ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ

ಅಂಕಣ

ನೋಟ! ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ ಬೆಟ್ಟದಲ್ಲಿತೋಳ ಕೋದಿತ್ತು  ಕರುವಿನ ಕರುಳ ಕಿತ್ತು ಹುಲಿ,ಗಜ,ತೋಳನ ಉಡ ನುಂಗಿದ್ದ ಕಂಡೆ ಗೋಪತಿನಾಥ ವಿಶ್ವೇಶ್ವರ ಲಿಂಗವನರಿಯಲಾಗಿ……      ಹನ್ನೆರಡನೆಯ ಶತಮಾನದ ತಳಮಟ್ಟದಿಂದ ಬಂದು ಜ್ಞಾನ ಪ್ರಸಾರ ಮಾಡಿದ  ಅಂಬಿಗರ ಚೌಡಯ್ಯ,ನುಲಿಯ ಚಂದಯ್ಯ,ಹೆಂಡದ ಮಾರಯ್ಯ, ಉರಿಲಿಂಗ ಪೆದ್ದಿ,ಕದಿರ  ರೇಮವ್ವೆ, ಕಾಳವ್ವೆ ಮುಂತಾದವರ ಗುಂಪಿನಲ್ಲಿ ಎದ್ದು ಕಾಣುವ ಹೆಸರು. ಈ ವಚನಕತೃ,ತುರುಗಾಹಿ ರಾಮಣ್ಣನವರದು ಒಂದರ್ಥದಲ್ಲಿ ಶರಣಚಳುವಳಿಯ ಮೊದಲ ದಲಿತ ಚಳುವಳಿಯೇ ಆಗಿದೆ ಎಂಬ ಡಾ.ಅರವಿಂದ ಮಾಲಗತ್ತಿಯವರ ಮಾತು ಅರ್ಥಪೂರ್ಣವಾಗಿದೆ. ಬಸವಣ್ಣನವರ ಅನುಭವ ಮಂಟಪದಲ್ಲಿ ಸಕಲ ಜಾತಿಯವರೂ ಇದ್ದರು. ತಂತಮ್ಮ ಕಾಯಕ ಮಾಡುತ್ತಲೇಅನುಭಾವಿಗಳೂ ಆಗಿದ್ದುದು ವಿಶೇಷ. ಈ ವಚನದತಿರುಳು: ಕುರುಬ ರಾಮಣ್ಣ  ಎಂದಿನಂತೆ ಕುರಿಮಂದೆಯಲ್ಲಿದ್ದಾನೆ. ಮೂರು ಬೆಟ್ಟದ ತಪ್ಪಲು ಅವನಿರುವ ಸ್ಥಾನ.ಹಸು,ಎತ್ತು, ಕರುಗಳೂ ಹಸಿರ ಮೇಯುತ್ತಿವೆ ಒಂದು ಗುಡ್ಡದಿಂದ ನೆಗೆದ ಹುಲಿ ಹಸುವನ್ನು ತಿಂದು ಬಿಡುತ್ತದೆ.ಇನ್ನೊಂದು ಗುಡ್ಡದಿಂದಿಳಿದು ಬಂದ ಆನೆ ಎತ್ತನ್ನು ಎತ್ತಿಬಿಸಾಕುತ್ತದೆ.ನಡುವಿನ ಬೆಟ್ಟದ ತೋಳ ಕರುವಿನ ಕರುಳು ಹಿಡಿದು ಎತ್ತಿಒಯ್ದು ಬಿಡುತ್ತದೆ. ಇಂತಹ ದಾರುಣ, ಭೀಷಣ ಚಿತ್ರಕಂಡ ಕುರಿಗಾಹಿ ತನ್ನನ್ನು ಸಂತೈಸಿಕೊಳ್ಳುತ್ತಾನೆ: ಗೋಪತಿನಾಥನ ವಿಶ್ವೇಶ್ವರಲಿಂಗ ಅರಿವುಂಟಾದಾಗ,ಹುಲಿ, ಆನೆ. ತೋಳಗಳನ್ನುಅರಿವೆಂಬ ಉಡವು ನುಂಗುತ್ತದೆ. ಮೇಲಿನ ಶಬ್ದ ಚಿತ್ರವನ್ನುಬಿಡಿಸಿದರೆ-ತನುವು ಹುಲಿ,ಮನ ಸಾಧುಹಸು,ಮದಗಜ ಅಹಂನ ಸಂಕೇತ. ಎತ್ತಿನಂತ ದುರ್ಬಲ ಪ್ರಾಣಿಯನ್ನು ಸುಖಾಸುಮ್ಮನೆ ಎತ್ತಿಎಸೆಯುತ್ತದೆ.ನಮ್ಮಲ್ಲೇ ಇರುವ ಲೋಭವು, ನಮ್ಮಲ್ಲೇ ಇರುವ ಮುಗ್ದತೆಯ ಮೇಲೆ ದಾಳಿ ಮಾಡವುದು, ತೋಳಕರುವಿನ ದೃಶ್ಯವನ್ನು ಸಂಕೇತಿಸುತ್ತದೆ.  ಜ್ಞಾನದ ಸಂಕೇತವಾದ ‘ಉಡ’ವು ಮೇಲೆ ಹೇಳಿದ ಎಲ್ಲಪ್ರಾಣಿಗಳನ್ನೂ ನಿಯಂತ್ರಿಸುತ್ತದೆ.. ಕ್ರೋಧ,ಮದ, ಲೋಭ ಈ ಮೂರೂ ಅವಗುಣಗಳ್ನು ಜ್ಞಾನಿ ಮಾಡುವುದು ಅನುಭಾವದಿಂದ ಎಂಬುದು ಸರಳವಾದ ಈ ವಚನದ ಅರ್ಥ! ಇವೆಲ್ಲ ಮನದ ಕಾಳಿಕೆಗಳು. ‘ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ’ ಎಂದುಬಸವಣ್ಣನವರು     ಆರ್ತರಾಗಿಪ್ರಾರ್ಥಿಸಿದ್ದನ್ನು ಇಲ್ಲಿ ನೆನೆಯಬಹುದು. ಮಾನವ ಮನಸ್ಸು   ‘ಅರಿಷಡ್ವರ್ಗ’ ಗಳಿಂದತುಂಬಿ ತುಳುಕುತ್ತಿರುತ್ತದೆ.(ಕಾಮ,ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯ) ಅರಿವಿನ ಶಸ್ತ್ರದಿಂದ,ಅವನ್ನು ಹೆರೆದು ಹಾಕಬೇಕು.ಧ್ಯಾನದಿಂದ ಅದನ್ನು ಸಾದಿಸಬಹುದು ಎಂಬುದು ಶರಣರ  ಇಂಗಿತ. ಇವೆಲ್ಲ ಸೆರಗಿನ ಕೆಂಡದಂತೆ-ನಮ್ಮಲ್ಲಿದ್ದು ನಮ್ಮನ್ನೇ ಸುಡುವಂತಹವು.ಋಜು ಮಾರ್ಗದಲ್ಲಿ ನಡೆವುದೊಂದೆ ಇದಕ್ಕೆ ಮದ್ದು. ಪಾಪವೆಸಗಿದರೂ ಪಶ್ಚಾತ್ತಾಪದ ಬೆಂಕಿಯಿಂದ ಅದನ್ನು ಸುಡಬಹುದು.ಕುರುಬ ವೃತ್ತಿಯ ತುರುಗಾಹಿ ರಾಮಣ್ನ ಕಂಡುಕೊಂಡ ಸತ್ಯವಿದು.. ಹನ್ನೆರಡನೆಯ ಶತಮಾನ, ಕನ್ನಡದ ‘ಕ್ರಾಂತಿಯುಗ’ ವೇ ಸರಿ. ಅಲ್ಲಮಪ್ರಭು, ಬಸವೇಶ್ವರರ ದಿವ್ಯ ಮಾರ್ಗದರ್ಶನದಲ್ಲಿ ಲೌಕಿಕವನ್ನು ಬಿಡದೆ, ಅಲೌಕಿಕದೊಟ್ಟಿಗೆ ಅನುಸಂಧಾನ  ಮಾಡಿದ ಶರಣರ  ಒಳಹೊರಗಿಲ್ಲದ ಬದುಕು, ವಿಸ್ಮಯ ಹುಟ್ಟಿಸುವಂತದ್ದು! ಓರ್ವ ಕುರಿಗಾಹಿಯ ಎದೆಯಲ್ಲಿ ಅರಿವಿನಬೆಳಕು ಕಂಡು, ಅದನ್ನಾತ,ತನಗೆ ಪರಿಚಿತವಾದ, ಆವರಣವನ್ನುಬಳಸಿಕೊಂಡು, ವಚನ ಕಟ್ಟಬೆಕೆಂದರೆ ಅದಕ್ಕೆಷ್ಟು ಸಾಧನೆ ಬೇಕು! ಅವನು, ಕಾಯದ ವೃತ್ತಿಯನ್ನುತಾತ್ವಿಕನೆಲೆಯಲ್ಲಿ ನೋಡಿದ್ದಾನೆ.ಬೆಡಗಿನ ಮಾತುಗಳಲ್ಲಿ ‘ನೀತಿ’ ಯನ್ನು ಹೇಳಿದ್ದಾನೆ.ಇದನ್ನಾತ ಜಪತಪ ಮಾಡದೆ ತನ್ನ ದೈನಂದಿನ ಕಾಯಕದಿಂದಲೇ ನಿರೂಪಿಸಿ ಉತ್ತಮ ಸಂದೇಶ ನೀಡಿರುವುದು ಮಹತ್ವದ ಸಂಗತಿ. ಡಾ.ಕಮಲಾ ಹೆಮ್ಮಿಗೆ                                                                               ಲೇಖಕರ ಪರಿಚಯ: ಕಮಲಾ ಹೆಮ್ಮಿಗೆಯವರು ಆಕಾಶವಾಣಿ, ದೂರದರ್ಶನದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.ಕನ್ನಡ ಸಾಹಿತ್ಯದ ಬಹುತೇಕೆ ಎಲ್ಲ ಪ್ರಭೇದಗಳಲ್ಲಿಯೂ ಕೈಯಾಡಿಸಿರುವ ಇವರು ಜನಪದ,ಅನುವಾದ,ವಿಮರ್ಶೆ,ಕಾವ್ಯ,ಕಥೆ ಕಾದಂಬರಿಗಳನ್ನು ರಚಿಸಿದ್ದಾರೆ.ಕರ್ನಾಟಕ ರಾಜ್ಯ ಪ್ರಶಸ್ತಿ ಸೇರಿದಂತೆಅನೇಕ  ಮನ್ನಣೆಗಳಿಗೆ ಬಾಜನರಾಗಿದ್ದಾರೆ.ಸವದತ್ತಿ ಎಲ್ಲಮ್ಮ ಹಾಗು ದೇವದಾಸಿಯರ ಕುರಿತಾದ ಸಂಶೋದನೆಗೆ ಪಿ.ಹೆಚ್.ಡಿ. ಪಡೆದಿದ್ದಾರೆ.ಸದ್ಯ ಕೇರಳದ ತಿರುವನಂತಪುರದಲ್ಲಿ ನೆಲೆಸಿದ್ದಾರೆ.

ಅಂಕಣ Read Post »

ಅಂಕಣ ಸಂಗಾತಿ

ಶಾನಿಯ ಡೆಸ್ಕಿನಿಂದ…

ಚಂದ್ರಾವತಿ ಬಡ್ಡಡ್ಕ ನಾನು- ಛೇ ನೀವು ಎಲ್ಲಿ ಹೋದ್ದು? ಸಚಿನ್ ಸರೀ ಹೊಡ್ದ, ನೋಡ್ಬೇಕಿತ್ತು… ಅಮ್ಮ- ಹೊಡ್ದನಾ…. ಯಾರಿಗೆ ಹೊಡ್ದಾ? ಆಚೆ ಪಾರ್ಟಿಯವನಿಗೆ ಹೊಡ್ದದ್ದದ್ದಾ…. ಯಾಕೆ ಹೊಡ್ದದ್ದು…? ಶ್ರೀಪತಿ- ಅಲ್ಲಮ್ಮಾ ರನ್ ಬಾರಿಸಿದ. ಅಮ್ಮ- ಹ್ಞಾ.. ಹಾಗಾ…. ನಾನು ಆಚೆ ಪಾರ್ಟಿಗೆ ಹೊಡ್ಡದ್ದದ್ದಾ ಅಂತ ನೆನ್ಸಿದೆ. ನಾನು- ಹ್ಹೋ…. ವೋ….. ವಿಕೆಟ್…. ಇಲ್ಲ ಥರ್ಡ್ ಅಂಪಾಯರ್ ಅಮ್ಮ- ಏನಾಯ್ತು….ಏನಾಯ್ತು… ನಾನು- ಸ್ವಲ್ಪ ಇರಿ…. ಧರ್ಡ್ ಅಂಪಾಯರ್‌ಗೆ ಹಾಕಿದ್ದಾರೆ ಅಮ್ಮ- ಅದ್ಯಾರು? ನಾನು- ವಿವರಿಸಿ ಎಂಬಂತೆ ಇವರತ್ತ ನೋಡಿದೆ. ಶ್ರೀಪತಿ- ಥರ್ಡ್ ಅಂಪಾಯರ್ ಅಂದ್ರೇ….(ಸಾಗಿತು ವಿವರಣೆ) ನಾನು- ಅಬ್ಬಾ… ನಾಟೌಟ್! ಅಮ್ಮ- ಇಲ್ವಾ ಸದ್ಯ. ಸ್ವಾಮೀ ದೇವರೇ… (ಮಿಕ್ಕಂತೆ ದೇವರನ್ನು ನಂಬದವರು) ಶ್ರೀಪತಿ- ಆಹಾ…. ಆರ್ರ್ಹಾ…… ಫೋರ್… ಯೇ… ಇಲ್ಲಲ್ಲ ಸಿಕ್ಸ್ ಅಮ್ಮ- ಅದೆಂಥ? ನಾನು- ಫೋರ್ ಅಂದ್ರೇ…..(ಫೋರ್- ಸಿಕ್ಸ್ ಬಗ್ಗೆ ಸಣ್ಣ ಉಪನ್ಯಾಸ) ನಾನು- ವ್ಹಾವ್….. ಹ್ಯೂಜ್ ಸಿಕ್ಸ್! ಶ್ರೀಪತಿ- ಮತ್ತೊಂದು ಸಿಕ್ಸ್ (ಅಷ್ಟರಲ್ಲಿ ನಾನು ಎದ್ದು ಟಾಯ್ಲೆಟ್‌ಗೆ ಹೋದೆ) ಅಮ್ಮ- ನೀನು ಎಲ್ಲಿ ಹೋದ್ದು…? ಅಂವ ಸುಮಾರು ಬೌಂಡರಿ ಹೊಡ್ದ. ಆದ್ರೆ ಆಚೆಯ ಹಸಿರು ಡ್ರೆಸ್ ಹಾಕಿದವರು ಗೆರೆ ದಾಟಲು ಬಿಡುವುದೇ ಇಲ್ಲ…… ಶ್ರೀಪತಿ- ಅಯ್ಯೋ ಅದು ಅವರ ಆಟ ಅಮ್ಮಾ. ಇವರು ಬೌಂಡರಿ ಹೊಡೆಯದಂತೆ ತಡೆಯೋದೆ ಅವರ ಕೆಲಸ ಮತ್ತು ಚಾಕಚಕ್ಯತೆ. ಅಮ್ಮ- ಹೌದಾ….. ಹಾಗಾ.. (ಅಷ್ಟರಲ್ಲಿ ಮೈದುನನ ಅಗಮನ) ಅಮ್ಮ-  ಹೇ… ನೀನು ಯಾಕೆ ಊಟಕ್ಕೆ ಬರ್ಲಿಲ್ಲಾ….. ಆಞ… ಅದೆಂಥ ಕೈಯಲ್ಲಿ….. ಈಗ ಊಟ ಮಾಡ್ತಿಯಾ…. ರಾತ್ರಿ ಊಟಕ್ಕಿದ್ದಿಯಾ….. ಬೇಗ ಬಾ ಮನೆಗೆ…. (ಹೀಗೆ ಮೈದುನ ಹಿಂದೆ ಹೋಗಿ ಒಂದು ಹದ್ನೈದು ನಿಮಿಷ ಹೋಯ್ತು) ಶ್ರೀಪತಿ: ಹೇ…. ನೋಡ್ನೋಡ್ನೋಡು ಹೇಗೆ ಡೈವ್ ಹೊಡ್ದ. ಎಕ್ಸೆಲಂಟ್ ಕ್ಯಾಚ್……. (ಅವರಿಗೆ ಇಷ್ಟವಾಗಿದ್ದ ಹಳೆಯ ಕ್ಯಾಚ್‌ಗಳ ವಿವರಣೆ…..) ಅಮ್ಮ: ಮರಳಿ ಬಂದು ಅವರ ಜಾಗದಲ್ಲಿ ಕುಳಿತು, ಏನಾಯ್ತು, ಎಷ್ಟಾಯ್ತು…? ನಂಗೆ ಟೆನ್ಷನ್ ಆಗ್ತದೆ… ನಾನು:  ಯಾಕೆ? ಅಮ್ಮ: ಇಂಡಿಯಾ ಸೋತರೇ….? ನಾನು: ಸೋತರೆ ಏನಾಯ್ತು? ಆಟವನ್ನು ಆಟವಾಗಿ ನೋಡಿ, ಯಾರು ಚೆನ್ನಾಗಿ ಆಡ್ತಾರೋ ಅವರೇ ಗೆಲ್ತಾರೆ. ಅಮ್ಮ: ನಂಗೆ ಟೆನ್ಷನ್ ಆಗ್ತದೆ…. ಶ್ರೀಪತಿ: ಈ ಅಮ್ಮನಿಗೆ ಹೀಗೆ ಬೇಡದ ವಿಷಯಕ್ಕೆ ಟೆನ್ಷನ್ ಮಾಡೇ ಬಿಪಿ ಜಾಸ್ತಿ ಆಗೋದೂ…….. ಅಮ್ಮ: ಲಲಿತ್ಮಾಯಿಗೆ ಫೋನ್ ಮಾಡ್ತೇನೆ…. ನಾನು:  ಯಾಕೆ? ಅಮ್ಮ: ಅವಳಿಗೆ ಕ್ರಿಕೆಟ್ ಚೆನ್ನಾಗಿ ಗೊತ್ತು. ಭಾರತ ಸೋಲ್ತದ ಗೆಲ್ತದಾಂತ ಅವಳು ಹೇಳ್ತಾಳೆ. ನಾನು ಇವರು ಮುಖ-ಮುಖ ನೋಡ್ಕೊಂಡೆವು (ವರ್ಷಗಳ ಹಿಂದೆ ಕ್ರಿಕೆಟ್ ನೋಡ್ತಿದ್ದಾಗ ಬರೆದಿದ್ದೆ. ಅರ್ಧಕ್ಕೆ ಬರೆದಿದ್ದ ಇದು ಭೂ(ಕಂಪ್ಯೂಟರ್)ಗತ ವಾಗಿತ್ತು. ಮತ್ತೆ ಹೇಗೆ ಮುಂದುವರಿಸಬೇಕಿದ್ದೆ ಎಂಬುದ ನಂಗೆ ಈಗ ಮರೆತು ಹೋಗಿದೆ. ಹೇಗಿತ್ತೋ ಹಾಗೇ ಪೋಸ್ಟ್ ಮಾಡೋಣ ಅನ್ನಿಸಿತು, ಹಾಗೇ ಮಾಡುತ್ತಿದ್ದೇನೆ) ಚಂದ್ರಾವತಿ ಬಡ್ಡಡ್ಕ. ಲೇಖಕರ ಪರಿಚಯ: ಚಂದ್ರಾವತಿ ಬಡ್ಡಡ್ಕ, ಪತ್ರಿಕೆ ಗಳಲ್ಲಿ ಪೋರ್ಟಲ್ ಗಳಲ್ಲಿ ಕೆಲಸ ಮಾಡಿ ಅನುಭವ . ಸದ್ಯಕ್ಕೆ ವೃತ್ತಿಪರ ಅನುವಾದಕಿ

ಶಾನಿಯ ಡೆಸ್ಕಿನಿಂದ… Read Post »

You cannot copy content of this page

Scroll to Top