ ಕೆಲಸ ಮಾಡುತ್ತದೆ. ಆದರೆ ಚಗಳಿ ಇರುವೆಗಳ ಗೂಡುಗಳಲ್ಲಿ ಇರುವೆಗಳ ಸಂಖ್ಯೆ ಜೇನಿಗಿಂತ ಕಡಿಮೆ ಇರುತ್ತದೆ. ಹಾಗೂ ಇವಗಳ ಆಹಾರ ಪದ್ಧತಿಯಲ್ಲಿ ವ್ಯತ್ಯಾಸ ಕಾಣುತ್ತೇವೆ. ಜೇನು ಸಸ್ಯ ಆಹಾರಿ ಆದರೆ ಇರುವೆ ಸಸ್ಯ ಮತ್ತು ಮಾಂಸಹಾರಿ, ಇದನ್ನು ಹೊರತು ಪಡಿಸಿದರೆ ಉಳಿದಂತೆ ರಕ್ಷಣೆ ಕಾರ್ಯ, ಕಾರ್ಯ ಹಂಚಿಕೆ, ಮತ್ತು ನಿರ್ವಹಣೆ ನೂರಕ್ಕೆ ತೊಂಭತ್ತೊಂಭತ್ತರಷ್ಟು ಹೋಲಿಕೆ ಆಗುತ್ತದೆ.          ಜೇನುಗೂಡು ಕಟ್ಟುವ ಲಕ್ಷಾಂತರ ಹುಳುಗಳು ಮಧ್ಯೆ ನಡೆಯುವ ದಿನನಿತ್ಯದ ಕೆಲಸದಲ್ಲಿ ದಿನಕ್ಕೆ ಸುಮಾರು ಎರಡು ಸಾವಿರದಷ್ಟು ಜೇನ್ನೊಣಗಳು ಅಸುನೀಗುತ್ತವೆ. ಹಿಂದೆ ರಾಜರ ಕಾಲದಲ್ಲಿ ತಾಜಮಹಲ್, ಗೋಲ ಗುಂಬಜ್ ನಂತಹ ಐತಿಹಾಸಿಕ ಸ್ಥಳಗಳನ್ನು ನಿರ್ಮಿಸುವಾಗ ದಶಾನುದಶ ವರ್ಷಗಳ ಕಾಲ ನಡೆಯುವ ಕೆಲಸದಲ್ಲಿ ಕೆಲಸಗಾರರು ಅಸುನೀಗಿದಂತೆ. ಹೀಗೆ ಒಂದು ಜೇನುಗೂಡು ಕಟ್ಟಿ ಜೇನುತುಪ್ಪವನ್ನು ಪೇರಿಸುವ ಈ ಕೆಲಸದಲ್ಲಿ ಲಕ್ಷಾಂತರ ಹುಳುಗಳು ಯೋಧರಂತೆ ವೀರಮರಣವಪ್ಪಿ ಸಾವಿರಾರು ಜನರಿಗೆ ಅಚ್ಚು ಮೆಚ್ಚಿನ ಜೇನುತುಪ್ಪವನ್ನು ನೀಡುತ್ತವೆ. ಇಂತಹ ನಿಸ್ವಾರ್ಥ ಸೇವೆಯನ್ನು ಮನುಷ್ಯನನ್ನು ಹೊರತುಪಡಿಸಿ ಅನೇಕ ಜೀವಿಗಳಲ್ಲಿ ಕಾಣಬಹುದು… ನಾಗರಾಜ ಮಸೂತಿ ಲೇಖಕರ ಪರಿಚಯ: ಶಿಕ್ಷಕರಾಗಿರುವ  ಶ್ರೀಯುತರು ಕಥೆ,ಕವಿತೆ,ಲೇಖನ, ಪ್ರಬಂದಗಳನ್ನು  ಬರೆಯುತ್ತಾ ಬರುತ್ತಿದ್ದಾರೆ. ಇವರ ಹಲವು ಬರಹಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಪ್ರಬಂದ Read Post »

You cannot copy content of this page

Scroll to Top